ಲವಲVK ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಲವಲVK ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಮಂಗಳವಾರ, ನವೆಂಬರ್ 20, 2018

ಆಹಾ ಪುರುಷಾಕಾರಂ!

ನವೆಂಬರ್ 18, 2018ರಂದು ವಿಜಯ ಕರ್ನಾಟಕ ಸಾಪ್ತಾಹಿಕ ಪುರವಣಿಯಲ್ಲಿ ಪ್ರಕಟವಾಗಿರುವ ಲೇಖನ

ಯಾರು ನಿಮ್ಮ ಹೀರೋ? ಹಾಗೆಂದು ಆಗಷ್ಟೇ ಪದವಿ ತರಗತಿಗಳಿಗೆ ಹೊಸದಾಗಿ ಪ್ರವೇಶ ಪಡೆದು ಬೆರಗುಗಣ್ಣುಗಳೊಂದಿಗೆ ಕುಳಿತಿದ್ದ ಹುಡುಗ ಹುಡುಗಿಯರನ್ನು ಕೇಳಿದೆ. ಒಂದಷ್ಟು ಸಿನಿಮಾ ನಾಯಕರು, ಸ್ವಾತಂತ್ರ್ಯ ಹೋರಾಟಗಾರರು, ರಾಜಕೀಯ ನೇತಾರರರ ಹೆಸರುಗಳು ಒಂದಾದಮೇಲೊಂದು ಬಂದವು. ಅವೆಲ್ಲ ನಿರೀಕ್ಷಿತವೇ ಆಗಿದ್ದರೂ ಆ ಹೊಸ ಮಕ್ಕಳು ತಿರುಗಿ ಇನ್ನೊಂದು ಪ್ರಶ್ನೆ ಕೇಳಬಹುದೆಂದು ಅಂದುಕೊಂಡಿರಲಿಲ್ಲ. ‘ನಿಮ್ಮ ಹೀರೋ ಯಾರು ಸರ್?’ ನಾನು ಚಕಿತನಾಗಿ ಎರಡು ಕ್ಷಣ ತಡೆದು ‘ನನ್ನ ಅಪ್ಪ’ ಅಂದೆ. ಹ್ಞಾ? ಎಂದು ಚುರುಕಾದ ಅವರ ಮುಖದಲ್ಲೀಗ ಮಂದಹಾಸ ಬೆರೆತ ಸಣ್ಣ ಕುತೂಹಲವೂ ಇತ್ತು.

ಅವರಿಗೆ ಎರಡು ಮಾತಿನ ವಿವರಣೆ ಕೊಡುವುದು ನನಗೆ ಅನಿವಾರ್ಯವಾಗಿತ್ತು: ನನ್ನ ಅಪ್ಪ ಹುಟ್ಟಿ ಎರಡೂವರೆ ವರ್ಷಕ್ಕೆ ಅವರಮ್ಮ ತೀರಿಕೊಂಡರಂತೆ. ಎರಡು ಹೊತ್ತಿನ ಕೂಳು ಸಂಪಾದಿಸುವುದೇ ಬದುಕಿನ ಏಕೈಕ ಉದ್ದೇಶವಾಗಿದ್ದ ಮೇಲೆ ಓದು ಬರಹ ದೂರವೇ ಉಳಿಯಿತು. ಎಲ್ಲೋ ಎರಡನೇ ಕ್ಲಾಸು ಮುಗಿಸಿದ್ದರೆಂದು ಕಾಣುತ್ತದೆ. ಆಮೇಲಿನದ್ದೆಲ್ಲ ಅವರಿವರ ಮನೆ ಚಾಕರಿಯ ಗತವೈಭವ.

ಓಡಾಟ, ಹೋರಾಟ. ಮರಳಿನಿಂದ ಎಣ್ಣೆ ಹಿಂಡುವ ಛಲ. ಬರಡು ನೆಲದಲ್ಲಿ ಬೆಳೆ ತೆಗೆವ ಬಲ. ನಮಗೆ ನೆನಪಿರುವುದು ನಸುಕಿನ ಮೂರು ಗಂಟೆಗೆ ಎದ್ದು ತಲೆ ಮೇಲೆ ಬಾಳೆಗೊನೆ ಹೊತ್ತು ಹದಿನೈದು ಕಿಲೋಮೀಟರ್ ಕಾಡು ಹಾದಿ ಬಳಸಿ ಸಂತೆಗೆ ಹೋಗಿ ಮಾರಾಟ ಮಾಡಿ ಮಟಮಟ ಮಧ್ಯಾಹ್ನ ಅಕ್ಕಿ ದಿನಸಿ ಹೊರೆ ಹೊತ್ತು ಬಸವಳಿದು ಬಂದು ಮುಳಿಹುಲ್ಲಿನ ಮನೆಯ ಸೆಗಣಿ ಸಾರಿಸಿದ ಜಗುಲಿಯ ಅಂಚಿನಲ್ಲಿ ಕುಳಿತು ಮಜ್ಜಿಗೆ ನೀರು ಕುಡಿಯುತ್ತಿರುವ ಅಪ್ಪನ ಕಪ್ಪುಬಿಳುಪು ಚಿತ್ರ.

ಆ ಚಿತ್ರ ಕಣ್ಣೆದುರು ಬಂದಾಗಲೆಲ್ಲ ‘ನನಗೆ ಕೇಳಿಸದೇ ಅಪ್ಪಯ್ಯ/ ಆ ಬಿರುಕು ಬಿಟ್ಟಿರುವ ಬರಡು ಕೊಳಗಳ ಹಿಂದೆ/ ಮಡುಗಟ್ಟಿ ನಿಂತಿರುವ ಕೊಳಗಗಟ್ಟಲೆ ಉಪ್ಪುನೀರು?/ ಒಂದೊಮ್ಮೆ ಜೀವಜಲದಲ್ಲಿ ಮಿಂದೆದ್ದ ಮೀನುಗಳ ಕಳೇಬರ?/ ಕರಟಿ ಗಬ್ಬದ್ದಿರುವ ನೈದಿಲೆ, ತಾವರೆಗಳ ರಾಶಿರಾಶಿ?’ ಎಂಬಿತ್ಯಾದಿ ಕವಿತೆ ಸಾಲುಗಳನ್ನೆಲ್ಲ ಗೀಚಿ ಪುಸ್ತಕಗಳ ನಡುವೆ ಜೋಡಿಸಿದ್ದೂ ಉಂಟು. ಅಪ್ಪನ ಬಳಿ ನೂರೆಂಟು ಪುರಾಣ ಕತೆಗಳಿದ್ದವು, ಬರೆಯದ ಆತ್ಮಕಥೆಯ ಸಾವಿರದೆಂಟು ಪುಟಗಳಿದ್ದವು. ಎಷ್ಟು ಓದಿದೆವೋ ಎಷ್ಟು ಓದದೆ ಉಳಿದೆವೋ ಗೊತ್ತಿಲ್ಲ, ಆದರೆ ಮೂವತ್ತು ಚಿಲ್ಲರೆ ವರ್ಷಗಳಲ್ಲಿ ಅಪ್ಪನಂತಹ ಇನ್ನೊಬ್ಬ ಮಹಾತ್ಮ ಕಣ್ಣಿಗೆ ಬಿದ್ದಿಲ್ಲ. ಅದಕ್ಕೆ ಅವರೇ ನನ್ನ ಹೀರೋ.

ಎಂಬ ಇತಿವೃತ್ತವನ್ನು ಮೂರು ವಾಕ್ಯದಲ್ಲಿ ಹೇಳಿಮುಗಿಸಿದೆ. ಬಹುಶಃ ಅವರೆಲ್ಲರಿಗೂ ಅವರವರ ಬಾಲ್ಯದ ನೆನಪು ಬಂದಿರಬೇಕು. ಅವರಲ್ಲಿ ಬಹುತೇಕರು ತೀರಾ ಬಡತನದಿಂದ ಬಂದ ಕಷ್ಟಜೀವಿಗಳೇ. ಅದರಲ್ಲೂ ಹೆಚ್ಚಿನವರು ಅವರ ಕುಟುಂಬದಿಂದಲೇ ಮೊದಲ ಬಾರಿ ಶಾಲೆಯ ಮೆಟ್ಟಿಲು ಹತ್ತಿದವರು. ‘ಹೇಳಿ, ಅಪ್ಪ ಯಾವ ಹೀರೋಗೆ ಕಡಿಮೆ?’ ಎಂದು ಕೇಳಿದೆ. ಅಷ್ಟು ಹೊತ್ತಿಗೆಲ್ಲ ಅವರೂ ತಮ್ಮ ಮನಸ್ಸಿನೊಳಗೆ ಇದ್ದ ಹೀರೋನ ಪ್ರತಿಮೆಯನ್ನು ಬದಲಾಯಿಸಿಕೊಂಡಿದ್ದರು. ಜಗತ್ತಿನ ಶೇಕಡಾ ತೊಂಬತ್ತೊಂಬತ್ತು ಮಂದಿಯ ಮೊದಲ ಹೀರೋ-ಹೀರೋಯಿನ್ನುಗಳು ಅವರ ಮನೆಯಲ್ಲೇ ಇದ್ದಾರೆ.

ಹಾಗೆಂದುಕೊಂಡಿರುವುದು ವಾಸ್ತವವೇ ಅಥವಾ ಬರೀ ಗತಕಾಲದ ಭ್ರಮೆಯೇ ಎಂಬ ಪ್ರಶ್ನೆ ಕಾಡಿದ್ದು ಈ ಬಾರಿಯ ‘ಅಂತಾರಾಷ್ಟ್ರೀಯ ಪುರುಷರ ದಿನಾಚರಣೆ’ಯ ಘೋಷವಾಕ್ಯವನ್ನು ನೋಡಿದಾಗ. ಧನಾತ್ಮಕ ಪುರುಷ ಮಾದರಿ (Positive Male Role Models) ಎಂಬುದೇ ಆ ಸ್ಲೋಗನ್. ವಾಟ್ಸಾಪು ಫೇಸ್ಬುಕ್ಕಿನ ಭಾಷೆಯಲ್ಲಿ ವ್ಯವಹರಿಸುವ ನಮ್ಮ ಹೊಸ ಜಮಾನಾದ ಹುಡುಗರಿಗೆ ಧನಾತ್ಮಕ ಪುರುಷ ಮಾದರಿಯೊಂದರ ಅಗತ್ಯ ಇದೆಯೇ? ಇದ್ದರೆ ಅವರ ಕಣ್ಣೆದುರು ಬರುವ ಮಾದರಿ ಯಾವುದು? ಅವರು ಬೆಳೆದು ವಿಶಾಲ ಸಮಾಜವೊಂದರ ಭಾಗವಾದಾಗ ಅವರ ಸಮಾಜೋ-ಸಾಂಸ್ಕೃತಿಕ ಬದುಕಿನ ಹಿಂದೆ ಈ ಮಾಡೆಲ್ಲಿನ ಪಾತ್ರ ಏನು?

ಪುರುಷನೆಂಬ ಆಕೃತಿ ಮನುಷ್ಯನ ಇತಿಹಾಸದಷ್ಟೇ ಹಳೆಯದು. ಅದ್ಯಾಕೆ ಇಷ್ಟು ಸಾವಿರ ವರ್ಷಗಳಲ್ಲಿ ಇಲ್ಲದ ಪುರುಷರ ದಿನಾಚರಣೆ ಈಗ ಆರಂಭವಾಗಿದೆ? ಪುರುಷನ ಧನಾತ್ಮಕ ಮಾದರಿಯ ಬಗ್ಗೆ ಚಿಂತಿಸುವ, ಚರ್ಚಿಸುವ ಅವಶ್ಯಕತೆಯೊಂದು ಜಗತ್ತಿನೆದುರು ಈಗ ಯಾಕೆ ತೆರೆದುಕೊಂಡಿದೆ? ಧನಾತ್ಮಕ ಮಾದರಿಯ ಬಗ್ಗೆ ಒತ್ತಿ ಹೇಳುತ್ತಿದ್ದೇವೆ ಎಂದರೆ ಋಣಾತ್ಮಕ ಮಾದರಿಯ ಪ್ರಭಾವ ಜಾಸ್ತಿ ಇದೆ ಎಂದು ಅರ್ಥ ಅಲ್ಲವೇ?

...ಗುಣಕೆ ಮಚ್ಚರವೇಕೆ? 
ಶ್ರೀರಾಮನಾಹ್ಲಾದ ರೂಪಿ. ಔದಾರ್ಯ ನಿಧಿ.
ನಿರಸೂಯೆಯಿಂ ಸರ್ವರನುರಾಗ ಭಜನಂ.
ಕಲಿ. ಮತ್ಸರವಿದೂರನತ್ಯಂತ ಶಾಂತಿಖನಿ.
ಪ್ರಿಯಭಾಷಿ. ಹಿತಸಖಂ. ಮಿತಮಾರ್ಗಿ. ಧೀರವಶಿ.
ನಗುಮೊಗದ ಸಂಯಮಿ. ಕೃತಜ್ಞತಾ ಮೂರ್ತಿ. ಮೇಣ್
ಜ್ಞಾನಿ. ಸಜ್ಜನಪ್ರೇಮಿ. ಸೂಕ್ಷ್ಮಮತಿ. ಪಂಡಿತಂ.
ಶೃತಿವಿದಂ; ಸುವಿಚಾರಿ; ನಿತ್ಯಪ್ರಜಾಪ್ರೇಮಿ!
ಸುಸ್ಥಿರಂ; ಸಂಬುದ್ಧ ಪ್ರಜ್ಞಾ ಮಹೇಶ್ವರಂ! 
ಇದು ಕುವೆಂಪು ಅವರ ದಶರಥ ಕಡೆದ ರಾಮನ ಚಿತ್ರ. ಲೋಕದಲ್ಲಿ ಕೋಟ್ಯಂತರ ಪುರುಷರಿದ್ದರೂ ರಾಮನೊಬ್ಬನೇ ಪುರುಷೋತ್ತಮನೆಂದು ಕರೆಯಲ್ಪಟ್ಟ. ಪುರುಷೋತ್ತಮನ ಹೊಸದೊಂದು ಮಾದರಿಗೆ ಆಧುನಿಕ ಜಗತ್ತು ತಹತಹಿಸುತ್ತಿದೆಯೇ?

ಒಂಬತ್ತು ತಿಂಗಳ ಹೆಣ್ಣು ಶಿಶುವಿನ ಮೇಲೆ ಅದನ್ನು ನೋಡಿಕೊಳ್ಳುವ ಸಹಾಯಕನೊಬ್ಬ ಮೊನ್ನೆ ಅತ್ಯಾಚಾರ ಮಾಡಿದನಂತೆ. ಅದಕ್ಕೂ ಮೂರು ದಿನದ ಹಿಂದೆ ಉತ್ತರ ಪ್ರದೇಶದ ಆಸ್ಪತ್ರೆಯೊಂದರ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾತು ಬಾರದ ಹದಿಹರೆಯದ ಹುಡುಗಿಯ ಮೇಲೆ ವಾರ್ಡ್‍ಬಾಯ್‍ಗಳೇ ಸಾಮೂಹಿಕ ಅತ್ಯಾಚಾರ ಎಸಗಿದರಂತೆ. ಇಂತಹ ಸುದ್ದಿಗಳು ಬೇಡವೆಂದರೂ ಪ್ರತೀದಿನ ಎಂಬ ಹಾಗೆ ಕಣ್ಣಿಗೆ ರಾಚುತ್ತವೆ. ಇನ್ನೂ ಜಗತ್ತಿನ ಬೆಳಕಿಗೆ ಕಣ್ಣು ತೆರೆಯುತ್ತಿರುವ ಹಸುಳೆಯ ಮೇಲೆ ಅತ್ಯಾಚಾರ ಎಸಗಬೇಕೆಂದು ಅನಿಸುವ ಆ ಪುರುಷನ ಒಳಗಿನ ಮನಸ್ಸು ಎಂತಹದು? ಚಿಕಿತ್ಸೆಗಾಗಿ ಬಂದು ಅಸಹಾಯಕಳಾಗಿ ಬಿದ್ದಿರುವ ಹುಡುಗಿಯ ಮೇಲೆ ಅತ್ಯಾಚಾರ ಎಸಗುವ ಆಸ್ಪತ್ರೆ ಹುಡುಗರ ಎದೆ ಇನ್ನೆಂತಹ ಬಂಡೆಗಲ್ಲು ಇದ್ದೀತು? ಇವರೆಲ್ಲ ಯಾವ ಸೀಮೆಯ ಪುರುಷರು?

ನಾವೆಲ್ಲೋ ದಯನೀಯವಾಗಿ ಸೋತುಬಿಟ್ಟಿದ್ದೇವೆ. ಈ ಸೋಲಿಗೆ ಯಾರು ಕಾರಣರು? ಅಪ್ಪನೇ, ಅಮ್ಮನೇ, ಅಧ್ಯಾಪಕನೇ, ಸ್ನೇಹಿತನೇ, ಸುತ್ತಲಿನ ಸಮಾಜವೇ? ಎದುರಿಗಿರುವ ಹೆಣ್ಣನ್ನು ಕಾಮದ ಕಣ್ಣಿನಿಂದಷ್ಟೇ ನೋಡುವ ಮನಸ್ಸು ಈ ಯುವಕರಲ್ಲಿ ಬೆಳೆದದ್ದಾದರೂ ಹೇಗೆ? ಹೆಣ್ಣೊಬ್ಬಳನ್ನು ಕಂಡಾಗ ತನ್ನ ಮನೆಯಲ್ಲೇ ಇರುವ ಅಕ್ಕನೋ ತಂಗಿಯೋ ಅಮ್ಮನೋ ಚಿಕ್ಕಮ್ಮನೋ ಯಾರೂ ನೆನಪಾಗುವುದಿಲ್ಲವೇ?

ನಮ್ಮ ಸೋಲಿನ ಮೂಲ ನಮ್ಮ ಮನೆಗಳಲ್ಲೇ ಇದೆ. ಪಕ್ಕದಲ್ಲಿರುವ ಹೆಣ್ಣುಮಗುವನ್ನು ಸಹೋದರಿಯಂತೆಯೋ ಒಳ್ಳೆಯ ಸ್ನೇಹಿತೆಯಂತೆಯೋ ಹೆತ್ತಮ್ಮನಂತೆಯೋ ನೋಡುವುದು ನಮ್ಮ ಪುರುಷರಿಗೆ ಸಾಧ್ಯವಾಗುತ್ತಿಲ್ಲವೆಂದರೆ ಅದಕ್ಕೆ ಸಂಸ್ಕಾರಹೀನತೆಯಲ್ಲದೆ ಬೇರೆ ಕಾರಣಗಳಿಲ್ಲ. ಮನೆಯಲ್ಲಿ ಕಲಿಯದ ಸಂಸ್ಕಾರ ಹೊರಗೆಲ್ಲಿ ದಕ್ಕೀತು? ಹೆಣ್ಣನ್ನು ಪ್ರಕೃತಿಯೆಂದು, ದೇವರೆಂದು ಕಂಡ ಪರಂಪರೆಯ ಪ್ರವಾಹ ನಮ್ಮ ಮನಸ್ಸುಗಳ ಕೊಳೆಯನ್ನು ತೊಳೆಯುತ್ತಿಲ್ಲ. ಸಂಸ್ಕಾರದ ವಿಶಾಲ ವಟವೃಕ್ಷ ಹೊಸ ಮನಸ್ಸುಗಳಲ್ಲಿ ಬೇರು ಬಿಡುತ್ತಿಲ್ಲ. ನಾವು ಯಾವುದೋ ಸುಂದರ ಜಲಪಾತದಲ್ಲಿ ಮೀಯುತ್ತಿರುವ ಭ್ರಮೆಯಲ್ಲಿ ನಮ್ಮದಲ್ಲದ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದೇವೆ? ಯಾವುದೀ ಪ್ರವಾಹವು?

ಮನೆ, ಮನೆಯೊಳಗಿನ ಮಂದಿ ಮನಸ್ಸು ಮಾಡಿದರೆ ಏನೂ ಆಗಬಹುದು. ಆದರೆ ಅದಕ್ಕೆ ಯಾರಿಗೂ ವ್ಯವಧಾನವಾಗಲೀ ಸಮಯವಾಗಲೀ ಇಲ್ಲ. ಅಮೇರಿಕದಲ್ಲಿ ಪ್ರತೀ ತಂದೆ ತನ್ನ ಮಗುವಿನ ಜೊತೆಗೆ ದಿನವೊಂದಕ್ಕೆ 10 ನಿಮಿಷ ಕಳೆಯುತ್ತಿದ್ದಾನಂತೆ. ನಾವೂ ಹೆಚ್ಚೂ ಕಡಿಮೆ ಅದೇ ಹಾದಿಯಲ್ಲಿದ್ದೇವೆ. ಜಗತ್ತು ಹುಡುಕುತ್ತಿರುವ ಪಾಸಿಟಿವ್ ರೋಲ್ ಮಾಡೆಲ್ ಯಾವ ಸಿದ್ಧ ಮಾರುಕಟ್ಟೆಯಲ್ಲೂ ಲಭ್ಯವಿಲ್ಲ. ಒಬ್ಬ ಅಪ್ಪ, ಒಬ್ಬ ಅಧ್ಯಾಪಕ ಮನಸ್ಸು ಮಾಡಿದರೆ ಕಲ್ಮಷವಿಲ್ಲದ ಮನಸ್ಸಿನ ಮಕ್ಕಳನ್ನು ಸಮಾಜಕ್ಕೆ ಕೊಡಲು ಅಡ್ಡಿ ಬರುವವರು ಯಾರಿದ್ದಾರೆ? ಒಮ್ಮೆ ಅಂತಹದೊಂದು ಮಾದರಿ ಮನೆಯಿಂದ, ಶಾಲೆಯಿಂದ ಆಚೆ ಬಂದರೆ ಅದನ್ನು ಕೆಡಿಸುವ ತಾಕತ್ತು ಬೇರೆ ಯಾರಿಗಿದೆ? ಮನೆ-ಶಾಲೆಯಲ್ಲಿ ಸರಿಯಾದ ಮಾದರಿ ದೊರೆಯದೇ ಹೋದರೆ ಮಕ್ಕಳು ನಿಸ್ಸಂಶಯವಾಗಿ ಟಿವಿ, ಧಾರಾವಾಹಿ, ಸಿನಿಮಾ, ಮೊಬೈಲ್‍ನಲ್ಲಿ ಅಡ್ಡಾಡುವ ಮಾದರಿಗಳನ್ನೇ ಅನುಸರಿಸಬೇಕು. ಅದು ಅವರ ತಪ್ಪಲ್ಲ.

ಎಲ್ಲ ಪುರುಷನೊಳಗೂ ಒಬ್ಬಳು ಸ್ತ್ರೀ ಇದ್ದಾಳೆ, ಇರಬೇಕು. ಅಂತಹದೊಂದು ಪರಂಪರೆಯ ಛಾಯೆ ನಮ್ಮಲ್ಲಿದೆ. ನಾವು ವಿಸ್ಮøತಿಗೆ ಜಾರಿದ್ದೇವೆ ಅಷ್ಟೇ. ಶಿವೆಯನ್ನು ತನ್ನ ಹೃದಯೇಶ್ವರಿಯೆಂದ ಶಿವ ತನ್ನ ದೇಹದ ಅರ್ಧಭಾಗವನ್ನೇ ಆಕೆಗೆ ನೀಡಿ ಅರ್ಧನಾರೀಶ್ವರನಾದ. ಪ್ರಕೃತಿ-ಪುರುಷ, ದ್ಯಾವಾ-ಪೃಥೀವೀಗಳೆಂಬ ಪರಿಕಲ್ಪನೆ ಈ ನೆಲದಷ್ಟೇ ಹಳೆಯದು. ಅದನ್ನು ಹೊಸದಾಗಿ ಎಲ್ಲಿಂದಲೂ ಕಡ ತರಬೇಕಾಗಿಲ್ಲ. ಹಾಗೆ ನೋಡಿದರೆ ಮಹಿಳೆಗಿಂತ ಪುರುಷನೇ ದುರ್ಬಲ. ಜಗತ್ತಿನಲ್ಲಿ ಅತಿಹೆಚ್ಚು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರು ಪುರುಷರೇ ಹೊರತು ಮಹಿಳೆಯರಲ್ಲ! ‘ಒರಟುತನವೆಂಬುದು ದುರ್ಬಲ ವ್ಯಕ್ತಿಯ ಬಲಾಢ್ಯತೆಯ ಸೋಗು’ ಎಂದ ಎಮರ್ಸನ್. ದುರ್ಬಲ ಪುರುಷನೇ ಅಹಮಿಕೆಯ ಒರಟುತನವನ್ನು ಬೆಳೆಸಿಕೊಂಡು ಬಲಾಢ್ಯನೆಂಬ ಸೋಗು ಹೊದ್ದುಕೊಂಡ. ಮಾನಸಿಕವಾಗಿ ಅವನಷ್ಟು ಪುಕ್ಕಲನೂ ದುರ್ಬಲನೂ ಇನ್ಯಾರೂ ಇಲ್ಲ. ಅದನ್ನು ಮರೆಮಾಚಲು ಹೆಣ್ಣನ್ನು ಅಬಲೆಯೆಂದು ಕರೆದ ಅಷ್ಟೇ.

ನೀರು-ನೆಲ ಸೇರದೆ ಯಾವ ತೆನೆಯೂ ಬಲಿಯದು. ಸ್ತ್ರೀ-ಪುರುಷರನ್ನು ಪ್ರತ್ಯೇಕವಾಗಿ ಇಟ್ಟು ಯಾವ ಮಾದರಿಯನ್ನೂ ಬೆಳೆಸಲಾಗದು. ಗಂಡು ತನ್ನೊಳಗಿನ ಹೆಣ್ಣನ್ನು ಒಪ್ಪಿಕೊಂಡು ವಾಸ್ತವವನ್ನು ಅರ್ಥ ಮಾಡಿಕೊಂಡರೆ ನಿಜವಾದ ಪುರುಷ ಮಾದರಿಯೊಂದು ತಲೆಯೆತ್ತೀತು. ಅಲ್ಲಿ ಹೆಣ್ಣಿನ ಬಗ್ಗೆ ಗೌರವ ತಾನಾಗಿಯೇ ಅರಳುತ್ತದೆ. ಆಗಷ್ಟೇ ಹೆಣ್ಣೂ ಯಾವುದೇ ಬಿಗುಮಾನವಿಲ್ಲದೇ ತೆರೆದ ಮನಸ್ಸಿನಿಂದ ಹೇಳಬಲ್ಲಳು: ಆಹಾ ಪುರುಷಾಕಾರಂ!

ಗುರುವಾರ, ಜನವರಿ 11, 2018

ಇದು ಯುವೋತ್ಕರ್ಷದ ಕಾಲ

ದಿನಾಂಕ: 07-01-2018ರ 'ವಿಜಯ ಕರ್ನಾಟಕ' - 'ಸಾಪ್ತಾಹಿಕ ಲವಲVK'ಯಲ್ಲಿ ಪ್ರಕಟವಾದ ಲೇಖನ

(UNEDITED)

ಯೌವ್ವನವೆಂದರೆ ಏನು ಸೊಗಸು! ಎಂಥಾ ಪ್ರಕಾಶ!
ಎಷ್ಟೊಂದು ಭ್ರಮೆಗಳು, ಆಕಾಂಕ್ಷೆಗಳು, ಕನಸುಗಳು!
ಅದು ಕೊನೆಯೇ ಇಲ್ಲದ ಕಥೆಯ ಆರಂಭವೆಂಬ ಪುಸ್ತಕ
ಅಲ್ಲಿ ಪ್ರತೀ ಹುಡುಗಿಯೂ ನಾಯಕಿ, ಪ್ರತೀ ಪುರುಷನೂ ಸ್ನೇಹಿತ!
ಹೀಗೆ ಸಾಗುತ್ತದೆ ಕವಿ ಹೆನ್ರಿ ಲಾಂಗ್‌ಫೆಲೋ ಕವಿತೆ. ಯೌವ್ವನವೆಂದರೆ ಹಾಗೆಯೇ ಅಲ್ಲವೇ? ಅದು ಎಲ್ಲವನ್ನೂ ಮೀರಿ ನಿಂತ ಹಿಮಾಲಯ ಪರ್ವತ. ಕನಸುಗಳ ಬಿಳಲುಗಳನ್ನು ಸುತ್ತಲೂ ಹರಡಿ ಇನ್ನೆಂದೂ ಬೀಳದಂತೆ ನೆಲಕಚ್ಚಿ ನಿಂತ ಬೃಹತ್ ಆಲದ ಮರ. ಎಂತಹ ಬಂಡೆಗಲ್ಲುಗಳನ್ನೂ ಲೆಕ್ಕಿಸದೆ ಕೊಳೆಕಳೆಗಳನ್ನು ತೊಳೆಯುತ್ತಾ ರಭಸದಿಂದ ಹರಿಯುವ ಮಹಾಪ್ರವಾಹ. ಎಂತಹ ಕಠಿಣ ಗುರಿಗಳನ್ನೂ ಬೇಧಿಸಿ ಮುನ್ನುಗ್ಗುವ ಛಾತಿಯುಳ್ಳ ಬೆಂಕಿಚೆಂಡು. ಆತ್ಮವಿಶ್ವಾಸವೇ ಯೌವ್ವನದ ಸ್ಥಾಯೀಭಾವ.

ಯುವಜನತೆಯ ಈ ಆತ್ಮವಿಶ್ವಾಸದ ಔನ್ನತ್ಯವನ್ನೇ ಎಷ್ಟೊಂದು ಸುಂದರವಾದ ಪದಗಳಲ್ಲಿ ಕಟ್ಟಿಕೊಟ್ಟಿದ್ದಾರೆ ಯುವಕರ ಸಾರ್ವಕಾಲಿಕ ರೋಲ್ ಮಾಡೆಲ್ ಸ್ವಾಮಿ ವಿವೇಕಾನಂದರು: ಪ್ರತೀ ಮಗುವೂ ಒಬ್ಬ ಹುಟ್ಟು ಆಶಾವಾದಿ, ಅವನು ಬಂಗಾರದ ಕನಸುಗಳನ್ನು ಕಾಣುತ್ತಾನೆ. ಯೌವ್ವನದಲ್ಲಿ ಆತ ಇನ್ನಷ್ಟು ಆಶಾವಾದಿಯಾಗುತ್ತಾನೆ. ಸಾವೆಂಬುದೊಂದಿದೆ, ಸೋಲೆಂಬುದೊಂದಿದೆ ಎಂಬುದನ್ನು ನಂಬುವುದೂ ಅವನಿಗೆ ಕಷ್ಟ! ರಾಷ್ಟ್ರನಿರ್ಮಾಣದ ಕಾರ್ಯ ಇಂತಹ ಯುವಕರಿಂದಲೇ ಸಾಧ್ಯ ಹೊರತು ಕಷ್ಟಗಳಿಗೆ, ಸವಾಲುಗಳಿಗೆ ಹೆದರುವ ಪುಕ್ಕಲರಿಂದಲ್ಲ ಎಂಬುದು ಅವರ ದೃಢ ನಂಬಿಕೆಯಾಗಿತ್ತು.

ಸಾಧನೆಯ ಹಾದಿಯಲ್ಲಿ
ಆಧುನಿಕ ಬದುಕಿನ ಬಗ್ಗೆ ಒಂದು ಕ್ಷಣ ಕಣ್ಮುಚ್ಚಿ ಕುಳಿತು ಯೋಚಿಸಿದರೆ ಅದು ಒಡ್ಡಿರುವ ಒತ್ತಡಗಳು, ಸವಾಲುಗಳು ವಿಸ್ಮಯ ತರಿಸುತ್ತವೆ. ಬದುಕು ಎಷ್ಟೊಂದು ಬದಲಾಗಿ ಹೋಗಿದೆ! ಹುಟ್ಟಿದ್ದೇವೆ, ಒಂದಷ್ಟು ಶಿಕ್ಷಣ ಪಡೆದಿದ್ದೇವೆ, ಇನ್ನು ಏನಾದರೂ ಉದ್ಯೋಗ ಮಾಡಿಕೊಂಡು ಸಂಸಾರ ಮುನ್ನಡೆಸಿಕೊಂಡು ಬದುಕಬೇಕು ಎಂಬ ನಿರ್ಲಿಪ್ತ ಮನಸ್ಥಿತಿ ಈಗಿನದ್ದಲ್ಲ. ಎಲ್ಲರೂ ಒಂದಲ್ಲ ಒಂದು ದಿನ ಜೀವನ ಮುಗಿಸಲೇಬೇಕು, ಆದರೆ ಅದಕ್ಕೂ ಮೊದಲು ಏನಾದರೊಂದು ಸಾಧಿಸಬೇಕು; ಇತರರಿಗಿಂತ ಭಿನ್ನವಾಗಿ ನಿಲ್ಲಬೇಕು; ಹೊಸದನ್ನು ಮಾಡಿತೋರಿಸಬೇಕು- ಇದು ಇಂದಿನ ಯುವಕರ ಮನಸ್ಥಿತಿ.

ಈ ಮಂದಿಯೇಕೆ ಕುಟುಂಬಕ್ಕೂ ಸಮಯ ಕೊಡದಂತೆ ಹೀಗೊಂದು ರಣೋತ್ಸಾಹದಿಂದ ಓಡಾಟ ಒದ್ದಾಟಗಳಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಒಮ್ಮೊಮ್ಮೆ ಅನಿಸಿದರೂ ಒಂದು ಕ್ಷಣವನ್ನೂ ವ್ಯರ್ಥವಾಗಿ ಕಳೆಯಬಾರದೆಂಬ ಅವರ ತುಡಿತ, ಏನಾದರೂ ಸಾಧಿಸಬೇಕೆಂಬ ಅವರ ಹುಮ್ಮಸ್ಸು, ಎಲ್ಲವನ್ನೂ ನಾಜೂಕಾಗಿ ನಿಭಾಯಿಸಿಕೊಂಡು ಹೋಗುವ ಅವರ ಕೌಶಲಕ್ಕೆ ಮನಸ್ಸು ಶಹಭಾಸ್ ಎನ್ನುತ್ತದೆ. ಅದಕ್ಕೇ ಇರಬೇಕು ಹೆಲನ್ ಕೆಲ್ಲರ್ ಹೇಳಿದ್ದು: ಜಗತ್ತಿನಲ್ಲಿ ಯುವಕರು ಇರುವವರೆಗೆ ನಾಗರಿಕತೆ ಹಿಮ್ಮುಖವಾಗಿ ಚಲಿಸುವುದು ಸಾಧ್ಯವೇ ಇಲ್ಲ!

ವಿವೇಕಾನಂದರ ಇನ್ನೊಂದು ಮಾತು ಇಲ್ಲಿ ಉಲ್ಲೇಖನೀಯ: ನನಗೆ ನನ್ನ ದೇಶದ ಮೇಲೆ, ವಿಶೇಷವಾಗಿ ದೇಶದ ಯುವಕರ ಮೇಲೆ ವಿಶ್ವಾಸವಿದೆ... ಯಾವುದಕ್ಕೂ ಹೆದರಬೇಡಿ, ನೀವು ಅದ್ಭುತವಾದದ್ದನ್ನು ಸಾಧಿಸಬಹುದು. ನೀವು ಭಯಗೊಂಡ ಕ್ಷಣಕ್ಕೆ ನೀವು ಯಾರೂ ಅಲ್ಲ. ಜಗತ್ತಿನ ದುಃಖಕ್ಕೆ ಭಯವೇ ಅತಿದೊಡ್ಡ ಕಾರಣ. ಅದೇ ಪ್ರಪಂಚದ ಅತಿದೊಡ್ಡ ಮೂಢನಂಬಿಕೆ ಕೂಡಾ. ನಿರ್ಭಯತೆಯಿಂದ ಒಂದೇ ಕ್ಷಣದಲ್ಲಿ ಸ್ವರ್ಗವನ್ನೂ ಧರೆಗಿಳಿಸಬಹುದು. ಈ ಕೆಚ್ಚಿನ ನುಡಿಗಳಿಗಾಗಿಯೇ ವಿವೇಕಾನಂದರು ಇಂದಿಗೂ ಎಂದೆಂದಿಗೂ ನಮ್ಮ ಅಭಿಮಾನ ಗೌರವಗಳಿಗೆ ಪಾತ್ರರಾಗುತ್ತಾರೆ. ಎಚ್ಚರಿಕೆ ಹೇಳುವ ನೆಪದಲ್ಲಿ ಕುಗ್ಗಿಸುವವರು ನಮ್ಮ ಸುತ್ತಮುತ್ತ ಬೇಕಾದಷ್ಟು ಮಂದಿ ಸಿಗುತ್ತಾರೆ; ಮುಂದಕ್ಕೆ ಹೋಗು ನಾವಿದ್ದೇವೆ ನಿನ್ನ ಜತೆ ಎನ್ನುವವರ ಸಂಖ್ಯೆ ಕಡಿಮೆಯೇ. ಅಂತಹ ಸಂದರ್ಭ ಬಂದಾಗಲೆಲ್ಲ ವಿವೇಕವಾಣಿ ಯುವಕರ ಕಿವಿಗಳಲ್ಲಿ ಮಾರ್ದನಿಸಬೇಕು.

ಭಗತ್‌ಸಿಂಗ್, ಸಾವರ್ಕರ್, ರಾಜಗುರು, ಸುಖದೇವ್, ಗಾಂಧೀ, ಪಟೇಲ್, ಖುದಿರಾಮ್, ಮಂಗಲ್‌ಪಾಂಡೆ, ಆಜಾದ್, ತಿಲಕ್ ಮುಂತಾದವರೆಲ್ಲ ತಮ್ಮ ಏರು ಜವ್ವನದ ದಿನಗಳನ್ನು ದೇಶಕ್ಕಾಗಿ ಮುಡಿಪಾಗಿಡದೇ ಹೋಗಿರುತ್ತಿದ್ದರೆ ಇಂದು ನಾವು ಏನಾಗಿರುತ್ತಿದ್ದೆವು? ನಮ್ಮ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನೊಮ್ಮೆ ಕಣ್ತೆರೆದು ನೋಡಿಕೊಂಡರೆ ಸಾಕು, ನಮ್ಮ ಯುವಕರಿಗೆ ಸಾಲುಸಾಲು ಮಾದರಿಗಳ ದರ್ಶನವಾಗುತ್ತದೆ. ಯೌವ್ವನದಲ್ಲಿ ದೃಢತೆಯನ್ನು ಹೊಂದುವ ವ್ಯಕ್ತಿಗಳು ಬಹಳ ಸಂತುಷ್ಟರು; ಆ ಉತ್ಸಾಹವನ್ನು ಜೀವನದುದ್ದಕ್ಕೂ ಕಾಯ್ದುಕೊಂಡವರು ಅವರಿಗಿಂತಲೂ ಮೂರು ಪಟ್ಟು ಸಂತುಷ್ಟರು ಎಂಬ ಮಾತಿದೆ. ಮೇಲೆ ಹೇಳಿರುವ ಹೆಸರುಗಳು ಅವರ ಬದುಕಿನ ನಂತರವೂ ಶತಮಾನಗಳ ಕಾಲ ಚಿರಮಾದರಿಗಳಾಗಿ ಯುವಜನಾಂಗದ ಎದುರು ಕಾಣಿಸಿಕೊಳ್ಳುತ್ತವೆ ಎಂದರೆ ಆ ಚೇತನಗಳಿಗೆ ಸಾವಿಲ್ಲ ಎಂದೇ ಅರ್ಥ.

ಹೊಳೆವ ತಾರೆಗಳು ಹಲವು
ಭಾರತದ ಮೊತ್ತಮೊದಲ ಫಾರ್ಮುಲಾ ವನ್ ರೇಸಿಂಗ್ ಡ್ರೈವರ್ ನಾರಾಯಣ್ ಕಾರ್ತಿಕೇಯನ್‌ಗೆ ಈಗಿನ್ನೂ ಮೂವತ್ತು ವರ್ಷ. ಜಗತ್ತಿನ ಮೊತ್ತಮೊದಲ ಅತಿಕಿರಿಯ ಮಹಿಳಾ ಚೆಸ್ ಗ್ರ್ಯಾಂಡ್‌ಮಾಸ್ಟರ್ ಕೊನೆರು ಹಂಪಿ ಆ ಹೆಗ್ಗಳಿಕೆಗೆ ಪಾತ್ರರಾದಾಗ ಆಕೆಯ ವಯಸ್ಸು ಕೇವಲ ಹದಿನೈದು. ಕ್ರಿಕೆಟ್ ಪ್ರಿಯರ ಕಣ್ಮಣಿ ವಿರಾಟ್ ಕೊಹ್ಲಿ, ಕೋಟ್ಯಂತರ ಅಭಿಮಾನಿಗಳನ್ನು ಪಡೆದಿರುವ ದೀಪಿಕಾ ಪಡುಕೋಣೆ, ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ, ಬ್ಯಾಡ್ಮಿಂಟನ್‌ನ ಭರವಸೆ ಸೈನಾ ನೆಹ್ವಾಲ್, ಗ್ರಾಮ್ಮಿ ಪುರಸ್ಕಾರಕ್ಕೆ ನಾಮನಿರ್ದೇಶನಗೊಂಡ ಅನುಷ್ಕಾ ಶಂಕರ್, ಸಾಫ್ಟ್‌ವೇರ್ ದಿಗ್ಗಜ ಮೈಕ್ರೋಸಾಫ್ಟ್‌ನ ಸಿಇಒ ಸತ್ಯಾ ನಾದೆಲ್ಲ, ಜಗತ್ಪ್ರಸಿದ್ಧ ಗೂಗಲ್ ಕಂಪೆನಿಯ ಸಿಇಒ ಸುಂದರ್ ಪಿಚೈ, ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಮೊದಲ ಮಹಿಳೆ ಪಿ. ವಿ. ಸಿಂಧು... ತಮ್ಮ ಯೌವ್ವನದ ದಿನಗಳಲ್ಲೇ ಕೀರ್ತಿ ಶಿಖರ ಏರಿರುವ ಇಂತಹ ಸಾಧಕರ ಪಟ್ಟಿ ಮಾಡುತ್ತಾ ಹೋದರೆ ಪುಟಗಳು ಸಾಲವು. ಹೊರಗೆಲ್ಲೂ ಕಾಣಿಸಿಕೊಳ್ಳದೆ ತಾವಾಯಿತು ತಮ್ಮ ಕೆಲಸವಾಯಿತು ಎಂದು ತೆರೆಯ ಹಿಂದೆಯೇ ಇರುತ್ತಾ ಶ್ರೇಷ್ಠ ಕೆಲಸಗಳನ್ನು ಸಾಧಿಸುತ್ತಿರುವ ಮುತ್ತುರತ್ನಗಳು ಇನ್ನೆಷ್ಟು ಇವೆಯೋ!

ನಮ್ಮ ದೇಶಕ್ಕೆ ಇಂದು ಬೇಕಾಗಿರುವುದು ಕಬ್ಬಿಣದಂತಹ ಮಾಂಸಖಂಡಗಳು, ಉಕ್ಕಿನಂತಹ ನರಗಳು ಇರುವ ವ್ಯಕ್ತಿಗಳು. ಅವರು ದುರ್ದಮವಾದ ಪ್ರಪಂಚದ ರಹಸ್ಯವನ್ನೆಲ್ಲ ಭೇದಿಸಿ ತಮ್ಮ ಇಚ್ಛೆಯನ್ನು ನೆರವೇರಿಸಿಕೊಳ್ಳಬಲ್ಲವರಾಗಿರಬೇಕು. ಸಮುದ್ರದ ಆಳಕ್ಕೆ ಬೇಕಾದರೂ ಹೋಗಿ ಮೃತ್ಯುವನ್ನಾದರೂ ಎದುರಿಸಲು ಅವರು ಸಿದ್ಧರಾಗಿರಬೇಕು- ಹೀಗೆಂದು ವಿವೇಕಾನಂದರು ನುಡಿದು ಶತಮಾನವೇ ಉರುಳಿದೆ. ಆದರೆ ಇಂದಿಗೂ ಆ ಮಾತೇ ನಮಗೆ ಮಾದರಿ, ಅದೇ ಯುವಜನಾಂಗದ ಎದುರಿರುವ ಘೋಷವಾಕ್ಯ.

ಶ್ರೀಕಾಂತ್ ಬೊಲ್ಲ ಅವರ ಹೆಸರು ನೀವು ಕೇಳಿರಬಹುದು. ಆಂಧ್ರಪ್ರದೇಶ ಮೂಲದ ಹುಟ್ಟು ಅಂಧ. ವ್ಯವಸಾಯವನ್ನೇ ನಂಬಿದ್ದ ಕುಟುಂಬದಲ್ಲಿ ಕುರುಡು ಮಗುವೊಂದು ಜನಿಸಿದಾಗ ಅದು ಹುಟ್ಟಿಯೇ ಇಲ್ಲ ಎಂದು ಭಾವಿಸಿ ಉಸಿರುಗಟ್ಟಿಸಿ ಎಲ್ಲಾದರೂ ಎಸೆದುಬಿಡಿ ಎಂದು ಸಲಹೆ ಕೊಟ್ಟವರೂ ಇದ್ದರಂತೆ. ಆದರೆ ಅಪ್ಪ ಅಮ್ಮ ಅಷ್ಟೊಂದು ನಿರ್ದಯಿಗಳಾಗಿರಲಿಲ್ಲ. ನಿರ್ಲಕ್ಷ್ಯ ಅಪಮಾನಗಳ ನಡುವೆಯೇ ಶ್ರೀಕಾಂತ್ ಬೆಳೆದ, ಶಿಕ್ಷಣ ಪಡೆದ. ಹತ್ತನೇ ತರಗತಿ ಬಳಿಕ ವಿಜ್ಞಾನ ಓದುವುದಕ್ಕೆ ಅವನಿಗೆ ಅವಕಾಶ ನಿರಾಕರಿಸಲಾಯಿತು. ಛಲ ಬಿಡದ ಶ್ರೀಕಾಂತ್ ಆ ಅವಕಾಶ ಪಡೆದುಕೊಂಡು ಶೇ. ೯೮ ಅಂಕ ಗಳಿಸಿದ್ದಲ್ಲದೆ, ಉನ್ನತ ವ್ಯಾಸಂಗಕ್ಕೆ ಅಮೇರಿಕದ ಪ್ರತಿಷ್ಠಿತ ಎಂಐಟಿ ವಿಶ್ವವಿದ್ಯಾನಿಲಯದಲ್ಲಿ ಸೀಟು ಪಡೆದುಕೊಂಡ. ಮಸಾಚುಸೆಟ್ಸ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಪ್ರವೇಶ ಪ್ರಡೆದ ಮೊತ್ತಮೊದಲ ಅಂತಾರಾಷ್ಟ್ರೀಯ ಅಂಧ ವಿದ್ಯಾರ್ಥಿ ಶ್ರೀಕಾಂತ್ ಬೊಲ್ಲ ಇಂದು ರೂ. ೫೦ ಕೋಟಿ ವ್ಯವಹಾರವುಳ್ಳ ಬೊಲ್ಲಾಂಟ್ ಇಂಡಸ್ಟ್ರೀಸ್‌ನ ಹೆಮ್ಮೆಯ ಮಾಲೀಕ. ಆತನಿಗಿನ್ನೂ ೨೫ ವರ್ಷ ವಯಸ್ಸು ಎಂದರೆ ಅವನಿಗೆ ಅವಕಾಶಗಳನ್ನು ನಿರಾಕರಿಸಿದ ಸಮಾಜವೇ ನಂಬುತ್ತಿಲ್ಲ!

ಯುವಕರ ಶಕ್ತಿಯ ಬಗ್ಗೆ ನಾವಿನ್ನೂ ಅನುಮಾನಗಳನ್ನು ಇಟ್ಟುಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಯುವಜನತೆಯಿಂದ ಜಗತ್ತಿನಲ್ಲಿ ನೂರಾರು ತಪ್ಪುಗಳು ಘಟಿಸುತ್ತಿರಬಹುದು. ಅವುಗಳನ್ನು ನಿವಾರಿಸಲು ಪ್ರಯತ್ನಿಸೋಣ; ಆದರೆ ಅದೇ ಯುವಜನತೆ ಮಾಡುತ್ತಿರುವ ಸಾವಿರಾರು ಸಾಹಸಗಳು ನಮ್ಮೆದೆಯ ನೆಮ್ಮದಿಯನ್ನು ಹೆಚ್ಚಿಸಲಿ, ಮನಸ್ಸುಗಳನ್ನು ತಂಪಾಗಿರಿಸಲಿ!