ಬುಧವಾರ, ಏಪ್ರಿಲ್ 17, 2024

ಪರ್ಸೆಂಟೇಜಿಗಿಂತ ಬದುಕು ದೊಡ್ಡದು

14 ಏಪ್ರಿಲ್‌ 2024ರ ʻಉದಯವಾಣಿʼ ಸಾಪ್ತಾಹಿಕ ಪುರವಣಿಯಲ್ಲಿ ಪ್ರಕಟವಾದ ಲೇಖನ.

ಹಿರಿಯರೊಬ್ಬರು ಮುಖದ ತುಂಬ ನೋವು ಹೊತ್ತುಕೊಂಡು ಹೇಳುತ್ತಿದ್ದರು: ‘ಈ ರಿಸಲ್ಟುಗಳು
ಯಾಕಾದರೂ ಬರುತ್ತವೋ... ರಿಸಲ್ಟಿನ ಮರುದಿನ ಪತ್ರಿಕೆ ನೋಡಲು ಭಯ... ಯಾವ ಎಳೆಯ ಹುಡುಗರು ಏನು ಅನಾಹುತ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಓದುವ ಆತಂಕ...’ ಇದು ಅವರದೊಬ್ಬರದೇ ಭಯ ಅಲ್ಲ. ಪ್ರತಿವರ್ಷ ನೂರಾರು ಮಂದಿಯ ಎದೆಯಲ್ಲಿ ಹುಟ್ಟಿಕೊಳ್ಳುವ ನಡುಕ. ಫಲಿತಾಂಶದ ಮರುದಿನ ಏನು, ಪರೀಕ್ಷೆಯ ಮರುದಿನದಿಂದಲೇ ಇದು ಆರಂಭವಾಗುತ್ತದೆ. ಪರೀಕ್ಷೆ ಚೆನ್ನಾಗಿ ಮಾಡಿಲ್ಲ ಎಂದು ನೇಣಿಗೆ ತಲೆಯೊಡ್ಡುವ ಮಕ್ಕಳು, ಮರುದಿನ ಬರುವ ರಿಸಲ್ಟಿಗೆ ಹೆದರಿಯೇ ರೈಲುಹಳಿಗೆ ಬಲಿಯಾಗುವ ಮಕ್ಕಳು... ಇವರಿಗೆ ಫಲಿತಾಂಶದವರೆಗೆ ಕಾಯುವ ತಾಳ್ಮೆಯೇ ಇಲ್ಲ. ಫಲಿತಾಂಶವನ್ನು ಊಹಿಸಿಕೊಂಡೇ ಬದುಕನ್ನು ಮುಗಿಸುವ ಮಕ್ಕಳಿವರು.

ಜೀವನಕ್ಕಿಂತ ಪರೀಕ್ಷೆಯೇ ದೊಡ್ಡದು ಎಂದು ಭಾವಿಸಿರುವ ಮಕ್ಕಳ ಕತೆಯಿದು. ವಾಸ್ತವವಾಗಿ ಇದು ಮಕ್ಕಳ ಸಮಸ್ಯೆ ಅಲ್ಲ, ಅವರ ತಂದೆತಾಯಿಯರದು, ಹತ್ತಿರದ ಬಂಧುಗಳದು ಮತ್ತು ಸುತ್ತಲಿನ ಸಮಾಜದ್ದು. ಇವರೆಲ್ಲ ಸೇರಿ ನಿರ್ಮಿಸಿರುವ ದೊಡ್ಡದೊಂದು ವ್ಯೂಹವಿದು- ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಗಳೆಂಬ ಭೂತ. ಭವಿಷ್ಯದ ದೃಷ್ಟಿಯಿಂದ ಇವರೆಡೂ ಹಂತಗಳು ಪ್ರಮುಖ ಎಂಬುದೇನೋ ನಿಜ. ಮುಂದೇನು ಓದಬೇಕು ಎಂಬ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ದೃಷ್ಟಿಯಿಂದ ಇವು ಪ್ರಮುಖವೇ ಹೊರತು ಇಲ್ಲಿ ಒಂದೆರಡು ಪರ್ಸೆಂಟೇಜು ಕಡಿಮೆಯಾದರೆ ಬದುಕೇ ಮುಗಿಯಿತು ಎಂದು ಭಾವಿಸಬೇಕಾಗಿಲ್ಲ.

ಆದರೆ ನಮ್ಮ ಸಮಾಜ ಈ ಎರಡು ಪರೀಕ್ಷೆಗಳನ್ನು ಪ್ರತಿಷ್ಠೆಯ ಪ್ರಶ್ನೆಯನ್ನಾಗಿ ಮಾಡಿಕೊಂಡಿದೆ ಅಥವಾ ಮಾಡಿಕೊಳ್ಳುವಂತೆ ನೋಡಿಕೊಳ್ಳಲಾಗಿದೆ. ಮೂಲತಃ ಇದರ ಹಿಂದೆ ಇರುವುದು ಹಣದ ಬೆನ್ನುಹತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಷಡ್ಯಂತ್ರವೇ ಹೊರತು ಇನ್ನೇನೂ ಅಲ್ಲ. ಇಂಜಿನಿಯರಿಂಗ್-ಮೆಡಿಕಲ್‍ಗಳಂತಹ ಒಂದೆರಡು ವೃತ್ತಿಗಳನ್ನೇ ಭೂಮಿಯ ಮೇಲಿನ ಮಹೋನ್ನತ ಉದ್ಯೋಗಗಳೆಂದು ಬಿಂಬಿಸಿರುವುದರ ಹಿಂದೆಯೂ ಇದೇ ಷಡ್ಯಂತ್ರ ಇದೆ. ಈ ಎರಡು ವೃತ್ತಿಪರ ಕೋರ್ಸುಗಳಿಗೆ ಲಕ್ಷಾಂತರ ಹಣ ಬೇಕೆಂಬುದು ಹಿಂದಿನಿಂದಲೂ ಚಾಲ್ತಿಯಲ್ಲಿರುವ ನಂಬಿಕೆ. ಇವುಗಳಿಗೆ ಪ್ರವೇಶ ಪಡೆಯುವುದೂ ಭಾರೀ ದೊಡ್ಡ ಸ್ಪರ್ಧೆಯೆಂಬ ಭ್ರಮೆಯನ್ನು ಕೂಡ ಬಹು ವ್ಯವಸ್ಥಿತವಾಗಿ ರೂಪಿಸಲಾಗಿದೆ.

‘ಇಂಜಿನಿಯರಿಂಗ್ ಅಥವಾ ವೈದ್ಯಕೀಯ ಕೋರ್ಸುಗಳಿಗೆ ಸೇರಬೇಕೆಂದರೆ ಒಳ್ಳೆಯ ಕಡೆ ಪಿಯುಸಿ ಮಾಡಬೇಕು. ಅಲ್ಲಿ ಉತ್ಕøಷ್ಟ ಮಟ್ಟದ ಸಿಇಟಿ-ಜೆಇಇ-ನೀಟ್ ಕೋಚಿಂಗ್ ಸಿಗಬೇಕು. ಅಂತಹ ಕಾಲೇಜು ಸಿಗಬೇಕೆಂದರೆ ಎಸ್.ಎಸ್.ಎಲ್.ಸಿ.ಯಲ್ಲಿ ಒಂದೊಂದು ಅಂಕವೂ ಮುಖ್ಯ’ – ಇದು ಬಹುಪಾಲು ತಂದೆತಾಯಂದಿರಲ್ಲಿ ಇರುವ ಧಾವಂತ. ಈ ಧಾವಂತ ಕ್ಷಣಕ್ಷಣವೂ ಮಕ್ಕಳ ತಲೆಗೆ ವರ್ಗಾವಣೆ ಆಗುತ್ತಾ ಇರುತ್ತದೆ. ಬೆಳಗೆಂದರೇನು, ಸಂಜೆಯೆಂದರೇನು, ಮಳೆಯೆಂದರೇನು, ಬಿಸಿಲೆಂದರೇನು ಎಂದು ತಿಳಿಯದ ಮಕ್ಕಳು. ಬೆಳಕಾಗುವ ಮುನ್ನವೇ ಬಾಗಿಲು ತೆರೆಯುವ ಕೋಚಿಂಗ್ ಸಂಸ್ಥೆಗಳು, ಮಧ್ಯರಾತ್ರಿ ಕಳೆದರೂ ಮಲಗಲು ಬಿಡದ ಹಾಸ್ಟೆಲುಗಳು. ಓದಲೇಬೇಕು, ಕೋಚಿಂಗ್ ಪಡೆಯಲೇಬೇಕು, ಓದಿದ್ದನ್ನೇ ಓದಬೇಕು, ಉರುಹೊಡೆಯಲೇಬೇಕು, ಮತ್ತಮತ್ತೆ ಪರೀಕ್ಷೆ ಬರೆಯಬೇಕು, ಪರ್ಸೆಂಟೇಜು ಹೆಚ್ಚಾಗಬೇಕು...

ಈ ನಿರೀಕ್ಷೆಗಳ ಭಾರದಲ್ಲಿ ಮಕ್ಕಳ ಮನಸ್ಸಿನ ಪಾಡು ಯಾರಿಗೂ ಬೇಕಾಗಿಲ್ಲ. ಮನಸ್ಸು-ಬುದ್ಧಿಗಳು ಉಲ್ಲಾಸದಿಂದ ವಿಕಸಿತಗೊಳ್ಳಬೇಕಾದ ಬಂಗಾರದ ಕಾಲವದು. ಮನುಷ್ಯನ ಒಟ್ಟಾರೆ ವ್ಯಕ್ತಿತ್ವ ನಿರ್ಮಾಣವಾಗುವುದೇ ಈ ಹದಿಹರೆಯದ ಪರ್ವಕಾಲದಲ್ಲಿ. ಆದರೆ ಈಗ ಅಲ್ಲಿ ನಡೆಯುವುದು ಅಂಕ ಮೊಗೆಯುವ ಯಂತ್ರಗಳನ್ನು ತಯಾರು ಮಾಡುವ ಪ್ರಕ್ರಿಯೆ ಮಾತ್ರ. ಬುದ್ಧಿಭಾವಗಳು ಬಲಿಯಬೇಕಾದ ಕಾಲದಲ್ಲಿ ಇದೇನು ಮಾಡುತ್ತಿದ್ದೇವೆ ಎಂಬ ವಿವೇಕ ಯಾರಿಗೂ ಬೇಕಾಗಿಲ್ಲ. ಯಾವುದೋ ವೇಗೋತ್ಕರ್ಷದ ಬಲದಲ್ಲಿ ಆಸಕ್ತಿಯಿರುವ ಇಲ್ಲದಿರುವ ಎಲ್ಲ ಮಕ್ಕಳು ಮುಂದಮುಂದಕ್ಕೆ ತೇಲಿಕೊಂಡೇನೋ ಹೋಗುತ್ತವೆ. ಅವರ ನಿಜವಾದ ಭವಿಷ್ಯ ಏನು? ಮುಂದೆ ತಾವು ಜೀವನ ನಡೆಸಬೇಕಾದವರೊಂದಿಗೆ, ಸುತ್ತಲಿನ ಸಮಾಜದೊಂದಿಗೆ ಹೊಂದಿಕೊಂಡು ಸಂತೋಷವಾಗಿ ಬದುಕಬಲ್ಲರೇ ಇವರು?

ಸಂತೋಷ ಎಂದರೇನು? ಮುಂದೆ ದೊರೆಯಲಿರುವ ಉದ್ಯೋಗ, ಅದರಿಂದ ಸಂಪಾದನೆಯಾಗುವ ಹಣ ಮತ್ತು ಆ ಮೂಲಕ ದೊರೆಯುವ ಸಾಮಾಜಿಕ ಪ್ರತಿಷ್ಠೆ. ಸಮಾಜದ ಕಣ್ಣಿನಲ್ಲಿ ಇದೇ ಸಂತೋಷ. ಇದುವೇ ವೃತ್ತಿಪರ ಕೋರ್ಸುಗಳಲ್ಲಿ ಸೀಟು ಗಿಟ್ಟಿಸಿಕೊಳ್ಳುವ ಧಾವಂತದಲ್ಲಿ ದೆಸೆಗೆಟ್ಟು ಓಡುತ್ತಿರುವ ಒಟ್ಟಾರೆ ಸಮಾಜದ ಪರಮ ಉದ್ದೇಶ. ಇದರ ಹಿಂದಿರುವುದು ಶಿಕ್ಷಣ ಸಂಸ್ಥೆಗಳನ್ನು ಹಣದ ಮಳೆಗರೆಯುವ ಕಲ್ಪವೃಕ್ಷ-ಕಾಮಧೇನುಗಳನ್ನಾಗಿ ಮಾಡಿಕೊಂಡಿರುವ ಮಂದಿಯ ಸ್ವಾರ್ಥಬುದ್ಧಿ ಎಂಬುದು ನಮ್ಮ ಸಮಾಜಕ್ಕಿನ್ನೂ ಅರ್ಥವಾಗದಿರುವುದು ದುರಂತ.

ಈ ಕಾಲದಲ್ಲಿ ಒಂದೊಳ್ಳೆಯ ಜೀವನ ಕಟ್ಟಿಕೊಳ್ಳಬೇಕೆಂದರೆ ಹಣಕಾಸಿನ ಸ್ಥಿತಿಗತಿ ಚೆನ್ನಾಗಿರಬೇಕೆಂಬುದರಲ್ಲಿ ಅನುಮಾನವೇನೂ ಇಲ್ಲ. ಆದರೆ ಅದು ಎಷ್ಟು ಬೇಕು, ಹೇಗೆ ಬೇಕು ಎಂಬ ಬಗ್ಗೆ ಪ್ರಾಮಾಣಿಕವಾಗಿ ಯಾರೂ ಯೋಚಿಸಿಲ್ಲ. ಸಂಪಾದನೆ ಮಾಡುವುದು ತಪ್ಪಲ್ಲ; ಸಮಾಜದಲ್ಲಿ ನಾಲ್ಕು ಮಂದಿಯ ಗೌರವಕ್ಕೆ ಪಾತ್ರರಾಗಬೇಕು ಎಂಬ ಅಪೇಕ್ಷೆಯಿರುವುದು ತಪ್ಪಲ್ಲ. ಆದರೆ ಅದಕ್ಕೆ ಯಾವುದೋ ಒಂದೆರಡು ದಾರಿಗಳು ಮಾತ್ರ ಇರುವುದು ಎಂಬುದು ಮಾತ್ರ ಶುದ್ಧ ಭ್ರಮೆ. ಮರ್ಯಾದೆಯಿಂದ ಬದುಕುವುದಕ್ಕೆ ಸಾವಿರ ದಾರಿಗಳಿವೆ. ಎಲ್ಲರೂ ಒಂದೇ ರಸ್ತೆಯಲ್ಲಿ ಸಾಗುತ್ತಿದ್ದರೆ ಆಮೇಲೆ ಅವರೆಲ್ಲ ಅದೇ ಟ್ರಾಫಿಕ್ಕಿನಲ್ಲಿ ಬದುಕನ್ನೆಲ್ಲ ಕಳೆಯಬೇಕಾಗುತ್ತದೆ. ವಾಸ್ತವವಾಗಿ ಬೇರೆ ರಸ್ತೆ ಹಿಡಿದವರು ಉಳಿದವರಿಗಿಂತ ಮೊದಲೇ ಗಮ್ಯ ಸೇರಿರುತ್ತಾರೆ.

ರಿಲಯನ್ಸ್ ಎಂಬ ಸಾಮ್ರಾಜ್ಯವನ್ನು ಕಟ್ಟಿದ ಧೀರೂಭಾಯ್ ಅಂಬಾನಿ ಆರಂಭದಲ್ಲಿ ಏನಾಗಿದ್ದರು? ಹ್ಯಾರಿಪಾಟರ್ ಪುಸ್ತಕಗಳಿಂದಲೇ ಲೋಕಪ್ರಸಿದ್ಧಿ ಪಡೆದ ಜೆ.ಕೆ. ರೌಲಿಂಗ್ ಏನಾಗಿದ್ದರು? ಜಗತ್ಪ್ರಸಿದ್ಧ ಬ್ಯಾಗುಗಳ ಬ್ರಾಂಡ್ ಅನ್ನು ಕಟ್ಟಿಬೆಳೆಸಿದ ಗುಚಿಯೋ ಗುಚಿ ಏನಾಗಿದ್ದರು? ಮಸ್ಯಾಚುಸೆಟ್ಸ್ ಇನ್ಸ್‍ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಪ್ರವೇಶ ಪಡೆದ ಮೊದಲ ಅಂತಾರಾಷ್ಟ್ರೀಯ ಅಂಧವ್ಯಕ್ತಿ ಶ್ರೀಕಾಂತ್ ಬೊಲ್ಲಾ ಅಲ್ಲಿಯವರೆಗೆ ಎದುರಿಸಿದ ನೋವು-ಅವಮಾನಗಳೇನು? ನಾವು ನಮ್ಮ ಸುತ್ತಲಿನ ಸಮಾಜವನ್ನು ಕಣ್ಣುತೆರೆದು ನೋಡುವುದೇ ಇಲ್ಲ. ಯಾರೋ ಬೆಳೆಸಿದ ಭ್ರಮೆಯಲ್ಲಿ, ನಾವೇ ಹಾಕಿಕೊಂಡ ಕನ್ನಡಕದಲ್ಲಿ ಬಂಧಿಯಾಗಿರುತ್ತೇವೆ. 

ಪರ್ಸೆಂಟೇಜಿಗಿಂತ ಬದುಕು ತುಂಬ ದೊಡ್ಡದು. ಬದುಕಿನ ತೃಪ್ತಿಯನ್ನು ಎಸ್.ಎಸ್.ಎಲ್.ಸಿ. ಅಥವಾ ಪಿಯುಸಿಯ ಪರ್ಸೆಂಟೇಜಿನಿಂದ ಅಳೆಯಲು ಬರುವುದಿಲ್ಲ. ಮೂಲತಃ ಪರ್ಸೆಂಟೇಜು ಒಬ್ಬ ವ್ಯಕ್ತಿಯ ಒಟ್ಟಾರೆ ವ್ಯಕ್ತಿತ್ವವನ್ನು, ಪ್ರತಿಭೆಯನ್ನು ಅಳೆಯುವ ಮಾನದಂಡವೇ ಅಲ್ಲ. ಅದು ಮಗುವಿನೊಳಗೆ ಸುಪ್ತವಾಗಿಯೇ ಇರುತ್ತದೆ. ಅದನ್ನು ಸಶಕ್ತವಾಗಿ ಹೊರಗೆ ತರುವುದಕ್ಕೆ ಹತ್ತಾರು ಮಾರ್ಗಗಳಿವೆ. ಅದು ಕೋಚಿಂಗ್ ಸೆಂಟರುಗಳಲ್ಲಿ ವಿಕಾಸವಾಗುವುದಿಲ್ಲ. ಹಾರ್ವರ್ಡ್‍ನ ಮನಃಶಾಸ್ತ್ರಜ್ಞ ಹೊವಾರ್ಡ್ ಗಾರ್ಡನರ್ ಪ್ರತಿಪಾದಿಸಿರುವ ‘ಬಹುಬುದ್ಧಿವಂತಿಕೆಯ ಸಿದ್ಧಾಂತ’ವೂ (ಮಲ್ಟಿಪಲ್ ಇಂಟೆಲಿಜೆನ್ಸಸ್ ಥಿಯರಿ) ಇದನ್ನೇ ಪ್ರತಿಪಾದಿಸುತ್ತದೆ. ಬುದ್ಧಿವಂತಿಕೆಗೆ ಏಳೆಂಟು ಆಯಾಮಗಳಿವೆ, ಅವುಗಳಲ್ಲಿ ಯಾವುದಾರೂ ಒಂದೋ ಎರಡೋ ಮೂರೋ ಮಗುವಿನಲ್ಲಿ ಪ್ರಬಲವಾಗಿರಬಹುದು. ಅವುಗಳನ್ನು ಆರಂಭದಿಂದಲೇ ಗಮನಿಸಿ ಬೆಳೆಸಿದರೆ ಆ ಮಗು ಮುಂದೆ ತನ್ನ ಆಸಕ್ತಿಯ ಕ್ಷೇತ್ರದಲ್ಲಿ ಅಸಾಧಾರಣವಾದುದನ್ನು ಸಾಧಿಸಬಹುದು ಎಂದಿದ್ದಾರೆ ಗಾರ್ಡನರ್.

ಕೆಲವರಲ್ಲಿ ದೃಶ್ಶಿಕ (ವಿಶುವಲ್) ಶಕ್ತಿ ಪ್ರಬಲವಾಗಿರುತ್ತದೆ - ಆ ಶಕ್ತಿಯನ್ನು ಬೆಳೆಸಿದರೆ ಮುಂದೆ ಅವರು ಉತ್ತಮ ವಿನ್ಯಾಸಕಾರರಾಗಿ ಬೆಳೆಯಬಹುದು. ಕೆಲವರಲ್ಲಿ ಶಾಬ್ದಿಕ (ವರ್ಬಲ್) ಪ್ರತಿಭೆ ದಟ್ಟವಾಗಿರುತ್ತದೆ- ಮುಂದೆ ಅವರು ಉತ್ತಮ ಬರೆಹಗಾರರಾಗಿ, ಮಾತುಗಾರರಾಗಿ ಬೆಳೆಯಬಹುದು. ಇನ್ನು ಕೆಲವರಲ್ಲಿ ಸಂಗೀತದ (ಮ್ಯೂಸಿಕಲ್) ಕೌಶಲ ಆಳದಲ್ಲಿ ಬೇರೂರಿರುತ್ತದೆ- ಅವರು ಮುಂದೆ ಜಗತ್ತು ಮೆಚ್ಚುವ ಸಂಗೀತಗಾರರಾಗಿ ಬೆಳೆಯಬಹುದು. ಮತ್ತೆ ಕೆಲವರಲ್ಲಿ ತಾರ್ಕಿಕ (ಲಾಜಿಕಲ್) ಶಕ್ತಿ ಪ್ರಬಲವಾಗಿರುತ್ತದೆ- ಅವರು ಮುಂದೆ ವಿಜ್ಞಾನಿಯಾಗಿಯೋ, ಇಂಜಿನಿಯರಾಗಿಯೋ ಹೆಸರು ಮಾಡಬಹುದು. ಹಲವರಲ್ಲಿ ದೈಹಿಕ (ಬಾಡಿಲೀ) ಕೌಶಲಗಳು ಅಪೂರ್ವವಾಗಿರುತ್ತವೆ- ಅಂಥವರು ಮುಂದೆ ಕ್ರೀಡಾಕ್ಷೇತ್ರದಲ್ಲಿ ಪ್ರಸಿದ್ಧಿಗೇರಬಹುದು... ಇದನ್ನು ಗಾರ್ಡನರ್ ‘ಮಲ್ಟಿಪಲ್ ಇಂಟೆಲಿಜೆನ್ಸಸ್’ ಎಂದು ಕರೆದಿರುವುದು. ತಂದೆತಾಯಿಯರು ಮತ್ತು ಅಧ್ಯಾಪಕರು ಇದನ್ನು ಗುರುತಿಸುವುದನ್ನು ಮರೆತರೆ ತಮ್ಮ ಮಕ್ಕಳಿಗೆ ಬಹುದೊಡ್ಡ ಅನ್ಯಾಯ ಮಾಡಿದಂತೆ. ಇಂಜಿನಿಯರ್ ಆಗಲಾರದ ವ್ಯಕ್ತಿಯೊಬ್ಬ ನಾಳೆ ದೊಡ್ಡ ಹಾಡುಗಾರ ಆಗಬಹುದು, ವೈದ್ಯಕೀಯ ವಿಜ್ಞಾನ ಓದಲಾಗದವನೊಬ್ಬ ನಾಳೆ ದೊಡ್ಡ ಕ್ರೀಡಾಪಟುವಾಗಿ ಹೊರಹೊಮ್ಮಬಹುದು, ಚಿತ್ರಕಾರನೋ, ಸಾಹಿತಿಯೋ, ವಕೀಲನೋ, ಪತ್ರಕರ್ತನೋ, ಸಂಶೋಧನಕೋ, ಲೆಕ್ಕಪರಿಶೋಧಕನೋ, ಅಧಿಕಾರಿಯೋ, ಉದ್ಯಮಿಯೋ ಆಗಬಹುದು. ಈ ಸ್ಥಾನಗಳಲ್ಲಿರುವುದು ಅವಮಾನವೇ? ಇವುಗಳಿಂದ ವ್ಯಕ್ತಿಯೊಬ್ಬ ತನ್ನ ಬದುಕಿನ ತೃಪ್ತಿ ಕಂಡುಕೊಳ್ಳಲು ಸಾಧ್ಯವಿಲ್ಲವೇ?

ಎಲ್ಲರಿಗಿಂತ ಮೊದಲು ಅಪ್ಪ-ಅಮ್ಮಂದಿರು ತಮ್ಮ ಭ್ರಮೆಗಳಿಂದ ಹೊರಬರಬೇಕು. ಧನದಾಹಿಗಳ ಸ್ವಾರ್ಥದಲ್ಲಿ ನಲುಗುತ್ತಿರುವ ಶಿಕ್ಷಣವಲಯ ನಿರ್ಮಿಸಿರುವ ವ್ಯೂಹದೊಳಗೆ ತಾವು ಬಂಧಿಗಳಾಗಿದ್ದೇವೆ ಎಂಬುದನ್ನು ತಿಳಿಯಬೇಕು. ಮಕ್ಕಳು ನಮ್ಮ ಭ್ರಮೆಗಳನ್ನೆಲ್ಲ ಹೊತ್ತುಕೊಂಡು ಓಡಬೇಕಾದ ಕತ್ತೆಗಳಲ್ಲ. ಅವರಿಗೂ ಅವರದ್ದೇ ಆದ ಮನಸ್ಸು, ಕೌಶಲ, ಪ್ರತಿಭೆ, ಕನಸುಗಳು ಇರುತ್ತವೆ. ಅವು ಹೂವಿನಂತೆ ಸ್ವಾಭಾವಿಕವಾಗಿ ವಿಕಾಸವಾಗಿ, ಹೀಚಾಗಿ, ಕಾಯಿಯಾಗಿ, ಹಣ್ಣಾಗಿ ಸುತ್ತಲಿನ ಸಮಾಜಕ್ಕೆ ಹಿತವಾಗಿ, ಉಪಯುಕ್ತವಾಗಿ ಪರಿಣಮಿಸಲು ಅವಕಾಶ ಮಾಡಿಕೊಡೋಣ. ಇಲ್ಲವಾದರೆ ಭವಿಷ್ಯ ನಮ್ಮನ್ನು ಕ್ಷಮಿಸಲಾರದು.

- ಸಿಬಂತಿ ಪದ್ಮನಾಭ ಕೆ. ವಿ.