ಭಾನುವಾರ, ಜೂನ್ 19, 2022

ಅಪ್ಪನೆಂಬ ಅಂತರಂಗದ ಬೆಳಕು

'ಬೋಧಿವೃಕ್ಷ' 18-25 ಜೂನ್ 2022ರ ಸಂಚಿಕೆಯಲ್ಲಿ ಪ್ರಕಟವಾದ ಲೇಖನ

Postmen in the Mountains ಎಂಬೊಂದು ಚೈನೀಸ್ ಚಲನಚಿತ್ರವಿದೆ. ಕಾಲ್ನಡಿಗೆಯಲ್ಲೇ ಕಡಿದಾದ ಬೆಟ್ಟಗುಡ್ಡಗಳನ್ನು ಏರಿಳಿಯುತ್ತಾ ಪತ್ರಗಳ ಬಟವಾಡೆ ಮಾಡಿಕೊಂಡು ತನ್ನ ಸುದೀರ್ಘ ವೃತ್ತಿಜೀವನವನ್ನು ಕಳೆದ ಅಂಚೆಯಣ್ಣನ ಕಥೆಯದು. ಸಿನಿಮಾ ಆರಂಭವಾಗುವುದು ಅಂಚೆಯಣ್ಣನ ವೃತ್ತಿಬದುಕಿನ ಕೊನೆಯ ದಿನದಿಂದ. ವಯೋಸಹಜ ಅನಾರೋಗ್ಯದಿಂದಾಗಿ ಅಂಚೆಯಣ್ಣ ತನ್ನ ಉದ್ಯೋಗಕ್ಕೆ ವಿದಾಯ ಹೇಳಬೇಕಾದ ಸಂದರ್ಭ ಬಂದಾಗ ಆ ಉದ್ಯೋಗ ಅವನ ಮಗನಿಗೆ ಸಿಗುತ್ತದೆ.  ಮಾಡಬೇಕಾದ ಕೆಲಸದಿಂದ ತೊಡಗಿ ನಡೆಯಬೇಕಾದ ದಾರಿಯವರೆಗೆ ಅವನಿಗೆ ಎಲ್ಲವೂ ಹೊಸದು. ಅದನ್ನು ಪರಿಚಯ ಮಾಡಿಕೊಡುವುದಕ್ಕಾಗಿ ಅಪ್ಪ ಮಗನೊಂದಿಗೆ ಹೊರಟುಬಿಡುತ್ತಾನೆ. ಬಹುಕಾಲದಿಂದ ಅಂಚೆಯಣ್ಣನ ಒಡನಾಡಿಯಾಗಿದ್ದ ನಾಯಿಯೂ ಜತೆಯಾಗುತ್ತದೆ. 

ಇಡೀ ಚಲನಚಿತ್ರದಲ್ಲಿ ಇರುವುದು ಅಪ್ಪ-ಮಗನ ಈ ಸಹಪಯಣದ ಕಥನ. ಅಂತಿಂಥ ಪಯಣವಲ್ಲ ಅದು. ಭರ್ತಿ ಇನ್ನೂರ ಅರವತ್ತು ಮೈಲಿಗಳ ನಡಿಗೆ. ಅಷ್ಟನ್ನು ಪೂರೈಸುವುದಕ್ಕೆ ಮೂರು ಹಗಲೂ ಮೂರು ಇರುಳೂ ಬೇಕು. ಗುಡ್ಡಗಾಡು ಪ್ರದೇಶಗಳಲ್ಲಿ ಚದುರಿಕೊಂಡಿರುವ ಸಣ್ಣಪುಟ್ಟ ಹಳ್ಳಿಗಳು, ಎಲ್ಲೋ ಅಡಗಿರುವ ಮನೆಗಳನ್ನು ಹುಡುಕಿ ಹೋಗಿ ಅಂಚೆ ಬಟವಾಡೆ ಮಾಡಿ ಮುಂದುವರಿಯಬೇಕು. ವಿಚಿತ್ರವೆಂದರೆ, ತರುಣ ಮಗ ತನ್ನ ದಿನನಿತ್ಯದ ಕೆಲಸಗಳನ್ನು, ಓಡಾಡಬೇಕಾದ ದಾರಿಯನ್ನು ಗಮನಿಸುವ ಬದಲು ತನ್ನ ತಂದೆಯನ್ನು ಗಮನಿಸಲು ಆರಂಭಿಸುತ್ತಾನೆ. ತಂದೆ ಮಗನನ್ನು ಗಮನಿಸಲು ಆರಂಭಿಸುತ್ತಾನೆ.

ಅವರಿಬ್ಬರೂ ಅಷ್ಟೊಂದು ಹತ್ತಿರದಿಂದ ನೋಡಿಕೊಂಡದ್ದು, ಮಾತನಾಡಿದ್ದು, ಒಬ್ಬರನ್ನೊಬ್ಬರು ಗಮನಿಸಿದ್ದು ಎರಡೂವರೆ ದಶಕದಲ್ಲಿ ಅದೇ ಮೊದಲು. ಅಂಚೆಚೀಲ ಬೆನ್ನಿಗೇರಿಸಿಕೊಂಡು ಒಮ್ಮೆ ಹೊರಟರೆ ಅಪ್ಪ ಹಿಂತಿರುಗುವುದು ಒಂದಷ್ಟು ದಿನಗಳಾದಮೇಲೆಯೇ. ಮನೆಯಲ್ಲಿ ಅಮ್ಮ-ಮಗ ಮಾತ್ರ. ಒಂದು ನಡಿಗೆ ಮುಗಿಸಿ ಮನೆಗೆ ಹಿಂತಿರುಗಿದ ಅಪ್ಪ ಮತ್ತೆ ಬೆಳಗಾಗುವ ಹೊತ್ತಿಗೆ ಎದ್ದು ಮುಂದಿನ ಪಯಣ ಆರಂಭಿಸಿರುತ್ತಾನೆ. ಮಗನ ಮನಸ್ಸಿನಲ್ಲಿರುವುದು ಅಪ್ಪನೆಂಬ ಆಕೃತಿ ಮಾತ್ರ. ಇಷ್ಟು ವರ್ಷಗಳಾದ ಮೇಲೆಯೂ ಅದರೊಂದಿಗೆ ಒಂದು ಭಾವಬಂಧ ಬಲಿತೇ ಇಲ್ಲ. ಅದಕ್ಕೆ ಸಣ್ಣ ಅವಕಾಶವೂ ಇರಲಿಲ್ಲ.  

ಅಂಥದ್ದೊಂದು ಅವಕಾಶವಾಗಿ ಒಲಿದು ಬಂದದ್ದು ಈ ಸಹಪಯಣದಿಂದ. ಪಯಣದಲ್ಲಿ ಎದುರಾಗುವ ಪ್ರತಿಕ್ಷಣವೂ ತರುಣ ಮಗನಿಗೆ ಹೊಚ್ಚಹೊಸದು. ಅವನಿಗೆ ಪ್ರತಿಯೊಂದರಲ್ಲೂ ವೈಶಿಷ್ಟ್ಯ, ಸ್ವಾರಸ್ಯ, ಕೌತುಕ. ಮುಕ್ಕಾಲು ಪಯಣ ಮುಗಿಯುವ ಹೊತ್ತಿಗೆ ನದಿಯೊಂದು ಎದುರಾಗುತ್ತದೆ. ಸೇತುವೆಯಿಲ್ಲದ ಅದನ್ನು ಹಾಗೆಯೇ ಕಾಲ್ನಡಿಗೆಯಲ್ಲಿ ದಾಟುವುದು ಕ್ರಮ. ಮಗ ನಾಯಿಯೊಂದಿಗೆ ಮೊದಲು ನದಿ ದಾಟಿ ಬೆನ್ನಮೇಲಿನ ಚೀಲವನ್ನು ಇನ್ನೊಂದು ದಡದಲ್ಲಿ ಇಟ್ಟು ಬರುತ್ತಾನೆ. ತಂದೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಇನ್ನೊಮ್ಮೆ ದಾಟುತ್ತಾನೆ. ಅಪ್ಪ-ಮಗ ಇಬ್ಬರಿಗೂ ಅದೊಂದು ವರ್ಣನಾತೀತ ಅನುಭೂತಿ.

“ಯಾವಾಗ ಮಗ ಅಪ್ಪನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಾನೋ ಆಗ ಮಗ ಬೆಳೆದು ದೊಡ್ಡವನಾದನೆಂದು ಅರ್ಥ ಅಂತ ನಮ್ಮೂರಿನ ಹಿರಿಯರು ಹೇಳ್ತಾ ಇದ್ರು. ನಾನು ಎಳೆಯವನಿದ್ದಾಗ ಅಪ್ಪ ನನಗೊಬ್ಬ ಭಾರೀ ಆಕೃತಿ ಆಗಿದ್ದ. ಇವನನ್ನು ನಾನು ಎಂದಾದರೂ ಹೊತ್ತುಕೊಂಡು ಹೋಗುವುದು ಸಾಧ್ಯವಿದೆಯೇ ಅಂತ ಕಳವಳಪಡುತ್ತಿದ್ದೆ...” ನದಿ ದಾಟುತ್ತಲೇ ಮಗ ಜ್ಞಾಪಿಸಿಕೊಳ್ಳುತ್ತಾನೆ.

ಅಪ್ಪನೊಳಗೂ ಇನ್ಯಾವುದೋ ಒಂದು ಭಾವಸ್ಫುರಣ ಉಂಟಾಗಿ ಮನಸ್ಸು ಒದ್ದೆಯಾಗಿರುತ್ತದೆ. ಬಹುಶಃ ಅವನ ಮನಸ್ಸಿನಲ್ಲೂ ಇರುವುದು ಮಗನ ಎದೆಯೊಳಗೆ ಹರಿದಾಡುತ್ತಿರುವ ಬೇಗುದಿಯೇ. ಅವನ ಕಣ್ಣುಗಳಲ್ಲಿರುವುದು ತಂದೆಯಾಗಿ ತಾನು ಮಾಡಬೇಕಾದ್ದನ್ನು ಮಾಡಿದ್ದೇನೆಯೇ ಎಂಬ ಪ್ರಾಮಾಣಿಕ ಪ್ರಶ್ನೆ. ನದಿಯನ್ನು ದಾಟುತ್ತಲೇ ಅಪ್ಪ-ಮಗ ಪರಸ್ಪರ ಮಾತುಗಳೇ ಇಲ್ಲದೆ ತಮ್ಮತಮ್ಮ ನೆಲೆಗಳನ್ನು, ಪಾತ್ರಗಳನ್ನು ಅರ್ಥೈಸಿಕೊಳ್ಳುವ ರೀತಿ ಮಾತ್ರ ಅದ್ಭುತ. ನದಿಯನ್ನು ದಾಟಿ ಮಗನ ಹೆಗಲಿನಿಂದ ಇಳಿದ ತಂದೆಗೆ ಆತನ ಮುಖ ನೋಡುವ ಧೈರ್ಯ ಇಲ್ಲ. ಮಗನಿಗೂ ಅಪ್ಪನ ಕಣ್ಣುಗಳನ್ನು ನೋಡುವ ಧೈರ್ಯ ಇಲ್ಲ. “ಈ ಪೋಸ್ಟ್ ಬ್ಯಾಗಿಗಿಂತಲೂ ನೀನೇ ಬಹಳ ಹಗುರ ಇದ್ದೀಯಾ” ಎಂದು ತಂದೆಯ ಮಾತುತಪ್ಪಿಸಲು ಪ್ರಯತ್ನಿಸುತ್ತಾನೆ.

ಅಪ್ಪನೆಂದರೆ ಹಾಗೆಯೇ. ಅದೊಂದು ವಿಚಿತ್ರ ವ್ಯಕ್ತಿತ್ವ. ಅಂಚೆಯಣ್ಣನ ಎಳೆಯ ಮಗನಿಗೆ ಕಂಡ ಹಾಗೆ ಅದೊಂದು ಭಯಂಕರ ಆಕೃತಿ. ಹೆಚ್ಚೆಂದರೆ ಅದು ಜಗತ್ತಿನ ಎಲ್ಲ ಕೆಲಸಗಳನ್ನೂ ಮಾಡಬಲ್ಲ, ಬೇಕಾದ್ದನ್ನು ತಂದುಕೊಡಬಲ್ಲ ಸೂಪರ್‍ಮ್ಯಾನ್ ಆಗಬಹುದು. ಇನ್ನು ಕೆಲವರಿಗೆ ಅದೊಂದು ಒರಟು ಮನುಷ್ಯ. ಅಮ್ಮನೊಂದಿಗೆ ಇರಬಹುದಾದ ಸಲುಗೆಯನ್ನು ಈ ವ್ಯಕ್ತಿಯೊಂದಿಗೆ ಇಟ್ಟುಕೊಳ್ಳುವುದು ಕಷ್ಟ. ಅಮ್ಮನಲ್ಲಾದರೆ ಏನು ಬೇಕಾದರೂ ಹೇಳಿಕೊಳ್ಳಬಹುದು. ಅಪ್ಪನೊಂದಿಗೆ ಮಾತಾಡುವುದಕ್ಕೆ ಅಮ್ಮನ ವಕಾಲತ್ತು ಬೇಕು. ಅನೇಕ ಸಲ ಅಮ್ಮನಿಗೂ ಬಚಾವಾಗುವುದಕ್ಕೆ ಈ ಅಪ್ಪನೆಂಬ ಗುರಾಣಿಯೇ ಬೇಕು. ‘ಇರು, ಅಪ್ಪ ಬರಲಿ, ಎಲ್ಲ ಹೇಳುತ್ತೇನೆ’ – ಆಕೆ ಹಾಗೆಂದು ಮಕ್ಕಳ ಬಹುಪಾಲು ಉಪಟಳಗಳನ್ನು ನಿಯಂತ್ರಿಸಿಯಾಳು.

ಆದರೆ ಅಪ್ಪನೆಂದರೆ ಅಷ್ಟೇ ಅಲ್ಲವೆಂದು ಮನದಟ್ಟು ಆಗುವ ಹೊತ್ತಿಗೆ ಬದುಕಿನ ಅರ್ಧ ಭಾಗವೇ ಸವೆದುಹೋಗಿರುತ್ತದೋ ಏನೋ! ಅಮ್ಮನೆಂದರೆ ಸುಲಭವಾಗಿ ಅರ್ಥವಾಗುವ ಸುಂದರ ಭಾವಗೀತೆ; ಅಪ್ಪನಾದರೋ ತಕ್ಷಣಕ್ಕೆ ಅರ್ಥವಾಗದ ಸುದೀರ್ಘ ಕಥನಕವನ. ಅಮ್ಮನೆಂದರೆ ಎರಡೂ ದಡಗಳಿಗೆ ತಂಪನ್ನುಣಿಸುತ್ತಾ ಮೆಲ್ಲಮೆಲ್ಲನೆ ಹರಿಯುವ ತಣ್ಣನೆಯ ತೊರೆ; ಅಪ್ಪನಾದರೋ ಆಳ-ಅಗಲ ತಕ್ಷಣಕ್ಕೆ ಅರಿವಿಗೆ ಬಾರದೆ ತನ್ನಷ್ಟಕ್ಕೇ ಹರಿಯುತ್ತಿರುವ ಘನಗಂಭೀರ ವಿಸ್ತಾರ ನದಿ. ಆತನ ಮುಖವನ್ನಷ್ಟೇ ನೋಡಿ ಏನನ್ನಾದರೂ ಅರ್ಥ ಮಾಡಿಕೊಳ್ಳುವುದು ಕಷ್ಟ. ಏಕೆಂದರೆ ಮುಖದಲ್ಲೇ ಆತ ಎಲ್ಲವನ್ನೂ ವ್ಯಕ್ತಪಡಿಸಲಾರ.

‘ನಿನ್ನನ್ನು ಪ್ರೀತಿಸುತ್ತೇನೆ ಎಂದು ತಂದೆ ಹೇಳುವುದಿಲ್ಲ, ಆದರೆ ಅದನ್ನು ಮಾಡುತ್ತಲೇ ಇರುತ್ತಾನೆ’ ಎಂಬ ಮಾತಿದೆ. ಹೌದು, ಆತ ಮಾತಿನಲ್ಲೇ ಎಲ್ಲವನ್ನೂ ಹೇಳಲಾರ. ಹತ್ತಿರದಿಂದ ನೋಡುವವರಿಗೆ ಕಂಡೀತು ಅಷ್ಟೆ. ತನ್ನೊಳಗೆ ತಾನೇ ಕರಗಿ ನೀರಾಗಿ ಮತ್ತೆ ಗಟ್ಟಿಯಾಗುವ ಮೇಣದಂತೆ ಅವನು- ಸಂತೋಷವಾದರೂ, ದುಃಖವಾದರೂ ಹೊರಮುಖದಲ್ಲಿ ಪ್ರಕಟವಾಗುವುದು ತುಸು ಅಪರೂಪವೇ. ಪ್ರಕಟವಾದ ಕ್ಷಣಕ್ಕೆ ಆತ ಅಪ್ಪನಾಗಿ ಉಳಿಯದೆ ಅಮ್ಮನಾಗುತ್ತಾನೆ: ಎಂಬಲ್ಲಿಗೆ ವಾಸ್ತವವಾಗಿ ಅಪ್ಪ-ಅಮ್ಮ ಇಬ್ಬರೂ ಒಂದೇ ಎಂದಾಯಿತು. ಗಂಡಿನೊಳಗೊಂದು ಹೆಣ್ಣು, ಹೆಣ್ಣಿನೊಳಗೊಬ್ಬ ಗಂಡು ಇರುವುದರಿಂದ ಅಲ್ಲವೇ ಪ್ರಕೃತಿ-ಪುರುಷರ ಪರಿಕಲ್ಪನೆ, ಆಕಾಶ-ಭೂಮಿಯ ತತ್ವಗಳು ಸಾಧ್ಯವಾಗಿರುವುದು? 

‘ಆತ್ಮಾ ವೈ ಪುತ್ರ ನಾಮಾಸಿ’- ಅಪ್ಪನೇ ಮಗನಾಗಿ ಹುಟ್ಟುತ್ತಾನೆ: ಇದು ಪೂರ್ವಿಕರ ನಂಬಿಕೆ. ತಂದೆಯಾಗುವುದು ಕಷ್ಟವಲ್ಲವಂತೆ, ತಂದೆಯಾಗಿರುವುದು ಕಷ್ಟ. ಎಳೆಯ ಮಗುವಿನಿಂದ ತೊಡಗಿ ವಯೋವೃದ್ಧರವರೆಗೆ ಎಲ್ಲ ಹೆಣ್ಣುಮಕ್ಕಳನ್ನೂ ‘ಅಮ್ಮಾ’ ಎಂದು ಸಂಬೋಧಿಸಬಹುದು. ಆದರೆ ‘ಅಪ್ಪ’ ಎಂದು ಕರೆಯುವುದು ಒಬ್ಬನನ್ನೇ. ಅದಕ್ಕೆ ಆ ಸ್ಥಾನ ಅಷ್ಟು ವಿಶಿಷ್ಟವಾದದ್ದು. ಆ ಸ್ಥಾನಕ್ಕೆ ತಲುಪುವುದು ಬದುಕಿನ ಸಹಜ ಪ್ರಕ್ರಿಯೆ, ಆದರೆ ತಂದೆಯಾಗಿ ಮಾಡಬೇಕಾದ್ದನ್ನು ಆತ್ಮತೃಪ್ತಿ ದಕ್ಕುವಂತೆ ಮಾಡುವುದು ಕೊಂಚ ನಿಧಾನಪ್ರಕ್ರಿಯೆ. ತಂದೆಯಾಗಿ ಯಾವ ಕರ್ತವ್ಯ ನಿರ್ವಹಿಸಬೇಕೋ ಅದನ್ನು ಸರಿಯಾಗಿ ನಿರ್ವಹಿಸದವನು  ಮುಂದೆ ತನ್ನ ಮಕ್ಕಳಿಂದಲೂ ಅಂತಹದನ್ನು ನಿರೀಕ್ಷಿಸಲಾಗದು.

ಮಕ್ಕಳು ಹದಿಹರೆಯ ದಾಟಿ ಪ್ರಾಯಪ್ರಬುದ್ಧರಾದ ಮೇಲೆ ಅಪ್ಪ ಅವರನ್ನು ಸ್ನೇಹಿತರಂತೆ ನೋಡಿಕೊಳ್ಳಬೇಕೆಂಬುದೊಂದು ಲೋಕರೂಢಿ. ಅಪ್ಪ ಗೆಳೆಯನೂ ಆಗಿರುವುದರಿಂದಲೇ ಅವನೊಳಗೊಬ್ಬ ಮಾರ್ಗದರ್ಶಕನೂ ಸಲಹೆಗಾರನೂ ಇರುತ್ತಾನೆ. ಅಪ್ಪ ಪ್ರತಿಯೊಬ್ಬನ ಬೆನ್ನಹಿಂದೆ ಇರುವ ಒಬ್ಬ ಫ್ರೆಂಡ್, ಗೈಡ್ ಅಂಡ್ ಫಿಲಾಸಫರ್. ಹಾಗೆಂದು ಆತ ವಾಚಾಳಿಗಳಂತೆ ಎಲ್ಲವನ್ನೂ ಮಾತಿನಲ್ಲೇ ಹೇಳಿರುತ್ತಾನೆ ಎಂದೇನೂ ಇಲ್ಲ.  ಅವನ ಮೌನವನ್ನೂ, ಮೌನದೊಳಗಿರುವ ಸೂಚನೆಗಳನ್ನೂ ಅರ್ಥಮಾಡಿಕೊಳ್ಳಬಲ್ಲವರೇ ಜೀವನದಲ್ಲಿ ಯಶಸ್ಸನ್ನು ಕಂಡಾರು. ಅಪ್ಪ ಎಂದರೆ ಅಂತರಂಗದಲ್ಲಿ ಸದಾ ಬೆಳಗುತ್ತಿರುವ ಹೊಂಬೆಳಕು. ಆ ಬೆಳಕು ಒಳಗಿನಿಂದಲೇ ಪ್ರಭೆಯನ್ನು ಹೊಮ್ಮಿಸುವ ಮಿಂಚುಹುಳ ಆಗಿರುವುದರಿಂದಲೇ ನಮ್ಮ ವ್ಯಕ್ತಿತ್ವವನ್ನೂ ಬೆಳಗುತ್ತದೆ, ಭವಿಷ್ಯದ ದಾರಿಯನ್ನೂ ತೋರಿಸುತ್ತದೆ. ಆ ಬೆಳಕು ಮುಗಿಯುವುದೇ ಇಲ್ಲ.

- ಸಿಬಂತಿ ಪದ್ಮನಾಭ ಕೆ. ವಿ.

ಕಾಮೆಂಟ್‌ಗಳಿಲ್ಲ: