ಗುರುವಾರ, ಮಾರ್ಚ್ 7, 2013

ಮಾರ್ಚ್ 9ರಂದು ಮಂಗಳೂರು ವಿ.ವಿ. ಮಟ್ಟದ 9ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ


ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ೯ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವು ಮಂಗಳೂರು ವಿ. ವಿ. ಸ್ನಾತಕೋತ್ತರ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಇದೇ ಮಾರ್ಚ್ 9ರಂದು ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟೆ, ಮಂಗಳೂರು ಇಲ್ಲಿ ಜರುಗಲಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಶ್ರೀ ಬೊಳುವಾರು ಮಹಮದ್ ಕುಂಞಿ ಸಮ್ಮೇಳನವನ್ನು ಬೆಳಗ್ಗೆ 9.30 ಗಂಟೆಗೆ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಕೆ. ಚಿನ್ನಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಚ್. ಆರ್. ಲಕ್ಷ್ಮೀನಾರಾಯಣ ಭಟ್ಟ ಶುಭಾಶಂಸನೆ ನೆರವೇರಿಸಲಿದ್ದಾರೆ.

ಸಮ್ಮೇಳನದಲ್ಲಿ ಪ್ರಬಂಧಗೋಷ್ಠಿ, ಕಥಾಗೋಷ್ಠಿ ಹಾಗೂ ಕವಿಗೋಷ್ಠಿ- ಒಟ್ಟು ಮೂರು ಗೋಷ್ಠಿಗಳು ನಡೆಯಲಿದ್ದು, ಪ್ರಬಂಧಗೋಷ್ಠಿಯ ಅಧ್ಯಕ್ಷತೆಯನ್ನು ಸುಳ್ಯದ ನಿವೃತ್ತ ಪ್ರಾಧ್ಯಾಪಕ, ಶಿಕ್ಷಣ ಚಿಂತಕ ಡಾ. ಚಂದ್ರಶೇಖರ ದಾಮ್ಲೆ ವಹಿಸಲಿದ್ದಾರೆ. ಬಹುಮಾನ ವಿಜೇತ ವಿದ್ಯಾರ್ಥಿ ಸಾಹಿತಿಗಳು 'ಜಾತಿಮುಕ್ತ ಭಾರತ: ಸವಾಲುಗಳು ಮತ್ತು ಸಾಧ್ಯತೆಗಳು’ ಹಾಗೂ 'ಮಹಿಳಾ ಸಬಲೀಕರಣ: ಆಗಿರುವುದೇನು? ಆಗಬೇಕಿರುವುದೇನು?’ ವಿಷಯಗಳ ಬಗ್ಗೆ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳಲಿದ್ದಾರೆ.
ಕಥಾಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿಗಳೂ, ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ ಇಲ್ಲಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರೂ ಆದ ಡಾ. ಪಾರ್ವತಿ ಜಿ. ಐತಾಳ್ ವಹಿಸಿಕೊಳ್ಳಲಿದ್ದಾರೆ. ಮೂವರು ಉದಯೋನ್ಮುಖ ಕಥೆಗಾರರು ಕಥೆಗಳನ್ನು ಮಂಡಿಸಲಿದ್ದಾರೆ.

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಯಿತ್ರಿ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿವಿಜಿ ಕನ್ನಡ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಡಾ. ಗೀತಾ ವಸಂತ ವಹಿಸಲಿದ್ದು, 12 ಮಂದಿ ಯುವಕವಿಗಳು ಸ್ವರಚಿತ ಕವಿತೆಗಳನ್ನು ವಾಚಿಸಲಿದ್ದಾರೆ.

ಸಂಜೆ 4-೦೦ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಾಹಿತಿಗಳೂ ನಿವೃತ್ತ ಪ್ರಾಧ್ಯಾಪಕರೂ ಆದ ಡಾ. ನಾ. ದಾಮೋದರ ಶೆಟ್ಟಿ ಸಮಾರೋಪ ಭಾಷಣ ಮಾಡಲಿದ್ದಾರೆ. ಮಂಗಳೂರು ವಿ.ವಿ. ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯ, ಅಲ್ಲದೆ ಗಡಿನಾಡಿನ ಕಾಸರಗೋಡು ಜಿಲ್ಲೆಯ ಪದವಿ ಹಾಗೂ ಸ್ನಾತಕೋತ್ತರ ಸಾಹಿತ್ಯಾಸಕ್ತ ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಕಾಮೆಂಟ್‌ಗಳಿಲ್ಲ: