ಮಂಗಳವಾರ, ಮಾರ್ಚ್ 3, 2026

ವಿವೇಕವೇ ಸಾಮಾಜಿಕ ವರ್ತನೆಯ ದಿಕ್ಸೂಚಿ

ಬೋಧಿವೃಕ್ಷ, 21-27 ಫೆಬ್ರವರಿ 2026ರ ಸಂಚಿಕೆಯಲ್ಲಿ ಪ್ರಕಟವಾದ ಲೇಖನ

ಅಧ್ಯಯನ ಯೋಜನೆಯೊಂದರ ಭಾಗವಾಗಿ ಇತ್ತೀಚೆಗೆ ಭೂತಾನ್ ದೇಶದಲ್ಲಿ ಕೆಲವು ದಿನ ಕಳೆಯುವ ಅವಕಾಶ ಒದಗಿತ್ತು. ಈ ಸಂದರ್ಭದಲ್ಲಿ ವಿಶಿಷ್ಟ ಅಂಶವೊಂದು ನಮ್ಮನ್ನು ಚಕಿತಗೊಳಿಸಿತು. ಅದೇನೆಂದರೆ, ಇಡೀ ಭೂತಾನ್ ದೇಶದಲ್ಲಿ ಒಂದೇ ಒಂದು ಟ್ರಾಫಿಕ್ ಸಿಗ್ನಲ್ ಇಲ್ಲದಿರುವುದು! ಅರೆ, ಈ ಕಾಲದಲ್ಲೂ ಟ್ರಾಫಿಕ್ ಸಿಗ್ನಲ್ ಇಲ್ಲದೆ ವಾಹನ ಸಂಚಾರವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಅಚ್ಚರಿ ಎನಿಸಬಹುದು. ಆದರೆ ಆ ದೇಶದ ಮಟ್ಟಿಗೆ ಈ ಅಚ್ಚರಿಯೇ ನಿಜ. ದೇಶದ ರಾಜಧಾನಿ ಥಿಂಪುವಿನಲ್ಲೇ ಒಂದೇ ಒಂದು ಟ್ರಾಫಿಕ್ ಸಿಗ್ನಲ್ ಕಾಣಸಿಗುವುದಿಲ್ಲ. ಟ್ರಾಫಿಕ್ ಸಿಗ್ನಲ್ ಅಷ್ಟೇ ಅಲ್ಲ, ರಸ್ತೆ ಉಬ್ಬುಗಳು ಕೂಡ ಕಾಣಸಿಗುವುದಿಲ್ಲ. ರಸ್ತೆಗಳು ಕೂಡುವ ಜಾಗದಲ್ಲಿ ಇರುವ ವೃತ್ತಗಳು ಕೂಡ ತೀರಾ ಸಣ್ಣವು.

ಒಂದು ದೇಶದ ರಸ್ತೆಗಳು ಆ ದೇಶದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಎಂಬ ಪ್ರಸಿದ್ಧ ಮಾತೊಂದು ಇದೆ. ರಸ್ತೆಗಳು ಎಂಬಲ್ಲಿ ಸಂಚಾರ ವ್ಯವಸ್ಥೆ ಎಂದರೂ ಚೆನ್ನಾಗಿ ಒಪ್ಪುತ್ತದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭೂತಾನ್‌ನಲ್ಲಿ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ಕಡಿಮೆ ಇರುವುದರಿಂದ ಅಲ್ಲಿ ಸಂಚಾರ ವ್ಯವಸ್ಥೆಯನ್ನು ನಿಭಾಯಿಸುವುದು ಸುಲಭ ಎಂಬ ತಾಂತ್ರಿಕ ಕಾರಣವನ್ನು ಕೊಡಬಹುದಾದರೂ, ವಾಸ್ತವವಾಗಿ ಇಂತಹದೊಂದು ಸೋಜಿಗ ಸಾಧ್ಯವಾಗಿರುವುದು ಅಲ್ಲಿನ ಜನರು ಮತ್ತವರ ಗುಣನಡತೆಯಿಂದಾಗಿ ಎಂಬುದೇ ನಿಜ.

ಭೂತಾನ್ ನಾಗರಿಕರ ಸಾಮಾಜಿಕ ವರ್ತನೆಯು ಸಾಂಸ್ಕೃತಿಕ ಮೌಲ್ಯಗಳು ಮತ್ತು ಅದರಿಂದ ಹುಟ್ಟಿಕೊಂಡಿರುವ ವಿಶಿಷ್ಟವಾಗಿರುವ ನೈತಿಕ ಪ್ರಜ್ಞೆಯಿಂದ ಪ್ರಭಾವಿಸಲ್ಪಟ್ಟಿದೆ. ಅವರ ಪ್ರತಿ ವರ್ತನೆಯಲ್ಲೂ ಅಪಾರ ಸಂಯಮ ಮತ್ತು ಸೌಜನ್ಯ ಎದ್ದು ಕಾಣುತ್ತದೆ. ನಮ್ಮಿಂದಾಗಿ ಇನ್ನೊಬ್ಬರಿಗೆ ತೊಂದರೆ ಆಗಬಾರದು, ಸಾಧ್ಯವಾದಷ್ಟು ಇನ್ನೊಬ್ಬರಿಗೆ ಸಹಾಯ ಮಾಡಬೇಕು ಎಂಬ ಅವರ ಮನಸ್ಸೇ ಈ ಬಗೆಯ ವ್ಯಕ್ತಿತ್ವಕ್ಕೆ ಕಾರಣ. ಹೀಗಾಗಿ ರಸ್ತೆಯ ಮೇಲೆ ನಡೆಯುವಾಗಲಾಗಲೀ, ವಾಹನ ಚಲಾಯಿಸುವಾಗಲಾಗಲೀ ಅವರಿಗೆ ಧಾವಂತವಿಲ್ಲ. ಅನಗತ್ಯವಾಗಿ ಹಾರ್ನ್ ಮಾಡುವುದಿಲ್ಲ, ಸ್ಪರ್ಧೆಗೆ ಬಿದ್ದವರಂತೆ ಓವರ್‌ಟೇಕ್ ಮಾಡುವುದಿಲ್ಲ, ಒಂದು ನಿರ್ದಿಷ್ಟ ವೇಗಮಿತಿಯಿಂದಾಚೆ ವಾಹನ ಚಾಲನೆ ಮಾಡುವುದಿಲ್ಲ. ತಾಳ್ಮೆಯೇ ಅಲ್ಲಿನ ಸಂಚಾರ ವ್ಯವಸ್ಥೆಯ ಸ್ಥಾಯೀಭಾವ.

ಹೀಗಾಗಿ ರಸ್ತೆಗಳು ಸೇರುವಲ್ಲಿ ಟ್ರಾಫಿಕ್ ದೀಪಗಳು ಬೇಕೆಂದು ಅವರಿಗೆ ಅನ್ನಿಸಿಯೇ ಇಲ್ಲ.
ಎದುರಿನಿಂದಲೋ, ಪಕ್ಕದಿಂದಲೋ ವಾಹನವೊಂದು ಬಂತೆಂದರೆ ಈ ಕಡೆಯ ವಾಹನ ಸವಾರರು ಆ ವಾಹನ ಮೊದಲು ಹೋಗುವುದಕ್ಕೆ ಅವಕಾಶ ಮಾಡಿಕೊಡುತ್ತಾರೆ. ಅವರ ಮಧ್ಯೆ ತಮ್ಮದೇ ಆದ ಒಂದು ಸಂವಹನ ಇರುತ್ತದೆ. ಇನ್ನೊಬ್ಬರ ಅಗತ್ಯವನ್ನು ಅರ್ಥ ಮಾಡಿಕೊಂಡು ವ್ಯವಹರಿಸುವ ವಿಶೇಷ ಸಂವಹನವದು. ತಾವೇ ಮೊದಲು ಹೋಗಿಬಿಡಬೇಕು ಎಂಬ ಮನಸ್ಥಿತಿಗೂ ಇನ್ನೊಬ್ಬ ಮೊದಲು ಹೋಗಿಬಿಡಲಿ ಎಂಬ ಮನಸ್ಥಿತಿಗೂ ಎಷ್ಟೊಂದು ವ್ಯತ್ಯಾಸ ಅಲ್ಲವೇ?

ಪರಸ್ಪರ ಗೌರವ:

ಪರಸ್ಪರರನ್ನು ಗೌರವಿಸುವ ಗುಣ ಜನರಲ್ಲಿ ಇದ್ದಾಗ ಮಾತ್ರ ಇಂತಹದೊಂದು ಮನಸ್ಥಿತಿ ಮತ್ತು ವರ್ತನೆ ಸಾಧ್ಯವಾಗುತ್ತದೆ. ತಮಗೊಬ್ಬರಿಗೆ ಮಾತ್ರ ತುರ್ತು ಕೆಲಸವಿರುವುದು, ಬೇರೆಯವರ ಅಗತ್ಯಗಳ ಬಗ್ಗೆ ತಾನೇಕೆ ತಲೆಕೆಡಿಸಿಕೊಳ್ಳಲಿ ಎಂಬ ಮನೋಭಾವ ನಮ್ಮ ನಾಗರಿಕ ಪ್ರಜ್ಞೆಯನ್ನೇ ಹಾಳುಮಾಡಿಬಿಡುತ್ತದೆ. ಇದು ಕೇವಲ ರಸ್ತೆಯ ಮೇಲಿನ ವಿಷಯ ಮಾತ್ರವಲ್ಲ, ನಮ್ಮ ದಿನನಿತ್ಯದ ಜೀವನದ ಪ್ರತಿ ಹಂತದಲ್ಲೂ ನಡೆಯುತ್ತದೆ. ಇನ್ನೊಬ್ಬರ ಇಷ್ಟಾನಿಷ್ಟಗಳ ಬಗ್ಗೆ ಯೋಚಿಸಿಕೊಂಡು ತಾವೇಕೆ ಸಮಯ ಕಳೆಯಬೇಕು, ನಮ್ಮನಮ್ಮ ಕೆಲಸ ನೋಡಿಕೊಂಡರಾಯಿತು ಎಂಬುದು ನಮ್ಮ ಸಾಮಾನ್ಯ ಯೋಚನಾವಿಧಾನ. ಇನ್ನೊಬ್ಬರ ತಂಟೆಗೆ ಹೋಗದಿರುವುದು ಸರಿ, ಆದರೆ ಇನ್ನೊಬ್ಬರ ಅವಶ್ಯಕತೆಗಳ ಬಗ್ಗೆ ಗೌರವ ಮತ್ತು ಕಾಳಜಿ ಇಲ್ಲದೆ ಹೋದಾಗ ನಾವು ಕೇವಲ ಯಂತ್ರಗಳಾಗಿಬಿಡುತ್ತೇವೆ.

ಹೇಳಿಕೇಳಿ ಮನುಷ್ಯ ಸಂಘಜೀವಿ, ಸಮಾಜಜೀವಿ. ಭೂಮಿಯ ಮೇಲೆ ನಾಗರಿಕತೆಯ ವಿಕಾಸ ಆರಂಭವಾದಲ್ಲಿಂದಲೂ ಮನುಷ್ಯ ಜತೆಯಾಗಿಯೇ ಬದುಕುವುದನ್ನು ಅಭ್ಯಾಸ ಮಾಡಿಕೊಂಡ. ಜತೆಯಾಗಿಯೇ ವಾಸ, ಜತೆಯಾಗಿಯೇ ಊಟ, ಜತೆಯಾಗಿಯೇ ಓಡಾಟ. ಒಂಟಿಯಾಗಿರುವುದು ಬಲುಕಷ್ಟ. ಹಾಗೆ ನೋಡಿದರೆ ಒಂಟಿಯಾಗಿರುವುದಕ್ಕಿಂತಲೂ ಒಟ್ಟಿಗೆ ಬಾಳುವುದು ಇನ್ನೂ ಕಷ್ಟ. “ಎಷ್ಟು ಕಷ್ಟವೋ ಹೊಂದಿಕೆಯೆAಬುದು ನಾಲ್ಕು ದಿನದ ಈ ಬದುಕಿನಲಿ?” ಎಂದು ಕವಿ ಇದನ್ನೇ ಉದ್ದೇಶಿಸಿ ಕೇಳಿರುವುದು. ಇದೇ ಕವಿ “ಇಲ್ಲಿದೆ ನಂದನ ಇಲ್ಲಿದೆ ಬಂಧನ ಎಲ್ಲಾ ಇವೆ ಈ ನಮ್ಮೊಳಗೆ” ಅಂತಲೂ ಸೂಚನೆ ಕೊಟ್ಟಿದ್ದಾರೆ. ನಮ್ಮನಮ್ಮ ಬದುಕನ್ನು ಸ್ವರ್ಗವಾಗಿಯೋ ನರಕವಾಗಿಯೋ ಮಾಡಿಕೊಳ್ಳುವುದು ನಮ್ಮಲ್ಲೇ ಇದೆ. ಇನ್ನೊಬ್ಬರಿಂದಾಗಿ ನಮ್ಮ ಬದುಕು ಅಸಹನೀಯವಾಯಿತು ಎಂಬ ಭಾವನೆಯೇ ಮೂರ್ಖತನದ್ದು.

ವಿವೇಕವೇ ಬದುಕು:

ಸರಿತಪ್ಪುಗಳ ವಿವೇಚನೆ, ಸಮಾಜದಲ್ಲಿ ಇನ್ನೊಬ್ಬರೊಂದಿಗೆ ಹೇಗೆ ವ್ಯವಹರಿಸಬೇಕು ಎಂಬ ವಿವೇಕ ನಮ್ಮ ಬದುಕನ್ನು ನಿರ್ಧರಿಸುತ್ತದೆ. ಪ್ರತಿದಿನ ಹತ್ತುಹಲವು ಮಂದಿಯೊಂದಿಗೆ ನಾವು ವ್ಯವಹರಿಸುತ್ತಿರುತ್ತೇವೆ. ಅಪ್ಪ-ಅಮ್ಮ, ಕುಟುಂಬದ ಸದಸ್ಯರು, ಬಂಧುಗಳು, ಸ್ನೇಹಿತರು, ಸಹೋದ್ಯೋಗಿಗಳು, ಗುರುಗಳು, ವಿದ್ಯಾರ್ಥಿಗಳು, ನೆರೆಹೊರೆಯವರು, ಅಪರಿಚಿತರು... ಇವರೆಲ್ಲರೊಂದಿಗೆ ಒಂದಲ್ಲ ಒಂದು ರೀತಿ ಸಂವಹನ ನಡೆಸುವ ಸಂದರ್ಭ ಇದ್ದೇ ಇರುತ್ತದೆ. ತಾನು, ತನ್ನದು, ತಾನು ಮಾಡಿದ್ದು ಸರಿ, ಉಳಿದವರೆಲ್ಲ ಅವಿವೇಕಿಗಳು ಎಂಬ ಭಾವನೆ ಇದ್ದಾಗ ಸಹಬಾಳ್ವೆ, ಸಾಮರಸ್ಯ ಮರೀಚಿಕೆಯಾಗುತ್ತದೆ.

ಹೆತ್ತವರ ಮಾತನ್ನು ಯಾಕೆ ಕೇಳಬೇಕು, ಗುರುಗಳನ್ನು ಯಾಕೆ ಗೌರವಿಸಬೇಕು, ಸಹಪ್ರಯಾಣಿಕರೊಂದಿಗೆ ಯಾಕೆ ಹೊಂದಾಣಿಕೆ ಮಾಡಿಕೊಳ್ಳಬೇಕು, ರಸ್ತೆಯ ಮೇಲೆ ಯಾಕೆ ಸಂಯಮದಿಂದ ವರ್ತಿಸಬೇಕು, ಸಾಮಾಜಿಕ ಮಾಧ್ಯಮಗಳನ್ನು ಯಾಕೆ ಜವಾಬ್ದಾರಿಯಿಂದ ಬಳಸಬೇಕು, ನನ್ನ ಪರಿಸರವನ್ನು ಯಾಕೆ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು – ಇಂತಹ ಪ್ರಶ್ನೆಗಳನ್ನು ಕೇಳುವವರ ಮನಸ್ಸಿನಲ್ಲಿ “ಇದೆಲ್ಲ ನನ್ನ ಕೆಲಸವಲ್ಲ, ಬೇರೆ ಯಾರಾದರೂ ಮಾಡಲಿ” ಎಂಬ ಉಡಾಫೆಯೊಂದು ಸದಾ ಇರುತ್ತದೆ. ಈ ಉಡಾಫೆಯೇ ಅವರ ಬಾಹ್ಯ ವರ್ತನೆಗಳಿಗೆ ಕಾರಣ. ಇದರಿಂದಾಗಿಯೇ ಅವರು ಹಿರಿಯರ ಸಲಹೆಗಳಿಗೆ ಕಿವಿಗೊಡುವುದಿಲ್ಲ, ಗುರುಗಳನ್ನು ಗೌರವಿಸುವುದಿಲ್ಲ, ಸಹಪ್ರಯಾಣಿಕರೊಂದಿಗೋ ಸಹೋದ್ಯೋಗಿಗಳೊಂದಿಗೋ ಸಂಯಮದಿಂದ ವರ್ತಿಸುವುದಿಲ್ಲ, ಸಾಮಾಜಿಕ ಮಾಧ್ಯಮಗಳನ್ನು ವಿವೇಕದಿಂದ ಬಳಸುವುದಿಲ್ಲ. 

ಇಂಥವರು ಕಾನೂನನ್ನಾಗಲೀ ಸಾಮಾಜಿಕ ಮೌಲ್ಯಗಳನ್ನಾಗಲೀ ಗೌರವಿಸುವುದಿಲ್ಲ. ಸಾರ್ವಜನಿಕ ಸೌಲಭ್ಯಗಳನ್ನು ಜವಾಬ್ದಾರಿಯಿಂದ ಬಳಸಬೇಕು, ಅದು ಎಲ್ಲರಿಗೂ ಸಂಬಂಧಪಟ್ಟದ್ದು ಎಂಬ ತಿಳುವಳಿಕೆ ಇಲ್ಲದವರು ಇವರಲ್ಲ. ಶಿಕ್ಷಿತರೇ ಆಗಿರುತ್ತಾರೆ. ಆದರೆ ಶಿಕ್ಷಿತರಿಗೂ ವಿದ್ಯಾವಂತರಿಗೂ ವ್ಯತ್ಯಾಸ ಇದೆ. ಶಿಕ್ಷಣ ಕೇವಲ ಅಂಕಪಟ್ಟಿಗಳಿಗೆ, ಪ್ರಮಾಣಪತ್ರಗಳಿಗೆ ಸೀಮಿತವಾಗಿದ್ದಾಗ ಆಗುವ ಸಮಸ್ಯೆ ಇದು. ಶಿಕ್ಷಣ ವಿದ್ಯೆ ಆಗಿ ಪರಿವರ್ತನೆ ಆದರೆ ಸಾಮಾಜಿಕ ವಿವೇಕ ತಾನಾಗಿಯೇ ರೂಪುಗೊಳ್ಳುತ್ತಾ ಹೋಗುತ್ತದೆ.

- ಸಿಬಂತಿ ಪದ್ಮನಾಭ ಕೆ. ವಿ.

ವಿದ್ಯಾರ್ಥಿಗಳು, ಯುವಕರು ಓದಲೇಬೇಕಾದ ಪುಸ್ತಕ ʼಸಕ್ಸೆಸ್‌ ಮಂತ್ರʼ

ಇಂಥದ್ದೊಂದು ಪುಸ್ತಕ ಬರೆಯಬೇಕೆನ್ನುವುದು ನನ್ನ ಬಹುದಿನಗಳ ಆಸೆಯಾಗಿತ್ತು.

ಅಪ್ಪ ಮೊಬೈಲ್‌ ಕೊಡಿಸಲಿಲ್ಲ, ಅಮ್ಮ ಗೇಮ್‌ ಆಡಲು ಬಿಡಲಿಲ್ಲ, ಮೇಷ್ಟ್ರು ಬೈದರು, ಪ್ರೀತಿಸಿದವರು ಕೈಕೊಟ್ಟರು ಎಂಬ ಕಾರಣಗಳಿಗೆ ಜೀವ ಕಳೆದುಕೊಳ್ಳುವ ಎಳೆಯ ವಯಸ್ಸಿನ ಹುಡುಗರು; ಸಾಮಾನ್ಯ ಜ್ಞಾನವೇ ಇಲ್ಲದ ತೊಂಬತ್ತೊಂಬತ್ತು ಪರ್ಸೆಂಟೇಜಿನ ಬುದ್ಧಿವಂತರು; ಕಿರಿಯರೊಂದಿಗೆ, ಓರಗೆಯವರೊಂದಿಗೆ, ಹಿರಿಯರೊಂದಿಗೆ ಹೇಗೆ ವ್ಯವಹರಿಸಬೇಕೆಂದೇ ಗೊತ್ತಿಲ್ಲದ rank ಹೋಲ್ಡರುಗಳು; ಇಂಜಿನಿಯರಿಂಗ್‌, ಮೆಡಿಕಲ್‌ ಬಿಟ್ಟರೆ ಬದುಕುವುದಕ್ಕೆ ಬೇರೆ ದಾರಿಗಳೇ ಇಲ್ಲ ಎಂಬ ಮನಸ್ಥಿತಿಗೆ ಬಂದಿರುವ ಸಮಾಜ; ಸಣ್ಣಪುಟ್ಟ ಸೋಲುಗಳನ್ನೂ ನಿಭಾಯಿಸಲಾಗದ ದುರ್ಬಲ ತರುಣರು...
ಇಂತಹ ಸುದ್ದಿಗಳು ಪ್ರತಿದಿನ ನಮ್ಮ ಕಣ್ಣು-ಕಿವಿಗಳಿಗೆ ಬೀಳುತ್ತಿರುತ್ತವೆ. ಆಗೆಲ್ಲ ಮನಸ್ಸು ವಿಹ್ವಲವಾಗುತ್ತದೆ. ಇದಕ್ಕೆಲ್ಲ ಏನು ಕಾರಣ? ಯಾರು ಕಾರಣ? ನಮ್ಮ ಶಿಕ್ಷಣ ವ್ಯವಸ್ಥೆಯ ವೈಫಲ್ಯವೇ? ಶಿಕ್ಷಕರ, ಹೆತ್ತವರ ಸೋಲೇ? ಆಧುನಿಕತೆಯ ಪರಿಣಾಮವೇ? ಕುಟುಂಬ ವ್ಯವಸ್ಥೆ ಕುಸಿದಿರುವ ಸೂಚನೆಯೇ? ಯಾವುದೂ ಆಗಿರಬಹುದು; ಎಲ್ಲವೂ ಆಗಿರಬಹುದು.
ಆದರೆ ಇದರ ಬಲಿಪಶುಗಳು ಮಾತ್ರ ಮುಂದೆ ಬಾಳಿ ಬದುಕಬೇಕಾದ ನಮ್ಮ ಮಕ್ಕಳು.
ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ದೊಡ್ಡದೊಂದು ಕೊರತೆಯಿದೆ. ಅದನ್ನು ಹೇಗಾದರೂ ಮಾಡಿ ನಮ್ಮಿಂದಾದ ಮಟ್ಟಿಗೆ ಸರಿಪಡಿಸಬೇಕು. ಮಕ್ಕಳ ಹೃದಯ-ಮನಸ್ಸು-ವ್ಯಕ್ತಿತ್ವ ಸಮರ್ಪಕವಾಗಿ ಬೆಳೆದುಬರಬೇಕು. ಅವರು ಒಳಗಿಂದಲೇ ಗಟ್ಟಿಯಾಗಬೇಕು.
ಹೀಗೆಂದು ಯೋಚಿಸುತ್ತಲೇ ಹುಟ್ಟಿಕೊಂಡ ಬರಹಗಳಿವು. ʼವಿಜಯ ಕರ್ನಾಟಕʼದ ವಿದ್ಯಾರ್ಥಿ ಆವೃತ್ತಿ (ವಿಕ ಮಿನಿ)ಯಲ್ಲಿ ಇದೇ ʼಸಕ್ಸೆಸ್‌ ಮಂತ್ರʼ ಎಂಬ ಶೀರ್ಷಿಕೆಯಲ್ಲಿ ಐವತ್ತು ಕಂತುಗಳಲ್ಲಿ ಪ್ರಕಟವಾದವು. ಕೆಲವನ್ನು ಫೇಸ್ಬುಕ್‌ ಇತ್ಯಾದಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡದ್ದೂ ಇದೆ. (ಬೇರೆ ಕೆಲವು ಲೇಖನಗಳೂ ಇವೆ).

ಆದರೆ ಇವು ಒಟ್ಟಾಗಿ ಒಂದೇ ಕಡೆ ನಮ್ಮ ವಿದ್ಯಾರ್ಥಿಗಳಿಗೆ, ಅವರ ಹೆತ್ತವರಿಗೆ, ಶಿಕ್ಷಕರಿಗೆ ದೊರೆಯಬೇಕು ಎಂಬುದು ನನ್ನ ಬಯಕೆ. ಪ್ರಕಟಿಸುತ್ತೀರಾ ಎಂದು ಅಯೋಧ್ಯಾ ಪ್ರಕಾಶನವನ್ನು ಕೇಳಿಕೊಂಡೆ. ಅವರು ಮರುಮಾತಿಲ್ಲದೆ ಆಯಿತು ಎಂದರು. ಅವರಿಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು. ಈಗ ʼಸಕ್ಸೆಸ್‌ ಮಂತ್ರʼ ಪುಸ್ತಕರೂಪದಲ್ಲಿ ನಿಮ್ಮ ಮುಂದಿದೆ. ಪ್ರಾಥಮಿಕ ಶಾಲೆಯಿಂದ ತೊಡಗಿ ಪದವಿ ಹಂತದ ವಿದ್ಯಾರ್ಥಿಗಳವರೆಗೆ ವಿವಿಧ ಸ್ತರಗಳ ವಿದ್ಯಾರ್ಥಿಗಳು ಓದಬೇಕಾದ ಪುಸ್ತಕವಿದು.
ಪುಟ: 180
ಬೆಲೆ: ರೂ. 200
ನಿಮ್ಮ ಪ್ರತಿಯನ್ನು
ಇಲ್ಲಿಂದ ನೇರವಾಗಿ ಪಡೆದುಕೊಳ್ಳಬಹುದು.
ಅಥವಾ-
ನನಗೆ ಒಂದು ವಾಟ್ಸಾಪ್‌ ಮೆಸೇಜ್‌ ಮಾಡಬಹುದು: 9449525854
- ಸಿಬಂತಿ ಪದ್ಮನಾಭ

ಬುಧವಾರ, ಫೆಬ್ರವರಿ 18, 2026

ಮಾಧ್ಯಮ: ಎಐ ಕಾಲದ ನೈತಿಕ ಸವಾಲುಗಳು

(ʻದಿ ಚೆನ್ನುಡಿʼ ವಾರಪತ್ರಿಕೆಯ ಚೊಚ್ಚಲ ಸಂಚಿಕೆಗೆ ಬರೆದ ಮುನ್ನುಡಿ) 

17 ಫೆಬ್ರವರಿ 2026


ಎಪ್ಸ್ಟೀನ್ ಕಡತಗಳ ವಿಚಾರ ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ಕೋಲಾಹಲ ಎಬ್ಬಿಸಿದ ಬೆನ್ನಲ್ಲೇ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜೆಫ್ರಿ ಎಪ್ಸ್ಟೀನ್  ಹಾಗೂ ಒಬ್ಬ ಯುವತಿಯೊಂದಿಗೆ ನಿಂತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು. ಮೇಲ್ನೋಟಕ್ಕೆ ಅದೊಂದು ಫೇಕ್ ಫೋಟೋ ಎಂದು ಅರ್ಥೈಸಿಕೊಳ್ಳಬಹುದಾದರೂ ಅನೇಕ ಫ್ಯಾಕ್ಟ್ಚೆಕ್ ಸಂಸ್ಥೆಗಳು ಅದನ್ನು ದುರುದ್ದೇಶಪೂರಿತ ನಕಲಿ ಚಿತ್ರವೆಂದು ದೃಢಪಡಿಸಿದವು. ಇದರ ಬೆನ್ನಲ್ಲೇ ಮೋದಿಯವರಿದ್ದ ಜಾಗದಲ್ಲಿ ರಾಹುಲ್ ಗಾಂಧಿಯವರಿದ್ದ ಇನ್ನೊಂದು ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿತು. ಮೊದಲನೆಯದು ಫೇಕ್ ಎಂದ ಮೇಲೆ ಎರಡನೆಯದು ಫೇಕ್ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಇದು ಏಕಾಯಿತು ಎಂಬುದಕ್ಕೆ ದೊಡ್ಡ ತರ್ಕವೇನೂ ಬೇಕಾಗಿಲ್ಲ. ಇದರ ಹಿಂದಿರುವುದು ನೂರಕ್ಕೆ ನೂರು ರಾಜಕೀಯ ಕೆಸರೆರಚಾಟದ ತಂತ್ರಗಳು. ಇಂಥವುಗಳನ್ನು ಮಾಡುವುದಕ್ಕಾಗಿಯೇ ಸಾಮಾಜಿಕ ಜಾಲತಾಣಗಳ ಹಿಂದೆ ಸಾವಿರಾರು ಮಂದಿ ಮಾರುವೇಷಗಳಲ್ಲಿ ಹಗಲಿರುಳು ದುಡಿಯುತ್ತಿದ್ದಾರೆ. ಎಪ್ಸ್ಟೀನ್ ಹಾಗೂ ಯುವತಿಯ ಜೊತೆ ಮೋದಿಯವರನ್ನು ತೋರಿಸಿ ಒಂದು ವರ್ಗ ವಿಕೃತ ಸಂತೋಷ ಅನುಭವಿಸಿದರೆ, ಎದುರಿನ ಇನ್ನೊಂದು ವರ್ಗ ತಾನೇಕೆ ರಾಹುಲ್ ಗಾಂಧಿಯವರನ್ನು ಆ ಜಾಗದಲ್ಲಿ ತೋರಿಸಬಾರದು ಎಂದು ಭಾವಿಸುತ್ತದೆ. ಮುಯ್ಯಿಗೆ ಮುಯ್ಯಿ ತಂತ್ರ. ಇದರಲ್ಲಿ ಯಾರು ಸರಿ ಯಾರು ತಪ್ಪು ಎಂಬ ವಾದ ಅನಗತ್ಯ. ಎಲ್ಲರದೂ ತಪ್ಪೇ. ಇದೊಂದು ತುದಿಮೊದಲಿಲ್ಲದ ವಿಷವೃತ್ತ ಎಂಬುದು ಮಾತ್ರ ನಿಜ. ಇಂಥವು ಈಗೀಗ ಸಾಮಾಜಿಕ ಜಾಲತಾಣಗಳಲ್ಲಿ ಸರ್ವೇಸಾಮಾನ್ಯವಾಗಿವೆ. ದಿನಕ್ಕೆ ಇಂತಹ ನೂರಾರು ವಿಕೃತ ವಿಚಾರಗಳನ್ನು ಹರಡುವ ಕಾರ್ಖಾನೆಗಳು ಎಗ್ಗಿಲ್ಲದೆ ಕಾರ್ಯನಿರ್ವಹಿಸುತ್ತಿವೆ.


ಅವಿವೇಕಿಗಳ ಕೈಗೆ ಆಯುಧ:

ಕೃತಕ ಬುದ್ಧಿಮತ್ತೆ (ಎಐ)ಯ ಕರಾಳಮುಖ ಹೀಗೆ ಇಷ್ಟಿಷ್ಟೇ ಬೆಳಕಿಗೆ ಬರುತ್ತಿದೆ. ಎಐ ಜಗತ್ತಿಗೆ ವರವೇ ಶಾಪವೇ ಎಂಬ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆದಿವೆ, ನಡೆಯುತ್ತಲೇ ಇವೆ. ಎಷ್ಟೋ ಮಂದಿ ಅದನ್ನೊಂದು ಶಾಪವೆಂದು ಒಪ್ಪುವುದೇ ಇಲ್ಲ. ಅದೇನಿದ್ದರೂ ಬಳಸುವವರ ಮನಸ್ಸು ಮತ್ತು ಕೈಗಳಲ್ಲಿದೆ ಎಂಬುದು ಅವರ ವಾದ. ಎಐ ಆಯುಧವಿದ್ದ ಹಾಗೆ. ಆಯುಧವೆಂದ ಕೂಡಲೇ ಹಾನಿಯನ್ನೇ ಮಾಡಬೇಕಿಲ್ಲ. ಆತ್ಮರಕ್ಷಣೆಗೂ ಆಯುಧ ಬೇಕು. ತಾನು ದುರ್ಬಲನಲ್ಲ ಎಂದು ತೋರಿಸಿಕೊಳ್ಳುವುದಕ್ಕೂ ಆಯುಧ ಬೇಕು. ಆದರೆ ಯಾರು ಆಯುಧವನ್ನು ಧರಿಸುತ್ತಾನೋ ಅವನಿಗೆ ವಿವೇಕ ಇರಬೇಕು. ಅವಿವೇಕಿಯ ಕೈಗೆ ಆಯುಧ ಕೊಟ್ಟರೆ ಅವಿವೇಕತನದ್ದಲ್ಲದೆ ಬೇರೆ ಯಾವ ಕೆಲಸ ಮಾಡಲು ಸಾಧ್ಯ? ಎಐ ಎಂಬ ಆಯುಧ ಅವಿವೇಕಿಗಳ ಕೈಗೆ ಸಿಕ್ಕರೂ ಆಗುವುದು ಇದೇ.

ಸಾಮಾಜಿಕ ಜಾಲತಾಣಗಳನ್ನು ತೆರೆದರೆ ಕಾಣಸಿಗುವ ಚಿತ್ರಗಳು ಮತ್ತು ವೀಡಿಯೋಗಳಲ್ಲಿ ಅಸಲಿ ಯಾವುದು, ನಕಲಿ ಯಾವುದು ಎಂದು ಪ್ರತ್ಯೇಕಿಸಿ ನೋಡಲಾಗದ ಅಸಹಾಯಕ ಸ್ಥಿತಿಗೆ ಜಗತ್ತು ತಲುಪಿದೆ. ಕೆಲವನ್ನು ಮನರಂಜನೆಯ ಉದ್ದೇಶಕ್ಕಾಗಿ ಬಳಸಲಾಗುತ್ತಿದ್ದರೆ ಹಲವನ್ನು ದುರುದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಎಲ್ಲಿಂದಲೋ ಬಂದ ಹುಲಿಯೊಂದು ಒಂಟಿ ವ್ಯಕ್ತಿಯನ್ನು ಎತ್ತಿಕೊಂಡು ಕಾಡಿನೊಳಗೆ ಓಡುತ್ತದೆ. ನದಿಯಿಂದ ಜಿಗಿಯುವ ಮೊಸಳೆಯೊಂದು ಯುವತಿಯನ್ನು ಇಡಿಯಾಗಿ ನುಂಗಿಬಿಡುತ್ತದೆ. ದೈತ್ಯ ಹೆಬ್ಬಾವೊಂದು ಮಗುವನ್ನು ಅದರ ಅಮ್ಮನೆದುರೇ ತಿಂದುಹಾಕಿದೆ. ಇವೆಲ್ಲ ಫೇಸ್‌ಬುಕ್, ಇನ್‌ಸ್ಟಾಗ್ರಾಮಿನಂತಹ ಸಾಮಾಜಿಕ ತಾಣಗಳಲ್ಲಿ ಕಂಡುಬರುತ್ತಿರುವ ಎಐ ಆಧಾರಿತ ವೀಡಿಯೋಗಳು. ಎಲ್ಲೋ ಮೂಲೆಯಲ್ಲಿ ಸಣ್ಣ ಅಕ್ಷರಗಳಲ್ಲಿ ‘ಇದು ಎಐ ಪ್ರೇರಿತ ವೀಡಿಯೋವೆಂದೂ, ಯಾರೂ ಸತ್ಯವೆಂದು ತಿಳಿಯಬಾರದೆಂದೂ, ಮನರಂಜನೆಯ ಉದ್ದೇಶಕ್ಕಾಗಿ ಮಾಡಲಾಗಿದೆಯೆಂದೂ’ ನಮೂದಿಸಲ್ಪಟ್ಟಿರುತ್ತದೆ.

ಇಂತಹ ವೀಡಿಯೋಗಳಿಂದ ಜನರ ಮನರಂಜಿಸಿ ಆಗಬೇಕಾದ ಘನಕಾರ್ಯವಾದರೂ ಏನಿದೆ? ಇದನ್ನು ಮನರಂಜನೆ ಎಂದು ತಿಳಿದವರಾದರೂ ಎಂತಹ ಮನಸ್ಥಿತಿಯವರು? ಜನರ ಮನಸ್ಸನ್ನು ವಿಹ್ವಲಗೊಳಿಸಿ, ಮುಗ್ಧರನ್ನು ವಂಚಿಸಿ ದೊರೆಯುವ ಕ್ಲಿಕ್ಸ್, ವ್ಯೂಸ್‌ಗಳಿಂದ ಇವರು ದುಡಿಯುವ ದುಡ್ಡಿಗೆ ಯಾವ ನೈತಿಕತೆ ಇದೆ? ಈ ದುಡ್ಡು ಎಷ್ಟು ಕಾಲ ಉಳಿಯುತ್ತದೆ?

ಎಐ ಬಳಸಿ ಇಂತಹ ವೀಡಿಯೋಗಳನ್ನು ತಯಾರಿಸುವವರಿಗೂ ರಾಜಕೀಯ ಪ್ರೇರಿತವಾಗಿರುವ ಮತ್ತು ಜನರ ಧಾರ್ಮಿಕ ಭಾವನೆಗಳನ್ನು ಕೆದಕುವ ವೀಡಿಯೋಗಳನ್ನು ಸಿದ್ಧಪಡಿಸುವವರಿಗೂ ಮೂಲತಃ ಯಾವ ವ್ಯತ್ಯಾಸವೂ ಇಲ್ಲ. ಇಬ್ಬರೂ ಪರಮಧೂರ್ತರೇ. ಆದರೆ ಎರಡನೆಯ ವರ್ಗದವರು ಸಮಾಜದಲ್ಲಿ ಸೃಷ್ಟಿಮಾಡುವ ಸಮಸ್ಯೆಗಳು ಮಾತ್ರ ಮಾರಣಾಂತಿಕವಾದವು. ಅವರನ್ನು ಯಾವ ಕಟು ಶಬ್ದಗಳಿಂದ ಜರೆದರೂ ಕಡಿಮೆಯೇ. ಎಐ ಬಳಸಿಕೊಂಡು ತಮ್ಮ ರಾಜಕೀಯ ವಿರೋಧಿಗಳನ್ನು ಹಣಿಯುವ, ಜನರ ಧಾರ್ಮಿಕ ನಂಬಿಕೆಗಳಲ್ಲಿ ವಿಷ ಹರಡುವ ಕೆಲಸಗಳಂತೂ ಇತ್ತೀಚಿನ ದಿನಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿವೆ.

ಮಾಧ್ಯಮಗಳಿಗೆ ಎಐ ಕಾಟ:

ಕೇವಲ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಷ್ಟೇ ಅಲ್ಲದೆ ಸಾಂಪ್ರದಾಯಿಕ ಮಾಧ್ಯಮಗಳಾದ ಪತ್ರಿಕೆ ಮತ್ತು ಟಿವಿ ವಾಹಿನಿಗಳಿಗೂ ಎಐ ಶಾಪ ಮತ್ತು ತಾಪ ಆವರಿಸಿಕೊಂಡಿದೆ. ಏಕೆಂದರೆ ಸಾಂಪ್ರದಾಯಿಕ ಮಾಧ್ಯಮಗಳಿಗೆ ಇಂದು ಡಿಜಿಟಲ್ ಮಾಧ್ಯಮಗಳೇ ಪ್ರಮುಖ ಸುದ್ದಿಮೂಲಗಳಾಗಿವೆ. ತಲೆಯ ಮೇಲೆ ಎರೆದದ್ದು ಕಾಲಿಗೆ ಇಳಿಯುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗುವುದಿಲ್ಲವಲ್ಲ! ಸಾಮಾಜಿಕ ಮಾಧ್ಯಮಗಳಲ್ಲಿ ಬಂದದ್ದು ಪತ್ರಿಕೆ ಹಾಗೂ ಟಿವಿ ಚಾನೆಲ್‌ಗಳಿಗೂ ಕಾಳ್ಗಿಚ್ಚಿನಂತೆ ಹರಡುತ್ತದೆ. ಈ ಮಾಧ್ಯಮಗಳಲ್ಲಿ ಅಸಲಿ ಮತ್ತು ನಕಲಿಗಳನ್ನು ಪರಿಶೀಲಿಸುವುದಕ್ಕೊಂದು ಗೇಟ್ ಕೀಪಿಂಗ್ ವ್ಯವಸ್ಥೆ ಇದ್ದರೂ, ಒಂದು ಹಂತದಲ್ಲಿ ವಿಷವಾಯು ಈ ಎಲ್ಲ ತಡೆಗೋಡೆಗಳನ್ನು ದಾಟಿಕೊಂಡು ಹೋಗುತ್ತದೆ. 

ಇಂದು ಲೇಖನವೊಂದನ್ನು ಸಿದ್ಧಪಡಿಸಿಕೊಡಲು ವಿಷಯದ ತಿಳುವಳಿಕೆಯೂ ಬೇಕಿಲ್ಲ, ಭಾಷಾಜ್ಞಾನವೂ ಬೇಕಿಲ್ಲ. ಒಂದೆರಡು ಪದಗಳಲ್ಲಿ ವಿನಂತಿಸಿಕೊಂಡರೆ ಸಾಕು, ಎಐ ಎರಡೇ ಕ್ಷಣಗಳಲ್ಲಿ ಎಷ್ಟು ಬೇಕೋ ಅಷ್ಟು ಪದಗಳಲ್ಲಿ ಲೇಖನ ಸಿದ್ಧಪಡಿಸಿಕೊಡುತ್ತದೆ. ಕಥೆ-ಕವನ ಬೇಕಾದರೂ ಬರೆದುಕೊಡುತ್ತದೆ. ಹೀಗಾಗಿ ಯಾರು ಬೇಕಾದರೂ ಈಗ ದಿನಬೆಳಗಾಗುವುದರೊಳಗೆ ಲೇಖಕ, ಕಥೆಗಾರ, ಕವಿ, ಸಂಶೋಧಕ ಎಲ್ಲ ಆಗಬಹುದು. ತಮಗೆ ಬಂದಿರುವ ಬರಹಗಳಲ್ಲಿ ನೈಜವಾದವು ಎಷ್ಟು, ಕೃತಕ ಬುದ್ಧಿಮತ್ತೆಯವೆಷ್ಟು ಎಂದು ಸಂಪಾದಕರೇ ನಿರ್ಧರಿಸಲಾಗದೆ ಬಸವಳಿಯುವ ಸ್ಥಿತಿ ಇಂದು ನಿರ್ಮಾಣವಾಗಿದೆ. ಇನ್ನು ಅವುಗಳನ್ನು ಓದುವವರ ಗತಿಯೇನು?

ಎಐಯನ್ನು ಹೇಗೆ ಬಳಸಬೇಕು, ಎಷ್ಟು ಬಳಸಬೇಕು ಎಂಬುದರ ಬಗ್ಗೆ ಸಮಾಜಕ್ಕೆ ಸ್ಪಷ್ಟತೆಯಿಲ್ಲ. ಎಲ್ಲರೂ ಬಳಸುತ್ತಾರೆ, ನಾವು ಬಳಸಿದರೆ ತಪ್ಪೇನು? ತಂತ್ರಜ್ಞಾನ ಇರುವುದೇ ಬಳಸುವುದಕ್ಕೆ ಅಲ್ಲವೇ? ಬಳಸಿದರೆ ಏನಾಗುತ್ತದೆ? ಹೀಗೆ ಸಾಗುತ್ತದೆ ಮನುಷ್ಯನ ಆಲೋಚನಾ ಲಹರಿ. ಮಾಧ್ಯಮಗಳಿಗೂ, ಉದ್ಯಮಗಳಿಗೂ, ಜನಸಾಮಾನ್ಯರಿಗೂ, ಪತ್ರಕರ್ತರಿಗೂ ವ್ಯತ್ಯಾಸಗಳು ಉಳಿಯದಿರುವ ಈ ಕಾಲದಲ್ಲಿ ಎಐ ಬಳಕೆಯ ಇತಿಮಿತಿಗಳ ಸ್ಪಷ್ಟತೆ ಮಾಧ್ಯಮ ಜಗತ್ತಿನಲ್ಲಿಯೂ ಇಲ್ಲದಿರುವುದು ಅಚ್ಚರಿಯೇನಲ್ಲ.

ಆಧುನಿಕ ಸಮಾಜದ ಅತಿದೊಡ್ಡ ಬಿಕ್ಕಟ್ಟು ಇದು: ಸರಿ-ತಪ್ಪುಗಳ ವಿವೇಚನೆಯಲ್ಲಿರುವ ಸಮಸ್ಯೆ. ಯಾವುದು ನೈತಿಕ, ಯಾವುದು ಅನೈತಿಕ ಎಂಬುದರ ವಿವೇಚನೆಯಲ್ಲಿರುವ ಸಮಸ್ಯೆ. ಪತ್ರಿಕೋದ್ಯಮದಲ್ಲಿಯೂ ಈ ಬಿಕ್ಕಟ್ಟು ಸಾಕಷ್ಟು ಹಿಂದಿನಿಂದಲೂ ಇದೆ. ಈ ರಂಗವನ್ನು ಉದ್ಯಮ ಎಂದು ಪರಿಗಣಿಸಿದ ಮೇಲೆ ಲಾಭ-ನಷ್ಟಗಳ ಪ್ರಶ್ನೆ ಅಸಂಗತವೇನೂ ಅಲ್ಲ. ಯಾರೂ ಯಾವ ವೃತ್ತಿಯನ್ನೂ ಶುದ್ಧಾಂಗ ಸೇವೆಯನ್ನಾಗಿ ಉಳಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲದ ಕಾಲ ಇದಾಗಿರುವಾಗ ಮಾಧ್ಯಮ ಜಗತ್ತೂ ಲೌಕಿಕ ಲಾಭದ ಅಪೇಕ್ಷೆಯಿಲ್ಲದೆ ಮುಂದುವರಿಯುವುದು ಅಸಾಧ್ಯ. ಆದರೆ ಬೇರೆ ಉದ್ಯಮಗಳಿಗೂ ಮಾಧ್ಯಮರಂಗಕ್ಕೂ ಒಂದು ನಿರ್ದಿಷ್ಟ ವ್ಯತ್ಯಾಸ ಇದೆ. ಅದು ‘ಸಾಮಾಜಿಕ ಹೊಣೆಗಾರಿಕೆ’ಯದ್ದು. ಏನೇ ಲಾಭ-ನಷ್ಟದ ಲೆಕ್ಕಾಚಾರವಿದ್ದರೂ ಸಾಮಾಜಿಕ ಹೊಣೆಗಾರಿಕೆಯಿಲ್ಲದೆ ಮಾಧ್ಯಮದ ವಿಚಾರವನ್ನು ಮಾತಾಡುವುದಕ್ಕೆ ಬರುವುದಿಲ್ಲ. ಮಾಧ್ಯಮಗಳನ್ನು ಸಮಾಜ ವಿಶಿಷ್ಟವಾಗಿ ನೋಡುವುದಕ್ಕೂ ಇದೇ ಕಾರಣ. ಮಾಧ್ಯಮಗಳು ಯಾವಾಗ ಸಾಮಾಜಿಕ ಜವಾಬ್ದಾರಿಯನ್ನು ಸಂಪೂರ್ಣವಾಗಿ ಮರೆಯುತ್ತವೋ, ಆಗ ಅವುಗಳಿಗೂ ಬೇರೆ ಉದ್ಯಮಗಳಿಗೂ ಯಾವ ವ್ಯತ್ಯಾಸವೂ ಉಳಿಯುವುದಿಲ್ಲ. ಎಐ ಬಳಕೆಯ ನೈತಿಕ ಹೊಣೆಗಾರಿಕೆಯೂ ಈ ಸಾಮಾಜಿಕ ಜವಾಬ್ದಾರಿಯ ಒಂದು ಭಾಗವೆಂದು ನಾವು ಅರ್ಥ ಮಾಡಿಕೊಳ್ಳಬೇಕು.

‘ಚೆನ್ನುಡಿ’ ಚಿರಾಯುವಾಗಲಿ:

ಪತ್ರಿಕೆಯಿಂದ ತೊಡಗಿ ಡಿಜಿಟಲ್ ಮಾಧ್ಯಮದವರೆಗೆ ಯಾವ ಹೊಸ ಉಪಕ್ರಮವನ್ನು ಆರಂಭಿಸುವುದಕ್ಕೂ ಈ ಕಾಲದಲ್ಲಿ ಎಂಟೆದೆ ಇರಬೇಕು. ಮಾಧ್ಯಮವೊಂದನ್ನು ನಡೆಸಿಕೊಂಡು ಹೋಗುವುದು ಯಾವ ಕಾಲದಲ್ಲೂ ಸುಲಭದ ವಿಚಾರವಲ್ಲ. ಅದರಲ್ಲೂ ಲಕ್ಷಾಂತರ ಸಂಖ್ಯೆಯ ಮಾಧ್ಯಮಗಳು ಇರುವ ಈ ಕಾಲದಲ್ಲಿ ವಿದ್ಯಾರ್ಥಿಮಿತ್ರರಾದ ಶ್ರೀ ಚನ್ನಬಸವ ಮತ್ತು ಶ್ರೀ ಗಿರೀಶ್ ‘ದಿ ಚೆನ್ನುಡಿ’ ಎಂಬ ಹೊಸದೊಂದು ಸಾಹಸಕ್ಕೆ ಕೈ ಹಾಕಿದ್ದಾರೆ. ತಮ್ಮ ಮುಂದಿರುವ ಎಲ್ಲ ಸವಾಲುಗಳನ್ನು ಅರಿತುಕೊಂಡೇ ಅವರು ಈ ಸಾಹಸದಲ್ಲಿ ತೊಡಗಿದ್ದಾರೆ ಎಂದು ನಾನು ಭಾವಿಸುತ್ತೇನೆ. ಹಾಗೆಂದು ತಾವೇನೋ ವಿಶಿಷ್ಟವಾದುದನ್ನು ಮಾಡುತ್ತೇವೆ ಎಂದು ವಿದ್ಯಾರ್ಥಿಗಳಾಗಿದ್ದವರು ಹೊರಟಾಗ ಅವರ ಅಧ್ಯಾಪಕನಾಗಿ ಅವರ ಉತ್ಸಾಹವನ್ನು ತಗ್ಗಿಸುವ, ಕುಗ್ಗಿಸುವ ಮಾತುಗಳನ್ನಾಡಲಾರೆ. ಆದರೆ ಎಚ್ಚರಿಕೆಯ ಮಾತನ್ನಾಡುವುದು ನನ್ನ ಕರ್ತವ್ಯ. ಅವರು ಕೇವಲ ವಾಣಿಜ್ಯಕ ಉದ್ದೇಶವನ್ನಷ್ಟೇ ಇಟ್ಟುಕೊಳ್ಳದಿರಲಿ. ಸಾಮಾಜಿಕ ಹೊಣೆಗಾರಿಕೆ ಪತ್ರಿಕೆಯ ಸ್ಥಾಯೀಗುಣವಾಗಿರಲಿ. ಕೃತಕ ಬುದ್ಧಿಮತ್ತೆ ಒಡ್ಡಿರುವ ನೈತಿಕ ಸವಾಲುಗಳನ್ನು ಅವರು ಸದಾ ನೆನಪಿನಲ್ಲಿ ಇಟ್ಟುಕೊಳ್ಳಲಿ. ವಿಶ್ವಾಸಾರ್ಹತೆಯೇ ಪತ್ರಿಕೋದ್ಯಮದ ಬೆನ್ನೆಲುಬು ಮತ್ತು ಅದರ ಅಂತಿಮ ಗುರಿ. ವಿಶ್ವಾಸಾರ್ಹತೆ ಕಳೆದುಹೋದ ದಿನ ಮಾಧ್ಯಮ ಮತ್ತು ಅದರ ಸಂಪಾದಕರು ಸತ್ತುಹೋದಂತೆ. ‘ದಿ ಚೆನ್ನುಡಿ’ ಚಿರಾಯುವಾಗಲಿ.

- ಡಾ. ಸಿಬಂತಿ ಪದ್ಮನಾಭ ಕೆ.ವಿ.

ಬುಧವಾರ, ಏಪ್ರಿಲ್ 17, 2024

ಪರ್ಸೆಂಟೇಜಿಗಿಂತ ಬದುಕು ದೊಡ್ಡದು

14 ಏಪ್ರಿಲ್‌ 2024ರ ʻಉದಯವಾಣಿʼ ಸಾಪ್ತಾಹಿಕ ಪುರವಣಿಯಲ್ಲಿ ಪ್ರಕಟವಾದ ಲೇಖನ.

ಹಿರಿಯರೊಬ್ಬರು ಮುಖದ ತುಂಬ ನೋವು ಹೊತ್ತುಕೊಂಡು ಹೇಳುತ್ತಿದ್ದರು: ‘ಈ ರಿಸಲ್ಟುಗಳು
ಯಾಕಾದರೂ ಬರುತ್ತವೋ... ರಿಸಲ್ಟಿನ ಮರುದಿನ ಪತ್ರಿಕೆ ನೋಡಲು ಭಯ... ಯಾವ ಎಳೆಯ ಹುಡುಗರು ಏನು ಅನಾಹುತ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಓದುವ ಆತಂಕ...’ ಇದು ಅವರದೊಬ್ಬರದೇ ಭಯ ಅಲ್ಲ. ಪ್ರತಿವರ್ಷ ನೂರಾರು ಮಂದಿಯ ಎದೆಯಲ್ಲಿ ಹುಟ್ಟಿಕೊಳ್ಳುವ ನಡುಕ. ಫಲಿತಾಂಶದ ಮರುದಿನ ಏನು, ಪರೀಕ್ಷೆಯ ಮರುದಿನದಿಂದಲೇ ಇದು ಆರಂಭವಾಗುತ್ತದೆ. ಪರೀಕ್ಷೆ ಚೆನ್ನಾಗಿ ಮಾಡಿಲ್ಲ ಎಂದು ನೇಣಿಗೆ ತಲೆಯೊಡ್ಡುವ ಮಕ್ಕಳು, ಮರುದಿನ ಬರುವ ರಿಸಲ್ಟಿಗೆ ಹೆದರಿಯೇ ರೈಲುಹಳಿಗೆ ಬಲಿಯಾಗುವ ಮಕ್ಕಳು... ಇವರಿಗೆ ಫಲಿತಾಂಶದವರೆಗೆ ಕಾಯುವ ತಾಳ್ಮೆಯೇ ಇಲ್ಲ. ಫಲಿತಾಂಶವನ್ನು ಊಹಿಸಿಕೊಂಡೇ ಬದುಕನ್ನು ಮುಗಿಸುವ ಮಕ್ಕಳಿವರು.

ಜೀವನಕ್ಕಿಂತ ಪರೀಕ್ಷೆಯೇ ದೊಡ್ಡದು ಎಂದು ಭಾವಿಸಿರುವ ಮಕ್ಕಳ ಕತೆಯಿದು. ವಾಸ್ತವವಾಗಿ ಇದು ಮಕ್ಕಳ ಸಮಸ್ಯೆ ಅಲ್ಲ, ಅವರ ತಂದೆತಾಯಿಯರದು, ಹತ್ತಿರದ ಬಂಧುಗಳದು ಮತ್ತು ಸುತ್ತಲಿನ ಸಮಾಜದ್ದು. ಇವರೆಲ್ಲ ಸೇರಿ ನಿರ್ಮಿಸಿರುವ ದೊಡ್ಡದೊಂದು ವ್ಯೂಹವಿದು- ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಗಳೆಂಬ ಭೂತ. ಭವಿಷ್ಯದ ದೃಷ್ಟಿಯಿಂದ ಇವರೆಡೂ ಹಂತಗಳು ಪ್ರಮುಖ ಎಂಬುದೇನೋ ನಿಜ. ಮುಂದೇನು ಓದಬೇಕು ಎಂಬ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ದೃಷ್ಟಿಯಿಂದ ಇವು ಪ್ರಮುಖವೇ ಹೊರತು ಇಲ್ಲಿ ಒಂದೆರಡು ಪರ್ಸೆಂಟೇಜು ಕಡಿಮೆಯಾದರೆ ಬದುಕೇ ಮುಗಿಯಿತು ಎಂದು ಭಾವಿಸಬೇಕಾಗಿಲ್ಲ.

ಆದರೆ ನಮ್ಮ ಸಮಾಜ ಈ ಎರಡು ಪರೀಕ್ಷೆಗಳನ್ನು ಪ್ರತಿಷ್ಠೆಯ ಪ್ರಶ್ನೆಯನ್ನಾಗಿ ಮಾಡಿಕೊಂಡಿದೆ ಅಥವಾ ಮಾಡಿಕೊಳ್ಳುವಂತೆ ನೋಡಿಕೊಳ್ಳಲಾಗಿದೆ. ಮೂಲತಃ ಇದರ ಹಿಂದೆ ಇರುವುದು ಹಣದ ಬೆನ್ನುಹತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಷಡ್ಯಂತ್ರವೇ ಹೊರತು ಇನ್ನೇನೂ ಅಲ್ಲ. ಇಂಜಿನಿಯರಿಂಗ್-ಮೆಡಿಕಲ್‍ಗಳಂತಹ ಒಂದೆರಡು ವೃತ್ತಿಗಳನ್ನೇ ಭೂಮಿಯ ಮೇಲಿನ ಮಹೋನ್ನತ ಉದ್ಯೋಗಗಳೆಂದು ಬಿಂಬಿಸಿರುವುದರ ಹಿಂದೆಯೂ ಇದೇ ಷಡ್ಯಂತ್ರ ಇದೆ. ಈ ಎರಡು ವೃತ್ತಿಪರ ಕೋರ್ಸುಗಳಿಗೆ ಲಕ್ಷಾಂತರ ಹಣ ಬೇಕೆಂಬುದು ಹಿಂದಿನಿಂದಲೂ ಚಾಲ್ತಿಯಲ್ಲಿರುವ ನಂಬಿಕೆ. ಇವುಗಳಿಗೆ ಪ್ರವೇಶ ಪಡೆಯುವುದೂ ಭಾರೀ ದೊಡ್ಡ ಸ್ಪರ್ಧೆಯೆಂಬ ಭ್ರಮೆಯನ್ನು ಕೂಡ ಬಹು ವ್ಯವಸ್ಥಿತವಾಗಿ ರೂಪಿಸಲಾಗಿದೆ.

‘ಇಂಜಿನಿಯರಿಂಗ್ ಅಥವಾ ವೈದ್ಯಕೀಯ ಕೋರ್ಸುಗಳಿಗೆ ಸೇರಬೇಕೆಂದರೆ ಒಳ್ಳೆಯ ಕಡೆ ಪಿಯುಸಿ ಮಾಡಬೇಕು. ಅಲ್ಲಿ ಉತ್ಕøಷ್ಟ ಮಟ್ಟದ ಸಿಇಟಿ-ಜೆಇಇ-ನೀಟ್ ಕೋಚಿಂಗ್ ಸಿಗಬೇಕು. ಅಂತಹ ಕಾಲೇಜು ಸಿಗಬೇಕೆಂದರೆ ಎಸ್.ಎಸ್.ಎಲ್.ಸಿ.ಯಲ್ಲಿ ಒಂದೊಂದು ಅಂಕವೂ ಮುಖ್ಯ’ – ಇದು ಬಹುಪಾಲು ತಂದೆತಾಯಂದಿರಲ್ಲಿ ಇರುವ ಧಾವಂತ. ಈ ಧಾವಂತ ಕ್ಷಣಕ್ಷಣವೂ ಮಕ್ಕಳ ತಲೆಗೆ ವರ್ಗಾವಣೆ ಆಗುತ್ತಾ ಇರುತ್ತದೆ. ಬೆಳಗೆಂದರೇನು, ಸಂಜೆಯೆಂದರೇನು, ಮಳೆಯೆಂದರೇನು, ಬಿಸಿಲೆಂದರೇನು ಎಂದು ತಿಳಿಯದ ಮಕ್ಕಳು. ಬೆಳಕಾಗುವ ಮುನ್ನವೇ ಬಾಗಿಲು ತೆರೆಯುವ ಕೋಚಿಂಗ್ ಸಂಸ್ಥೆಗಳು, ಮಧ್ಯರಾತ್ರಿ ಕಳೆದರೂ ಮಲಗಲು ಬಿಡದ ಹಾಸ್ಟೆಲುಗಳು. ಓದಲೇಬೇಕು, ಕೋಚಿಂಗ್ ಪಡೆಯಲೇಬೇಕು, ಓದಿದ್ದನ್ನೇ ಓದಬೇಕು, ಉರುಹೊಡೆಯಲೇಬೇಕು, ಮತ್ತಮತ್ತೆ ಪರೀಕ್ಷೆ ಬರೆಯಬೇಕು, ಪರ್ಸೆಂಟೇಜು ಹೆಚ್ಚಾಗಬೇಕು...

ಈ ನಿರೀಕ್ಷೆಗಳ ಭಾರದಲ್ಲಿ ಮಕ್ಕಳ ಮನಸ್ಸಿನ ಪಾಡು ಯಾರಿಗೂ ಬೇಕಾಗಿಲ್ಲ. ಮನಸ್ಸು-ಬುದ್ಧಿಗಳು ಉಲ್ಲಾಸದಿಂದ ವಿಕಸಿತಗೊಳ್ಳಬೇಕಾದ ಬಂಗಾರದ ಕಾಲವದು. ಮನುಷ್ಯನ ಒಟ್ಟಾರೆ ವ್ಯಕ್ತಿತ್ವ ನಿರ್ಮಾಣವಾಗುವುದೇ ಈ ಹದಿಹರೆಯದ ಪರ್ವಕಾಲದಲ್ಲಿ. ಆದರೆ ಈಗ ಅಲ್ಲಿ ನಡೆಯುವುದು ಅಂಕ ಮೊಗೆಯುವ ಯಂತ್ರಗಳನ್ನು ತಯಾರು ಮಾಡುವ ಪ್ರಕ್ರಿಯೆ ಮಾತ್ರ. ಬುದ್ಧಿಭಾವಗಳು ಬಲಿಯಬೇಕಾದ ಕಾಲದಲ್ಲಿ ಇದೇನು ಮಾಡುತ್ತಿದ್ದೇವೆ ಎಂಬ ವಿವೇಕ ಯಾರಿಗೂ ಬೇಕಾಗಿಲ್ಲ. ಯಾವುದೋ ವೇಗೋತ್ಕರ್ಷದ ಬಲದಲ್ಲಿ ಆಸಕ್ತಿಯಿರುವ ಇಲ್ಲದಿರುವ ಎಲ್ಲ ಮಕ್ಕಳು ಮುಂದಮುಂದಕ್ಕೆ ತೇಲಿಕೊಂಡೇನೋ ಹೋಗುತ್ತವೆ. ಅವರ ನಿಜವಾದ ಭವಿಷ್ಯ ಏನು? ಮುಂದೆ ತಾವು ಜೀವನ ನಡೆಸಬೇಕಾದವರೊಂದಿಗೆ, ಸುತ್ತಲಿನ ಸಮಾಜದೊಂದಿಗೆ ಹೊಂದಿಕೊಂಡು ಸಂತೋಷವಾಗಿ ಬದುಕಬಲ್ಲರೇ ಇವರು?

ಸಂತೋಷ ಎಂದರೇನು? ಮುಂದೆ ದೊರೆಯಲಿರುವ ಉದ್ಯೋಗ, ಅದರಿಂದ ಸಂಪಾದನೆಯಾಗುವ ಹಣ ಮತ್ತು ಆ ಮೂಲಕ ದೊರೆಯುವ ಸಾಮಾಜಿಕ ಪ್ರತಿಷ್ಠೆ. ಸಮಾಜದ ಕಣ್ಣಿನಲ್ಲಿ ಇದೇ ಸಂತೋಷ. ಇದುವೇ ವೃತ್ತಿಪರ ಕೋರ್ಸುಗಳಲ್ಲಿ ಸೀಟು ಗಿಟ್ಟಿಸಿಕೊಳ್ಳುವ ಧಾವಂತದಲ್ಲಿ ದೆಸೆಗೆಟ್ಟು ಓಡುತ್ತಿರುವ ಒಟ್ಟಾರೆ ಸಮಾಜದ ಪರಮ ಉದ್ದೇಶ. ಇದರ ಹಿಂದಿರುವುದು ಶಿಕ್ಷಣ ಸಂಸ್ಥೆಗಳನ್ನು ಹಣದ ಮಳೆಗರೆಯುವ ಕಲ್ಪವೃಕ್ಷ-ಕಾಮಧೇನುಗಳನ್ನಾಗಿ ಮಾಡಿಕೊಂಡಿರುವ ಮಂದಿಯ ಸ್ವಾರ್ಥಬುದ್ಧಿ ಎಂಬುದು ನಮ್ಮ ಸಮಾಜಕ್ಕಿನ್ನೂ ಅರ್ಥವಾಗದಿರುವುದು ದುರಂತ.

ಈ ಕಾಲದಲ್ಲಿ ಒಂದೊಳ್ಳೆಯ ಜೀವನ ಕಟ್ಟಿಕೊಳ್ಳಬೇಕೆಂದರೆ ಹಣಕಾಸಿನ ಸ್ಥಿತಿಗತಿ ಚೆನ್ನಾಗಿರಬೇಕೆಂಬುದರಲ್ಲಿ ಅನುಮಾನವೇನೂ ಇಲ್ಲ. ಆದರೆ ಅದು ಎಷ್ಟು ಬೇಕು, ಹೇಗೆ ಬೇಕು ಎಂಬ ಬಗ್ಗೆ ಪ್ರಾಮಾಣಿಕವಾಗಿ ಯಾರೂ ಯೋಚಿಸಿಲ್ಲ. ಸಂಪಾದನೆ ಮಾಡುವುದು ತಪ್ಪಲ್ಲ; ಸಮಾಜದಲ್ಲಿ ನಾಲ್ಕು ಮಂದಿಯ ಗೌರವಕ್ಕೆ ಪಾತ್ರರಾಗಬೇಕು ಎಂಬ ಅಪೇಕ್ಷೆಯಿರುವುದು ತಪ್ಪಲ್ಲ. ಆದರೆ ಅದಕ್ಕೆ ಯಾವುದೋ ಒಂದೆರಡು ದಾರಿಗಳು ಮಾತ್ರ ಇರುವುದು ಎಂಬುದು ಮಾತ್ರ ಶುದ್ಧ ಭ್ರಮೆ. ಮರ್ಯಾದೆಯಿಂದ ಬದುಕುವುದಕ್ಕೆ ಸಾವಿರ ದಾರಿಗಳಿವೆ. ಎಲ್ಲರೂ ಒಂದೇ ರಸ್ತೆಯಲ್ಲಿ ಸಾಗುತ್ತಿದ್ದರೆ ಆಮೇಲೆ ಅವರೆಲ್ಲ ಅದೇ ಟ್ರಾಫಿಕ್ಕಿನಲ್ಲಿ ಬದುಕನ್ನೆಲ್ಲ ಕಳೆಯಬೇಕಾಗುತ್ತದೆ. ವಾಸ್ತವವಾಗಿ ಬೇರೆ ರಸ್ತೆ ಹಿಡಿದವರು ಉಳಿದವರಿಗಿಂತ ಮೊದಲೇ ಗಮ್ಯ ಸೇರಿರುತ್ತಾರೆ.

ರಿಲಯನ್ಸ್ ಎಂಬ ಸಾಮ್ರಾಜ್ಯವನ್ನು ಕಟ್ಟಿದ ಧೀರೂಭಾಯ್ ಅಂಬಾನಿ ಆರಂಭದಲ್ಲಿ ಏನಾಗಿದ್ದರು? ಹ್ಯಾರಿಪಾಟರ್ ಪುಸ್ತಕಗಳಿಂದಲೇ ಲೋಕಪ್ರಸಿದ್ಧಿ ಪಡೆದ ಜೆ.ಕೆ. ರೌಲಿಂಗ್ ಏನಾಗಿದ್ದರು? ಜಗತ್ಪ್ರಸಿದ್ಧ ಬ್ಯಾಗುಗಳ ಬ್ರಾಂಡ್ ಅನ್ನು ಕಟ್ಟಿಬೆಳೆಸಿದ ಗುಚಿಯೋ ಗುಚಿ ಏನಾಗಿದ್ದರು? ಮಸ್ಯಾಚುಸೆಟ್ಸ್ ಇನ್ಸ್‍ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಪ್ರವೇಶ ಪಡೆದ ಮೊದಲ ಅಂತಾರಾಷ್ಟ್ರೀಯ ಅಂಧವ್ಯಕ್ತಿ ಶ್ರೀಕಾಂತ್ ಬೊಲ್ಲಾ ಅಲ್ಲಿಯವರೆಗೆ ಎದುರಿಸಿದ ನೋವು-ಅವಮಾನಗಳೇನು? ನಾವು ನಮ್ಮ ಸುತ್ತಲಿನ ಸಮಾಜವನ್ನು ಕಣ್ಣುತೆರೆದು ನೋಡುವುದೇ ಇಲ್ಲ. ಯಾರೋ ಬೆಳೆಸಿದ ಭ್ರಮೆಯಲ್ಲಿ, ನಾವೇ ಹಾಕಿಕೊಂಡ ಕನ್ನಡಕದಲ್ಲಿ ಬಂಧಿಯಾಗಿರುತ್ತೇವೆ. 

ಪರ್ಸೆಂಟೇಜಿಗಿಂತ ಬದುಕು ತುಂಬ ದೊಡ್ಡದು. ಬದುಕಿನ ತೃಪ್ತಿಯನ್ನು ಎಸ್.ಎಸ್.ಎಲ್.ಸಿ. ಅಥವಾ ಪಿಯುಸಿಯ ಪರ್ಸೆಂಟೇಜಿನಿಂದ ಅಳೆಯಲು ಬರುವುದಿಲ್ಲ. ಮೂಲತಃ ಪರ್ಸೆಂಟೇಜು ಒಬ್ಬ ವ್ಯಕ್ತಿಯ ಒಟ್ಟಾರೆ ವ್ಯಕ್ತಿತ್ವವನ್ನು, ಪ್ರತಿಭೆಯನ್ನು ಅಳೆಯುವ ಮಾನದಂಡವೇ ಅಲ್ಲ. ಅದು ಮಗುವಿನೊಳಗೆ ಸುಪ್ತವಾಗಿಯೇ ಇರುತ್ತದೆ. ಅದನ್ನು ಸಶಕ್ತವಾಗಿ ಹೊರಗೆ ತರುವುದಕ್ಕೆ ಹತ್ತಾರು ಮಾರ್ಗಗಳಿವೆ. ಅದು ಕೋಚಿಂಗ್ ಸೆಂಟರುಗಳಲ್ಲಿ ವಿಕಾಸವಾಗುವುದಿಲ್ಲ. ಹಾರ್ವರ್ಡ್‍ನ ಮನಃಶಾಸ್ತ್ರಜ್ಞ ಹೊವಾರ್ಡ್ ಗಾರ್ಡನರ್ ಪ್ರತಿಪಾದಿಸಿರುವ ‘ಬಹುಬುದ್ಧಿವಂತಿಕೆಯ ಸಿದ್ಧಾಂತ’ವೂ (ಮಲ್ಟಿಪಲ್ ಇಂಟೆಲಿಜೆನ್ಸಸ್ ಥಿಯರಿ) ಇದನ್ನೇ ಪ್ರತಿಪಾದಿಸುತ್ತದೆ. ಬುದ್ಧಿವಂತಿಕೆಗೆ ಏಳೆಂಟು ಆಯಾಮಗಳಿವೆ, ಅವುಗಳಲ್ಲಿ ಯಾವುದಾರೂ ಒಂದೋ ಎರಡೋ ಮೂರೋ ಮಗುವಿನಲ್ಲಿ ಪ್ರಬಲವಾಗಿರಬಹುದು. ಅವುಗಳನ್ನು ಆರಂಭದಿಂದಲೇ ಗಮನಿಸಿ ಬೆಳೆಸಿದರೆ ಆ ಮಗು ಮುಂದೆ ತನ್ನ ಆಸಕ್ತಿಯ ಕ್ಷೇತ್ರದಲ್ಲಿ ಅಸಾಧಾರಣವಾದುದನ್ನು ಸಾಧಿಸಬಹುದು ಎಂದಿದ್ದಾರೆ ಗಾರ್ಡನರ್.

ಕೆಲವರಲ್ಲಿ ದೃಶ್ಶಿಕ (ವಿಶುವಲ್) ಶಕ್ತಿ ಪ್ರಬಲವಾಗಿರುತ್ತದೆ - ಆ ಶಕ್ತಿಯನ್ನು ಬೆಳೆಸಿದರೆ ಮುಂದೆ ಅವರು ಉತ್ತಮ ವಿನ್ಯಾಸಕಾರರಾಗಿ ಬೆಳೆಯಬಹುದು. ಕೆಲವರಲ್ಲಿ ಶಾಬ್ದಿಕ (ವರ್ಬಲ್) ಪ್ರತಿಭೆ ದಟ್ಟವಾಗಿರುತ್ತದೆ- ಮುಂದೆ ಅವರು ಉತ್ತಮ ಬರೆಹಗಾರರಾಗಿ, ಮಾತುಗಾರರಾಗಿ ಬೆಳೆಯಬಹುದು. ಇನ್ನು ಕೆಲವರಲ್ಲಿ ಸಂಗೀತದ (ಮ್ಯೂಸಿಕಲ್) ಕೌಶಲ ಆಳದಲ್ಲಿ ಬೇರೂರಿರುತ್ತದೆ- ಅವರು ಮುಂದೆ ಜಗತ್ತು ಮೆಚ್ಚುವ ಸಂಗೀತಗಾರರಾಗಿ ಬೆಳೆಯಬಹುದು. ಮತ್ತೆ ಕೆಲವರಲ್ಲಿ ತಾರ್ಕಿಕ (ಲಾಜಿಕಲ್) ಶಕ್ತಿ ಪ್ರಬಲವಾಗಿರುತ್ತದೆ- ಅವರು ಮುಂದೆ ವಿಜ್ಞಾನಿಯಾಗಿಯೋ, ಇಂಜಿನಿಯರಾಗಿಯೋ ಹೆಸರು ಮಾಡಬಹುದು. ಹಲವರಲ್ಲಿ ದೈಹಿಕ (ಬಾಡಿಲೀ) ಕೌಶಲಗಳು ಅಪೂರ್ವವಾಗಿರುತ್ತವೆ- ಅಂಥವರು ಮುಂದೆ ಕ್ರೀಡಾಕ್ಷೇತ್ರದಲ್ಲಿ ಪ್ರಸಿದ್ಧಿಗೇರಬಹುದು... ಇದನ್ನು ಗಾರ್ಡನರ್ ‘ಮಲ್ಟಿಪಲ್ ಇಂಟೆಲಿಜೆನ್ಸಸ್’ ಎಂದು ಕರೆದಿರುವುದು. ತಂದೆತಾಯಿಯರು ಮತ್ತು ಅಧ್ಯಾಪಕರು ಇದನ್ನು ಗುರುತಿಸುವುದನ್ನು ಮರೆತರೆ ತಮ್ಮ ಮಕ್ಕಳಿಗೆ ಬಹುದೊಡ್ಡ ಅನ್ಯಾಯ ಮಾಡಿದಂತೆ. ಇಂಜಿನಿಯರ್ ಆಗಲಾರದ ವ್ಯಕ್ತಿಯೊಬ್ಬ ನಾಳೆ ದೊಡ್ಡ ಹಾಡುಗಾರ ಆಗಬಹುದು, ವೈದ್ಯಕೀಯ ವಿಜ್ಞಾನ ಓದಲಾಗದವನೊಬ್ಬ ನಾಳೆ ದೊಡ್ಡ ಕ್ರೀಡಾಪಟುವಾಗಿ ಹೊರಹೊಮ್ಮಬಹುದು, ಚಿತ್ರಕಾರನೋ, ಸಾಹಿತಿಯೋ, ವಕೀಲನೋ, ಪತ್ರಕರ್ತನೋ, ಸಂಶೋಧನಕೋ, ಲೆಕ್ಕಪರಿಶೋಧಕನೋ, ಅಧಿಕಾರಿಯೋ, ಉದ್ಯಮಿಯೋ ಆಗಬಹುದು. ಈ ಸ್ಥಾನಗಳಲ್ಲಿರುವುದು ಅವಮಾನವೇ? ಇವುಗಳಿಂದ ವ್ಯಕ್ತಿಯೊಬ್ಬ ತನ್ನ ಬದುಕಿನ ತೃಪ್ತಿ ಕಂಡುಕೊಳ್ಳಲು ಸಾಧ್ಯವಿಲ್ಲವೇ?

ಎಲ್ಲರಿಗಿಂತ ಮೊದಲು ಅಪ್ಪ-ಅಮ್ಮಂದಿರು ತಮ್ಮ ಭ್ರಮೆಗಳಿಂದ ಹೊರಬರಬೇಕು. ಧನದಾಹಿಗಳ ಸ್ವಾರ್ಥದಲ್ಲಿ ನಲುಗುತ್ತಿರುವ ಶಿಕ್ಷಣವಲಯ ನಿರ್ಮಿಸಿರುವ ವ್ಯೂಹದೊಳಗೆ ತಾವು ಬಂಧಿಗಳಾಗಿದ್ದೇವೆ ಎಂಬುದನ್ನು ತಿಳಿಯಬೇಕು. ಮಕ್ಕಳು ನಮ್ಮ ಭ್ರಮೆಗಳನ್ನೆಲ್ಲ ಹೊತ್ತುಕೊಂಡು ಓಡಬೇಕಾದ ಕತ್ತೆಗಳಲ್ಲ. ಅವರಿಗೂ ಅವರದ್ದೇ ಆದ ಮನಸ್ಸು, ಕೌಶಲ, ಪ್ರತಿಭೆ, ಕನಸುಗಳು ಇರುತ್ತವೆ. ಅವು ಹೂವಿನಂತೆ ಸ್ವಾಭಾವಿಕವಾಗಿ ವಿಕಾಸವಾಗಿ, ಹೀಚಾಗಿ, ಕಾಯಿಯಾಗಿ, ಹಣ್ಣಾಗಿ ಸುತ್ತಲಿನ ಸಮಾಜಕ್ಕೆ ಹಿತವಾಗಿ, ಉಪಯುಕ್ತವಾಗಿ ಪರಿಣಮಿಸಲು ಅವಕಾಶ ಮಾಡಿಕೊಡೋಣ. ಇಲ್ಲವಾದರೆ ಭವಿಷ್ಯ ನಮ್ಮನ್ನು ಕ್ಷಮಿಸಲಾರದು.

- ಸಿಬಂತಿ ಪದ್ಮನಾಭ ಕೆ. ವಿ.

ಶುಕ್ರವಾರ, ಮಾರ್ಚ್ 29, 2024

ಪ್ರತಿಯೊಬ್ಬ ಕನ್ನಡಿಗನ ಬಳಿ ಇರಬೇಕಾದ ಕೃತಿ ʼಸರಿಗನ್ನಡ-ಸರಿಕನ್ನಡʼ

  • ಪುಸ್ತಕ: ಸರಿಗನ್ನಡ-ಸರಿಕನ್ನಡ
  • ಲೇಖಕರು: ಕೊಕ್ಕಡ ವೆಂಕಟ್ರಮಣ ಭಟ್‌, ಮಂಡ್ಯ
  • ಪ್ರಕಾಶಕರು: ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ (ರಿ.)
  • ವರ್ಷ: 2023
  • ಪುಟಗಳು: 180
  • ಬೆಲೆ: ರೂ. 200
  • ಸಂಪರ್ಕ: ಕೊಕ್ಕಡ ವೆಂಕಟ್ರಮಣ ಭಟ್‌ (9972448183), ಸಿರಿಬಾಗಿಲು ರಾಮಕೃಷ್ಣ ಮಯ್ಯ (9448344380)

ಎಲ್ಲರೂ ಕನ್ನಡ ರಕ್ಷಣೆಯ ಬಗ್ಗೆ ಮಾತಾಡುವವರೇ; ಆದರೆ ಕನ್ನಡ ಮಾತ್ರ ದಿನೇದಿನೇ ಸೊರಗುತ್ತಲೇ ಇದೆ. ದಿನಬೆಳಗಾದರೆ ಅಪಭ್ರಂಶಗಳೇ ಕಣ್ಣಿಗೆ ರಾಚುತ್ತಿರುತ್ತವೆ. ಭಾಷೆಯ ಸರಿಯಾದ ಬಳಕೆಯ ಬಗ್ಗೆ ಮಾತಾಡುವವರು ಬೆರಳೆಣಿಕೆಯಷ್ಟು. ಮಾತಾಡಿದರೂ ನೂರೆಂಟು ಕಾರಣ ಹೇಳಿ ಅವರ ಬಾಯಿ ಮುಚ್ಚಿಸುವವರೇ ಹೆಚ್ಚು.

ರಸ್ತೆಯಲ್ಲಿ ಐದು ನಿಮಿಷ ಓಡಾಡಿದರೆ ʼಶುಭಾಷಯʼದ ದೊಡ್ಡದೊಡ್ಡ ಫ್ಲೆಕ್ಸುಗಳು ಕಾಣುತ್ತವೆ. ಮೊಬೈಲು, ಸಾಮಾಜಿಕ ತಾಣಗಳಲ್ಲಂತೂ ದಿನಕ್ಕೆ ಹತ್ತಾರು ಬಾರಿ ʼಶುಭಾಷಯʼಗಳ ವಿನಿಮಯ ಆಗುತ್ತಾ ಇರುತ್ತದೆ. ಮೊನ್ನೆ ಒಂದು ಅಂಗಡಿಯ ಎದುರು ʼಹೊಸವರ್ಷದ ಶುಭಾಶಯಗಳುʼ ಎಂದು ಸರಿಯಾಗಿಯೇ ಬರೆದಿದ್ದರು. ಅಂಗಡಿಗೆ ಬಂದಿದ್ದಾತ ತನ್ನ ಹೆಂಡತಿಗೆ ಅದನ್ನು ತೋರಿಸಿ, “ನೋಡು! ಎಷ್ಟೊಂದು ತಪ್ಪು ಬರೆದಿದ್ದಾರೆ; ಅದು ಶುಭಾಷಯ ಆಗಬೇಕು” ಎಂದು ತಿಳಿಹೇಳುತ್ತಿದ್ದ. ತಪ್ಪುಗಳನ್ನೇ ಎಲ್ಲೆಡೆ ಬರೆಯುತ್ತಾ ಕೊನೆಗೆ ಸರಿಯಾದುದನ್ನೇ ತಪ್ಪು ಎಂದು ಜನರು ಸಾಧಿಸುವ ಕಾಲಕ್ಕೆ ಬಂದಿದ್ದೇವೆ. "ಸರಿಯಾಗಿ ಬರೆಯಲು ಬರುತ್ತಿಲ್ಲವೇ? ತಪ್ಪುಗಳನ್ನೇ ಜನಸ್ನೇಹೀ ಪರ್ಯಾಯ ಭಾಷೆಯೆಂದು ಬಿಂಬಿಸಿದರಾಯ್ತು" ಎಂಬ ಹೊಸ ವಾದಗಳನ್ನೂ ಹುಟ್ಟುಹಾಕುತ್ತಿದ್ದೇವೆ. ಇದು ಕೊನೆಗೆ ಎಲ್ಲಿಗೆ ತಲುಪೀತು? ಕನ್ನಡ ರಕ್ಷಣೆಗಾಗಿ ಕಲಾವಿದರು ಸಾಹಿತಿಗಳ ಹೊಸ ಸಂಘಟನೆ ಮಾಡುತ್ತಿರುವುದಾಗಿಯೂ, ಇದಕ್ಕೆ ಸಹಕರಿಸಿದರೆ "ನಿಮಗೆ ಹೊಳ್ಳೆದು ಹಾಗುತದೆ" ಎಂಬುದಾಗಿಯೂ ಒಬ್ಬ ಸಂಘಟಕರು ನನಗೆ ಇತ್ತೀಚೆಗೆ ಸಂದೇಶ ಕಳಿಸಿದ್ದರು. ಇವರ ಪ್ರಕಾರ ಕನ್ನಡದ ರಕ್ಷಣೆ ಎಂದರೆ ಏನು?

ಮಾಧ್ಯಮಗಳು ಭಾಷೆಯನ್ನು ಉಳಿಸಿ, ಬೆಳೆಸುವ ವೇದಿಕೆಗಳೆಂಬ ಹೆಗ್ಗಳಿಕೆ ಹೊಂದಿದ್ದವು. ಭಾಷೆ ಹಾಗೂ ಸಾಹಿತ್ಯದ ಬೆಳವಣಿಗೆಗೆ ಮುದ್ರಣ ಮಾಧ್ಯಮದ ಕೊಡುಗೆಯಂತೂ ಅಪಾರ. “ಪತ್ರಿಕೆಯೆಂದರೆ ಪದಗಳ ಟಂಕಸಾಲೆ”ಯೆಂದು ಹಿರಿಯರು ಹೇಳಿದ್ದುಂಟು. ಆದರೆ ಇತ್ತೀಚಿನ ವರ್ಷಗಳಲ್ಲಿ ಪತ್ರಿಕೆಗಳು, ಟಿವಿ ವಾಹಿನಿಗಳಲ್ಲಿ ಭಾಷೆಯ ಕಗ್ಗೊಲೆಯಾಗುತ್ತಿರುವುದು ನೋಡಿದರೆ ತೀರಾ ಕಸಿವಿಸಿ ಎನಿಸುತ್ತದೆ. ಹೆಜ್ಜೆಹೆಜ್ಜೆಗೂ ಅಪಶಬ್ದಗಳು, ಕಾಗುಣಿತ ದೋಷಗಳು… ಇವು ಮಾಧ್ಯಮಗಳ ಗುಣಮಟ್ಟವನ್ನು ಹೇಳುವುದಕ್ಕಿಂತಲೂ ನಮ್ಮ ಶಿಕ್ಷಣದ ಹಾಗೂ ಅಧ್ಯಾಪಕರ ಗುಣಮಟ್ಟದತ್ತಲೇ ಹೆಚ್ಚು ಬೊಟ್ಟು ಮಾಡುತ್ತಿರುವಂತಿದೆ.

ಇರಲಿ. ಭಾಷೆಯ ಉಳಿವಿಗೆ, ಸರಿಯಾದ ಬಳಕೆಯ ಬೆಳವಣಿಗೆಗೆ ನಾವೇನು ಮಾಡಬಹುದು ಎಂಬ ಪ್ರಶ್ನೆಗೆ ಇತ್ತೀಚೆಗೆ ಪ್ರಕಟವಾಗಿರುವ ಶ್ರೀ ಕೊಕ್ಕಡ ವೆಂಕಟ್ರಮಣ ಭಟ್ಟರ ʼಸರಿಗನ್ನಡ-ಸರಿನ್ನಡʼ ಕೃತಿಯು ಅತ್ಯಂತ ಸೂಕ್ತ ಉತ್ತರದಂತಿದೆ. ಕನ್ನಡವನ್ನು ಸಾಕಷ್ಟು ಚೆನ್ನಾಗಿ ಬಲ್ಲವರೂ ಪ್ರತಿದಿನ ಮಾಡುವ ಹತ್ತಾರು ತಪ್ಪುಗಳನ್ನು ಉದಾಹರಣೆಗಳೊಂದಿಗೆ ವಿವರಿಸಿ, ಸರಿಯಾದ ಬಳಕೆ ಯಾವುದೆಂಬುದನ್ನು ತಿಳಿಸುವ ಅಮೂಲ್ಯ ಕೆಲಸವನ್ನು ಭಟ್ಟರು ಈ ಪುಸ್ತಕದ ಮೂಲಕ ಮಾಡಿದ್ದಾರೆ.

ಪತ್ರಿಕೆಗಳಲ್ಲಿ ದಿನಕ್ಕೊಮ್ಮೆಯಾದರೂ ʼಅಪ್ರಾಪ್ತನ ಬಂಧನʼ ಎಂಬ ಬಳಕೆಯನ್ನು ಕಾಣುತ್ತೇವೆ. ಭಾಷಣಕಾರರು ಮಾತಿಗೆ ತೊಡಗಿದರೆ ʼಅಜಗಜಾಂತರ ವ್ಯತ್ಯಾಸʼ ಎನ್ನುತ್ತಾರೆ. ಅನಾನುಕೂಲ, ಯಡವಟ್ಟು, ನಾಗರೀಕ, ಜಾತ್ಯಾತೀತ, ಕೋಟ್ಯಾಧಿಪತಿ, ಸದಾವಕಾಶ, ರೋಧನ, ಪೂರ್ವಾಗ್ರಹ, ಧಾಳಿ, ಅಮೂಲಾಗ್ರ… ಹೀಗೆ ತಪ್ಪುಬಳಕೆಗಳನ್ನೇ ಎಲ್ಲೆಡೆ ಕಾಣುತ್ತೇವೆ. ಕನ್ನಡ ಅಧ್ಯಾಪಕರು, ಕನ್ನಡ ಪತ್ರಕರ್ತರು, ಸಾಹಿತಿಗಳು… ಇವುಗಳನ್ನೇ ಸಲೀಸಾಗಿ ಬರೆಯುತ್ತಿರುತ್ತಾರೆ. ತಪ್ಪುಗಳನ್ನೇ ಬರೆಯುತ್ತಾ ಇವೇ ಸರಿಯಾದ ಬಳಕೆಗಳು ಎಂದು ವಾದಿಸುವಷ್ಟರಮಟ್ಟಿಗೆ ಇವು ದಿನನಿತ್ಯದ ಬಳಕೆಗಳಲ್ಲಿ ಗಟ್ಟಿಯಾಗಿಬಿಟ್ಟಿವೆ. ಇವು ಯಾಕೆ ತಪ್ಪು, ಸರಿಯಾದ ಬಳಕೆ ಯಾವುದು, ಸರಿಯಾದುದನ್ನು ಉಳಿಸಿ ಬೆಳೆಸಬೇಕಾದ ಅಗತ್ಯ ಏನು ಎಂಬುದನ್ನು ತಮ್ಮ ಪುಸ್ತಕದಲ್ಲಿ ಸಮರ್ಥವಾಗಿ ವಿವರಿಸಿದ್ದಾರೆ ಶ್ರೀ ವೆಂಕಟ್ರಮಣ ಭಟ್ಟರು.

ಈ ರೀತಿಯ ಪದಗಳನ್ನು ಅಕಾರಾದಿ ಜೋಡಿಸಿರುವುದರಿಂದ ಪರಾಮರ್ಶನದ ದೃಷ್ಟಿಯಿಂದಲೂ ಕೃತಿ ಅನುಕೂಲಕರವಾಗಿದೆ. ಕೃತಿಕಾರರು ಸುಮಾರು ನಾಲ್ಕು ದಶಕಗಳ ಕಾಲ ಸಂಸ್ಕೃತ ಅಧ್ಯಾಪಕರಾಗಿ ಸೇವೆ ಸಲ್ಲಿಸಿರುವುದರಿಂದ ಪದಗಳ ವ್ಯುತ್ಪತ್ತಿ, ಅವುಗಳ ಅರ್ಥ, ತಪ್ಪು ಬಳಕೆಯಿಂದ ಆಗುವ ಅನರ್ಥಗಳನ್ನು ಅಧಿಕೃತವಾಗಿ ಹೇಳಬಲ್ಲವರಾಗಿದ್ದಾರೆ.

ʼಸರಿಗನ್ನಡ-ಸರಿಕನ್ನಡʼ ನಿಜಕ್ಕೂ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ದೊಡ್ಡದೊಂದು ಕೊಡುಗೆ. ಪ್ರತೀ ಕನ್ನಡ ಪತ್ರಿಕೆ, ಟಿವಿ ವಾಹಿನಿಗಳೇ ಮೊದಲಾದ ಮಾಧ್ಯಮಗಳು ತಮ್ಮ ಕಚೇರಿಗಳಲ್ಲಿ ಇಟ್ಟುಕೊಳ್ಳಬೇಕಾದ ಪುಸ್ತಕ ಇದು. ಕನ್ನಡ ಅಧ್ಯಾಪಕರು, ವಿದ್ಯಾರ್ಥಿಗಳು, ಪತ್ರಕರ್ತರಂತೂ ತಮ್ಮ ಬಳಿ ಸದಾ ಇರಿಸಿಕೊಳ್ಳಬೇಕಾದ ಕೃತಿಯಿದು. ಅಷ್ಟೇ ಏಕೆ, ಭಾಷೆಯ ಬಗ್ಗೆ ಪ್ರೀತಿ-ಅಭಿಮಾನವುಳ್ಳ ಪ್ರತಿಯೊಬ್ಬ ಕನ್ನಡಿಗನೂ ಗಮನಿಸಬೇಕಾದ, ಪರಸ್ಪರ ಹಂಚಿಕೊಳ್ಳಬೇಕಾದ ಪುಸ್ತಕ ಇದೆಂದರೆ ಅತಿಶಯವೇನೂ ಇಲ್ಲ.

ಈ ಕಾಲಕ್ಕೆ ಬಹಳ ಅಗತ್ಯವಿರುವ ಕೃತಿಯಿದು. ಇಂತಹದೊಂದು ಮಹತ್ವದ ಪುಸ್ತಕ ರಚಿಸಿರುವ ಶ್ರೀ ಕೊಕ್ಕಡ ವೆಂಕಟ್ರಮಣ ಭಟ್ಟರಿಗೂ, ಇದನ್ನು ಪ್ರಕಟಿಸಿರುವ ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನಕ್ಕೂ ನಾವು ಆಭಾರಿಗಳಾಗಿರಬೇಕು. ಭೌಗೋಳಿಕವಾಗಿ ಕರ್ನಾಟಕದ ಹೊರಗಿರುವ, ಗಡಿನಾಡಿನ ಸಂಸ್ಥೆಯೊಂದು ಇಂತಹ ಘನಕಾರ್ಯವನ್ನು ಮಾಡಿದೆ ಎಂಬುದನ್ನು ನಾವೆಲ್ಲ ಗಮನಿಸಬೇಕು ಮತ್ತು ಅಭಿನಂದಿಸಬೇಕು.

 - ಸಿಬಂತಿ ಪದ್ಮನಾಭ ಕೆ. ವಿ.

ಶನಿವಾರ, ಜನವರಿ 27, 2024

ಭಾರತೀಯ ಪತ್ರಿಕಾಲೋಕದ ಹಿಂದಿನ ಕಥೆ

28 ಜನವರಿ 2024ರ ʻಉದಯವಾಣಿ ಸಾಪ್ತಾಹಿಕ ಸಂಪದʼದಲ್ಲಿ ಪ್ರಕಟವಾದ ಲೇಖನ

ಕಾಫಿಯಿಲ್ಲದ ಬೆಳಗನ್ನಾದರೂ ಊಹಿಸಬಹುದು, ಪತ್ರಿಕೆಯಿಲ್ಲದ ಮುಂಜಾವನ್ನು ಊಹಿಸಿಕೊಳ್ಳುವುದು ಕಡುಕಷ್ಟ. ಪತ್ರಿಕೆಯ ಜಾಗದಲ್ಲಿ ಮೊಬೈಲೇನೋ ಬಂದು ಕೂತಿರಬಹುದು, ಆದರೆ ಮನುಷ್ಯನ ದಿನದ ಬಾಗಿಲನ್ನು ತೆರೆಯುವುದು ಯಾವುದೋ ಒಂದು ಮಾಧ್ಯಮ ಎಂಬುದರಲ್ಲಿ ಎರಡು ಮಾತಿಲ್ಲ. ಯಾವ ಮಾಧ್ಯಮ ಬಂದರೂ ಪತ್ರಿಕೆಯ ಮೇಲೆ ಕಣ್ಣಾಡಿಸದೆ ತೃಪ್ತಿಯಿಲ್ಲ ಎನ್ನುವ ಮಂದಿಯಂತೂ ಬೇಕಾದಷ್ಟಿದ್ದಾರೆ.

ಪತ್ರಿಕೆಗಳನ್ನು ಇಷ್ಟೊಂದು ಹಚ್ಚಿಕೊಂಡಿರುವ ಎಲ್ಲರಿಗೂ ‘ಜನರನ್ನು ಈ ಮಟ್ಟಕ್ಕೆ ಪ್ರಭಾವಿಸಿರುವ ಇಂತಹದೊಂದು ಮಾಧ್ಯಮ ಹೇಗೆ ಹುಟ್ಟಿಕೊಂಡಿತು? ಯಾವಾಗ ಹುಟ್ಟಿಕೊಂಡಿತು?’ ಎಂಬ ಪ್ರಶ್ನೆ ಕಾಡದಿರದು.  ಆ ಕಥೆ ಬಹಳ ಸ್ವಾರಸ್ಯಕರವಾಗಿದೆ. ಸದ್ಯಕ್ಕೆ ನಾವು ಭಾರತದಲ್ಲಿ ಪತ್ರಿಕೆಗಳು ಹೇಗೆ ಹುಟ್ಟಿಕೊಂಡವು? ನಮ್ಮ ದೇಶದ ಮೊದಲ ಪತ್ರಿಕೆಯ ಕಥೆ ಏನು? ಆರಂಭಿಸಿದವರು ಯಾರು? ಇತ್ಯಾದಿಗಳನ್ನು ಗಮನಿಸೋಣ. 

ಸುಮಾರು ಇನ್ನೂರೈವತ್ತು ವರ್ಷಗಳ ಹಿಂದೆ ಭಾರತದಲ್ಲಿ ಪತ್ರಿಕೆಗಳೇ ಇರಲಿಲ್ಲ. ಇರಲಿಲ್ಲ ಎಂದರೆ ಜನ ಪತ್ರಿಕೆಗಳನ್ನು ಕಂಡೇ ಇರಲಿಲ್ಲ ಎಂದಲ್ಲ. ಯುರೋಪಿನ ಪತ್ರಿಕೆಗಳನ್ನು ಜನರು ಓದುತ್ತಿದ್ದುದುಂಟು. ಇಲ್ಲಿ ಬ್ರಿಟಿಷರ ವ್ಯಾಪಾರ ವ್ಯವಹಾರ ಜೋರಾಗಿದ್ದುದರಿಂದ, ಇಂಗ್ಲೆಂಡಿನಿಂದ ಹಡಗುಗಳ ಮೂಲಕ ಪತ್ರಿಕೆಗಳೂ ಆಗೊಮ್ಮೆ ಈಗೊಮ್ಮೆ ಬರುತ್ತಿದ್ದವು. ಅವು ಮೂರ್ನಾಲ್ಕು ತಿಂಗಳು ಹಳೆಯ ಪತ್ರಿಕೆಗಳು. ಅವನ್ನೇ ಇಲ್ಲಿನ ಮಂದಿ ಬಿಸಿಬಿಸಿ ಸುದ್ದಿಗಳೆಂದು ಭಾವಿಸಿ ಓದಬೇಕಿತ್ತು.

ವ್ಯಾಪಾರಿಯ ಕನಸು:

ಭಾರತದಲ್ಲೇ ಪತ್ರಿಕೆಗಳನ್ನು ಮುದ್ರಿಸಬೇಕು ಎಂಬ ಯೋಚನೆ ಮೊದಲು ಬಂದದ್ದು ವಿಲಿಯಂ ಬೋಲ್ಟ್ಸ್ ಎಂಬ ಯುರೋಪಿಯನ್ ವ್ಯಾಪಾರಿಗೆ. ಭಾರತದಲ್ಲಿ ಪತ್ರಿಕೆಗಳಿಲ್ಲದೆ ವ್ಯಾಪಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದೂ, ಯಾರಾದರೂ ಮುದ್ರಣಾಲಯವನ್ನು ಸ್ಥಾಪಿಸುವ ಆಸಕ್ತರಿದ್ದರೆ ಅವರಿಗೆ ತಾನು ಸಹಾಯ ಮಾಡುತ್ತೇನೆ ಎಂದೂ, ತನ್ನಲ್ಲಿ ಸಾಕಷ್ಟು ವಿಶೇಷ ಸುದ್ದಿಗಳಿದ್ದು ಅವನ್ನು ಓದಬಯಸುವವರು ತನ್ನಮನೆಗೆ ಬೆಳಗ್ಗಿನ ಹೊತ್ತು ಬರಬಹುದು ಎಂದೂ ಒಂದು ಕರಪತ್ರವನ್ನು ಸಿದ್ಧಪಡಿಸಿ ಅವನು ಕಲ್ಕತ್ತಾದ ಕೌನ್ಸಿಲ್ ಹೌಸಿನ ಹೆಬ್ಬಾಗಿಲಿನಲ್ಲಿ ಅಂಟಿಸಿದ. ಅದು 1760ರ ದಶಕದ ಕೊನೆಯ ಭಾಗ.

ಕಂಪೆನಿ ಸರ್ಕಾರಕ್ಕೆ ಅಲ್ಲೇ ಅಪಾಯದ ಮುನ್ಸೂಚನೆ ಕಂಡಿತು. ಇದನ್ನು ಚಿಗುರಲ್ಲೇ ಚಿವುಟದೆ ಹೋದರೆ ನಮಗೇ ಸಂಚಕಾರ ಉಂಟಾದೀತು ಎಂದು ಭಾವಿಸಿದ ಕಂಪೆನಿ ಅಧಿಕಾರಿಗಳು ಬೋಲ್ಟ್ಸ್‍ನನ್ನು ಗಡಿಪಾರು ಮಾಡುವುದೇ ಸರಿ ಎಂದು ಯೋಚಿಸಿದರು. ಆತ ಕೂಡಲೇ ಬಂಗಾಲ ತೊರೆದು ಮದ್ರಾಸಿಗೆ ಹೋಗಿ, ಅಲ್ಲಿಂದ ಇಂಗ್ಲೆಂಡ್‍ನ ಹಡಗು ಹಿಡಿಯಬೇಕು ಎಂದು ಸರ್ಕಾರ ಆದೇಶಿಸಿತು. ಅಲ್ಲಿಗೆ ಭಾರತದ ಮೊದಲ ಪತ್ರಿಕೆ ಹುಟ್ಟುವ ಮೊದಲೇ ಸತ್ತುಹೋಯಿತು.

ಬೆಂಗಾಲ್ ಗಜೆಟ್:

ಇದಾಗಿ ಹನ್ನೆರಡು ವರ್ಷಗಳ ಬಳಿಕ ಭಾರತದ ಮೊತ್ತಮೊದಲ ಪತ್ರಿಕೆ ‘ಬೆಂಗಾಲ್ ಗಜೆಟ್’ನ ಉಗಮವಾಯಿತು. 1780ರ ಜನವರಿ 29ರಂದು ಜೇಮ್ಸ್ ಆಗಸ್ಟಸ್ ಹಿಕಿ ಎಂಬ ಇನ್ನೊಬ್ಬ ಯುರೋಪಿಯನ್ ವ್ಯಾಪಾರಿ ‘ಬೆಂಗಾಲ್ ಗಜೆಟ್’ನ ಮೊದಲ ಸಂಚಿಕೆಯನ್ನು ಹೊರಡಿಸಿದ. ಅದಕ್ಕೆ ‘ದಿ ಒರಿಜಿನಲ್ ಕಲ್ಕತ್ತಾ ಜನರಲ್ ಅಡ್ವಟೈಸರ್’ ಎಂಬ ಇನ್ನೊಂದು ಹೆಸರೂ ಇತ್ತು. ಆ ಪತ್ರಿಕೆಗೆ ಹಿಕಿಯೇ ಲೇಖಕ, ವರದಿಗಾರ, ಪ್ರಕಾಶಕ, ಮುದ್ರಕ ಎಲ್ಲವೂ ಆಗಿದ್ದರಿಂದ ಅದಕ್ಕೆ ‘ಹಿಕೀಸ್ ಗಜೆಟ್’ ಎಂಬ ಹೆಸರೂ ಇತ್ತು.

ಭಾರತದಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿಯ ಕೇಂದ್ರಸ್ಥಾನ ಬಂಗಾಳದ ಕಲ್ಕತ್ತಾವೇ ಆಗಿದ್ದುದರಿಂದ ನಮ್ಮ ಪತ್ರಿಕೋದ್ಯಮದ ಜನ್ಮಸ್ಥಳವೂ ಅದೇ ಆಯಿತು. ‘ಬೆಂಗಾಲ್ ಗಜೆಟ್’ ಇಂಗ್ಲಿಷ್ ಭಾಷೆಯ ವಾರಪತ್ರಿಕೆ ಆಗಿತ್ತು. 12 ಇಂಚು ಉದ್ದ, 8 ಇಂಚು ಅಗಲದ ಈ ಪುಟ್ಟ ಪತ್ರಿಕೆಯಲ್ಲಿ ನಾಲ್ಕು ಪುಟಗಳಿದ್ದವು. ಪುಟಗಳನ್ನು ತಲಾ ಮೂರು ಕಾಲಂಗಳಾಗಿ ವಿಭಾಗಿಸಲಾಗಿತ್ತು. ಕಂಪೆನಿ ಅಧಿಕಾರಿಗಳು, ಇಂಗ್ಲಿಷ್ ಬಲ್ಲ ಕೆಲವು ಭಾರತೀಯರು ಇದರ ಓದುಗರಾಗಿದ್ದರು. ಸರಾಸರಿ 400 ಪ್ರತಿಗಳಷ್ಟು ‘ಗಜೆಟ್’ ಪ್ರಕಟವಾಗುತ್ತಿತ್ತು. ಅದರ ಮುದ್ರಣವೇನೂ ಅಷ್ಟೊಂದು ಸೊಗಸಾಗಿರಲಿಲ್ಲ. ಸುದ್ದಿಗಳಿಗಿಂತ ಜಾಹೀರಾತುಗಳೇ ಹೆಚ್ಚಾಗಿದ್ದವು.

ಯಾರೀತ ಹಿಕಿ?

‘ಈಸ್ಟ್ ಇಂಡಿಯಾ ಕಂಪೆನಿಯ ಮಾಜಿ ಮುದ್ರಕ’ ಎಂದು ಜೇಮ್ಸ್ ಆಗಸ್ಟಸ್ ಹಿಕಿ ತನ್ನನ್ನು ತಾನು ಪರಿಚಯಿಸಿಕೊಂಡಿದ್ದ. ಆತ ಮೂಲತಃ ಐರ್ಲೆಂಡಿನವನು. 1740ರ ಆಸುಪಾಸಿನಲ್ಲಿ ಜನಿಸಿದ. ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡಿದ್ದ ಹಿಕಿ 1772ರಲ್ಲಿ ಭಾರತಕ್ಕೆ ಬಂದು ಈಸ್ಟ್ ಇಂಡಿಯಾ ಕಂಪೆನಿ ಸೇರಿಕೊಂಡ. ‘ಶಸ್ತ್ರಚಿಕಿತ್ಸಕ’ನಾಗಿ, ಮುದ್ರಣ ಸಹಾಯಕನಾಗಿ ಆತ ಕಾರ್ಯನಿರ್ವಹಿಸುತ್ತಿದ್ದ. ವ್ಯಾಪಾರದಲ್ಲಿ ಸಾಕಷ್ಟು ನಷ್ಟ ಅನುಭವಿಸಿ ಸಾಲ ತೀರಿಸಲಾಗದೆ ಜೈಲುಪಾಲಾದ. ಜೈಲಿನಲ್ಲಿದ್ದಾಗಲೇ ಒಂದು ಮುದ್ರಣ ಯಂತ್ರ ಪಡೆದುಕೊಂಡು ಮುದ್ರಣದ ಕೆಲಸ ಆರಂಭಿಸಿದ. 1777ರಲ್ಲಿ ಜೈಲಿನಿಂದ ಹೊರಬಂದು ತನ್ನದೇ ಪ್ರಿಂಟಿಂಗ್ ಪ್ರೆಸ್ ಆರಂಭಿಸಿದ. ಮೂರು ವರ್ಷಗಳ ಬಳಿಕ ಅವನಿಂದಲೇ ಭಾರತದ ಮೊದಲ ಪತ್ರಿಕೆ ಆರಂಭವಾಯಿತು.

ಹಿಕಿ ಒಬ್ಬ ವಿಲಕ್ಷಣ ಪ್ರವೃತ್ತಿಯ ವ್ಯಕ್ತಿ. ಆತನ ‘ಬೆಂಗಾಲ್ ಗಜೆಟ್’ ಆರಂಭದಲ್ಲಿ ಗಂಭೀರವಾಗಿಯೇ ಪ್ರಕಟವಾಗುತ್ತಿತ್ತು. ತನ್ನದು “ಎಲ್ಲ ಪಕ್ಷಗಳಿಗೂ ಮುಕ್ತವಾದ ಆದರೆ ಯಾರಿಂದಲೂ ಪ್ರಭಾವಕ್ಕೊಳಗಾಗದ ಪತ್ರಿಕೆ” ಎಂದು ಪತ್ರಿಕೆಯ ಮೇಲ್ಭಾಗದಲ್ಲೇ ಹಿಕಿ ಪ್ರಕಟಿಸುತ್ತಿದ್ದ. ಆದರೆ ಎಂಟ್ಹತ್ತು ತಿಂಗಳಲ್ಲಿ ‘ಇಂಡಿಯಾ ಗಜೆಟ್’ ಎಂಬ ಇನ್ನೊಂದು ಪತ್ರಿಕೆ ಆರಂಭವಾದಾಗ, ಹಿಕಿಗೆ ಆತಂಕವಾಯಿತು. ತನ್ನ ಓದುಗರು ಎಲ್ಲಿ ಕಡಿಮೆಯಾಗುತ್ತಾರೋ ಎಂಬ ಆತಂಕದಲ್ಲಿ ತನ್ನ ಪತ್ರಿಕೆಯ ಧ್ವನಿಯನ್ನೇ ಬದಲಾಯಿಸಿಕೊಂಡ. ಸುದ್ದಿಗಳಲ್ಲಿ, ಲೇಖನಗಳಲ್ಲಿ ಅಲ್ಲಿಯವರೆಗೆ ಇದ್ದ ಸಮತೋಲನ ಕಳೆದುಹೋಗಿ ವೈಯಕ್ತಿಕ ಪ್ರಹಾರಗಳನ್ನು ಆರಂಭಿಸಿದ.

ಪ್ರಖರ ಟೀಕಾಕಾರ:

ಸ್ವತಃ ಯುರೋಪಿಯನ್ನನಾಗಿದ್ದೂ ಹಿಕಿ ಈಸ್ಟ್ ಇಂಡಿಯಾ ಕಂಪೆನಿಯ ಪ್ರಖರ ಟೀಕಾಕಾರನಾಗಿದ್ದ. ಅಲ್ಲಿನ ಅಧಿಕಾರಿಗಳ ದಬ್ಬಾಳಿಕೆ ಹಾಗೂ ಭ್ರಷ್ಟಾಚಾರಗಳನ್ನು ತೀಕ್ಷ್ಣವಾಗಿ ಖಂಡಿಸಿ ಲೇಖನಗಳನ್ನು ಪ್ರಕಟಿಸುತ್ತಿದ್ದ. ‘ಬೆಂಗಾಲ್ ಗಜೆಟ್’ ಬ್ರಿಟಿಷ್ ಅಧಿಕಾರಿಗಳ ಪಾಲಿಗೆ ನುಂಗಲಾರದ ಬಿಸಿತುಪ್ಪವಾಗಿತ್ತು. ಆಗ ಭಾರತದ ಗವರ್ನರ್ ಜನರಲ್ ಆಗಿದ್ದ ವಾರನ್ ಹೇಸ್ಟಿಂಗ್ಸ್, ಸುಪ್ರೀಂಕೋರ್ಟಿನ ಮುಖ್ಯನಾಯಾಧೀಶರಾಗಿದ್ದ ಸರ್ ಎಲಿಜಾ ಇಂಪೆಯವರನ್ನೂ ಬಿಡದೆ ಕಾಡಿದ ಹಿಕಿ.

ಆದರೆ ಟೀಕೆಯ ಭರದಲ್ಲಿ ಹಿಕಿ ವೈಯಕ್ತಿಕ ದಾಳಿಯಲ್ಲಿ ತೊಡಗಿದ. ತನಗಾಗದಿದ್ದವರ ಖಾಸಗಿ ಬದುಕಿನ ಕುರಿತು ವ್ಯಂಗ್ಯವಾಡಿದ. ಹೇಸ್ಟಿಂಗ್ಸ್‍ನ ಪತ್ನಿಯ ಕುರಿತೂ ದೋಷಾರೋಪಣೆ ಮಾಡಿದ. ಇದರಿಂದಾಗಿ ಹಿಕಿ ಪದೇಪದೇ ಮಾನನಷ್ಟ ಮೊಕದ್ದಮೆಗಳನ್ನು ಎದುರಿಸಬೇಕಾಯಿತು. ಕೋರ್ಟು ಕಚೇರಿ ಅಲೆದಾಡಬೇಕಾಯಿತು. ಸಾವಿರಾರು ರುಪಾಯಿ ದಂಡ ಹಾಕಿಸಿಕೊಳ್ಳಬೇಕಾಯಿತು. ಬೆಂಗಾಲ್ ಗಜೆಟ್‍ನ ಅಂಚೆ ಸೌಲಭ್ಯ ರದ್ದಾಯಿತು. ಕೊನೆಗೊಂದು ದಿನ ಹಿಕಿಯ ಮುದ್ರಣಾಲಯವನ್ನೇ ಸರ್ಕಾರ ವಶಪಡಿಸಿಕೊಂಡು ಬೀಗ ಜಡಿಯಿತು. 1782ರ ಮಾರ್ಚ್ 23ರಂದು ಗಜೆಟ್‍ನ ಕೊನೆಯ ಸಂಚಿಕೆ ಪ್ರಕಟವಾಯಿತು.

ಮರೆತುಹೋದ ಮಹಾನುಭಾವ:

ಹಿಕಿಯ ಬಗ್ಗೆ ಇತಿಹಾಸದಲ್ಲಿ ಅಂತಹ ಒಳ್ಳೆಯ ಅಭಿಪ್ರಾಯವೇನೂ ಇಲ್ಲ. ಆದರೆ ಆತನಿಂದಲೇ ಭಾರತೀಯ ಪತ್ರಿಕಾಲೋಕ ಹುಟ್ಟಿಕೊಂಡಿತು ಎಂಬುದರಲ್ಲಿ ಎರಡು ಮಾತಿಲ್ಲ. ಆತ ಒಳ್ಳೆಯ ಉದ್ದೇಶದಿಂದಲೇ ಪತ್ರಿಕೆ ಆರಂಭಿಸಿದ, ಬ್ರಿಟಿಷರ ಭ್ರಷ್ಟಾಚಾರಗಳನ್ನು ಕಟುವಾಗಿ ಟೀಕಿಸಿದ. ಪತ್ರಿಕಾ ಸ್ವಾತಂತ್ರ್ಯವನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಕೊನೆಯವರೆಗೂ ಹೋರಾಡಿದ. ಆದರೆ ಒಂದು ಹಂತದಲ್ಲಿ ಆತ ಬೆಳೆಸಿಕೊಂಡ ಕೀಳು ಅಭಿರುಚಿ ಹಾಗೂ ಕಂಪೆನಿಯ ಪೂರ್ವಗ್ರಹದಿಂದ ಆತನಿಗೆ ಹೆಚ್ಚುಸಮಯ ಪತ್ರಿಕೆಯನ್ನು ನಡೆಸಲಾಗಲಿಲ್ಲ. ಆತನನ್ನು ‘ಮರೆತುಹೋದ ಮಹಾನುಭಾವ’ ‘ಭಾರತೀಯ ಪತ್ರಿಕೋದ್ಯಮದ ಪಿತಾಮಹ’ ಅಂತಲೂ ಇತಿಹಾಸಕಾರರು ದಾಖಲಿಸಿದ್ದುಂಟು.

ಒಟ್ಟಿನಲ್ಲಿ, ಬೆಂಗಾಲ್ ಗಜೆಟ್‍ನ ಹುಟ್ಟಿನ ನೆನಪಲ್ಲಿ ಜನವರಿ 29 ‘ಭಾರತೀಯ ಪತ್ರಿಕಾ ದಿನ’ ಎಂದು ಪ್ರಸಿದ್ಧಿಪಡೆದಿದೆ. ನಮ್ಮ ಪತ್ರಿಕಾಲೋಕದ ಸಿಂಹಾವಲೋಕನಕ್ಕೆ ಇದು ಸುದಿನ.

- ಸಿಬಂತಿ ಪದ್ಮನಾಭ ಕೆ. ವಿ.

ಮಂಗಳವಾರ, ಅಕ್ಟೋಬರ್ 31, 2023

ಸವಾಲುಗಳೆಂಬ ಬದುಕಿನ ದೀಪಸ್ತಂಭಗಳು

23-29 ಸೆಪ್ಟೆಂಬರ್‌ 2023ರ ʻಬೋಧಿವೃಕ್ಷʼದಲ್ಲಿ ಪ್ರಕಟವಾದ ಲೇಖನ

:

:

ತೇಜಸ್ವಿ ಪಿಯುಸಿಗೆ ಬರುವ ಹೊತ್ತಿಗೆ ಕೋವಿಡ್ ಮಹಾಮಾರಿ ಜಗತ್ತನ್ನು ಆವರಿಸಿಕೊಂಡಿತ್ತು. ಎಲ್ಲೆಡೆ ಲಾಕ್‌ಡೌನ್, ಎಲ್ಲರಿಗೂ ಗೃಹಬಂಧನ. ಅವನು ಕಾಲೇಜನ್ನು ನೋಡಿದ್ದೇ ಕಡಿಮೆ. ಪಾಠ, ಪರೀಕ್ಷೆ ಎಲ್ಲವೂ ಆನ್ಲೆನಿನಲ್ಲೇ ನಡೆಯುತ್ತಿದ್ದವು. ಅಂತರಜಾಲದ ಹೊಸ ಸಾಧ್ಯತೆ ಹೊಸಹೊಸ ಆತಂಕಗಳನ್ನೂ ತಂದಿತ್ತು. ತೇಜಸ್ವಿಯ ವಯಸ್ಸಿನ ಬಹುತೇಕ ಹುಡುಗರು ಆಗಲೇ ಸಾಮಾಜಿಕ ಜಾಲತಾಣಗಳಲ್ಲಿ ಕಳೆದುಹೋಗಿದ್ದರು. ತೇಜಸ್ವಿಯೂ ಅವುಗಳಲ್ಲಿ ಮುಳುಗಿದ್ದ- ಆದರೆ ಕಾಲಯಾಪನೆಗೆ ಅಲ್ಲ.

ಅವನು ಭವಿಷ್ಯದ ಹೊಸ ಸಾಧ್ಯತೆಗಳ ಅನ್ವೇಷಣೆಯಲ್ಲಿದ್ದ. ಇಂಜಿನಿಯರಿಂಗ್, ಮೆಡಿಕಲ್ ಬಿಟ್ಟು ಜಗತ್ತಿನಲ್ಲಿ ಇನ್ನೇನಿದೆ ಎಂದು ಹುಡುಕುತ್ತಿದ್ದ. ಕೊಂಚ ಸಾಹಸಪ್ರವೃತ್ತಿಯ ಅವನನ್ನು ಸೆಳೆದದ್ದು ಮರ್ಚೆಂಟ್ ನೇವಿ. ಪ್ರಪಂಚದ ಒಟ್ಟಾರೆ ವಾಣಿಜ್ಯಕ ಸರಕು ಸಾಗಾಣಿಕೆಯ ಶೇ. ೯೦ರಷ್ಟು ವ್ಯವಹಾರ ಈ ಮರ್ಚೆಂಟ್ ನೇವಿಯ ಮೂಲಕವೇ ನಡೆಯುತ್ತದಾದರೂ ಇದರ ಬಗ್ಗೆ ತಿಳಿದುಕೊಂಡವರು ನಮ್ಮಲ್ಲಿ ಕಡಿಮೆ. ಕೋವಿಡ್ ತೆರೆದುತೋರಿಸಿದ ಆನ್ಲೈನ್ ಪ್ರಪಂಚ ತೇಜಸ್ವಿಗೆ ಅಜ್ಞಾತ ಪ್ರಪಂಚದ ಅನಾವರಣ ಮಾಡಿತು.

ಅಲ್ಲಿಂದ ಆರಂಭವಾಯಿತು ಹೊಸ ಧ್ಯಾನ. ಮರ್ಚೆಂಟ್ ನೇವಿ ಸೇರಬೇಕೆಂದರೆ ಅಗತ್ಯವಿರುವ ದೇಹದಾರ್ಢ್ಯ, ಮಾನಸಿಕ ದೃಢತೆ, ತಿಳುವಳಿಕೆ ಸಂಪಾದಿಸಲು ಸದಾ ತಯಾರಿ. ಊಟಕ್ಕೆ ಕೂರುವಾಗ ಪಕ್ಕದಲ್ಲಿ ತಕ್ಕಡಿ ಇಟ್ಟುಕೊಳ್ಳುವ ಅವನನ್ನು ನೋಡಿ ಮನೆಮಂದಿಗೆ ಸೋಜಿಗ. ಬಾಲ್ಯದಿಂದಲೂ ವೈವಿಧ್ಯಮಯ ತಿಂಡಿತಿನಿಸಿನಲ್ಲಿ ಆಸಕ್ತಿಯಿದ್ದ ಹುಡುಗ ಹೊಸ ಜಗತ್ತಿನ ಸೆಳೆತ ಹುಟ್ಟಿಕೊಂಡ ಮೇಲೆ ಶಿಸ್ತಿನ ಸಿಪಾಯಿಯಾಗಿಬಿಟ್ಟ. ಅವನದ್ದೇ ದಿನಚರಿ, ಅವನದ್ದೇ ಆಹಾರ ವಿಹಾರ, ಅವನದ್ದೇ ಕನಸಿನಲೋಕ. ಅಂತರಜಾಲದ ಅಷ್ಟೂ ಸಾಧ್ಯತೆಗಳನ್ನು ಬಳಸಿಕೊಂಡು ಮುಂದಿನ ವರ್ಷಕ್ಕೆ ಸಿದ್ಧವಾಗುತ್ತಿದ್ದ. ಸಾಮಾಜಿಕ ಜಾಲತಾಣಗಳ ಮೂಲಕ ಮರ್ಚೆಂಟ್ ನೇವಿಯಲ್ಲಿದ್ದ ಅನುಭವಸ್ಥರ ಸಂಪರ್ಕ ಮಾಡಿಕೊಂಡು ಅವರಿಂದ ಮಾರ್ಗದರ್ಶನ ಪಡೆದ. ಮಾಕ್ ಟೆಸ್ಟ್, ಮಾಕ್ ಇಂಟರ್ವ್ಯೂಗಳಲ್ಲಿ ಭಾಗವಹಿಸಿದ. ನೋಟ್ಸ್, ಪ್ರಶ್ನೋತ್ತರಗಳನ್ನು ಬರೆಯುತ್ತಾ ನೂರಾರು ಪುಟ ಮುಗಿಸಿದ. 

ನೋಡುತ್ತಲೇ ಪುಣೆಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ತಾನು ಬಯಸಿದ ಕೋರ್ಸಿಗೆ ಆಯ್ಕೆಯಾದ. ಕೋವಿಡ್ ಆತಂಕದಿಂದ ಜಗತ್ತು ನಿಧಾನಕ್ಕೆ ಹೊರಬರುವ ಹೊತ್ತಿಗೆ ಅವನ ಹೊಸ ಪಯಣ ಆರಂಭವಾಯಿತು. ಒಂದು ವರ್ಷದ ಥಿಯರಿ ತರಗತಿಗಳನ್ನು ಮುಗಿಸಿ ಪ್ರಾಯೋಗಿಕ ತರಬೇತಿಗಾಗಿ ಸಿಂಗಾಪುರದಿಂದ ಹಡಗನ್ನೇರಿದ. ಹತ್ತಾರು ದೇಶಗಳ ಕಡಲಕಿನಾರೆಗಳನ್ನು ಮುಟ್ಟಿ, ತನ್ನ ಮೊದಲ ವರ್ಷದ ಸಮುದ್ರಯಾನ ಮುಗಿಸಿ ಮೊನ್ನೆಮೊನ್ನೆ ವಾಪಸಾದ. ತಾನು ಇಷ್ಟಪಟ್ಟದ್ದನ್ನು ಸಾಧಿಸಿದ ತೃಪ್ತಿ ಅವನ ಮುಖದಲ್ಲಿ. ಮಗನ ಬಗ್ಗೆ ಹೆಮ್ಮೆ ಅಪ್ಪ-ಅಮ್ಮನ ಮುಖದಲ್ಲಿ.

ಇದು ಕನ್ನಡದ ಹುಡುಗನೊಬ್ಬನ ಕಥೆ. ಅತ್ತಿತ್ತ ಕಣ್ಣಾಡಿಸಿದರೆ ಇಂತಹ ನೂರೆಂಟು ಕಥೆಗಳು ನಮಗೆ ಸಿಗಬಹುದು- ಕೋವಿಡ್ ಮಹಾಮಾರಿಯಿಂದ ಜಗತ್ತೇ ಕಂಗೆಟ್ಟಿರುವಾಗ, ಅದು ತಂದಿಟ್ಟ ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿಕೊಂಡವರ ಕಥೆಗಳು.

ಜೀವನದಲ್ಲಿ ಎದುರಾಗುವ ಬಹುತೇಕ ಕಷ್ಟಗಳು, ಸವಾಲುಗಳು ವಾಸ್ತವವಾಗಿ ಕಷ್ಟಗಳೇ ಆಗಿರುವುದಿಲ್ಲ. ನಿಜವಾಗಿಯೂ ಅವು ನಮ್ಮೆದುರಿನ ದೊಡ್ಡ ಅವಕಾಶಗಳಾಗಿರುತ್ತವೆ. ಇದನ್ನು ಅರ್ಥ ಮಾಡಿಕೊಂಡವರು ಯಶಸ್ಸು ಪಡೆಯುತ್ತಾರೆ, ಅರ್ಥ ಮಾಡಿಕೊಳ್ಳಲು ವಿಫಲರಾದವರು ಜೀವನದಲ್ಲೂ ವೈಫಲ್ಯ ಕಾಣುತ್ತಾರೆ. ಇನ್ನೇನು ಪ್ರವಾಹದಲ್ಲಿ ಮುಳುಗಿಯೇ ಹೋಗುತ್ತೇನೆ ಎಂದುಕೊಂಡವನಿಗೆ ಕೈಗೆ ಸಿಗುವ ಹುಲ್ಲುಕಡ್ಡಿಯೂ ಆಸರೆಯಾಗುತ್ತದಂತೆ. ಹುಲ್ಲುಕಡ್ಡಿಯಲ್ಲಿ ಆತ ತನ್ನ ಪುನರ್ಜನ್ಮದ ಶಕ್ತಿಯನ್ನು ಕಂಡುಕೊಳ್ಳುವುದು ಮುಖ್ಯ ಅಷ್ಟೇ. 

ಅಡೆತಡೆಗಳು ಇಲ್ಲದಾಗ ಬದುಕು ನೀರಸವೆನಿಸುತ್ತದೆ. ನಿಂತ ನೀರು ಮಾತ್ರ ಉಬ್ಬರವಿಳಿತವಿಲ್ಲದೆ ಇರಬಲ್ಲುದು. ಬದುಕು ಹರಿಯುವ ನದಿಯೆಂದು ನಾವು ಒಪ್ಪಿಕೊಳ್ಳುವುದಾದರೆ ಅಲ್ಲಲ್ಲಿ ಕಲ್ಲುಬಂಡೆಗಳು, ಜಲಪಾತಗಳು, ಕೊರಕಲುಗಳು ಇದ್ದೇ ಇರುತ್ತವೆ. ನೀರು ನಿಂತಲ್ಲೇ ಇದ್ದರೆ ಪಾಚಿ ಕಟ್ಟಿಕೊಂಡು ದುರ್ವಾಸನೆ ಬೀರುತ್ತದೆ. ಅದು ಹರಿಯಲೇಬೇಕು- ಬದುಕಿನ ಥರ. ‘ಸವಾಲುಗಳು ಬದುಕನ್ನು ಆಸಕ್ತಿದಾಯಕವನ್ನಾಗಿಸುತ್ತವೆ. ಅವುಗಳನ್ನು ಮೀರಿದಾಗ ಬದುಕು ಅರ್ಥಪೂರ್ಣವೆನಿಸುತ್ತದೆ’ ಎಂಬ ಮಾತನ್ನು ಇದೇ ಅರ್ಥದಲ್ಲಿ ಹೇಳಿರುವುದು.

ಎಂತೆಂತಹವರೆಲ್ಲ ಆರಾಮ ಜೀವನ ನಡೆಸುತ್ತಿರುತ್ತಾರೆ, ಕಷ್ಟಗಳೆಲ್ಲ ನಮಗೆ ಮಾತ್ರ ಬರುತ್ತಿರುತ್ತವೆ ಎಂದು ಕೊರಗುವವರು ಬಹಳ ಮಂದಿ. ಅವರೆಲ್ಲ ಅರ್ಥ ಮಾಡಿಕೊಳ್ಳಬೇಕಿರುವುದು ಇಷ್ಟೇ: ಕಹಿಯಿಲ್ಲದೆ ಹೋದರೆ ಸಿಹಿ ಯಾವುದೆಂದು ತಿಳಿಯುವುದಿಲ್ಲ, ಕತ್ತಲೆಯೆಂಬುದು ಇಲ್ಲದೆ ಹೋದರೆ ಬೆಳಕಿನ ಮಹಿಮೆ ತಿಳಿಯುವುದಿಲ್ಲ. ಹೆಚ್ಚಿನ ಸಂದರ್ಭಗಳಲ್ಲೂ ನಮ್ಮೆದುರಿನ ಸವಾಲುಗಳ ಅಂತರ್ಯದಲ್ಲಿ ಜಗತ್ತನ್ನು ಬೆರಗುಗೊಳಿಸಬಲ್ಲ ಹೊಸ ಸಾಧ್ಯತೆಗಳಿರುತ್ತವೆ. ನೋಡುವ ಕಣ್ಣುಗಳು ನಮ್ಮದಾಗಿರಬೇಕು ಅಷ್ಟೇ. ಅಡುಗೆ ಮನೆಯಲ್ಲಿ ಒಂದು ಹಿಡಿ ತರಕಾರಿ ಇಲ್ಲದಾಗಲೂ ರುಚಿಕಟ್ಟಾದ ಅಡುಗೆ ಮಾಡಿ ಉಣಬಡಿಸುತ್ತಾಳೆ ಅಮ್ಮ. ಅಂತಹದೊಂದು ಮನಸ್ಸು, ಸಾಮರ್ಥ್ಯ ಅಮ್ಮನಿಗೆ ಇರುತ್ತದೆ. ಇದ್ದುದರಲ್ಲಿ ನಳಪಾಕ ಮಾಡುತ್ತಾಳೆ ಅವಳು. ಬದುಕಿನ ಇತಿಮಿತಿಗಳ ಕಥೆಯೂ ಇದೇ. ಸಾಧ್ಯವೇ ಇಲ್ಲ ಎಂಬ ಸನ್ನಿವೇಶದಲ್ಲೂ ಏನಾದರೊಂದು ಸಾಧ್ಯತೆ ಇದ್ದೇ ಇರುತ್ತದೆ. ಅದನ್ನು ಬಳಸಿಕೊಳ್ಳುವುದು ನಮ್ಮ ಧೋರಣೆಯನ್ನು ಅವಲಂಬಿಸಿದೆ ಅಷ್ಟೇ. 

ಹಿರಿಯರು ಎಷ್ಟು ಚೆನ್ನಾಗಿ ಹೇಳಿದ್ದಾರೆ ನೋಡಿ- ‘ಜೀವನದಲ್ಲಿ ಕಷ್ಟಗಳು ಬರುವುದು ನಮ್ಮನ್ನು ನಾಶ ಮಾಡುವುದಕ್ಕಲ್ಲ; ನಮ್ಮ ಅಂತಃಸತ್ವವನ್ನು ನಮಗೆ ಪರಿಚಯಿಸಿಕೊಡುವುದಕ್ಕೆ’. ನಾವು ಏನು ಎಂದು ನಮಗೆ ಅರ್ಥವಾಗುವುದು ಸವಾಲುಗಳು ಎದುರಾದಾಗಲೇ. ತುಪ್ಪವಾಗಿ ಪರಿಮಳ ಬೀರುವುದಕ್ಕೆ ಬೆಣ್ಣೆಮುದ್ದೆಗೂ ಬಿಸಿ ಬೇಕೇಬೇಕು. ಸದಾ ತಣ್ಣಗೇ ಇರುತ್ತೇನೆಂದರೆ ಸುಮ್ಮನೇ ಮಜ್ಜಿಗೆಯ ಮೇಲೆ ತೇಲುತ್ತಾ ಕಾಲಯಾಪನೆ ಮಾಡಬೇಕಷ್ಟೆ. ಅನಿವಾರ್ಯತೆಯೇ ಅನ್ವೇಷಣೆಯ ತಾಯಿ ಎಂಬ ನಾಣ್ಣುಡಿಯಿದೆ. ಅನಿವಾರ್ಯಗಳು ಎದುರಾದಾಗ ಹೊಸ ಹಾದಿಗಳು ಗೋಚರಿಸುತ್ತವೆ. ಸವಾಲುಗಳು ಎದುರಾದಾಗ ಬುದ್ಧಿ ಚುರುಕಾಗುತ್ತದೆ, ಮನಸ್ಸು ಗಟ್ಟಿಯಾಗುತ್ತದೆ, ಕ್ರಿಯಾಶೀಲತೆ ತೆರೆದುಕೊಳ್ಳುತ್ತದೆ. ಪರಿಹಾರದ ದಾರಿಗಳು ತಾವಾಗಿಯೇ ತೆರೆದುಕೊಳ್ಳುತ್ತವೆ. ಅನಿವಾರ್ಯಗಳೇ ಇಲ್ಲದಾಗ ಮನಸ್ಸು ಜಡವಾಗುತ್ತದೆ, ಬುದ್ಧಿಗೆ ಮಂಕು ಕವಿಯುತ್ತದೆ. ಸೋಮಾರಿ ಮನಸ್ಸು ದೆವ್ವಗಳ ಆಡುಂಬೊಲ. ಏನೂ ಕೆಲಸವಿಲ್ಲದ ಮನಸ್ಸಿಗೆ ಕುಚೇಷ್ಟೆ, ದುರ್ವ್ಯಸನಗಳೇ ಆಕರ್ಷಕ, ರುಚಿಕರ ಎನಿಸುತ್ತವೆ. ಅವು ಚಟಗಳಾಗಿ ಬದಲಾಗುತ್ತವೆ. ಮನುಷ್ಯ ಬದುಕಿದ್ದಾಗಲೇ ಶವವಾಗುವುದಕ್ಕೆ ಇವು ಧಾರಾಳ ಸಾಕು.

ನಡೆಯುವ ಹಾದಿಯಲ್ಲಿ ವಾಸ್ತವವಾಗಿ ನಮಗೆ ಅಡೆತಡೆ ಗೋಚರಿಸುವುದು ತಲುಪಬೇಕಾದ ಗುರಿಯ ಬಗ್ಗೆ ಗೊಂದಲವಿದ್ದಾಗ ಮಾತ್ರ. ಉಳಿದೆಲ್ಲ ದ್ರೋಣಶಿಷ್ಯರಿಗೆ ಮರ, ರೆಂಬೆಕೊಂಬೆ, ಎಲೆ, ಬಳ್ಳಿ, ಹೂವು, ಹಕ್ಕಿ ಕಾಣಿಸಿದಾಗ ಅರ್ಜುನನೊಬ್ಬನಿಗೆ ಹಕ್ಕಿಯ ಕಣ್ಣು ಕಾಣಿಸಿತಲ್ಲ, ಅಂತಹದೇ ಸನ್ನಿವೇಶ ಇದು. ಗಮ್ಯಸ್ಥಾನದ ಬಗ್ಗೆ ಸ್ಪಷ್ಟತೆಯಿದ್ದಾಗ, ಉಳಿದವೆಲ್ಲ ನಗಣ್ಯ ಎನಿಸುತ್ತದೆ. ಗುರಿಯ ಕುರಿತೇ ಅನಾಸಕ್ತಿಯಿದ್ದಾಗ ಹತ್ತಾರು ನೆಪಗಳು ತಾವಾಗಿಯೇ ಎದ್ದುಬಂದು ಕೈಕಾಲಿಗೆ ತೊಡರಿಕೊಳ್ಳುತ್ತವೆ.

ಅನೇಕ ಬಾರಿ ನಮಗೆ ಕಷ್ಟಗಳು ಎದುರಾಗುವುದು ನಾವು ತಪ್ಪು ಮಾಡುತ್ತಿದ್ದೇವೆ ಎಂಬ ಕಾರಣಕ್ಕಲ್ಲ, ಸರಿಯಾದುದನ್ನು ಮಾಡುತ್ತಿದ್ದೇವೆ ಎಂಬ ಕಾರಣಕ್ಕೆ. ಸವಾಲುಗಳು ಎದುರಾದಾಗ ನಮ್ಮ ಹಾದಿ ಸರಿಯಿದೆ ಎಂದು ಭಾವಿಸಿಕೊಳ್ಳುವುದೇ ಸೂಕ್ತ. ನಮ್ಮತ್ತ ಎಸೆದ ಕಲ್ಲುಗಳನ್ನೇ ಆರಿಸಿಕೊಂಡು ಭವಿಷ್ಯದ ಸೌಧ ಕಟ್ಟಿಕೊಳ್ಳುವ ಛಾತಿ, ಆತ್ಮವಿಶ್ವಾಸ ನಮ್ಮದಿರಬೇಕು ಅಷ್ಟೇ. ಇಂತಹ ಅನುಭವಗಳಿರುವ ಕಾರಣಕ್ಕೇ ಹಿರಿಯರ ಮಾತುಗಳನ್ನು ದಾರಿದೀಪ ಎಂದು ನಾವು ತಿಳಿಯಬೇಕಿರುವುದು- “ಬದುಕೇ ಒಂದು ಸವಾಲು, ಏಕೆಂದರೆ ಸವಾಲುಗಳಿಂದ ಮಾತ್ರ ನಾವು ಬೆಳೆಯುವುದು ಸಾಧ್ಯ.” 

- ಸಿಬಂತಿ ಪದ್ಮನಾಭ ಕೆ. ವಿ.

ಮಂಗಳವಾರ, ಅಕ್ಟೋಬರ್ 10, 2023

ಲೇಖಕರಾಗಲು ಹತ್ತು ಸೂತ್ರಗಳು

ʻಉದಯವಾಣಿʼ UV Fusion 100ನೆಯ ಸಂಚಿಕೆಯಲ್ಲಿ ಪ್ರಕಟವಾದ ಲೇಖನ | 08 ಅಕ್ಟೋಬರ್‌ 2023

ಒಂದು ವಿಷಯದ ಕುರಿತು ಗಂಟೆಗಟ್ಟಲೆ, ದಿನಗಟ್ಟಲೆ ಅಧ್ಯಯನ ಮಾಡಿ, ಟಿಪ್ಪಣಿ ಮಾಡಿಕೊಂಡು, ಕೊನೆಗೊಮ್ಮೆ ಆ ಟಿಪ್ಪಣಿಗೆಳನ್ನೆಲ್ಲ ಮುಚ್ಚಿ ಬದಿಗಿಟ್ಟು ಕುಳಿತಲ್ಲಿಂದ ಏಳದೆ ಸರಸರನೆ ನಿಮ್ಮಷ್ಟಕ್ಕೆ ಒಂದು ಲೇಖನವನ್ನು ಬರೆಯಬಲ್ಲಿರಾ? ಅದು ನಿಮ್ಮ ಅತ್ಯುತ್ತಮ ಬರೆಹ ಎನಿಸೀತು.

ಅನೇಕ ಮಂದಿ ಒಳ್ಳೆಯ ಲೇಖಕರಾಗಬೇಕೆಂದು, ನಾಲ್ಕು ಮಂದಿಯಿಂದ ಸೈ ಅನಿಸಿಕೊಳ್ಳಬೇಕೆಂದು ಕನಸು ಕಾಣುತ್ತಾರೆ. ಅದು ನನಸಾಗದೆ ಭ್ರಮನಿರಸನಗೊಳ್ಳುತ್ತಾರೆ. ಇದಕ್ಕೆ ಮುಖ್ಯವಾಗಿ ಕಾರಣಗಳು ಎರಡು: ಬರೆವಣಿಗೆಗೆ ಪೂರಕ ಅಧ್ಯಯನವಿಲ್ಲದಿರುವುದು ಮತ್ತು ನಿರಂತರವಾಗಿ ಬರೆಯದಿರುವುದು.

ಬರೆವಣಿಗೆಯೆಂಬುದು ಕನಸು ಕಂಡಷ್ಟು ಸುಲಭವಲ್ಲ. ಅದೊಂದು ತಪಸ್ಸಿನ ಹಾಗೆ. ತಪಸ್ಸಿಗೆ ಕುಳಿತವರಿಗೆ ಎಂದೂ ಕರಗದ ಛಲ, ಕಠಿಣ ಪರಿಶ್ರಮ, ಏಕಾಗ್ರತೆ ಇರಬೇಕಾಗುತ್ತದೆ. ಅದು ಎವರೆಸ್ಟ್‌ ಶಿಖರವನ್ನು ಏರುವ ಸಾಹಸ. ಅರ್ಧದಲ್ಲಿ ಪ್ರಯತ್ನ ಕೈಬಿಟ್ಟರೆ ಎವರೆಸ್ಟ್‌ ಹತ್ತಿದಂತೆ ಆಗುವುದಿಲ್ಲ.

ಹಾಗಾದರೆ ಒಳ್ಳೆಯ ಬರೆಹಗಾರರೆನಿಸಿಕೊಳ್ಳಲು ಏನು ಮಾಡಬೇಕು? ಅದಕ್ಕಾಗಿ ಹತ್ತು ಸೂತ್ರಗಳು ಇಲ್ಲಿವೆ ನೋಡಿ:

  1. ಬರೆಯುವುದಕ್ಕಿಂತಲೂ ಓದು ಹೆಚ್ಚು ಮುಖ್ಯ. ಹತ್ತು ಓದಿದ ಬಳಿಕ ಒಂದು ಬರೆ ಎಂಬುದು ಹಿರಿಯರ ಸಲಹೆ. ಕಥೆ, ಕಾದಂಬರಿ, ಕಾವ್ಯ, ಲಲಿತಪ್ರಬಂಧ, ಜೀವನಚರಿತ್ರೆ ಇತ್ಯಾದಿಗಳನ್ನು ನಿರಂತರವಾಗಿ ಓದುತ್ತಿರಬೇಕು. ತಿಂಗಳಿಗೊಂದಾದರೂ ಹೊಸ ಪುಸ್ತಕ ಓದಬೇಕು.
  2. ಪತ್ರಿಕೆ ಹಾಗೂ ನಿಯತಕಾಲಿಕಗಳು ನಮ್ಮ ದೈನಂದಿನ ಓದಿನ ಭಾಗವಾಗಿರಬೇಕು. ಹೀಗೆ ಓದುವಾಗಲೆಲ್ಲ ಒಂದು ಪುಟ್ಟ ಟಿಪ್ಪಣಿ ಪುಸ್ತಕ ಜತೆಗಿರಬೇಕು. ಮುಖ್ಯವೆನಿಸುವ ಘಟನೆಗಳು, ಅಂಕಿಅಂಶಗಳು, ಉಕ್ತಿಗಳನ್ನು ಆಗಿಂದಾಗಲೇ ಬರೆದಿಟ್ಟುಕೊಳ್ಳಬೇಕು.
  3. ಭಾಷೆಯೇ ಬರೆಹಗಾರನ ಬಂಡವಾಳ. ಭಾಷೆಯನ್ನು ಚೆನ್ನಾಗಿ ದುಡಿಸಿಕೊಳ್ಳಬಲ್ಲವರು ಮಾತ್ರ ಉತ್ತಮ ಲೇಖಕರಾಗಬಲ್ಲರು. ಶ್ರೇಷ್ಠ ಗದ್ಯಕೃತಿಗಳ ನಿರಂತರ ಓದಿನಿಂದ ಮಾತ್ರ ಉತ್ತಮ ಶಬ್ದಭಂಡಾರ, ಸುಲಲಿತ ಭಾಷೆ ಬೆಳೆಯಬಹುದು.
  4. ಬರೆವಣಿಗೆಯಲ್ಲಿ ನಿರಂತರತೆ ಇದ್ದಾಗ ಮಾತ್ರ ಅದರಲ್ಲೊಂದು ಲಯಸಿದ್ಧಿ ಸಾಧ್ಯ. ʻಹಾಡಿ ಹಾಡಿ ರಾಗʼ ಎಂಬಂತೆ ಬರೆದು ಬರೆದೇ ಬರೆವಣಿಗೆಯ ನಾಡಿಮಿಡಿತ ಹಿಡಿಯಲಾದೀತು. ಪದದಿಂದ ಪದಕ್ಕೆ, ವಾಕ್ಯದಿಂದ ವಾಕ್ಯಕ್ಕೆ ಅರ್ಥಪೂರ್ಣ ಜೋಡಣೆ, ಸುಸಂಬದ್ಧತೆ, ಲಯಬದ್ಧತೆ ಇರಬೇಕು.
  5. ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳುವುದಕ್ಕೆ ವ್ಯಾಯಾಮ ಹೇಗೆ ನಿರಂತರವಾಗಿರಬೇಕೋ, ಬರೆವಣಿಗೆಯ ಸೌಂದರ್ಯ ಉಳಿಸಿಕೊಳ್ಳುವುದಕ್ಕೂ ಅದೇ ಬಗೆಯ ಪ್ರಯತ್ನ ಬೇಕು. ನಡುವೆ ನಿಲ್ಲಿಸಿದರೆ ಬೊಜ್ಜು ಬೇಡವೆಂದರೂ ಬಂದು ತುಂಬಿಕೊಂಡೀತು.
  6. ದಿನಚರಿ ಬರೆಯುವುದನ್ನು ರೂಢಿಸಿಕೊಳ್ಳುವುದು ಬರೆವಣಿಗೆಯಲ್ಲಿ ನಿರಂತರತೆ ಸಾಧಿಸುವುದಕ್ಕೆ ಸುಲಭ ಮಾರ್ಗ. ಆಯಾ ದಿನದ ಪ್ರಮುಖ ಅನುಭವಗಳನ್ನು ಬರೆದಿಡುತ್ತಾ ಹೋಗಿ. ಪ್ರತಿದಿನ ಮಲಗುವುದಕ್ಕೆ ಮುಂಚೆ ಹತ್ತು ನಿಮಿಷ ಇದಕ್ಕಾಗಿ ಮೀಸಲಿಡಿ. ನಿಮ್ಮ ಅಭಿವ್ಯಕ್ತಿ ವಿಧಾನದಲ್ಲಿ ಆಗುವ ಬದಲಾವಣೆಯನ್ನು ನೀವೇ ಗಮನಿಸುವಿರಿ.
  7. ಆರಂಭದಲ್ಲೇ ದೊಡ್ಡ ದೊಡ್ಡ ಲೇಖನಗಳನ್ನು ಬರೆಯುವುದಕ್ಕೆ ತೊಡಗಬೇಡಿ. ಪುಟ್ಟಪುಟ್ಟ ಬರೆಹಗಳಿಂದ ಆರಂಭಿಸಿ. ಉದಾಹರಣೆಗೆ, ಪತ್ರಿಕೆಗಳಲ್ಲಿನ ʼಸಂಪಾದಕರಿಗೆ ಪತ್ರʼ ಅಂಕಣವನ್ನು ಯತೇಚ್ಛ ಬಳಸಿಕೊಳ್ಳಿ. ಸಮಕಾಲೀನ ವಿದ್ಯಮಾನಗಳು, ಸಮಸ್ಯೆಗಳ ಕುರಿತು ಬರೆಯಿರಿ; ಪ್ರಕಟಿತ ಲೇಖನ, ಅಂಕಣ, ಸಂಪಾದಕೀಯ, ನುಡಿಚಿತ್ರಗಳಿಗೆ ಪ್ರತಿಕ್ರಿಯೆ ಬರೆಯಿರಿ. ಇದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ.
  8. ಏನೇ ಬರೆದರೂ ಅದನ್ನು ನೀವೇ ಮತ್ತೆಮತ್ತೆ ಓದಿಕೊಂಡು ಪದಗಳು, ವಾಕ್ಯಗಳು ಸುಲಲಿತವಾಗಿ ಸಾಗಿವೆಯೇ ಎಂದು ಪರಿಶೀಲಿಸಿಕೊಳ್ಳಿ. ಕಾಗುಣಿತ ತಪ್ಪುಗಳಿದ್ದರೆ ತಿದ್ದಿಕೊಳ್ಳಿ. ಸ್ನೇಹಿತರಿಗೋ ಅಧ್ಯಾಪಕರಿಗೋ ತೋರಿಸಿ ಅವರ ಅಭಿಪ್ರಾಯ ಪಡೆಯಿರಿ.
  9. ಯಾವುದೇ ವಿಷಯ ಬರೆಯುವ ಮುಂಚೆ ಅದನ್ನು ಎಲ್ಲ ಆಯಾಮಗಳಿಂದಲೂ ಯೋಚಿಸಿ. ದೊರೆಯುವ ಸಂಪನ್ಮೂಲಗಳನ್ನೆಲ್ಲ ಅಧ್ಯಯನ ಮಾಡಿ. ಆದರೆ ಅವುಗಳನ್ನೇ ಲೇಖನಕ್ಕೆ ಭಟ್ಟಿಯಿಳಿಸಲು ಹೋಗಬೇಡಿ. ಸ್ವಂತಿಕೆಯೇ ನಿಮ್ಮ ಆದ್ಯತೆಯಾಗಿರಲಿ.
  10. ಬರೆದದ್ದೆಲ್ಲ ಪ್ರಕಟವಾಗಬೇಕು ಎಂಬ ಆಸೆ ಬೇಡ.  ನಾವು ಬರೆದದ್ದು ಇನ್ನೊಬ್ಬರಿಗೆ ಇಷ್ಟವಾಗಲೇಬೇಕು ಎಂದಿಲ್ಲ. ಅದು ಸಂದರ್ಭಕ್ಕೆ ಸರಿಹೊಂದದೆಯೂ ಇರಬಹುದು. ಎರಡು ಲೇಖನ ಪ್ರಕಟವಾಗದಿದ್ದ ಕೂಡಲೇ ಶಸ್ತ್ರಸನ್ಯಾಸ ಮಾಡಬೇಡಿ. ʻತಾಳ್ಮೆಗಿಂತ ಅನ್ಯ ತಪವು ಇಲ್ಲʼ.

 - ಸಿಬಂತಿ ಪದ್ಮನಾಭ ಕೆ. ವಿ.

ಸೋಮವಾರ, ಆಗಸ್ಟ್ 7, 2023

ಕಂಪ್ಯೂಟರಿಗೆ ಕನ್ನಡ ಕಲಿಸಿದ ಕೆ.ಪಿ.ರಾವ್

06 ಆಗಸ್ಟ್‌ 2023ರ ʼಉದಯವಾಣಿʼ ಸಾಪ್ತಾಹಿಕ ಸಂಪದದಲ್ಲಿ ಪ್ರಕಟವಾದ ಲೇಖನ

ಕರಾವಳಿ ತೀರದ ಕಿನ್ನಿಕಂಬಳದ ಪುಟ್ಟದೊಂದು ಮನೆ. ಅಲ್ಲಿನ ಹೆಣ್ಣುಮಗುವೊಂದಕ್ಕೆ ಅಕ್ಷರಾಭ್ಯಾಸ ಮಾಡಿಸುವುದಕ್ಕೆ ಪುರೋಹಿತರು ಬಂದಿದ್ದರು. ರಂಗೋಲಿ ಪುಡಿಯಲ್ಲಿ ʻಗʼ ಮತ್ತು ʻಶ್ರೀʼ ಎಂಬೆರಡು ಅಕ್ಷರಗಳನ್ನು ಒಂದೆಡೆ ಬರೆದಿದ್ದರು. ಇದನ್ನು ನೋಡುತ್ತ ಕುಳಿತಿದ್ದ ಹೆಣ್ಮಗುವಿನ ಎರಡು ವರ್ಷದ ತಮ್ಮ ಅದೇ ರಂಗೋಲಿ ಪುಡಿಯನ್ನೆತ್ತಿಕೊಂಡು ಸಂಜೆ ವೇಳೆಗೆ ಮನೆ ತುಂಬಾ ʻಗʼ ಮತ್ತು ʻಶ್ರೀʼ ಬರೆದುಬಿಟ್ಟಿದ್ದ. ಎರಡು ವರ್ಷದ ಕಂದಮ್ಮನ ಒಳಗೆ ಅದ್ಯಾವ ಶಕ್ತಿಯಿತ್ತೋ, ಮುಂದೆ ಅದೇ ಕಂದಮ್ಮ ಕಂಪ್ಯೂಟರುಗಳಿಗೆ ಕನ್ನಡ ಕಲಿಸಿಬಿಟ್ಟಿತು! ಹೌದು, ಆ ಮಗು ಬೇರಾರೂ ಅಲ್ಲ; ಕನ್ನಡದ ಅಧಿಕೃತ ಕೀಲಿಮಣೆ ವಿನ್ಯಾಸವನ್ನು ರೂಪಿಸಿದ ಪ್ರೊ. ಕಿನ್ನಿಕಂಬಳ ಪದ್ಮನಾಭ ರಾವ್, ಅಂದರೆ ಕೆ. ಪಿ. ರಾವ್.

ಹಾಗೆ ನೋಡಿದರೆ, ಕೆ. ಪಿ. ರಾವ್ ಅವರನ್ನು ಕಂಪ್ಯೂಟರಿಗೆ ಕನ್ನಡ ಕಲಿಸಿದವರು ಎಂದರೆ ಸಾಲದು; ಭಾರತೀಯ ಭಾಷೆಗಳನ್ನು ಕಂಪ್ಯೂಟರಿಗೆ ಕಲಿಸಿದವರು ಎನ್ನಬೇಕು. ಯಾವುದೇ ಭಾರತೀಯ ಭಾಷೆ ಕಂಪ್ಯೂಟರಿನಲ್ಲಿ ಇಲ್ಲದ ಕಾಲದಲ್ಲಿ ಅವುಗಳನ್ನು ಕಂಪ್ಯೂಟರಿನಲ್ಲಿ ಮೂಡಿಸುವುದಕ್ಕೆ ಹಗಲಿರುಳು ಶ್ರಮಿಸಿದವರು ಕೆ. ಪಿ. ರಾವ್. ಬಡುಗ, ತುಳು, ಬ್ರಾಹ್ಮಿ, ಖರೋಷ್ಠಿ, ಕದಂಬ ಮುಂತಾದ ಅನೇಕ ಲಿಪಿಗಳನ್ನು ಕಂಪ್ಯೂಟರಿನಲ್ಲಿ ಮೂಡಿಸುವುದಕ್ಕೆ ಅವರು ಪಟ್ಟ ಶ್ರಮ ಅದ್ವಿತೀಯ. ʼಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹʼ ಎಂಬ ಅಭಿದಾನ ಅವರಿಗೆ ಚೆನ್ನಾಗಿಯೇ ಒಪ್ಪುತ್ತದೆ.

ಗುರುವಿನ ಕೃಪೆ ಅಂದರು...

ಬಾಲ್ಯದ ಪರಿಸರ ಹಾಗೂ ಶ್ರೇಷ್ಠ ಅಧ್ಯಾಪಕರೇ ತಮ್ಮ ಎಲ್ಲ ಅನ್ವೇಷಣೆಗಳ ಪ್ರೇರಣೆ ಎಂಬುದನ್ನು ರಾಯರು ಮುಕ್ತ ಮನಸ್ಸಿನಿಂದ ಹೇಳುತ್ತಾರೆ. ಅದರಲ್ಲೂ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ತಾವು ಬಿಎಸ್ಸಿ ಓದುತ್ತಿದ್ದಾಗ ಕನ್ನಡ ಪ್ರಾಧ್ಯಾಪಕರಾಗಿದ್ದ ಸೇಡಿಯಾಪು ಕೃಷ್ಣ ಭಟ್ಟರು ತಮಗೆ ಪ್ರಾತಃಸ್ಮರಣೀಯರು ಎನ್ನುತ್ತಾರೆ. “ಸೇಡಿಯಾಪು ನನ್ನ ಮರೆಯಲಾಗದ ಗುರು. ಪಾಣಿನಿಯನ್ನು ಅರ್ಥ ಮಾಡಿಸಿದವರು ಅವರು. ಲೋಕದ ಎಲ್ಲ ಭಾಷೆಗಳ ಮೂಲ ತತ್ವ ಏನು ಎಂಬುದನ್ನು ಮನಸ್ಸಿನಲ್ಲಿ ನಾಟಿಸಿಬಿಟ್ಟಿದ್ದರು. ಅವರಿಂದಾಗಿ ಕನ್ನಡದ ಜತೆಜತೆಗೆ ಜಗತ್ತಿನ ಎಲ್ಲ ಭಾಷೆಗಳ ಮೇಲೆ ನನಗೆ ಮಮತೆ ಹುಟ್ಟಿಬಿಟ್ಟಿತು,” ಎಂದು ನೆನಪಿಸಿಕೊಳ್ಳುತ್ತಾರೆ ರಾಯರು.

ಅವರಿಗೆ ಮೊದಲಿನಿಂದಲೂ ಗಣಿತವೆಂದರೆ ಪ್ರೀತಿ. ಜಗತ್ತಿನ ಎಲ್ಲ ಜ್ಞಾನಶಿಸ್ತು ಹಾಗೂ ಭಾಷೆಗಳ ಹಿಂದೆ ಇರುವ ಮೂಲತತ್ವ ಗಣಿತದ್ದು ಎಂಬುದನ್ನು ಅವರು ವಿದ್ಯಾರ್ಥಿದೆಸೆಯಲ್ಲೇ ಅರ್ಥಮಾಡಿಕೊಂಡಿದ್ದರು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳನ್ನು ಕಂಪ್ಯೂಟರಿನಲ್ಲಿ ಮೂಡಿಸುವುದಕ್ಕೆ ಅವರಿಗೆ ಸಾಧ್ಯವಾದದ್ದು ಇದೇ ಕಾರಣದಿಂದ. ಕಂಪ್ಯೂಟರ್ ಅಂತೂ ಗಣಿತವನ್ನೇ ಆಧಾರವಾಗಿಸಿಕೊಂಡಿರುವ ʻಗಣಕಯಂತ್ರʼ ಅಲ್ಲವೇ?

ವೈವಿಧ್ಯಮಯ ವೃತ್ತಿಬದುಕು:

ವೈವಿಧ್ಯಮಯ ವೃತ್ತಿಬದುಕು ಕೆ. ಪಿ. ರಾವ್ ಅವರದ್ದು. ಅವರ ವೃತ್ತಿಜೀವನ ಆರಂಭವಾದದ್ದು ಮುಂಬೈಯ ಪ್ರತಿಷ್ಠಿತ ಬಾಬಾ ಅಟೊಮಿಕ್ ರೀಸರ್ಚ್ ಸೆಂಟರಿನಲ್ಲಿ. ಅಲ್ಲಿ ಹೋಮಿ ಭಾಭಾ, ಡಿ. ಡಿ. ಕೊಸಾಂಬಿ, ಎ.ಕೆ. ಗಂಗೂಲಿ, ರಾಜಾರಾಮಣ್ಣ ಮೊದಲಾದ ದಾರ್ಶನಿಕರ ಒಡನಾಟ.  ಮುಂದೆ ಟಾಟಾ ಪ್ರೆಸ್ಸಿಗೆ ಇಂಜಿನಿಯರ್ ಆಗಿ ಸೇರಿಕೊಂಡಾಗಲೂ ಮುದ್ರಣದ ಹೊಸ ಸಾಧ್ಯತೆಗಳ ಕುರಿತ ಚಿಂತನೆ ಸಾಧ್ಯವಾಯಿತು. ಬೆರಳಚ್ಚು ಯಂತ್ರಕ್ಕೆ ಸಿಂಧೂ ಕಣಿವೆ ಲಿಪಿಯ ಸಂಕೇತಗಳನ್ನು ಅಳವಡಿಸುವ ಮಹತ್ತರ ಕಾರ್ಯವೂ ರಾಯರಿಂದ ಇದೇ ಸಮಯದಲ್ಲಿ ನಡೆಯಿತು.

ಟಾಟಾ ಪ್ರೆಸ್ಸಿನಲ್ಲಿ ಅಕ್ಷರಗಳೊಂದಿಗೆ ಆರಂಭವಾದ ರಾಯರ ಒಡನಾಟ ಬೆಂಗಳೂರಿನ ಮಾನೋಟೈಪ್ ಇಂಡಿಯಾ ಕಂಪೆನಿಯಲ್ಲಿ ಯಶಸ್ವಿಯಾಗಿ ಮುಂದುವರಿಯಿತು. ಭಾರತೀಯ ಭಾಷೆಗಳಿಗೆ ಫಾಂಟ್ಗಳನ್ನು ವಿನ್ಯಾಸಮಾಡುವ ಮಹತ್ಕಾರ್ಯಕ್ಕೆ ಅವರ ಪ್ರತಿಭೆ ಬಳಕೆಯಾಯಿತು. ಕಂಪ್ಯೂಟರಿನಲ್ಲಿ ಕನ್ನಡವನ್ನು ಮೂಡಿಸುವ ಬೇರೆಬೇರೆ ಪ್ರಯತ್ನಗಳು ಆ ಹಂತದಲ್ಲಿ ನಡೆದಿದ್ದರೂ, ಅವೆಲ್ಲವನ್ನು ಏಕಸೂತ್ರದಲ್ಲಿ ಒಯ್ಯುವ ಕೆಲಸ ಆಗಿರಲಿಲ್ಲ. ಆ ಕೆಲಸ ಸಾಧ್ಯವಾದದ್ದು ಕೆ. ಪಿ. ರಾಯರು ಒಂದು ಪ್ರಮಾಣಿತ ಕೀಲಿಮಣೆ ವಿನ್ಯಾಸವನ್ನು ಸಂಶೋಧಿಸಿದಾಗ. ರಾಯರು ತಮ್ಮ ಶಬ್ದಾಧಾರಿತ ಕೀಲಿಮಣೆಗೆ ʻಸೇಡಿಯಾಪುʼ ಎಂದು ನಾಮಕರಣ ಮಾಡಿದರು. 

ರಾಯರು ತಮ್ಮ ತಂತ್ರಾಂಶಕ್ಕೆ ತಮ್ಮ ಗುರುಗಳ ಹೆಸರನ್ನಿಟ್ಟು ಕೃತಾರ್ಥರಾದರೆ, ಕರ್ನಾಟಕ ಸರ್ಕಾರ 2002ರಲ್ಲಿ ಇದನ್ನೇ ರಾಜ್ಯದ ಅಧಿಕೃತ ಕೀಲಿಮಣೆ ವಿನ್ಯಾಸ ಎಂದು ಸ್ವೀಕರಿಸಿ ರಾಯರ ಶ್ರಮವನ್ನು ಗೌರವಿಸಿತು. ಇಂದು ಇದೇ ತಂತ್ರಾಂಶ ʻನುಡಿʼ ಎಂದು ಪ್ರಸಿದ್ಧವಾಗಿರುವುದು ಎಲ್ಲರಿಗೂ ತಿಳಿದದ್ದೇ. ಕಂಪ್ಯೂಟರಿನಲ್ಲಿ ಕನ್ನಡ ಟೈಪಿಂಗ್ ಮಾಡಲು ಇನ್ನೂ ಕೆಲವು ತಂತ್ರಾಂಶಗಳು ಬಳಕೆಯಾಗುತ್ತಿದ್ದರೂ, ʻನುಡಿʼ ತನ್ನ ಸರಳ ಪ್ರಮಾಣಿತ ಸ್ವರೂಪದಿಂದಾಗಿ ಹೆಚ್ಚು ಜನಪ್ರಿಯವೆನಿಸಿದೆ. 

ದುಡ್ಡಿನಿಂದ ಸಂತೋಷ ಸಿಗಲ್ಲ...

ವಿಶೇಷವೆಂದರೆ, ತಮ್ಮದೇ ತಂತ್ರಾಂಶ ʻಸೇಡಿಯಾಪುʼವಿನ ಸಂಶೋಧನೆಗೆ ರಾಯರು ಪೇಟೆಂಟ್ ಪಡೆದುಕೊಂಡಿಲ್ಲ. 80ರ ದಶಕದಲ್ಲೇ ಅದನ್ನು ಕೇಳಿದವರಿಗೆಲ್ಲ ಅವರು ಉಚಿತವಾಗಿ ಕೊಟ್ಟಿದ್ದರು. ಕರ್ನಾಟಕ ಸರ್ಕಾರದ ಗಣಕ ಪರಿಷತ್ತು ಕೂಡ ʼನುಡಿʼಯನ್ನು ಉಚಿತವಾಗಿಯೇ ಒದಗಿಸುತ್ತಿದೆ. “ನೀವು ಪೇಟೆಂಟ್ ತೆಗೆದುಕೊಂಡಿದ್ದರೆ ಸಾಕಷ್ಟು ಹಣಸಂಪಾದನೆ ಮಾಡಬಹುದಿತ್ತು ಎಂದು ತುಂಬ ಮಂದಿ ನನಗೆ ಹೇಳುತ್ತಾರೆ. ನನ್ನ ದೊಡ್ಡ ಸಮಸ್ಯೆ ಎಂದರೆ ನನಗೆ ದುಡ್ಡಿನ ಬೆಲೆ ಗೊತ್ತಿಲ್ಲ. ಈ ತಂತ್ರಾಂಶವನ್ನಿಟ್ಟುಕೊಂಡು ಹಣಸಂಪಾದಿಸಬೇಕು ಎಂದು ನನಗೆಂದೂ ಅನಿಸಿಯೇ ಇಲ್ಲ. ನಮ್ಮ ಭಾಷೆಗಾಗಿ, ತಂತ್ರಜ್ಞಾನದೊಂದಿಗೆ ಅದನ್ನು ಬೆಳೆಸುವುದಕ್ಕಾಗಿ ಕೆಲಸ ಮಾಡುವುದರಲ್ಲಿ ನನಗೆ ದೊರೆಯುವ ಸಂತೋಷ ಹಣದಿಂದ ದೊರೆಯದು ಅನಿಸುತ್ತದೆ,” ಎಂದು ಮುಗುಳ್ನಗುತ್ತಾರೆ ಕೆ. ಪಿ. ರಾಯರು. ಇಂತಹ ಮಂದಿ ಈ ಕಾಲದಲ್ಲಿ ದೊರೆಯುವುದು ಬಹಳ ಕಷ್ಟ.

ಮಾನೋಟೈಪ್ನ ನಿರ್ದೇಶಕರಾಗಿ ನಿವೃತ್ತಿ ಹೊಂದಿದ ಬಳಿಕ ರಾಯರು ಮಣಿಪಾಲ ವಿಶ್ವವಿದ್ಯಾನಿಲಯ ಹಾಗೂ ಗೌಹಾಟಿಯ ಐಐಟಿಯಲ್ಲಿ ಪ್ರಾಧ್ಯಾಪಕರಾಗಿ ತಮ್ಮ ಜ್ಞಾನ-ಅನುಭವವನ್ನು ಹೊಸಪೀಳಿಗೆಗೆ ಧಾರೆಯೆರೆದರು. ಪ್ರತಿಷ್ಠಿತ ಅಡೋಬಿ ಕಂಪೆನಿಗೆ ಸಲಹೆಗಾರರಾಗಿ ಸೇವೆ ಸಲ್ಲಿಸಿದರು.  ಅನೇಕ ವೈಜ್ಞಾನಿಕ ಹಾಗೂ ಸೃಜನಶೀಲ ಕೃತಿಗಳನ್ನು ರಚಿಸಿದರು.

ಪ್ರಶಸ್ತಿ-ಗೌರವ:

ರಾಯರ ಸಾಧನೆ-ಶ್ರಮವನ್ನು ಗುರುತಿಸಿ ಅನೇಕ ಪ್ರಶಸ್ತಿಗಳು ಸಂದಿವೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,  ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ನಾಡೋಜ ಗೌರವ, ಆಳ್ವಾಸ್ ನುಡಿಸಿರಿ ಪ್ರಶಸ್ತಿಗಳು ಪ್ರಮುಖವಾದವು. ಕನ್ನಡ ಮಾಧ್ಯಮದಲ್ಲಿ ಕಲಿತ ಹಳ್ಳಿಗಾಡಿನ ಬಡಕುಟುಂಬದ ಹುಡುಗನೊಬ್ಬ ದೇಶವಿದೇಶ ಸುತ್ತಿ ಕನ್ನಡಕ್ಕಾಗಿ ಇಂತಹದೊಂದು ಶಾಶ್ವತ ಕೊಡುಗೆ ನೀಡಿರುವುದು ಕನ್ನಡಿಗರು ಎಂದೂ ಮರೆಯಲಾಗದ ವಿಷಯ. ಅದರಲ್ಲೂ “ನನಗೇನೂ ಬೇಡ, ಭಾಷೆ ಬೆಳೆದರೆ ಅಷ್ಟೇ ಸಾಕು,” ಎನ್ನುವುದಂತೂ ಯಾವ ಪ್ರಶಸ್ತಿಯೂ ಸರಿಗಟ್ಟದ ಒಂದು ಮನಸ್ಥಿತಿ. ಇಂತಹವರ ಸಂತತಿ ಅಸಂಖ್ಯವಾಗಲಿ.

- ಸಿಬಂತಿ ಪದ್ಮನಾಭ ಕೆ. ವಿ.


ಮಂಗಳವಾರ, ಜೂನ್ 13, 2023

ಬದುಕಿನ ಪಯಣಕ್ಕೆ ದಿಕ್ಸೂಚಿ ಯಾವುದು?

10-16 ಜೂನ್ 2023ರ 'ಬೋಧಿವೃಕ್ಷ'ದಲ್ಲಿ ಪ್ರಕಟವಾದ ಲೇಖನ

‘ನಲ್ವತ್ತರ ಈ ವಯಸ್ಸಿನಲ್ಲಿ ಇಂತಹ ಸಾಧನೆ ಮಾಡುವುದು ನಿಮಗೆ ಹೇಗೆ ಸಾಧ್ಯವಾಯಿತು?’ ಜಗತ್ತಿನ ಅತಿ ಎತ್ತರದ ಪರ್ವತ ಶಿಖರ ಮೌಂಟ್ ಎವರೆಸ್ಟನ್ನು ಮೊದಲ ಬಾರಿ ತನ್ನ ಗೆಳೆಯ ಎಡ್ಮಂಡ್ ಹಿಲರಿ ಜತೆಗೆ ಏರಿ ವಿಶ್ವದಾಖಲೆ ನಿರ್ಮಿಸಿದ ತೇನ್‌ಸಿಂಗ್ ನಾರ್ಗೆಯನ್ನು ಪತ್ರಕರ್ತರು ಹೀಗೆ ಪ್ರಶ್ನಿಸಿದರಂತೆ. ‘ಅಯ್ಯೋ ಇದು ನಲ್ವತ್ತನೇ ವಯಸ್ಸಲ್ಲಿ ಸಾಧಿಸಿದ್ದಲ್ಲ, ಹತ್ತುವರ್ಷ ವಯಸ್ಸಿನವನಿರುವಾಗಲೇ ಶುರುಮಾಡಿದ್ದೆ. ಮೊನ್ನೆ ಪೂರೈಸಿದೆ ಅಷ್ಟೇ’ ಎಂದು ಉತ್ತರಿಸಿದನಂತೆ ತೇನ್‌ಸಿಂಗ್.

‘ಹತ್ತು ವರ್ಷದವನಿದ್ದಾಗ ಹಿಮಾಲಯದ ತಪ್ಪಲಲ್ಲಿ ನಾನು ಕುರಿ ಮೇಯಿಸ್ತಾ ಇದ್ದೆ. ಎವರೆಸ್ಟನ್ನು ತೋರಿಸಿ ನನ್ನಮ್ಮ- ನೋಡು ಈ ಶಿಖರವನ್ನು ಈವರೆಗೆ ಯಾರೂ ಹತ್ತಿಲ್ಲ, ನೀನು ಹತ್ತುತ್ತೀಯಾ – ಅಂತ ಕೇಳಿದರು. ಎವರೆಸ್ಟ್ ಹತ್ತುವ ಕನಸು ಅಲ್ಲಿಂದಲೇ ಆರಂಭವಾಯಿತು. ಪ್ರತಿದಿನ ಕುರಿಕಾಯುತ್ತಾ ನಾನು ಮನಸ್ಸಿನಲ್ಲೇ ಎವರೆಸ್ಟ್ ಏರುತ್ತಿದ್ದೆ’ ಎಂದು ತೇನ್‌ಸಿಂಗ್ ವಿವರಿಸಿದನಂತೆ. 

ತೇನ್‌ಸಿಂಗ್ ಕಂಡ ಕನಸು ಮತ್ತು ಅದನ್ನು ಸಾಧಿಸುವ ಛಲ - ಇವೆರಡೇ ಆತನ ಬದುಕಿನ ಪಯಣದ ದಿಕ್ಸೂಚಿಗಳು. ಸಾಧನೆಯ ಹಿಂದಿನ ಪ್ರಬಲ ಪ್ರೇರಣೆ ಒಂದು ದೊಡ್ಡ ಕನಸು. ಸಾಧಕ ತನ್ನ ಅಂತಿಮ ಯಶಸ್ಸನ್ನು ಮನಸ್ಸಿನಲ್ಲಿ ಸದಾ ದೃಶ್ಶೀಕರಿಸಿಕೊಳ್ಳುತ್ತಾ, ಧ್ಯಾನಿಸುತ್ತಾ ಇದ್ದಾಗ ಅದು ಆತ ತನ್ನ ದಾರಿಯಲ್ಲಿ ಹಿಂದೆ ಬೀಳದಂತೆ, ನಿರುತ್ಸಾಹಗೊಳ್ಳದಂತೆ ನಡೆಯುವುದಕ್ಕೆ ಪ್ರೇರಣೆಯಾಗುತ್ತದೆ. ಆದರೆ ಕನಸು ಕಂಡರಷ್ಟೇ ಸಾಲದು, ಸಾಗುವ ದಾರಿಯೂ ಮುಖ್ಯ. ದೊಡ್ಡ ಕನಸಿನ ಸಾಧನೆಗೆ ದೊಡ್ಡ ಪರಿಶ್ರಮವೇ ಬೇಕಾಗುತ್ತದೆ. ಕನಸಿನ ಗುಂಗಿನಲ್ಲೇ ಕಾಲ ಕಳೆಯುತ್ತಾ ಅದಕ್ಕಾಗಿ ವಾಸ್ತವದಲ್ಲಿ ಏನನ್ನಾದರೂ ಮಾಡದೆ ಹೋದರೆ ಕೊನೆಗೆ ಟೊಳ್ಳು ಭ್ರಮೆಯಷ್ಟೇ ಉಳಿದುಕೊಳ್ಳುತ್ತದೆ.

ಜೀವಗತಿಗೊಂದು ರೇಖಾಲೇಖವಿರಬೇಕು
ನಾವಿಕನಿಗಿರುವಂತೆ ದಿಕ್ಕು ದಿನವೆಣಿಸೆ
ಭಾವಿಸುವುದೆಂತದನು ಮೊದಲು ಕೊನೆ ತೋರದಿರೆ?
ಆವುದೀ ಜಗಕಾದಿ - ಮಂಕುತಿಮ್ಮ

ಎಂದು ಕೇಳುತ್ತಾರೆ ಡಿ.ವಿ.ಜಿ. ನಾವಿಕನಿಗೆ ದಿಕ್ಸೂಚಿ ಇರುವಂತೆ  ಜೀವನದ ಪಯಣಕ್ಕೂ ಒಂದು ಮಾರ್ಗದರ್ಶನದ ರೇಖೆ ಇರಲೇಬೇಕು; ಯಶಸ್ಸಿನ ತುದಿ-ಮೊದಲಿನ ಸ್ಪಷ್ಟ ಕಲ್ಪನೆ ಇಲ್ಲದೆ ಹೋದರೆ ಅದನ್ನು ಸಾಧಿಸುವುದಾದರೂ ಹೇಗೆ ಎಂಬುದು ಅವರ ಪ್ರಶ್ನೆ. 

ಎಲ್ಲರಿಗೂ ಸಲ್ಲುವಂಥ ಏಕರೂಪದ ದಿಕ್ಸೂಚಿಯೊಂದು ಇರುವುದು ಅಸಾಧ್ಯ. ಒಬ್ಬೊಬ್ಬರನ್ನು ನಡೆಸುವ ಶಕ್ತಿ ಒಂದೊಂದು ಇರಬಹುದು. ಕೆಲವರು ಅದನ್ನು ಕನಸು ಕಾಣುವ ಶಕ್ತಿ ಎನ್ನಬಹುದು, ಇನ್ನು ಕೆಲವರು ಛಲ ಎನ್ನಬಹುದು, ಮತ್ತೆ ಕೆಲವರು ಆತ್ಮವಿಶ್ವಾಸ ಎನ್ನಬಹುದು. ತಮ್ಮ ಕಣ್ಣೆದುರಿನ ಆದರ್ಶವೇ ತಮ್ಮ ದಿಕ್ಸೂಚಿ ಎಂದು ಹಲವರು ಭಾವಿಸಬಹುದು. ಆದರೆ ಎಲ್ಲವೂ ಮೂಲತಃ ನಮ್ಮೊಳಗಿನಿಂದಲೇ ಮೂಡಿಬರಬೇಕು ಎಂಬುದು ಮಾತ್ರ ಸತ್ಯ. ಅದನ್ನು ‘ಅಂತರಂಗದ ಧ್ವನಿ’ ಎಂದೋ, ‘ಆತ್ಮಸಾಕ್ಷಿ’ ಎಂದೋ ಕರೆದರೆ ಚೆನ್ನ.

ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ನೂರು ಮಂದಿ ಸಾವಿರ ರೀತಿ ಹೇಳಬಹುದು. ಆದರೆ ಸರಿ-ತಪ್ಪುಗಳನ್ನು ಅಂತಿಮವಾಗಿ ನಿರ್ಧರಿಸಬೇಕಾದವರು ನಾವೇ. ಇಂಥ ಸಂದರ್ಭದಲ್ಲಿ ಅಂತರಂಗದ ಧ್ವನಿ ಮಾತ್ರ ನಮ್ಮ ನೆರವಿಗೆ ಬರುತ್ತದೆ. ಐಎಎಸ್ ತೇರ್ಗಡೆಯಾಗುವ ದೊಡ್ಡ ಕನಸು ಇಟ್ಟುಕೊಂಡ ವ್ಯಕ್ತಿ ಯಾವುದೋ ಕಾರಕೂನಿಕೆಯ ಕೆಲಸ ಸಿಕ್ಕಿತೆಂದು ಅದರಲ್ಲೇ ತೃಪ್ತಿಪಟ್ಟುಕೊಂಡರೆ ಐಎಎಸ್ ಕನಸಿನ ಕತೆಯೇನು? ‘ಬದುಕಿನಲ್ಲಿ ದೊಡ್ಡ ಕನಸುಗಳನ್ನು ನನಸು ಮಾಡಿಕೊಳ್ಳಬೇಕಾದರೆ ಸಣ್ಣಪುಟ್ಟ ತ್ಯಾಗಗಳನ್ನು ಮಾಡಬೇಕಾಗುತ್ತದೆ’ ಎನ್ನುತ್ತಾರೆ ಬಿ.ಜಿ.ಎಲ್. ಸ್ವಾಮಿ. ಸಾಧನೆಯ ಹಾದಿಯ ಇಕ್ಕೆಲಗಳಲ್ಲಿ ಸಾಕಷ್ಟು ಸಣ್ಣಪುಟ್ಟ ಆಕರ್ಷಣೆಗಳು ಇದ್ದೇ ಇರುತ್ತವೆ. ಅವುಗಳೇ ಸಾಕೆಂದು ಮುಂದೆ ಸಾಗುವ ಯೋಚನೆಯನ್ನು ಕೈಬಿಟ್ಟರೆ ಮುಂದೊಂದು ದಿನ ಕೊರಗಬೇಕಾಗುತ್ತದೆ. ಆಗ ಹಾಗೆ ಮಾಡಬಾರದಿತ್ತು ಅಂದುಕೊಳ್ಳುತ್ತೇವೆ. ಆದರೆ ಅಷ್ಟು ಹೊತ್ತಿಗೆ ಬಹಳ ತಡವಾಗಿರುತ್ತದೆ. ಕೆಲವು ತ್ಯಾಗಗಳು ಅನಿವಾರ್ಯ. ಆದರೆ ಅಂತಹ ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಹೊತ್ತು ಸಾಕಷ್ಟು ಸಲ ನೆರವಿಗೆ ಬರುವುದು ನಮ್ಮ ಅಂತರಂಗದ ಧ್ವನಿ ಮಾತ್ರ.

ಇದರರ್ಥ ಹಿರಿಯರ, ಗೆಳೆಯರ ಮಾತುಗಳಿಗೆ ಕಿವಿಗೊಡಬಾರದು ಎಂದೇ? ಖಂಡಿತ ನಾಲ್ಕು ಮಂದಿಯ ಅಭಿಪ್ರಾಯವನ್ನು ಪರಿಗಣಿಸಬೇಕು. ಅನೇಕ ಸಂದರ್ಭ ಗೊಂದಲಗಳು ಏರ್ಪಡುತ್ತೇವೆ. ಮುಂದೇನು ಎಂಬ ಅಯೋಮಯ ಸನ್ನಿವೇಶ ಎದುರಾಗುತ್ತದೆ. ಅಂತಹ ಸಂದರ್ಭ ಹಿರಿಯರ ಇಲ್ಲವೇ ಸ್ನೇಹಿತರ ಸಲಹೆಯನ್ನು ಕೇಳುವುದರಲ್ಲಿ ತಪ್ಪೇನೂ ಇಲ್ಲ. ‘ಅಪ್ಪ ನೆಟ್ಟ ಆಲದ ಮರಕ್ಕೆ ಯಾಕೆ ಜೋತು ಬೀಳಬೇಕು?’ ಎಂಬ ಉಡಾಫೆ ಸಾಕಷ್ಟು ಮಂದಿಯಲ್ಲಿ ಇರುತ್ತದೆ. ಅಪ್ಪ ನೆಟ್ಟ ಆಲದ ಮರವೂ ಮಹತ್ವದ್ದೇ. ಹಳೆಯದು, ಹಳಬರು ಎಂಬ ಕಾರಣಕ್ಕೆ ಎಲ್ಲವೂ ವರ್ಜ್ಯವಲ್ಲ. ನಮ್ಮ ಬೇರುಗಳನ್ನಂತೂ ಮರೆಯಬಾರದು. ಎಷ್ಟೇ ಉನ್ನತ ಹಂತಕ್ಕೆ ತಲುಪಿದರೂ ನಮ್ಮ ಮೂಲದ ನೆನಪು ಇರಲೇಬೇಕು. ಆದರೆ ನಾಲ್ಕು ಮಂದಿಯ ಬಳಿ ಅಭಿಪ್ರಾಯ ಕೇಳಿದ ಮೇಲೂ ಅಂತಿಮ ನಿರ್ಧಾರ ತೆಗೆದುಕೊಳ್ಳುವವರು ನಾವೇ ಆಗಿರಬೇಕು.

ಅನೇಕ ಸಂದರ್ಭಗಳಲ್ಲಿ ನಮ್ಮನ್ನು ದಾರಿ ತಪ್ಪಿಸುವವರು, ನಿರುತ್ತೇಜಿಸುವವರು ಬಹಳ ಮಂದಿ ಇರುತ್ತಾರೆ. ಅವರಲ್ಲಿ ನಾವು ‘ಆತ್ಮೀಯರು’ ಎಂದು ನಂಬಿದವರೂ ಇರುತ್ತಾರೆ. ಯಾವುದೋ ಒಂದು ಮಹತ್ವಾಕಾಂಕ್ಷೆಯನ್ನೇ ನೆಚ್ಚಿ ವಿಶ್ವಾಸದಿಂದ ಮುಂದೆ ಸಾಗುತ್ತಿರುವಾಗ ನಮ್ಮನ್ನು ಹಿಂದಕ್ಕೆ ಎಳೆಯುವವರು, ಆಮಿಷ ಒಡ್ಡುವವರು, ಉತ್ಸಾಹವನ್ನು ಕುಗ್ಗಿಸುವವರು, ಟೀಕಿಸುವವರು ಇದ್ದೇ ಇರುತ್ತಾರೆ. ಅವರ ತಂತ್ರಗಳಿಗೆ ಬಲಿಯಾದರೆ ಅಲ್ಲಿಗೆ ಕತೆ ಮುಗಿದಂತೆ. ವಾಸ್ತವವಾಗಿ ಇವೇ ನಮ್ಮ ಅಗ್ನಿಪರೀಕ್ಷೆಯ ಕ್ಷಣಗಳು. ಟೀಕೆಗಳನ್ನು ನಿರುಮ್ಮಳವಾಗಿ ಕೇಳಿಸಿಕೊಳ್ಳಬೇಕು. ಅವು ಪೊಳ್ಳು ಎಂದು ಅನಿಸಿದರೆ ನಿರ್ಲಕ್ಷಿಸಿ ಮುಂದೆ ಸಾಗಬೇಕು. ಅವುಗಳಲ್ಲೂ ಸತ್ವವಿದೆ ಅನಿಸಿದರೆ ಅವುಗಳನ್ನು ಆತ್ಮವಿಮರ್ಶೆಯ ಪರಿಕರಗಳನ್ನಾಗಿ ಬಳಸಬೇಕು. ಆ ಹಂತವನ್ನು ದೃಢಚಿತ್ತದಿಂದ ದಾಟಿ ಮುಂದೆ ಹೋದರೆ ನಮ್ಮ ಯಶಸ್ಸನ್ನು ಕಸಿದುಕೊಳ್ಳುವವರು ಯಾರೂ ಇಲ್ಲ.

ಈ ದೃಢಚಿತ್ತ ಹುಟ್ಟಿಕೊಳ್ಳುವುದು ಸ್ವಂತಿಕೆಯಲ್ಲಿ. ಅದು ಒಳಗಿನಿಂದ ಹೊಮ್ಮುವ ಬೆಳಕು. ಎರವಲು ಪಡೆದದ್ದು ತಾತ್ಕಾಲಿಕ; ಸ್ವತಂತ್ರವಾಗಿ ಆರ್ಜಿಸಿಕೊಂಡದ್ದಷ್ಟೇ ಬದುಕಿನ ಶಾಶ್ವತ ದಿಕ್ಸೂಚಿ. ಆದ್ದರಿಂದ ನಮ್ಮೆದುರಿನದ್ದು ಎಷ್ಟೇ ಚೆನ್ನಾಗಿದ್ದರೂ ಅದನ್ನು ನಕಲು ಮಾಡುವುದು ಬೇಡ. ಅದರಿಂದ ಪ್ರೇರಣೆಯನ್ನಷ್ಟೇ ಪಡೆಯೋಣ.

ಬದುಕಿನ ಪಯಣಕ್ಕೆ ಬೇಕಾದದ್ದು ನಕಾಶೆಯೋ ದಿಕ್ಸೂಚಿಯೋ ಎಂಬ ಮೂಲಪ್ರಶ್ನೆಯಿದೆ. ನಕಾಶೆ ಎಂದರೆ ಈಗಾಗಲೇ ಯಾರೋ ತಯಾರಿಸಿಟ್ಟಿರುವ ಚಿತ್ರ. ನಾವು ಎಲ್ಲಿ, ಹೇಗೆ ಸಾಗಬೇಕು ಎಂದು ಅದು ಮಾರ್ಗದರ್ಶನ ಮಾಡುತ್ತದೆ. ನಾವು ಅದರ ಪ್ರಕಾರ ಹೋದರೆ ನಿರ್ದಿಷ್ಟ ಸ್ಥಳವನ್ನು ತಲುಪಬಹುದು. ಹೊಸ ಸಾಧ್ಯತೆಗಳ ಬಗ್ಗೆ ನಾವು ಯೋಚಿಸುವುದೇ ಇಲ್ಲ. ಆದರೆ ದಿಕ್ಸೂಚಿ ದಿಕ್ಕನ್ನು ಮಾತ್ರ ತೋರಿಸುತ್ತದೆ. ನಮ್ಮ ದಾರಿಯನ್ನು ನಾವೇ ರೂಪಿಸಿಕೊಳ್ಳಬೇಕು. ಈ ಪಯಣದಲ್ಲಿ ಒಂದು ಬಗೆಯ ಹೊಸತನ ಮತ್ತು ಇದನ್ನು ನಾವೇ ಸಾಧಿಸಿದೆವೆಂಬ ಹೆಚ್ಚುವರಿ ತೃಪ್ತಿಯೂ ಇರುತ್ತದೆ. ಇದು ಅರ್ಥವಾದರೆ ಬದುಕಿನ ಪಯಣ ರೋಚಕ ಮತ್ತು ಸಾರ್ಥಕ.

- ಸಿಬಂತಿ ಪದ್ಮನಾಭ ಕೆ. ವಿ.

ಶುಕ್ರವಾರ, ಏಪ್ರಿಲ್ 14, 2023

ಮನದೊಳಗಣ ಕಿಚ್ಚು ಮನವ ಸುಡುವುದು

15-21 ಏಪ್ರಿಲ್ 2023ರ 'ಬೋಧಿವೃಕ್ಷ'ದಲ್ಲಿ ಪ್ರಕಟವಾದ ಲೇಖನ.

ಕಿಚ್ಚನಾರಿಸಬಹುದು ಹೊಟ್ಟೆಯ | ಕಿಚ್ಚಿಗೌಷಧವುಂಟೆ ಲೋಕದಿ | ಮಚ್ಚರವು ಜೀವಂತ ಸುಡುವುದು ನಿಚ್ಚವೆಮ್ಮ || ಎಂದು ಬರೆಯುತ್ತಾರೆ ಯುವ ಯಕ್ಷಗಾನ ಕವಿ ಶಿವಕುಮಾರ ಅಳಗೋಡು. ಅಸೂಯೆ ಎಷ್ಟು ಘೋರವಾದದ್ದು ಎಂಬುದನ್ನು ಎಷ್ಟೊಂದು ಸರಳವಾಗಿ ಚಿತ್ರಿಸಿದ್ದಾರೆ! ಭೌತಿಕವಾಗಿ ಕಾಣುವ ಬೆಂಕಿಯನ್ನು ಹೇಗಾದರೂ ನಂದಿಸಬಹುದು, ಆದರೆ ಒಳಗಿನ ಕಿಚ್ಚಿಗೆ ಪರಿಹಾರವಿಲ್ಲ; ಅದು ವ್ಯಕ್ತಿಯನ್ನು ದಿನವೂ ಸುಡುತ್ತಿರುತ್ತದೆ ಎಂಬ ಮಾತು ನೂರು ಪ್ರತಿಶತ ಸತ್ಯ.

ಅಸೂಯೆ ಎಂಬ ಬೆಂಕಿ ವ್ಯಕ್ತಿಗಳನ್ನಷ್ಟೇ ಅಲ್ಲ, ರಾಜ್ಯ-ಕೋಶಗಳನ್ನೇ ಸುಟ್ಟುಹಾಕಿದೆ,  ಸಾಮ್ರಾಜ್ಯಗಳನ್ನೇ ಬೂದಿಮಾಡಿದೆ, ವಂಶಗಳೇ ಅಳಿದುಹೋಗುವಂತೆ ಮಾಡಿದೆ. ಅದು ಅಂತಿಂಥ ಕಿಚ್ಚಲ್ಲ. ಬದುಕನ್ನೇ ನಿರ್ನಾಮ ಮಾಡುವ ಕಿಚ್ಚು. ಕಾಳ್ಗಿಚ್ಚನ್ನಾದರೂ ಕಟ್ಟಿಹಾಕಬಹುದು, ಈರ್ಷ್ಯೆಯನ್ನಲ್ಲ. ಬರಿಗಣ್ಣಿಗೆ ತಕ್ಷಣ ಕಾಣದೆ ಇರುವ ಈ ಜ್ವಾಲೆ ಕೆನ್ನಾಲಿಗೆಯಾದ ಮೇಲೆ ತಡೆಯುವುದು ಕಷ್ಟ.

ಕೈಕೇಯಿಯ ಅಸೂಯೆಯಿಂದ ರಾಮಾಯಣವಾಯಿತು; ಗಾಂಧಾರಿಯ ಅಸೂಯೆಯಿಂದ ಮಹಾಭಾರತವೇ ಸೃಷ್ಟಿಯಾಯಿತು. ರಾಮ ಕಾಡಿಗೆ ಹೋದದ್ದರಿಂದಲಾದರೂ ಭೂಭಾರ ಹರಣ ಆಯಿತು. ಆದರೆ ಗಾಂಧಾರಿ ಹೊಟ್ಟೆ ಹಿಸುಕಿಕೊಂಡದ್ದರಿಂದ ನೂರೊಂದು ಕೌರವರು ಹುಟ್ಟಿಕೊಂಡುಬಿಟ್ಟರು. ಇಡೀ ಮಹಾಭಾರತವೇ ದಾಯಾದಿ ಕಲಹದ ವೇದಿಕೆಯಾಯಿತು. ಗಾಂಧಾರಿ ಯಾವ ಅಸಹನೆಯಿಂದ ತನ್ನ ಗರ್ಭವನ್ನು ಹಿಸುಕಿಕೊಂಡಳೋ ಅದೇ ಅಸಹನೆ ಸಮಸ್ತ ಕೌರವರ ಸ್ಥಾಯೀಗುಣವೇ ಆಗಿ ಕೊನೆಗೆ ಕುರುಕ್ಷೇತ್ರವೇ ನಿರ್ಮಾಣವಾಯಿತು.

ಧೃತರಾಷ್ಟ್ರನಂತೂ ಹುಟ್ಟುಕುರುಡ. ಆತನಿಗಿಲ್ಲದ ದೃಷ್ಟಿ ತನಗೂ ಬೇಡ ಎಂದು ಗಾಂಧಾರಿ ತಾನೂ ದೃಷ್ಟಿಯನ್ನು ಬಂಧಿಸಿಕೊಂಡಳು. ವಿಚಿತ್ರವೆಂದರೆ ಕೌರವರೆಲ್ಲರೂ ಈರ್ಷ್ಯೆಯೆಂಬ ಬಟ್ಟೆಯಿಂದ ತಮ್ಮ ಅಂತರಂಗದ ಕಣ್ಣುಗಳನ್ನೇ ಕಟ್ಟಿಕೊಂಡರು. ಅಸೂಯೆ ಒಳಗಣ್ಣನ್ನೇ ಕುರುಡಾಗಿಸುತ್ತದೆ. ಅದು ಮನುಷ್ಯನನ್ನು ಯೋಚಿಸದಂತೆ ಮಾಡುತ್ತದೆ, ಆತ್ಮಾವಲೋಕನದ ಶಕ್ತಿಯನ್ನು ಕುಂದಿಸುತ್ತದೆ. ಹೇಗಾದರೂ ಮಾಡಿ ತನ್ನ ಪ್ರತಿಸ್ಪರ್ಧಿಯನ್ನು ಮಣಿಸಬೇಕು ಎಂಬ ಉದ್ದೇಶ ಪ್ರಬಲವಾಗುತ್ತದೆಯೇ ಹೊರತು ತಾನೇಕೆ ಹೀಗಾಗಿದ್ದೇನೆ ಎಂದು ಚಿಂತಿಸುವುದೇ ಇಲ್ಲ. ತನ್ನ ಒಂದು ಕಣ್ಣು ಹೋದರೂ ಅಡ್ಡಿಯಿಲ್ಲ, ಎದುರಾಳಿಯ ಎರಡೂ ಕಣ್ಣು ಹೋಗಲಿ ಎಂಬ ಭಾವನೆಯೇ ಇಲ್ಲಿ ಪ್ರಬಲ.

ಉದ್ಯೋಗ, ವ್ಯವಹಾರ, ಸಂಪತ್ತು, ಸಂಬಂಧ- ಎಲ್ಲ ಕಡೆಗಳಲ್ಲೂ ಮತ್ಸರ ಅನಾಹುತಗಳನ್ನು ಸೃಷ್ಟಿಸಬಲ್ಲದು. ಇನ್ನೊಬ್ಬ ತನಗಿಂತ ಮುಂದಿರಬಾರದು ಎಂಬ ಮನಸ್ಥಿತಿಯೇ ಈ ಮತ್ಸರಕ್ಕೆ ಕಾರಣ. ಆದರೆ ಸೂಕ್ಷ್ಮವಾಗಿ ಗಮನಿಸಿದರೆ ಈ ಮನಸ್ಥಿತಿಯ ಮೂಲಕಾರಣ ಸ್ಪರ್ಧೆ ಎಂಬುದಕ್ಕಿಂತಲೂ ವ್ಯಕ್ತಿಯ ಕೀಳರಿಮೆ ಎಂಬುದೇ ನಿಜ. ‘ಅಸೂಯೆ ಎಂಬುದು ಒಬ್ಬ ವ್ಯಕ್ತಿಯ ಕೀಳರಿಮೆಯ ಅಂತಃಪ್ರಜ್ಞೆ. ಅದೊಂದು ಮಾನಸಿಕ ಕ್ಯಾನ್ಸರ್’ ಎನ್ನುತ್ತಾನೆ ಫೋರ್ಬ್ಸ್. ಗುಣ, ರೂಪ, ಹಣ, ಜ್ಞಾನ, ಅಂತಸ್ತು, ಜನಪ್ರಿಯತೆ- ಯಾವ ವಿಷಯದಲ್ಲಾದರೂ ಈ ಕೀಳರಿಮೆ ಹುಟ್ಟಿಕೊಳ್ಳಬಹುದು. ಇಂತಹ ವಿಷಯಗಳಲ್ಲಿ ಇನ್ನೊಬ್ಬನ ಮಟ್ಟಕ್ಕೆ ಏರುವುದು ತನಗೆ ಸಾಧ್ಯವಿಲ್ಲ ಎಂದು ವ್ಯಕ್ತಿಗೆ ಅನ್ನಿಸಿದಾಗ ಅದು ಕೀಳರಿಮೆಯಾಗಿ ಬೆಳೆಯುವುದುಂಟು. ಅಸೂಯೆ ಕೀಳರಿಮೆಯ ಇನ್ನೊಂದು ಮುಖ.

ಕೀಳರಿಮೆಗೆ ಕಾರಣ ವಾಸ್ತವವನ್ನು ಒಪ್ಪಿಕೊಳ್ಳಲಾಗದ ಮನಸ್ಥಿತಿ. ಒಬ್ಬೊಬ್ಬ ವ್ಯಕ್ತಿಯೂ ಅವನದೇ ನೆಲೆಯಲ್ಲಿ ವಿಶಿಷ್ಟ ಮತ್ತು ಅನನ್ಯ. ಒಬ್ಬ ವ್ಯಕ್ತಿ ಯಾವುದೋ ಒಂದು ವಿಷಯದಲ್ಲಿ ಗಟ್ಟಿಗನಾಗಿದ್ದಾನೆಂದರೆ ಇನ್ನೊಬ್ಬ ವ್ಯಕ್ತಿ ಎಲ್ಲ ವಿಷಯಗಳಲ್ಲೂ ದುರ್ಬಲ ಎಂದರ್ಥವಲ್ಲ. ಅವನಿಗೆ ಅವನದ್ದೇ ಆದ ವೈಶಿಷ್ಟ್ಯಗಳಿರಬಹುದು, ಮತ್ತು ಅವುಗಳ ಮೂಲಕ ಯಶಸ್ಸು ಸಾಧಿಸಬಹುದು. ಒಂದು ವಿಷಯದಲ್ಲಿ ಗಟ್ಟಿಗ ಎನಿಸಿಕೊಂಡವನು ಉಳಿದ ಹತ್ತಾರು ವಿಷಯಗಳಲ್ಲಿ ದುರ್ಬಲನಾಗಿರಬಹುದು. ನಿಜವಾಗಿ ನೋಡಿದರೆ ಪರಿಪೂರ್ಣತೆಯೆಂಬುದು ಒಂದು ಭ್ರಮೆ. ಒಬ್ಬ ವ್ಯಕ್ತಿ ಪರಿಪೂರ್ಣನಾಗಿರುವುದು ಸಾಧ್ಯವೇ ಇಲ್ಲ. ಇದಿಷ್ಟು ಸ್ಪಷ್ಟ ಇರುವವನಿಗೆ ಇನ್ನೊಬ್ಬನ ಕುರಿತು ಮತ್ಸರ ಹುಟ್ಟಿಕೊಳ್ಳುವುದು ಸಾಧ್ಯವೇ ಇಲ್ಲ. ‘ಹೋಲಿಸಿಕೊಳ್ಳದೆ ಬದುಕುವುದೆಂದರೆ ದೊಡ್ಡ ಹೊರೆಯೊಂದನ್ನು ಇಳಿಸಿಕೊಂಡಂತೆ’ ಎನ್ನುತ್ತಾರೆ ಜಿಡ್ಡು ಕೃಷ್ಣಮೂರ್ತಿ. 

ತಾನು ಯಾರೊಂದಿಗೂ ಸ್ಪರ್ಧಿಸಬೇಕಿಲ್ಲ, ತನಗೆ ತಾನೇ ಸ್ಪರ್ಧಿ; ಪ್ರತಿದಿನವೂ ತನ್ನನ್ನು ತಾನು ಮೀರುವ ದಾರಿಯಲ್ಲಿ ಸಾಗಬೇಕು ಎಂಬ ಮನಸ್ಥಿತಿ ಬೆಳೆಸಿಕೊಂಡರೆ ಪ್ರತಿಸ್ಪರ್ಧಿಗಳಿಂದ ತನಗೆ ತೊಂದರೆಯಿದೆ ಎಂದು ಯಾವ ವ್ಯಕ್ತಿಗೂ ಅನ್ನಿಸಲಾರದು. ಉದ್ಯೋಗ ಸ್ಥಳದಲ್ಲೇ ಆಗಿರಲಿ, ತಾನು ಗರಿಷ್ಠ ಪ್ರಯತ್ನದೊಂದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಅದಕ್ಕೆ ಸೂಕ್ತ ಪ್ರತಿಫಲ ಇಂದಲ್ಲ ನಾಳೆಯಾದರೂ ಸಿಕ್ಕಿಯೇ ಸಿಗುತ್ತದೆ ಎಂದು ಭಾವಿಸಿದವನಿಗೆ ಅಸೂಯೆಯ ಕಿಚ್ಚು ಕಾಡಲಾರದು. 

ಇದು ನಮ್ಮನ್ನು ಅಸೂಯೆ ಕಾಡದಂತೆ ನೋಡಿಕೊಳ್ಳುವ ಬಗೆಯಾಯಿತು. ನಮ್ಮನ್ನು ನೋಡಿ ಇನ್ನೊಬ್ಬ ಅಸೂಯೆಪಟ್ಟುಕೊಳ್ಳುತ್ತಿದ್ದಾನೆ, ಹೋದ ದಾರಿಗೆಲ್ಲ ಅಡ್ಡಬರುತ್ತಿದ್ದಾನೆ ಎಂದು ಅನಿಸುತ್ತಿದೆಯೇ? ಅಂಥವರ ಬಗ್ಗೆ ಎಳ್ಳಷ್ಟೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಏಕೆಂದರೆ ಮತ್ಸರವೆಂಬುದು ವ್ಯಕ್ತಿಯ ಒಳಗಿನ ಕಿಚ್ಚು ಎಂದು ಆಗಲೇ ಹೇಳಿಯಾಯಿತು. ಕಿಚ್ಚು ಒಳಗೆ ಇದೆ ಎಂದ ಮೇಲೆ ಅದು ಲೋಕವನ್ನು ಸುಡುವುದಕ್ಕಿಂತ ಮುಂಚೆ ವ್ಯಕ್ತಿಯನ್ನೇ ಸುಡುತ್ತದೆ. ವಾಸ್ತವವಾಗಿ ಅಂಥವರು ಪ್ರತಿದಿನವೂ ತಮ್ಮೊಳಗೇ ಸುಟ್ಟುಹೋಗುತ್ತಿರುತ್ತಾರೆ; ಯಾವುದೋ ಒಂದು ದಿನ ನೋಡನೋಡುತ್ತಿದ್ದಂತೆಯೇ ಕರಕಲಾಗುತ್ತಾರೆ. ‘ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು’ ಎಂದು ಬಸವಣ್ಣನೇ ಹೇಳಿಲ್ಲವೇ? ಇನ್ನೊಬ್ಬನನ್ನು ನೋಡಿ ಅಸೂಯೆಪಡುವವರಿಗೆ ಮಾನಸಿಕ ನೆಮ್ಮದಿಯೇ ಇರುವುದಿಲ್ಲ. ಅವರು ಸದಾ ಅತೃಪ್ತಿ, ಅಶಾಂತಿಗಳಿಂದ ಒಳಗೊಳಗೇ ಬೇಯುತ್ತಿರುತ್ತಾರೆ. ಕುದಿಯುವವರು ಆವಿಯಾಗುತ್ತಾರೆ, ಉರಿಯುವವರು ಬೂದಿಯಾಗುತ್ತಾರೆ ಎಂಬ ಮಾತೇ ಇದೆಯಲ್ಲ! 

ಇನ್ನೊಂದು ವಿಚಾರ ಏನೆಂದರೆ, ಯಾರೋ ನಮ್ಮನ್ನು ನೋಡಿ ಮತ್ಸರಪಡುತ್ತಿದ್ದಾರೆ ಎಂದರೆ ನಾವು ಸಾಧನೆಯ ದಾರಿಯಲ್ಲಿದ್ದೇವೆ ಎಂದು ಅರ್ಥ. ಸೋತವರನ್ನು ನೋಡಿ ಯಾರೂ ಅಸೂಯೆಪಡುವುದಿಲ್ಲವಲ್ಲ! “ನಿಮ್ಮನ್ನು ನೋಡಿ ಅಸೂಯೆಪಡುವವರನ್ನು ದ್ವೇಷಿಸಬೇಡಿ. ಅವರು ವಾಸ್ತವವಾಗಿ ತಮಗಿಂತ ನೀವೇ ಉತ್ತಮ ಎಂದು ಭಾವಿಸಿಕೊಂಡಿರುತ್ತಾರೆ. ಅಂಥವರಿಗೆ ಮನಸ್ಸಿನಲ್ಲೇ ಕೃತಜ್ಞತೆ ಹೇಳಿ ಮುಂದಕ್ಕೆ ಹೋಗುತ್ತಾ ಇರಿ” ಎಂದು ದಾರ್ಶನಿಕರು ಇದೇ ಕಾರಣಕ್ಕೆ ಹೇಳಿರುವುದು.

ಯಾವ ಸುಯೋಧನನ ಮತ್ಸರದಿಂದ ಕುರುಕ್ಷೇತ್ರ ಸೃಷ್ಟಿಯಾಯಿತೋ, ಅದೇ ಸುಯೋಧನ ಒಂದು ಹಂತದಲ್ಲಿ ತನ್ನ ಪ್ರತಿಸ್ಪರ್ಧಿಯ ಶೌರ್ಯವನ್ನು ಮೆಚ್ಚಿದ್ದುಂಟಂತೆ. ಯುದ್ಧದಲ್ಲಿ ಭೀಮನ ಪರಾಕ್ರಮವನ್ನು ನೋಡಿದ ಕೌರವ ‘ಸದ್ಗುಣಕೆ ಮತ್ಸರವೆ’ ಎಂದುಕೊಳ್ಳುತ್ತಾನೆ (ಕುಮಾರವ್ಯಾಸಭಾರತ). ಇನ್ನೊಬ್ಬನ ಸದ್ಗುಣವನ್ನು, ಒಳ್ಳೆಯತನವನ್ನು, ನ್ಯಾಯಮಾರ್ಗದಲ್ಲಿ ಗಳಿಸುವ ಯಶಸ್ಸನ್ನು ನೋಡಿ ಖಂಡಿತ ಮತ್ಸರಪಟ್ಟುಕೊಳ್ಳಬಾರದು. ಇನ್ನೊಬ್ಬನನ್ನು ಪ್ರಾಮಾಣಿಕವಾಗಿ ಅಭಿನಂದಿಸುವುದರಲ್ಲಿ ಇರುವ ಆತ್ಮಸಂತೋಷ ಬೇರೆಡೆ ಸಿಗಲಾರದು. ‘ಸರ್ವಂ ಪರಿಕ್ರೋಶಮ್ ಜಹಿ’ (ಎಲ್ಲ ಬಗೆಯ ಮತ್ಸರವನ್ನು ತ್ಯಜಿಸು) ಎನ್ನುತ್ತದೆ ಋಗ್ವೇದ. ವೇದದ ಬೆಳಕು ನಮ್ಮನ್ನು ಮುನ್ನಡೆಸಲಿ.

- ಸಿಬಂತಿ ಪದ್ಮನಾಭ ಕೆ. ವಿ.

ಮಂಗಳವಾರ, ಏಪ್ರಿಲ್ 11, 2023

ಉದ್ಯೋಗಸೇತುವಾಗಬಲ್ಲ ಕೌಶಲ ಕೋರ್ಸುಗಳು

03 ಏಪ್ರಿಲ್ 2023ರ 'ಪ್ರಜಾವಾಣಿ'ಯಲ್ಲಿ ಪ್ರಕಟವಾದ ಲೇಖನ

ನಮ್ಮ ಶಿಕ್ಷಣ ವ್ಯವಸ್ಥೆ ಹಾಗೂ ಉದ್ಯೋಗರಂಗದ ನಡುವೆ ಅಡ್ಡ ನಿಂತಿರುವ ದೊಡ್ಡ ಗೋಡೆ ಕೌಶಲಗಳ ಕೊರತೆ. ಶಿಕ್ಷಣ ಸಂಸ್ಥೆಗಳಿಂದ ಲಕ್ಷಾಂತರ ಪದವೀಧರರು ಪ್ರತಿವರ್ಷ ಹೊರಬರುತ್ತಲೇ ಇದ್ದರೂ ಉದ್ಯೋಗಜಗತ್ತಿನ ಅವಶ್ಯಕತೆಗಳು ಪೂರೈಕೆಯಾಗುತ್ತಿಲ್ಲ. ಒಂದೆಡೆ ಖಾಲಿ ಉಳಿದಿರುವ ಅಸಂಖ್ಯ ಉದ್ಯೋಗಗಳು, ಇನ್ನೊಂದೆಡೆ ಹೆಚ್ಚುತ್ತಲೇ ಇರುವ ನಿರುದ್ಯೋಗ.

ಈ ವೈರುಧ್ಯವನ್ನು ಸರಿಪಡಿಸುವ ಏಕೈಕ ದಾರಿಯೆಂದರೆ ಶಿಕ್ಷಣ ಹಾಗೂ ಉದ್ಯೋಗಜಗತ್ತಿನ ನಡುವಿನ ಅಂತರವನ್ನು ನಿವಾರಿಸುವುದು; ಅಂದರೆ ನಮ್ಮ ಯುವಕರನ್ನು ಹೊಸಕಾಲದ ಕೌಶಲ್ಯಗಳೊಂದಿಗೆ ಸಶಕ್ತರೂ ಸಮರ್ಥರೂ ಆಗಿ ಬೆಳೆಸುವುದು. ಕಾಲ ಬದಲಾಗಿದೆ, ಉದ್ಯೋಗಗಳೂ ಬದಲಾಗಿವೆ, ಅದಕ್ಕೆ ತಕ್ಕಂತೆ ಶಿಕ್ಷಣ ಹಾಗೂ ತರಬೇತಿ ಬದಲಾಗದೆ ಇರುವುದೇ ಇಂದಿನ ಎಲ್ಲ ಸಮಸ್ಯೆಗಳ ಮೂಲ. 

ಉದ್ಯೋಗ ಜಗತ್ತು ಡೇಟಾ ಸೈನ್ಸ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಸೈಬರ್ ಸೆಕ್ಯುರಿಟಿ, ವರ್ಚುವಲ್ ರಿಯಾಲಿಟಿ, 3-ಡಿ ಪ್ರಿಂಟಿಂಗ್, ರೋಬೋಟಿಕ್ಸ್, ಕ್ಲೌಡ್ ಕಂಪ್ಯೂಟಿಂಗ್ ಮುಂತಾದ ಕ್ಷೇತ್ರಗಳೆಡೆಗೆ ಭರದಿಂದ ವ್ಯಾಪಿಸುತ್ತಿದೆ. ನಾವು ಕೇವಲ ಸಾಂಪ್ರದಾಯಿಕ ಉದ್ಯೋಗಗಳ ಕಡೆಗಷ್ಟೇ ಗಮನಹರಿಸಿದರೆ ಏನೇನೂ ಸಾಲದು. ಹೊಸತನದತ್ತ ತೆರೆದುಕೊಳ್ಳುವುದು ಇಂದಿನ ಅನಿವಾರ್ಯ.

ಹೊಸ ಉದ್ಯೋಗ ಸಾಧ್ಯತೆಗಳನ್ನು ಗಮನಿಸಿದಾಗ ತಕ್ಷಣಕ್ಕೆ ಇವೆಲ್ಲ ತಾಂತ್ರಿಕ ಹುದ್ದೆಗಳು ಎನಿಸಿದರೂ, ಇವು ಎಲ್ಲ ಹಿನ್ನೆಲೆಯ ಮಂದಿಯನ್ನೂ ಸ್ವಾಗತಿಸುವ ಕ್ಷೇತ್ರಗಳೆಂಬುದು ವಾಸ್ತವ ಸಂಗತಿ. ಬಿಎ, ಬಿಕಾಂ, ಬಿಎಸ್ಸಿಯಂತಹ ಸಾಂಪ್ರದಾಯಿಕ ಪದವಿಗಳನ್ನು ಪಡೆದವರೂ ಇವುಗಳನ್ನು ಪ್ರವೇಶಿಸಿ ಯಶಸ್ಸು ಸಾಧಿಸಬಹುದು. ದೊಡ್ಡದೊಡ್ಡ ಕಂಪೆನಿಗಳು ಇಂದು ಎದುರು ನೋಡುತ್ತಿರುವುದು ಕೌಶಲಗಳನ್ನೇ ಹೊರತು ಅಂಕಪಟ್ಟಿಗಳನ್ನಲ್ಲ. ಪದವಿ ವ್ಯಾಸಂಗ ಮಾಡುತ್ತಿರುವವರು ಅದರ ಜೊತೆಜೊತೆಗೆ ಕಲಿಯಬಹುದಾದ ನೂರಾರು ಕೋರ್ಸುಗಳು ಈಗ ಲಭ್ಯವಿವೆ. ಇವುಗಳಲ್ಲಿ ಅನೇಕವು ಉಚಿತ ಹಾಗೂ ಆನ್ಲೈನ್ ವಿಧಾನದಲ್ಲಿ ಲಭ್ಯ.  ಬಿಡುವಿನ ವೇಳೆಯಲ್ಲಿ ಒಂದೆರಡು ಕೋರ್ಸುಗಳನ್ನು ಮಾಡಿಕೊಂಡರೆ ಇವುಗಳ ನೆರವಿನಿಂದಲೇ ಒಳ್ಳೆಯ ಉದ್ಯೋಗಗಳನ್ನೂ ಪಡೆಯಬಹುದು.

ಡಿಜಿಟಲ್ ಮಾರ್ಕೆಟಿಂಗ್: ಯಾವುದೇ ಉತ್ಪನ್ನದ ಮಾರಾಟಗಾರರೂ ಇಂದು ಪ್ರಚಾರಕ್ಕಾಗಿ ಅವಲಂಬಿಸಿರುವುದು ಡಿಜಿಟಲ್ ಮಾಧ್ಯಮವನ್ನು. ಸಾಂಪ್ರದಾಯಿಕ ಮಾಧ್ಯಮಗಳ ಜಾಹೀರಾತು ಸಾಕಾಗುವುದಿಲ್ಲ. ಕಂಟೆAಟ್ ಡೆವಲಪ್ಮೆಂಟ್, ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್, ಸರ್ಚ್ ಇಂಜಿನ್ ಆಪ್ಟಿಮೈಸೇಶನ್- ಹೀಗೆ ಡಿಜಿಟಲ್ ಮಾರ್ಕೆಟಿಂಗ್‌ಗೆ ಸಂಬಂಧಿಸಿದಂತೆ ಹತ್ತಾರು ಆನ್ಲೈನ್ ಕೋರ್ಸುಗಳಿವೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್: ಬಹುತೇಕ ಆನ್ಲೈನ್ ಚಟುವಟಿಕೆಗಳು ಇಂದು ಕೃತಕ ಬುದ್ಧಿಮತ್ತೆ ಆಧರಿತವಾಗಿವೆ. ಅದನ್ನು ಬಳಸಿಕೊಂಡು ವ್ಯವಹಾರ ಕ್ಷೇತ್ರವನ್ನು ವಿಸ್ತರಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಹತ್ತಾರು ಉಚಿತ ಕೋರ್ಸುಗಳು ಲಭ್ಯವಿವೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಪ್ರಾಜೆಕ್ಟ್ಸ್, ಇಂಟ್ರೊಡಕ್ಷನ್ ಟು ಎಐ, ಸೆಕ್ಯೂರ್ & ಪ್ರೈವೇಟ್ ಎಐ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಫಾರ್ ರೋಬೋಟಿಕ್ಸ್, ಡೆವಲಪಿಂಗ್ ಎಐ ಅಪ್ಲಿಕೇಶನ್ಸ್ – ಈ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲವು ಕೋರ್ಸುಗಳು.

ಡೇಟಾ ಅನಲಿಟಿಕ್ಸ್: ತಂತ್ರಜ್ಞಾನ ಬೆಳೆದಂತೆ ವಿವಿಧ ರಂಗಗಳಿಗೆ ಸಂಬಂಧಿಸಿದ ದತ್ತಾಂಶ ಬೆಟ್ಟದಂತೆ ಬೆಳೆಯುತ್ತಿದೆ. ಇದರ ವಿಶ್ಲೇಷಣೆ ಮತ್ತು ಅನ್ವಯ ದುಸ್ತರವಾಗುತ್ತಿದೆ. ಹೀಗಾಗಿ ಡೇಟಾ ಅನಲಿಟಿಕ್ಸ್ ಎಂಬ ಪ್ರಧಾನ ಉದ್ಯೋಗ ಕ್ಷೇತ್ರವೊಂದು ತೆರೆದುಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಕಂಪ್ಯೂಟಿಂಗ್  ಫಾರ್ ಡೇಟಾ ಅನಾಲಿಸಿಸ್, ಕ್ರಿಪ್ಟೋಗ್ರಫಿ & ನೆಟ್ವರ್ಕ್ ಸೆಕ್ಯುರಿಟಿ, ಡೇಟಾ ಅನಲಿಟಿಕ್ಸ್ ವಿದ್ ಪೈಥಾನ್. ಡೇಟಾ ಅನಾಲಿಸಿಸ್ ಫಾರ್ ಡಿಸಿಶನ್ ಮೇಕಿಂಗ್, ವಿಶುವಲೈಸೇಶನ್ ಫಾರ್ ಡೇಟಾ ಜರ್ನಲಿಸಂ- ಇಂತಹ ಹತ್ತಾರು ಕೋರ್ಸುಗಳಿವೆ.

ಸೈಬರ್ ಸೆಕ್ಯುರಿಟಿ: ಆನ್ಲೈನ್ ಜಗತ್ತಿನ ಕಳ್ಳಕಾಕರಿಂದ ಸುರಕ್ಷಿತವಾಗಿರುವುದು ಇಂದಿನ ಆದ್ಯತೆಗಳಲ್ಲೊಂದು. ಹೀಗಾಗಿ ಸೈಬರ್ ಭದ್ರತೆಯ ಜ್ಞಾನ ಹಾಗೂ ಕೌಶಲಗಳನ್ನು ಬೆಳೆಸಿಕೊಂಡವರಿಗೆ ಸಾಕಷ್ಟು ಉದ್ಯೋಗಾವಕಾಶಗಳು ದೊರೆಯುತ್ತವೆ. ಸರ್ಟಿಫಿಕೇಟ್ ಇನ್ ಸೈಬರ್ ಸೆಕ್ಯುರಿಟಿ, ಇನ್ಫಾರ್ಮೇಶನ್ ಸೆಕ್ಯುರಿಟಿ & ಸೈಬರ್ ಫಾರೆನ್ಸಿಕ್ಸ್, ಆನ್ಲೈನ್ ಪ್ರೈವಸಿ, ಸೈಬರ್ ಸೆಕ್ಯುರಿಟಿ ಇನ್ ಹೆಲ್ತ್ಕೇರ್ ಪ್ರೋಗ್ರಾಮ್ಸ್- ಈ ಕ್ಷೇತ್ರದಲ್ಲಿ ಲಭ್ಯವಿರುವ ಕೆಲವು ಕೋರ್ಸುಗಳು.

ಡೇಟಾ ಸೈನ್ಸ್: ದತ್ತಾಂಶ ನಿರ್ವಹಣೆ ಕುರಿತ ಆನ್ಲೈನ್ ಕೋರ್ಸುಗಳನ್ನು ಇಂದು ಅಂತಾರಾಷ್ಟ್ರೀಯ ಮಟ್ಟದ ಕಂಪೆನಿಗಳು ಹಾಗೂ ವಿಶ್ವವಿದ್ಯಾನಿಲಯಗಳು ನೀಡುತ್ತಿವೆ. ಇವು ಉಚಿತವಾಗಿಯೂ ಲಭ್ಯವಿವೆ. ಪರ್ಡ್ಯು ಯೂನಿವರ್ಸಿಟಿಯ ಡೇಟಾ ಸೈನ್ಸ್ ಫಾರ್ ಸ್ಮಾರ್ಟ್ ಸಿಟೀಸ್, ಎಂಐಟಿ ಕೇಂಬ್ರಿಜ್‌ನ ಕೊಲಾಬೊರೇಟಿವ್ ಡೇಟಾ ಸೈನ್ಸ್ ಫಾರ್ ಹೆಲ್ತ್ಕೇರ್, ಐಬಿಎಂನ ಡೇಟಾ ಸೈನ್ಸ್ ಟೂಲ್ಸ್, ಯೂನಿವರ್ಸಿಟಿ ಆಫ್ ಲಂಡನ್‌ನ ಫೌಂಡೇಶನ್ಸ್ ಆಫ್ ಡೇಟಾ ಸೈನ್ಸ್ ಇಂತಹ ಉಪಯುಕ್ತ ಕೋರ್ಸುಗಳಿಗೆ ಉದಾಹರಣೆಗಳು.

ಗ್ರಾಫಿಕ್ ಡಿಸೈನಿಂಗ್: ಯೋಚನೆ-ಯೋಜನೆಗಳ ದೃಶ್ಶಿಕ ವಿವರಣೆ ಹೊಸಕಾಲದ ಅವಶ್ಯಕತೆಗಳಲ್ಲೊಂದು. ಹೀಗಾಗಿ ಎಲ್ಲೆಡೆಯೂ ಗ್ರಾಫಿಕ್ ವಿನ್ಯಾಸಕಾರರು ಇಂದು ಬೇಕೇಬೇಕು. ಜಾಹೀರಾತಿನಿಂದ ತೊಡಗಿ ಸಿನಿಮಾರಂಗದವರೆಗೆ ನೂರಾರು ಕ್ಷೇತ್ರಗಳು ಅವರನ್ನು ಸ್ವಾಗತಿಸುತ್ತವೆ. ಇಂಟ್ರೊಡಕ್ಷನ್ ಟು ಗ್ರಾಫಿಕ್ ಡಿಸೈನ್ ವಿದ್ ಫೋಟೋಶಾಪ್, ಫಂಡಮೆಂಟಲ್ಸ್ ಆಫ್ ಗ್ರಾಫಿಕ್ ಡಿಸೈನ್, ಗ್ರಾಫಿಕ್ಸ್ & ಅನಿಮೇಶನ್ ಡೆವಲಪ್ಮಂಟ್, ಕಂಪ್ಯೂಟರ್ ಗ್ರಾಫಿಕ್ಸ್- ಹೀಗೆ ಅನೇಕ ಕೋರ್ಸುಗಳು ಉಚಿತವಾಗಿ ದೊರೆಯುತ್ತವೆ.

ಫೋಟೋಗ್ರಫಿ & ವೀಡಿಯೋಗ್ರಫಿ: ಕೌಟುಂಬಿಕ ಕಾರ್ಯಕ್ರಮಗಳಿಂದ ತೊಡಗಿ ಕಾರ್ಪೋರೇಟ್ ಸಮಾರಂಭಗಳವರೆಗೆ ಎಲ್ಲರಿಗೂ ಬೇಕಾಗಿರುವುದು ಛಾಯಾಗ್ರಹಣ ಮತ್ತು ವೀಡಿಯೋಗ್ರಫಿ. ಹೀಗಾಗಿ ಕ್ಯಾಮೆರಾ ನಿರ್ವಹಿಸಬಲ್ಲವರಿಗೆ ಈಗ ಎಲ್ಲೆಡೆಯೂ ಬೇಡಿಕೆ. ಫೋಟೋಗ್ರಫಿ, ವೀಡಿಯೋಗ್ರಫಿ ಬಲ್ಲವರು ನಿರುದ್ಯೋಗಿಗಳಾಗಿ ಕುಳಿತುಕೊಳ್ಳುವ ಪ್ರಮೇಯವೇ ಇಲ್ಲ. ಹತ್ತಾರು ಸಂಖ್ಯೆಯಲ್ಲಿ ಲಭ್ಯವಿರುವ ಉಚಿತ ಆನ್ಲೈನ್ ಕೋರ್ಸುಗಳ ಮೂಲಕ ನಮ್ಮ ಫೋಟೋಗ್ರಫಿ ಕೌಶಲಗಳನ್ನು ಸುಲಭವಾಗಿ ಬೆಳೆಸಿಕೊಳ್ಳಬಹುದು.

ವೆಬ್ ಡಿಸೈನಿಂಗ್: ತಾಂತ್ರಿಕ ಪದವಿಗಳ ವ್ಯಾಸಂಗ ಮಾಡದೆಯೂ ಜಾಲತಾಣಗಳನ್ನು ಹಾಗೂ ಆ್ಯಪ್‌ಗಳನ್ನು ಅಭಿವೃದ್ಧಿಪಡಿಸುವುದು ಈಗಿನ ಪ್ರವೃತ್ತಿಗಳಲ್ಲೊಂದು. ಅನೇಕ ಯುವಕರು ಇದನ್ನೊಂದು ಹವ್ಯಾಸವನ್ನಾಗಿ ಬೆಳೆಸಿಕೊಂಡು ದೊಡ್ಡ ಯಶಸ್ಸು ಸಾಧಿಸಿರುವುದುಂಟು. ಇಂಟ್ರೊಡಕ್ಷನ್ ಟು ವೆಬ್ ಡೆವಲಪ್ಮೆಂಟ್, ಯುಎಕ್ಸ್ ಡಿಸೈನ್ ಫಾರ್ ಮೊಬೈಲ್ ಡೆವಲಪರ್ಸ್, ಯೂಸರ್ ಇಂಟರ್‌ಫೇಸ್ ಡಿಸೈನ್. ಯೂಸರ್ ಎಕ್ಸ್ಪೀರಿಯನ್ಸ್ ಡಿಸೈನ್- ಈ ವರ್ಗಕ್ಕೆ ಸಂಬಂಧಿಸಿದ ಕೆಲವು ಕೋರ್ಸುಗಳು.

ಎಲ್ಲಿ ದೊರೆಯುತ್ತವೆ?

ಪ್ರಧಾನಮಂತ್ರಿ ಕೌಶಲ ವಿಕಾಸ್ ಯೋಜನಾ (PMKVY), ರಾಷ್ಟ್ರೀಯ ಕೌಶಲಾಭಿವೃದ್ಧಿ ನಿಗಮ (NSDC), ಸ್ವಯಂ (SWAYAM) ಮುಂತಾದ ಸರ್ಕಾರಿ ಸಂಸ್ಥೆಗಳಲ್ಲದೆ ನಾಸ್‌ಕಾಮ್, ಇನ್ಫೋಸಿಸ್‌ನಂತಹ ಸರ್ಕಾರೇತರ ಸಂಸ್ಥೆಗಳು ನೂರಾರು ಉಚಿತ ಹಾಗೂ ಪಾವತಿ ಕೋರ್ಸುಗಳನ್ನು ಒದಗಿಸುತ್ತಿವೆ. ಪ್ರಮಾಣಪತ್ರವನ್ನೂ ನೀಡುತ್ತವೆ. ಕೆಲವು ಉಪಯುಕ್ತ ಲಿಂಕ್‌ಗಳು ಇಲ್ಲಿವೆ:

https://infyspringboard.onwingspan.com/

http://www.pmkvyofficial.org/

https://futureskillsprime.in/

https://swayam.gov.in/

https://www.careers360.com/

2020ರ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪದವಿ ಹಾಗೂ ಉದ್ಯೋಗಗಳ ನಡುವಿನ ಅಂತರವನ್ನು ಮೌಲ್ಯ ಹಾಗೂ ಕೌಶಲ್ಯಗಳ ಚೌಕಟ್ಟಿನಲ್ಲಿ ನಿವಾರಿಸಿಕೊಳ್ಳುವ ದೊಡ್ಡ ಕನಸು ಇಟ್ಟುಕೊಂಡಿದೆ. ಇದರ ಸಮರ್ಥ ಅನುಷ್ಠಾನ ವಿದ್ಯಾರ್ಥಿಗಳ ಉತ್ಸಾಹ ಹಾಗೂ ಅಧ್ಯಾಪಕರ ಬದ್ಧತೆಯ ಮೇಲೆ ನಿಂತಿದೆ. ಕೌಶಲಾಭಿವೃದ್ಧಿ ಕೋರ್ಸುಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಇದಕ್ಕಿರುವ ಸರಳ ಮಾರ್ಗ.

- ಸಿಬಂತಿ ಪದ್ಮನಾಭ ಕೆ. ವಿ.

ಶುಕ್ರವಾರ, ಫೆಬ್ರವರಿ 24, 2023

ಒತ್ತಡ ಒಳ್ಳೆಯದು!

18-24 ಫೆಬ್ರವರಿ 2023ರ 'ಬೋಧಿವೃಕ್ಷ'ದಲ್ಲಿ ಪ್ರಕಟವಾದ ಲೇಖನ

ಕಾಲೇಜು ಕಾಲದ ಅಥವಾ ಬೇರೆ ಯಾವುದೋ ಪರೀಕ್ಷೆಯ ದಿನಗಳನ್ನೊಮ್ಮೆ ನೆನಪಿಸಿಕೊಳ್ಳಿ. ತಡರಾತ್ರಿಯವರೆಗೆ, ಕೆಲವೊಮ್ಮ ರಾತ್ರಿಯೆಲ್ಲ ಓದು, ನಿದ್ದೆಯ ಕೊರತೆ, ದೈಹಿಕ-ಮಾನಸಿಕ ನಿತ್ರಾಣ... ಅಬ್ಬಾ, ಈ ಪರೀಕ್ಷೆ ಒಮ್ಮೆ ಮುಗಿದರೆ ಸಾಕಪ್ಪಾ, ಆಮೇಲೆ ಮೂರು ಹಗಲು ಮೂರು ರಾತ್ರಿ ಉದ್ದಕ್ಕೆ ನಿದ್ದೆ ಮಾಡುವುದೇ ಎಂದೆಲ್ಲ ನೀವು ಕನಸು ಕಾಣುತ್ತಿದ್ದಿರಬಹುದು. ಸರಿ, ಪರೀಕ್ಷೆ ಮುಗಿಯಿತು, ಇನ್ನು ಆರಾಮ; ಎಷ್ಟು ಬೇಕಾದರೂ ನಿದ್ದೆ ಮಾಡಬಹುದು ಅಂತೇನಾದರೂ ಮಲಗಲು ಪ್ರಯತ್ನಪಟ್ಟಿರೋ, ನಿದ್ದೆ ಅಷ್ಟು ಸುಲಭಕ್ಕೆ ನಿಮ್ಮ ಬಳಿ ಸುಳಿಯದು. ಪರೀಕ್ಷೆಯ ಜೊತೆಗೆ ಅದೂ ಎಲ್ಲೋ ದೂರಕ್ಕೆ ಹಾರಿರುತ್ತದೆ. ಒಂದೆರಡು ದಿನ ನೀವೂ ಅಯೋಮಯರಾಗಿ ಮಂಕುಬಡಿದವರಂತೆ ಕುಳಿತಿರುತ್ತೀರಿ. ನಿದ್ರೆಯೂ ಬಾರದು, ಹೊಸದೇನನ್ನಾದರೂ ಮಾಡುವುದಕ್ಕೆ ಮನಸ್ಸೂ ಒಪ್ಪದು. ‘ನನ್ನ ತಲೆಯೇ ಓಡುತ್ತಿಲ್ಲ’ ಎಂದು ಸಹವರ್ತಿಗಳ ಜೊತೆ ನೀವು ಹೇಳಿದ್ದನ್ನು ಜ್ಞಾಪಿಸಿಕೊಳ್ಳಿ.

ಪರೀಕ್ಷೆಯ ದಿನಗಳೇ ಆಗಬೇಕಿಲ್ಲ. ಬೇರೆ ಯಾವುದೇ ಒತ್ತಡದ ಸಂದರ್ಭ ಆಗಿರಬಹುದು. ಒಂದಷ್ಟು ದಿನ ನಿಮಿಷವೂ ಬಿಡುವಿಲ್ಲದೆ ನಿರಂತರವಾಗಿ ಕೆಲಸಕಾರ್ಯಗಳಲ್ಲಿ ವ್ಯಸ್ತರಾಗಿದ್ದು, ಅದು ಮುಗಿದ ಮೇಲೆ ಕಾಡುವ ಖಾಲಿತನವನ್ನು ನೆನಪಿಸಿಕೊಳ್ಳಿ. ಅಲ್ಲಿಯೂ ಹೀಗೆಯೇ ಆಗುತ್ತದೆ. ಎಲ್ಲ ಕೆಲಸ ಮುಗಿಸಿ ಕೊಂಚ ಬಿಡುವಾದ ಮೇಲೆ ಯಾವುದೋ ಒಂದು ಹೊಸದನ್ನು ಕೈಗೆತ್ತಿಕೊಳ್ಳೋಣ ಎಂದುಕೊAಡಿದ್ದರೆ, ಅದಕ್ಕೊಂದು ಮುಹೂರ್ತವೇ ಒದಗುವುದಿಲ್ಲ. ಮನಸ್ಸು ಏಕಾಗ್ರತೆ ಇಲ್ಲದೆ ಅತ್ತಿಂದಿತ್ತ ಇತ್ತಿಂದತ್ತ ಎತ್ತೆತ್ತಲೋ ಅಡ್ಡಾಡಿಕೊಂಡಿರುತ್ತದೆ. ಅರೆ, ಹತ್ತುಹಲವು ಕೆಲಸಗಳಿದ್ದಾಗ ಇದೊಂದನ್ನು ಮಾಡಿಮುಗಿಸಲು ಅರ್ಧ ಗಂಟೆ ಸಾಕಾಗುತ್ತಿತ್ತು, ಈಗ ದಿನಗಟ್ಟಲೆ ತೆಗೆದುಕೊಂಡರೂ ಕೆಲಸ ಪೂರ್ತಿಯಾಗುತ್ತಿಲ್ಲ ಎಂದು ನಿಮ್ಮೊಳಗೆಯೇ ಅಚ್ಚರಿಪಟ್ಟುಕೊಂಡ ಉದಾಹರಣೆಗಳೂ ಇರಬಹುದು.

ಹೌದು, ಇದು ಮನುಷ್ಯನ ಮೂಲಸ್ವಭಾವ. ಯಾವುದೇ ಕೆಲಸವನ್ನು ಗುಣಮಟ್ಟದೊಂದಿಗೆ ನಿರ್ವಹಿಸಬೇಕಾದರೆ ಒಂದು ‘ಫೋಕಸ್’ ಬೇಕು. ಈ ಫೋಕಸ್ ಹುಟ್ಟಿಕೊಳ್ಳುವುದು ಒತ್ತಡದಲ್ಲಿ. ‘ಅನಿವಾರ್ಯವೇ ಅನ್ವೇಷಣೆಯ ತಾಯಿ’ ಎಂಬ ಮಾತೇ ಇದೆಯಲ್ಲ! ಇಲ್ಲಿ ಒಂದು ಕೆಲಸವನ್ನು ಮಾಡಿಮುಗಿಸಲೇಬೇಕಾದ ಅನಿವಾರ್ಯವೇ ಕೆಲಸದ ಹಿಂದಿನ ಪ್ರೇರಣಾಶಕ್ತಿ. ಆಗ ಫೋಕಸ್ ತಾನೇತಾನಾಗಿ ಸೃಷ್ಟಿಯಾಗಿರುತ್ತದೆ. ಅದು ಇದ್ದಾಗ ಮನಸ್ಸು ಅಸ್ಥಿರಗೊಳ್ಳುವುದಿಲ್ಲ; ಮರ್ಕಟನಂತೆ ಅಲ್ಲಿ ಇಲ್ಲಿ ಅಡ್ಡಾಡುವುದಕ್ಕೆ ಎಡೆಯೇ ಇರುವುದಿಲ್ಲ. ಅರ್ಧ ದಿನದಲ್ಲಿ ಮಾಡಿಮುಗಿಸಬಹುದಾದ ಕೆಲಸ ಅರ್ಧ ಗಂಟೆಯಲ್ಲೇ ಆಗುವುದೂ ಇದೆ. 

ಸೃಜನಶೀಲ ಕೆಲಸಗಳಿಗೂ ಅನೇಕ ಬಾರಿ ಇಂತಹ ಒತ್ತಡ ಬೇಕು. ಒಂದು ಲೇಖನ ಬರೆಯಬೇಕೆಂದುಕೊಂಡಿರುತ್ತೇವೆ. ಹಾಗಂದುಕೊಂಡೇ ದಿನಗಟ್ಟಲೆ ಸಮಯ ಕಳೆದಿರುತ್ತೇವೆ. ಬರೆವಣಿಗೆ ಒಂದಂಗುಲವೂ ಮುಂದೆ ಹೋಗಿರುವುದಿಲ್ಲ. ಯಾವುದೋ ಒಂದು ದಿನ ನಾಳೆ ಬೆಳಗ್ಗೆ ಆ ಲೇಖನ ಮುಗಿದಿರಲೇಬೇಕು ಎಂಬ ಅನಿವಾರ್ಯ ಹುಟ್ಟಿಕೊಳ್ಳುತ್ತದೆ ನೋಡಿ; ಅನುಮಾನವೇ ಬೇಡ, ಲೇಖನ ಸಿದ್ಧವಾಗುತ್ತದೆ. ಕೆಲಸ ಆಗಲೇಬೇಕು ಎಂಬ ಒಳಗಿನ ಒತ್ತಡ ಕೆಲಸವನ್ನು ಆಗುಮಾಡುತ್ತದೆ. ತರ್ಕಗಳು, ಯೋಚನೆಗಳು, ಅಗತ್ಯ ನಿದರ್ಶನಗಳು ತಾವಾಗಿಯೇ ಹುಟ್ಟಿಕೊಂಡು ಮನಸ್ಸಿನ ಎದುರು ಬಂದು ಕುಣಿಯುತ್ತವೆ. ಕೈ ಬರೆಯುತ್ತಾ ಸಾಗುತ್ತದೆ. 

ಇದರರ್ಥ ಮನುಷ್ಯ ಸದಾ ಒತ್ತಡಗಳ ಮಧ್ಯೆ ಬದುಕಬೇಕು ಎಂದಲ್ಲ. ವ್ಯಕ್ತಿಗೆ ಬಿಡುವು, ವಿಶ್ರಾಂತಿ ಬಹಳ ಮುಖ್ಯ. ಅವುಗಳ ಕೊರತೆಯಿಂದ ಆರೋಗ್ಯವೇ ಹಾಳಾಗುತ್ತದೆ. ಆರೋಗ್ಯ ಕೈಕೊಟ್ಟರೆ ಉತ್ಸಾಹವೇ ಕುಂದಿಬಿಡುತ್ತದೆ. ಯಾವ ಹೊಸ ಕೆಲಸವೂ ಆಗುವುದಿಲ್ಲ. ದೈಹಿಕ, ಮಾನಸಿಕ ಆರೋಗ್ಯ ಎಲ್ಲದಕ್ಕಿಂತಲೂ ಮುಖ್ಯ. ಅದು ಇದ್ದಾಗ ಮಾತ್ರ ಎಂತಹ ಒತ್ತಡಗಳನ್ನೂ ನಿಭಾಯಿಸಬಹುದು. ಮನಸ್ಸನ್ನು ಜಡವಾಗಿರಲು ಬಿಡಬಾರದು ಎಂಬುದಷ್ಟೇ ಇಲ್ಲಿ ಒತ್ತಡ, ಗಮನ ಇತ್ಯಾದಿ ಪದಗಳನ್ನು ಬಳಸಿರುವ ಉದ್ದೇಶ.

An idle mind is a devils' workshop ಎಂಬ ನಾಣ್ಣುಡಿಯೇ ಇದೆ. ಸೋಮಾರಿ ಮನಸ್ಸು ದೆವ್ವಗಳ ಕಮ್ಮಟವಂತೆ! ಯಾವುದನ್ನೇ ಖಾಲಿಬಿಟ್ಟರೂ ಅದನ್ನು ಇನ್ನೊಬ್ಬರು ಆಕ್ರಮಿಸಿಕೊಳ್ಳುವ ಕಾಲ ಇದು. ಇನ್ನು ಮನಸ್ಸನ್ನು ಖಾಲಿ ಬಿಟ್ಟರೆ ಆಗುತ್ತದೆಯೇ? ಇಲ್ಲಸಲ್ಲದ ಯೋಚನೆಗಳು, ಅನಗತ್ಯ ವಿಚಾರಗಳು ಅಲ್ಲಿ ಬಂದು ತುಂಬಿಕೊಳ್ಳುತ್ತವೆ. ಅವುಗಳಿಗಿಂತ ದೊಡ್ಡ ದೆವ್ವಗಳಿಲ್ಲ. ನಮ್ಮ ಮನಸ್ಸನ್ನು, ಕೆಲಸಗಳನ್ನು ಕೆಡಿಸಲು ಬೇರೆಯಾರೂ ಬರಬೇಕಿಲ್ಲ. ಅದಕ್ಕೆ ನಾವೇ ಸಾಕು. ಮನಸ್ಸು ಸದಾ ಯಾವುದೋ ಕಾರ್ಯದ ಕಡೆ ವ್ಯಸ್ತವಾಗಿದ್ದರೆ ಅಲ್ಲಿ ಬೇರೆ ಇನ್ನೇನೋ ಬಂದು ಠಿಕಾಣಿ ಹೂಡುವುದಕ್ಕೆ ಅವಕಾಶವೇ ಇರುವುದಿಲ್ಲ. ನಿಮ್ಮ ಅನುಮತಿಯಿಲ್ಲದೆ ಅದು ಹೇಗೆ ಅನಗತ್ಯ ಕಿರಿಕಿರಿಗಳು ನಿಮ್ಮ ಮನಸ್ಸಿನ ಮನೆಯೊಳಗೆ ಬಂದು ಬಾಡಿಗೆ ಹಿಡಿಯುತ್ತವೆ ಹೇಳಿ?

ಬ್ಯುಸಿ ಆಗಿರುವುದರಿಂದ ಇನ್ನೊಂದು ಪ್ರಯೋಜನವೂ ಇದೆ. ‘ಬ್ಯುಸಿ ಆಗಿರುವುದು ಒಳ್ಳೆಯದು. ಏಕೆಂದರೆ ಅಂತಹ ಸಮಯದಲ್ಲಿ ಬೇರೆಯವರನ್ನು ಟೀಕಿಸುವುದಕ್ಕೆ ಸಮಯ ಇರುವುದಿಲ್ಲ’ ಎನ್ನುತ್ತಾನೆ ಒಬ್ಬ ಲೇಖಕ. ಇದಂತೂ ಒಂದು ಅದ್ಭುತ ಮಾತು. ಬಹಳ ಮಂದಿ ಇನ್ನೊಬ್ಬರ ತಪ್ಪುಗಳನ್ನು ಹುಡುಕುವುದರಲ್ಲಿ, ಅವರನ್ನು ಹಳಿಯುವಲ್ಲೇ ತಮ್ಮ ಆಯುಷ್ಯವನ್ನು ಕಳೆದುಬಿಡುತ್ತಾರೆ. ಬೇರೆಯವರನ್ನು ಸದಾ ವಿಮರ್ಶೆಯ ತಕ್ಕಡಿಯಲ್ಲಿ ತೂಗುವ ಇವರಿಗೆ ತಮ್ಮ ತಪ್ಪುಗಳು ಕಾಣಿಸುವುದೇ ಇಲ್ಲ, ಅಥವಾ ಕಂಡರೂ ಕಾಣದಂತೆ ಇರುತ್ತಾರೆ. ಯಾವಾಗಲೂ ಇನ್ನೊಬ್ಬರನ್ನು ದೂರುತ್ತಾ ಕೂರುವವರಿಗೆ ತಮ್ಮ ಉದ್ಧಾರದ ದಾರಿ ಕಾಣಿಸುವುದೇ ಇಲ್ಲ. ಅವರು ಸರಿ ಇಲ್ಲ, ಇವರು ಸರಿ ಇಲ್ಲ ಎನ್ನುತ್ತಲೇ ಇಂಥವರು ಮನಸ್ಸನ್ನು ಸದಾ ವಿಷದ ಕುಲುಮೆ ಮಾಡಿಕೊಂಡು ಅಸಂತುಷ್ಟಿಯಲ್ಲಿ ಒದ್ದಾಡುತ್ತಿರುತ್ತಾರೆ. ‘ಉದ್ಧರೇದಾತ್ಮನಾತ್ಮಾನಾಂ’ ಎಂದು ಗೀತಾಚಾರ್ಯನೇ ಹೇಳಿಲ್ಲವೇ? ಆತನ ಮಾತನ್ನು ನಾವು ಪ್ರಮಾಣವನ್ನಾಗಿ ಇಟ್ಟುಕೊಳ್ಳಬಹುದು. ನಮ್ಮ ಉದ್ಧಾರವನ್ನು ಮಾಡಲು ಇನ್ನೊಬ್ಬ ಬರುವುದಿಲ್ಲ, ಅದನ್ನು ನಾವೇ ಮಾಡಿಕೊಳ್ಳಬೇಕು. ಅದಾಗಬೇಕೆಂದರೆ ಮನಸ್ಸು ಭೂತಬಂಗಲೆಯಾಗದಂತೆ ಎಚ್ಚರವಹಿಸಬೇಕು. ‘ಏನಾದರೊಂದು ಕೆಲಸದಲ್ಲಿ ಸದಾ ನಿರತವಾಗಿರಿ, ಕಾರ್ಯನಿರತ ವ್ಯಕ್ತಿಗೆ ಅಸಂತೋಷದಿಂದಿರಲು ಸಮಯವೇ ಸಿಗುವುದಿಲ್ಲ’ ಎಂದಿದ್ದ ಪ್ರಸಿದ್ಧ ಕವಿ ಆರ್. ಎಲ್. ಸ್ಟೀವನ್‌ಸನ್. 

ಸದಾ ಬ್ಯುಸಿ ಆಗಿರುವುದು, ಒತ್ತಡಗಳ ಮಧ್ಯೆ ಬದುಕವುದು ಸರಿ; ಆದರೆ ಅದು ಎಂತಹ ಒತ್ತಡ ಎಂಬುದರ ಕುರಿತೂ ನಮಗೆ ಸ್ಪಷ್ಟತೆ ಬೇಕು. ಇಲ್ಲಿ ಬ್ಯುಸಿ ಆಗಿರುವುದು ಎಂದರೆ ನಮ್ಮಿಂದಾಗದ ಕೆಲಸಗಳನ್ನು ತಲೆಯ ಮೇಲೆ ಎಳೆದುಕೊಳ್ಳುವುದು ಎಂದಲ್ಲ, ನಮಗೆ ಒಗ್ಗುವ ಕೆಲಸಗಳಲ್ಲಿ ಸದಾ ನಿರತವಾಗಿರುವುದು ಎಂದರ್ಥ. ನಮಗೆ ಇಷ್ಟವಾದ ಕೆಲಸಗಳು ಎಷ್ಟಿದ್ದರೂ ಅದು ಒತ್ತಡ ಎನಿಸುವುದೇ ಇಲ್ಲ. ‘ಜಗತ್ತಿನಲ್ಲಿ ಅತ್ಯಂತ ಪ್ರಬಲವಾದ ಒತ್ತಡವೆಂದರೆ ಸ್ನೇಹಮಯ ಒತ್ತಡ’ ಎಂಬ ಮಾತೊಂದಿದೆ. ನಮ್ಮ ಹೊಣೆಗಾರಿಕೆಗಳನ್ನು ಸ್ನೇಹಮಯ ಒತ್ತಡಗಳನ್ನಾಗಿ ಮಾಡಿಕೊಳ್ಳುವುದು ನಮ್ಮ ಮನಸ್ಥಿತಿಯಲ್ಲಿ ಇದೆ. 

ಕೆಲಸಗಳ ಅಡಾವುಡಿಯಲ್ಲಿ, ಈಗಿಂದೀಗಲೇ ಆಗಬೇಕು ಎಂಬ ಒತ್ತಡದಲ್ಲಿ ಕವಿತೆಯೊಂದು ಹುಟ್ಟಿಕೊಳ್ಳುವುದು ಸಾಧ್ಯವೇ ಎಂದು ನೀವು ಕೇಳಬಹುದು. ಆ ಪ್ರಶ್ನೆ ಸರಿಯಾದದ್ದೇ ಆಗಿದೆ. ಸೃಜನಶೀಲ ಕೃತಿಯೊಂದು ಹುಟ್ಟಿಕೊಳ್ಳುವುದರ ಹಿಂದೆ ತಣ್ಣನೆಯ ಧ್ಯಾನವೊಂದು ಅಗತ್ಯ. ಸದಾ ಧಾವಂತದಲ್ಲಿ ಓಡಾಡುವ ಮಂದಿಗೆ ಇಂತಹ ಧ್ಯಾನಕ್ಕೆ ಸಮಯ ದೊರೆಯುವುದಿಲ್ಲ. ಧಾವಂತಗಳ ಮಧ್ಯೆ ನಮ್ಮನ್ನು ನಾವು ಕಳೆದುಕೊಳ್ಳುವ ಪರಿಸ್ಥಿತಿ ಬರಬಾರದು. ಎಲ್ಲ ಒತ್ತಡಗಳ ನಡುವೆಯೂ ನಮ್ಮದೇ ಆದ ಒಂದು ಪುಟ್ಟ ಏಕಾಂತ ಬೇಕು. ದಿನಚರಿಯನ್ನು ಸರಿಯಾಗಿ ನಿಭಾಯಿಸಿಕೊಳ್ಳಲು ಕಲಿತರೆ ಎಲ್ಲ ಒತ್ತಡಗಳ ಮಧ್ಯೆ ನಮ್ಮದೇ ಆದ ಸಮಯವೂ ಸಿಗುತ್ತದೆ. ‘ಬ್ಯುಸಿ ಆಗಿದ್ದರಷ್ಟೇ ಸಾಲದು; ಇರುವೆಗಳೂ ಬ್ಯುಸಿ ಆಗಿರುತ್ತವೆ. ನಾವು ಯಾವುದರಲ್ಲಿ ಬ್ಯುಸಿ ಆಗಿರುತ್ತೇವೆ ಎಂಬುದು ಮುಖ್ಯವಾದ ಪ್ರಶ್ನೆ’ ಎನ್ನುತ್ತಾನೆ ಒಬ್ಬ ಕವಿ. ಯಾವುದರಲ್ಲಿ ಬ್ಯುಸಿ ಆಗಿರಬೇಕು, ಅದರೊಳಗೆ ಎಷ್ಟು ಸಮಯವನ್ನು ಏಕಾಂತಕ್ಕಾಗಿ ಇಟ್ಟುಕೊಳ್ಳಬೇಕು ಎಂದು ಅರ್ಥಮಾಡಿಕೊಂಡವರನ್ನು ಯಶಸ್ಸು ಹುಡುಕಿಕೊಂಡು ಬರುತ್ತದೆ.

- ಸಿಬಂತಿ ಪದ್ಮನಾಭ ಕೆ. ವಿ.

ಶನಿವಾರ, ಜನವರಿ 21, 2023

ಹೇಳದೆ ನೆಪ, ಮಾಡೋಣ ಶಿಸ್ತಿನ ಜಪ

(24-30 ಡಿಸೆಂಬರ್ 2022ರ 'ಬೋಧಿವೃಕ್ಷ'ದಲ್ಲಿ ಪ್ರಕಟವಾದ ಲೇಖನ)

ಇವತ್ತು ಟ್ರೇನು ಹಿಡಿಯಲೇಬೇಕೆಂದು ಹೊರಟಿದ್ದೆ, ಒಂದೇ ನಿಮಿಷದಲ್ಲಿ ಮಿಸ್ ಆಯ್ತು. ಇವತ್ತು ಬಸ್ಸು ತಪ್ಪಿಸಿಕೊಳ್ಳಲೇಬಾರದು
ಅಂದುಕೊಂಡಿದ್ದೆ; ಕಣ್ಣೆದುರೇ ಹೊರಟುಹೋಯ್ತು... ಇಂತಹ ಮಾತುಗಳನ್ನು ಪ್ರತಿದಿನ ಅವರಿವರಿಂದ ಕೇಳಿಸಿಕೊಳ್ಳುತ್ತಲೇ ಇರುತ್ತೇವೆ. ಪ್ರತಿದಿನ ಯಾಕೆ ಕೇಳುತ್ತೇವೆ ಎಂದರೆ ಈ ಬಗೆಯ ಮಂದಿ ಎಲ್ಲ ಕಡೆ ಇರುತ್ತಾರೆ ಅಥವಾ ಇವರು ಪ್ರತಿದಿನವೂ ಟ್ರೇನು-ಬಸ್ಸುಗಳನ್ನು ತಪ್ಪಿಸಿಕೊಳ್ಳುತ್ತಲೇ ಇರುತ್ತಾರೆ. ಕೊನೆಗೆ ಇವರು ‘ನನ್ನ ಹಣೆಬರಹವೇ ಸರಿ ಇಲ್ಲ’ ಎಂದೋ, ಇನ್ನೊಬ್ಬರಿಂದಾಗಿ ಹೀಗಾಯ್ತು ಎಂದೋ ಷರಾ ಬರೆದುಕೊಳ್ಳುತ್ತಾ ಹೋಗುತ್ತಾರೆ. ಆದರೆ ಸಮಸ್ಯೆ ಸರಿಹೋಗುವುದಿಲ್ಲ. ಸಾಮಾನ್ಯ ಟ್ರೇನು-ಬಸ್ಸುಗಳು ತಪ್ಪಿಹೋದರೆ ಚಿಂತೆಯಿಲ್ಲ, ನಿಜಜೀವನದ ಬಂಡಿಗಳನ್ನು ತಪ್ಪಿಸಿಕೊಂಡರೆ ಮುಂದೆ ದೊಡ್ಡ ನಷ್ಟಗಳನ್ನು ಅನುಭವಿಸಬೇಕಾಗುತ್ತದೆ.

ಇವರು ಟ್ರೇನು-ಬಸ್ಸುಗಳ ವಿಷಯದಲ್ಲಿ ಮಾತ್ರವಲ್ಲ, ಬಹುತೇಕ ಎಲ್ಲ ವಿಷಯಗಳಲ್ಲೂ ಗೊಂದಲ-ಗೋಜಲು ಮಾಡಿಕೊಳ್ಳುತ್ತಾರೆ. ಯಾವುದೋ ದಿನದ ಒಳಗೆ ನಿರ್ದಿಷ್ಟ ಉದ್ದೇಶಕ್ಕೆ ಅರ್ಜಿ ಸಲ್ಲಿಸಬೇಕಿರುತ್ತದೆ; ಕೊನೆಯ ದಿನಾಂಕ ಮುಗಿದ ಮರುದಿನ ಅದು ನೆನಪಾಗಿ ತಲೆತಲೆ ಚಚ್ಚಿಕೊಳ್ಳುತ್ತಾರೆ. ಇವತ್ತು ಐದು ಕೆಲಸ ಮಾಡಿ ಮುಗಿಸಲೇಬೇಕು ಎಂದು ಮನೆಯಿಂದ ಹೊರಟಿರುತ್ತಾರೆ. ಸಂಜೆಯ ವೇಳೆಗೆ ಅವುಗಳಲ್ಲಿ ಒಂದೆರಡನ್ನೂ ಮಾಡಲಾಗದೆ ಆತಂಕ ಹೆಚ್ಚಿಸಿಕೊಳ್ಳುತ್ತಾರೆ. ಯಾಕೆ ಹೀಗಾಗುತ್ತದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಿದರೆ ಅರ್ಥವಾಗುವುದೇನೆಂದರೆ ಇವರು ‘ಫೋಕಸ್’ ಕಳೆದುಕೊಂಡಿರುತ್ತಾರೆ, ಅಥವಾ ಎಂದೂ ಕೆಲಸಗಳನ್ನು ವ್ಯವಸ್ಥಿತವಾಗಿ ಮಾಡುವ ಬಗ್ಗೆ ತಲೆಕೆಡಿಸಿಕೊಂಡಿರುವುದಿಲ್ಲ. ಸರಳವಾಗಿ ಹೇಳಬೇಕೆಂದರೆ ಜೀವನಶಿಸ್ತು ಕುರಿತು ಇವರಿಗೆ ಆಸಕ್ತಿ ಕಡಿಮೆ.

‘ಅಶಿಸ್ತಿನಿಂದ ಬದುಕಿರಿ! ಆರಾಮವಾಗಿರಿ!’ ಎಂದು ಹೇಳುವ ಕೆಲವು ಮಂದಿ ಸಿಗುತ್ತಾರೆ. ಆದರೆ ಈ ಅಶಿಸ್ತಿನ ಸೂತ್ರ ಕೆಲವರಿಗಷ್ಟೇ ಸಂತೋಷ-ಸಮಾಧಾನ ತಂದುಕೊಡಬಹುದು. ಬೇರೆಯವರಿಗೆ ಮಾದರಿಯಾಗುವಂತೆ, ಪ್ರೇರಣೆಯಾಗುವಂತೆ ಬದುಕುವುದು ಕಷ್ಟ. ಜೀವನದಲ್ಲಿ ಎಲ್ಲವನ್ನೂ ನಿರೀಕ್ಷಿಸಿದಂತೆ, ನಿರ್ದಿಷ್ಟ ಯೋಜನೆಯಂತೆ ಮಾಡಿಕೊಂಡು ಹೋಗುವುದು ಅಸಾಧ್ಯ ಎಂಬುದೇನೋ ನಿಜ. ಆದರೆ ಎಲ್ಲರೂ ಅಶಿಸ್ತಿನಿಂದ ಬದುಕುತ್ತೇವೆ, ಆರಾಮವಾಗಿರುತ್ತೇವೆ ಎಂದುಕೊಂಡರೆ ಬದುಕೇ ಗೊಂದಲದ ಗೂಡಾಗಬಹುದು.

ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲ ಒಂದು ಪಾತ್ರದ ಚೌಕಟ್ಟಿನಲ್ಲೇ ಜೀವಿಸುತ್ತ ಇರುತ್ತಾನೆ. ವಿದ್ಯಾರ್ಥಿ, ಉದ್ಯೋಗಿ, ಮಾಲೀಕ, ತಂದೆ, ತಾಯಿ, ಪತಿ, ಪತ್ನಿ, ಗೃಹಿಣಿ... ಯಾವುದೋ ಒಂದು ಹೊಣೆಗಾರಿಕೆ ಹೆಗಲ ಮೇಲೆ ಸದಾ ಇರುತ್ತದೆ. ಅನೇಕ ಬಾರಿ ಒಬ್ಬ ವ್ಯಕ್ತಿ ಅನೇಕ ಚೌಕಟ್ಟುಗಳೊಳಗೆ ಏಕಕಾಲಕ್ಕೆ ಪಾತ್ರನಿರ್ವಹಿಸುತ್ತಾ ಇರುತ್ತಾನೆ. ಪ್ರತಿ ಚೌಕಟ್ಟೂ ಮಹತ್ವದ್ದೇ. ಅಲ್ಲಿ ನಿರ್ದಿಷ್ಟ ಯೋಚನೆ-ಯೋಜನೆಗಳು ಇಲ್ಲದೇ ಹೋದಾಗ ಬದುದು ಪ್ರತಿದಿನವೂ ಆತಂಕಕಾರಿ ಎನಿಸತೊಡಗುತ್ತದೆ.

ಟ್ರೇನು ತಪ್ಪಿಸಿಕೊಳ್ಳುವವನ ಉದಾಹರಣೆಯನ್ನೇ ತೆಗೆದುಕೊಳ್ಳೋಣ. ಆ ಟ್ರೇನಿಗೆ ಆತ ಮೊದಲ ಬಾರಿ ಹೋಗುವವನೇನಲ್ಲ. ಪ್ರತಿದಿನದ ಪ್ರಯಾಣಿಕನೇ. ಅದು ಇಂತಹ ಸಮಯಕ್ಕೆ ಬರುತ್ತದೆ ಎಂಬ ತಿಳುವಳಿಕೆ ಸಹಜವಾಗಿಯೇ ಇರುತ್ತದೆ. ಆದರೂ ಯಾಕೆ ಪದೇಪದೇ ತಪ್ಪಿಸಿಕೊಳ್ಳುತ್ತಾನೆ? ಎಲ್ಲೋ ಒಂದು ಕಡೆ ಆತ ಸಮಯವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿಕೊಳ್ಳುವಲ್ಲಿ, ಮುಂದಾಲೋಚನೆ ಮಾಡುವಲ್ಲಿ ಸೋತಿದ್ದಾನೆ ಎಂದು ಅರ್ಥ. ಅನಿರೀಕ್ಷಿತವಾಗಿ ಬರುವ ಕೆಲವು ಅಡೆತಡೆಗಳು ಎಲ್ಲ ಕಡೆ ಇರುತ್ತವೆ, ಅವುಗಳಿಂದ ತೊಂದರೆಗೊಳಗಾಗುವುದನ್ನು ತಪ್ಪಿಸಿಕೊಳ್ಳಲಾಗದು. ಆದರೆ ಅನಿರೀಕ್ಷಿತವೇ ಒಂದು ದಿನಚರಿ ಆಗಬಾರದು. 

ಕೆಲವರಿಗೆ ಜೀವನಶಿಸ್ತು ಸಹಜವಾಗಿಯೇ ಬಂದಿರುತ್ತದೆ. ಅವರ ಪ್ರತಿಯೊಂದು ಕೆಲಸದಲ್ಲೂ ಅಚ್ಚುಕಟ್ಟುತನ ಎದ್ದುಕಾಣುತ್ತದೆ. ಅವರು ಏನೇ ಮಾಡಿದರೂ ಚಂದ. ‘ಅಯ್ಯೋ ಯಾವುದಕ್ಕೂ ಟೈಮೇ ಸಿಗುತ್ತಿಲ್ಲ’ ಎಂಬ ದೂರು ಅವರಲ್ಲಿ ಕಡಿಮೆ. ಇರುವ ಸಮಯವನ್ನು ಅವರು ಅತ್ಯುತ್ತಮವಾಗಿ ಬಳಸಿಕೊಳ್ಳಬಲ್ಲರು. ಇನ್ನು ಕೆಲವರು ಯಾವುದನ್ನೂ ಸರಿಯಾಗಿ ಮಾಡುವುದಿಲ್ಲ. ಎಲ್ಲವೂ ಅರ್ಧಂಬರ್ಧ. ದಿನಕ್ಕೆ ನಲ್ವತ್ತೆಂಟು ಗಂಟೆ ಕೊಟ್ಟರೂ ಅವರು ಅದನ್ನು ಯಶಸ್ವಿಯಾಗಿ ಹಾಳುಗೆಡಹಬಲ್ಲರು. ಇವರಿಗೆ ಪ್ರತಿಯೊಂದಕ್ಕೂ ಏನಾದರೊಂದು ನೆಪ ಇದ್ದೇ ಇರುತ್ತದೆ. ಎಲ್ಲವನ್ನೂ ಅಚ್ಚುಕಟ್ಟಾಗಿ ಜೋಡಿಸಿಡಬೇಕೆಂದು ಅಂದುಕೊಳ್ಳುತ್ತೇನೆ, ಆದರೆ ನಮ್ಮ ಮನೆ ತುಂಬ ಸಣ್ಣದು. ಯಾವುದಕ್ಕೂ ಜಾಗ ಇಲ್ಲ ಎನ್ನುತ್ತಾರೆ. ತಮಾಷೆಯೆಂದರೆ ದೊಡ್ಡ ಮನೆ ಕೊಟ್ಟರೂ ಇವರು ಹೀಗೆಯೇ ಇರುತ್ತಾರೆ. ಏಕೆಂದರೆ ಅಶಿಸ್ತನ್ನು ಇವರು ಹುಟ್ಟುತ್ತಲೇ ಆವಾಹಿಸಿಕೊಂಡಿರುತ್ತಾರೆ. ಇವರು ಯಾವುದನ್ನೂ ಎತ್ತಿದಲ್ಲೇ ಮತ್ತೆ ಇಡಲಾರರು. ಇರುವ ಜಾಗವನ್ನು ಸದುಪಯೋಗಪಡಿಸಿಕೊಳ್ಳಲಾರರು. 

ಬಾಚಣಿಗೆ, ಪೌಡರು, ಕ್ಲಿಪ್ಪು, ಮತ್ತೊಂದು- ಇಂಥವನ್ನೆಲ್ಲ ಇಡಲು ಗೊತ್ತುಪಡಿಸಿದ ಒಂದು ನಿರ್ದಿಷ್ಟ ಜಾಗ ಇದ್ದರೂ ಅವನ್ನು ಅಲ್ಲೇ ಇಡಲಾರರು. ತಾವೆಲ್ಲಿಗೆ ಎತ್ತಿಕೊಂಡು ಹೋಗಿರುತ್ತಾರೋ ಅಲ್ಲೇ ಬಿಟ್ಟು ಮುಂದಿನ ಕೆಲಸಕ್ಕೆ ಹೋದಾರು. ಮುಂದಿನ ಸಲ ಆ ಜಾಗ ಮರೆತುಹೋಗಿರುತ್ತದೆ. ಅವುಗಳನ್ನು ಮನೆಯೆಲ್ಲ ಹುಡುಕಿ ಇರುವ ಸಮಯವನ್ನು ಕಳೆದುಕೊಂಡಾರು. ನೈಲ್ ಕಟ್ಟರ್ ಬಳಸಿ ಮತ್ತೆ ಅಲ್ಲೇ ತಂದು ಇಡಲಾರರು. ಮತ್ತೊಮ್ಮೆ ನೈಲ್ ಕಟ್ಟರ್ ಬಳಸುವ ಸಂದರ್ಭ ಬಂದಾಗ ಮತ್ತೆ ಮನೆಯೆಲ್ಲ ಹುಡುಕಾಟ. ತಮ್ಮ ಸ್ನಾನದ ಟವೆಲನ್ನು ಒಂದೇ ಕಡೆ ಒಣಹಾಕುವ ಅಭ್ಯಾಸ ಬೆಳೆಸಿಕೊಳ್ಳಲಾರರು. ಸ್ನಾನದ ಹೊತ್ತಿಗೆ ಗಡಿಬಿಡಿ ಮಾಡಿಕೊಂಡು ಅದೆಲ್ಲೆಂದು ಸಿಗದೆ ಹೊಸದೊಂದು ಟವೆಲ್ ಎಳೆದುಕೊಂಡಾರು. ತಾವು ಪ್ರತಿದಿನ ಬಳಸುವ ಪೆನ್ನು-ಪುಸ್ತಕ-ವಾಚು-ಬ್ಯಾಗುಗಳನ್ನೇ ಒಂದು ನಿರ್ದಿಷ್ಟ ಕಡೆ ಇರಿಸಿಕೊಳ್ಳಲಾರರು. ಆಮೇಲೆ ಅವುಗಳನ್ನೇ ಹುಡುಕುತ್ತಾ ಅರ್ಧರ್ಧ ಗಂಟೆ ಕಳೆದುಕೊಂಡಾರು, ಬರಿದೇ ಆತಂಕ ಹೆಚ್ಚಿಸಿಕೊಂಡಾರು.

ಇವೆಲ್ಲ ಸಣ್ಣಪುಟ್ಟ ಸಂಗತಿಗಳು ಎನಿಸಬಹುದು. ಆದರೆ ದಿನನಿತ್ಯದ ಬದುಕನ್ನು ಕಟ್ಟಿಕೊಡುವ ಸಣ್ಣ ತುಣುಕುಗಳು ಇವೇ. ಸ್ವಭಾವತಃ ಈ ಶಿಸ್ತು ಬಂದಿಲ್ಲ ಎಂದಿಟ್ಟುಕೊಳ್ಳಿ; ಕೆಲವನ್ನಾದರೂ ಪ್ರಜ್ಞಾಪೂರ್ವಕ ರೂಢಿಸಿಕೊಳ್ಳಬಹುದು. ಹುಟ್ಟುಗುಣ ಸುಟ್ಟರೂ ಹೋಗದು ಎಂಬ ಮಾತಿದೆ. ಆದರೆ ನಮ್ಮದೇ ಬದುಕಿನ ನಿರಾಳತೆಗಾಗಿ, ನೆಮ್ಮದಿಗಾಗಿ ಕೆಲವು ವಿಷಯಗಳನ್ನು ಪ್ರಜ್ಞಾಪೂರ್ವಕವಾಗಿಯೇ ಅಳವಡಿಸಿಕೊಳ್ಳುವುದು ಅನಿವಾರ್ಯ.

ದಿನಚರಿಯಲ್ಲಿ ಒಂದು ಸರಳ ವೇಳಾಪಟ್ಟಿಯನ್ನು ಅಳವಡಿಸಿಕೊಳ್ಳುವುದರಿಂದ ಬಹುತೇಕ ಅಶಿಸ್ತನ್ನು ಮತ್ತು ಅದರಿಂದುAಟಾಗುವ ಗೊಂದಲಗಳನ್ನು ತಡೆಯಬಹುದು. ಇದು ಶಾಲೆಯ ಟೈಂಟೇಬಲ್ ರೀತಿಯಲ್ಲಿ ಇರಬೇಕಾಗಿಲ್ಲ. ದಿನನಿತ್ಯದ ಅನೇಕ ಕೆಲಸಗಳನ್ನು ನಿಮಿಷ, ಸೆಕೆಂಡುಗಳ ಲೆಕ್ಕ ಇಟ್ಟುಕೊಂಡು ಮಾಡಲಾಗುವುದಿಲ್ಲ. ಆದರೆ ಅಂತಹದೊಂದು ವೇಳಾಪಟ್ಟಿಯ ಚೌಕಟ್ಟು ಇಲ್ಲದೆ ಹೋದಾಗ ಆಯಾ ದಿನದ ಉದ್ದೇಶ-ಗುರಿಗಳೆಲ್ಲ ಗೊಂದಲಗಳಾಗಿ ಮಾರ್ಪಟ್ಟು ಆತ್ಮವಿಶ್ವಾಸವನ್ನೇ ಕಳೆದುಕೊಂಡುಬಿಡುತ್ತೇವೆ. ಅದೇ ನಾವೆಂದುಕೊAಡAತೆ ಕೆಲಸಗಳು ನಡೆದಾಗ ಒಂದು ಸಂತೃಪ್ತಿಯ ನಿದ್ದೆಗೆ ಜಾರುತ್ತೇವೆ. ಮನುಷ್ಯನಿಗೆ ಆತ್ಯಂತಿಕವಾಗಿ ಬೇಕಾದುದು ಒಂದು ಸಮಾಧಾನದ ನಿದ್ದೆಯೇ ಹೊರತು ಇನ್ನೇನು!

ಬೆಳಗ್ಗೆ ಬೇಗನೆ ಏಳುವ ಅಭ್ಯಾಸದಿಂದ ಸಾಕಷ್ಟು ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಆರೂವರೆಗೋ ಏಳೂವರೆಗೋ ಏಳುವವರಿದ್ದರೆ ಐದುಗಂಟೆಗೆ ಎದ್ದುನೋಡಿ, ನಿಮ್ಮ ದಿನಚರಿಯೇ ಬದಲಾಗಿ ಹೋಗುತ್ತದೆ. ಸಾಮಾನ್ಯ ದಿನಗಳಿಗಿಂತ ಒಂದೆರಡು ಗಂಟೆ ಹೆಚ್ಚು ಸಮಯ ನಿಮ್ಮದಾಗುತ್ತದೆ. ನಾನು ರಾತ್ರಿ ತಡವಾಗಿ ಮಲಗುವವನು, ಆದ್ದರಿಂದ ಬೆಳಗ್ಗೆ ತಡವಾಗಿ ಏಳುವವನು- ಹೀಗೆ ಸಮಜಾಯುಷಿ ಕೊಡುವುದುಂಟು. ಕೆಲವರಿಗೆ ಒಂದೊAದು ಬಗೆಯ ದಿನಚರಿ ಒಗ್ಗುವುದುಂಟು; ಕೆಲವರ ಕೆಲಸದ ಸ್ವರೂಪ ಹೆಚ್ಚಿನ ಸಮಯ ಬೇಡುವುದೂ ಉಂಟು. ಆದರೂ ಮುಂಜಾನೆಯ ಸದುಪಯೋಗದ ಮೌಲ್ಯ ಒಂದು ಬೇರೆಯದೇ ಮಟ್ಟದ್ದು. ಮುಂಜಾನೆ ಎದ್ದು ನೀವು ಏನೇ ಮಾಡಿ, ಅದು ಉತ್ಕೃಷ್ಟವಾಗಿಯೇ ಇರುತ್ತದೆ. ಮುಂಜಾನೆ ಕೇಳುವ ಒಂದೊಳ್ಳೆಯ ಹಾಡು ಇಡೀ ದಿನ ಮನಸ್ಸಿನಲ್ಲಿ ಗುನುಗುವಂತೆ ಇರುವುದಿಲ್ಲವೇ- ಹಾಗೆ. ಇದರ ಜೊತೆಗೆ ಸಣ್ಣದೊಂದು ‘ಪ್ಲಾನಿಂಗ್’ ನಮ್ಮ ದಿನಚರಿಗೆ ಕೊಂಚ ನಿರಾಳತೆಯನ್ನು ತಂದುಕೊಡಬಹುದು. ರಾತ್ರಿ ಮಲಗುವ ಮುನ್ನ ಇವತ್ತೇನು ಮಾಡಿದೆ, ಏನೆಲ್ಲ ಬಾಕಿಯಿದೆ, ನಾಳೆಯೇನು ಮಾಡಬೇಕು ಎಂಬ ಒಂದೆರಡು ನಿಮಿಷಗಳ ಯೋಚನೆ, ಬೆಳಗ್ಗೆ ಎದ್ದ ತಕ್ಷಣ ಆ ದಿನ ಮಾಡಬೇಕಾದ ಕೆಲಸಗಳ ಕುರಿತ ಸಣ್ಣದೊಂದು ಚಿಂತನೆ- ಸಾಕಷ್ಟು ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಅನೇಕ ಜವಾಬ್ದಾರಿಗಳನ್ನು ಒಟ್ಟೊಟ್ಟಿಗೆ ನಿರ್ವಹಿಸುವವರಾದರೆ ಬಾಕಿ ಕೆಲಸಗಳ ಚೆಕ್‌ಲಿಸ್ಟ್ ಮಾಡಿಕೊಳ್ಳುವುದು ಉತ್ತಮ. ಇದರಿಂದ ಸಣ್ಣಪುಟ್ಟ ಕೆಲಸಗಳು ಮರೆತುಹೋಗುವುದನ್ನು ನಿವಾರಿಸಬಹುದು.

ನಮ್ಮ ಯಶಸ್ಸಿಗೆ ನಾವೇ ಕಾರಣರು ಎನ್ನುವುದು ನಿಜವಾದರೆ, ನಮ್ಮ ಗೊಂದಲಗಳಿಗೂ ನಾವೇ ಕಾರಣರು.

- ಸಿಬಂತಿ ಪದ್ಮನಾಭ ಕೆ.ವಿ.

ಸೋಮವಾರ, ಅಕ್ಟೋಬರ್ 31, 2022

ಸಿಬಂತಿ ಪದ್ಮನಾಭ ಹಾಗೂ ಶ್ರೀಶ ಪುಣಚ ಅವರ 'ಮಾಧ್ಯಮ ತಂತ್ರಜ್ಞಾನ' ಕೃತಿಗೆ ಶ್ರೀ ಬೇಳೂರು ಸುದರ್ಶನ ಅವರು ಬರೆದ ಮುನ್ನುಡಿ

ಸಿಬಂತಿ ಪದ್ಮನಾಭ ಹಾಗೂ ಶ್ರೀಶ ಪುಣಚ ಅವರ 'ಮಾಧ್ಯಮ ತಂತ್ರಜ್ಞಾನ' ಕೃತಿಗೆ ಮುಖ್ಯಮಂತ್ರಿಗಳ ಇ-ಆಡಳಿತ
ಸಲಹೆಗಾರರೂ ಮುಕ್ತಜ್ಞಾನದ ಪ್ರತಿಪಾದಕರೂ ಆದ
ಶ್ರೀ ಬೇಳೂರು ಸುದರ್ಶನ ಅವರು ಬರೆದ ಮುನ್ನುಡಿ:

ರಾಜ್ಯದ ವಿಶ್ವವಿದ್ಯಾಲಯಗಳ ಪತ್ರಿಕೋದ್ಯಮ ವಿಭಾಗದ ಪದವಿ ವಿದ್ಯಾರ್ಥಿಗಳಿಗಾಗಿ ರೂಪಿತವಾದ ಈ ಪುಸ್ತಕವು ಕನ್ನಡದಲ್ಲಿ ಈ ವರ್ಗದ ಮೊಟ್ಟಮೊದಲ ಮತ್ತು ಸರ್ವಸ್ಪರ್ಶೀ ಪಠ್ಯವಾಗಿದೆ ಎಂದು ಹೇಳಲು ನನಗೆ ಬೇರಾವ ದಾಖಲೆಯೂ ಬೇಡ. ಏಕೆಂದರೆ ಅಂತಹ ದಾಖಲೆಗಳು ಸಿಗುವುದೂ ಇಲ್ಲ! ಹೆಚ್ಚೆಂದರೆ 2005-07 ರ ನಡುವೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ದೂರಶಿಕ್ಷಣ ವಿಭಾಗದ ವಿದ್ಯಾರ್ಥಿಗಳಿಗಾಗಿ ರೂಪಿಸಿದ ಗಣಕ ಪರಿಚಯ, ಯಂತ್ರಾಂಶ – ತಂತ್ರಾಂಶ ಕುರಿತ ಪಠ್ಯಪುಸ್ತಕಗಳನ್ನು ಇಲ್ಲಿ ಉಲ್ಲೇಖಿಸಬಹುದು. ಖಾಸಗಿ ಪ್ರಕಟಣಾ ರಂಗದಲ್ಲಿ ಈ ಕುರಿತ ಬಿಡಿ ವಿಷಯಗಳ ಕೆಲವು ಪುಸ್ತಕಗಳೂ ಬಂದಿರಬಹುದು. ಆದರೆ ಪತ್ರಿಕಾರಂಗದ ವಿದ್ಯಾರ್ಥಿ - ಶಿಕ್ಷಕರಿಗೆಂದು ರೂಪಿಸಿದ ಈ ಪುಸ್ತಕವು ಈ ಕಾಲದ ಮಹತ್ವದ ಕೃತಿ. 

ಮಾಹಿತಿಸ್ಫೋಟದ ಈ ಯುಗದಲ್ಲಿ ಮಾಹಿತಿ – ಜ್ಞಾನದ ನಡುವಣ ಅಂತರವೇ ತೆಳುವಾಗುತ್ತಿದೆ. ಹುಸಿ  ವ್ಯಾಖ್ಯಾನಗಳಿಂದ, ತಪ್ಪು  ಅಂಕಿ ಅಂಶ ಮತ್ತು ವಿವರಣೆಗಳಿಂದ ಅಂತರಜಾಲವು ಕಲುಷಿತಗೊಂಡಿದೆ. ವಿಕಿಪೀಡಿಯದಂತಹ ಸ್ವಯಂಘೋಷಿತ ಮುಕ್ತಜ್ಞಾನದ ವೇದಿಕೆಗಳಲ್ಲೂ ಕುಂದುಕೊರತೆಗಳು ಕಾಣುತ್ತಿವೆ.  ಫೇಸ್‌ಬುಕ್ - ಇನ್‌ಸ್ಟಾಗ್ರಾಂ ನಂತಹ ಸಿಮ್ ಆಧಾರಿತವಲ್ಲದ ಸಮಾಜತಾಣಗಳಿಂದ ಹಿಡಿದು ವಾಟ್ಸಪ್, ಕ್ಲಬ್‌ಹೌಸ್‌ನಂತಹ ಸಿಮ್ ಆಧಾರಿತ ಸಮೂಹ ಮಾಧ್ಯಮಗಳಲ್ಲೂ ಸತ್ಯದೊಂದಿಗೇ ಅಸತ್ಯದ ಅಂಶಗಳೂ ಢಾಳಾಗಿ ವಿಜೃಂಭಿಸತೊಡಗಿವೆ. ಆನ್‌ಲೈನ್ ಪತ್ರಿಕಾ ಜಾಲತಾಣಗಳಲ್ಲಿ ಹುಸಿ ವರದಿಗಳನ್ನು ಹುಡುಕುವುದೇ ದೊಡ್ಡ ಉದ್ಯಮವಾಗಿದೆ. ಇದಕ್ಕಾಗಿಯೇ ಪ್ರತ್ಯೇಕವಾದ ಜಾಲತಾಣಗಳೂ ಹುಟ್ಟಿಕೊಂಡಿದ್ದು ಅವುಗಳಲ್ಲೂ ಪಕ್ಷಪಾತಿ ವರ್ತನೆಯನ್ನು ಕಾಣಬಹುದಾಗಿದೆ. ಕಳೆದೆರಡು ವರ್ಷಗಳ ಕೊರೋನಾ ಮಹಾಪಿಡುಗಿನ ನಂತರ ಪತ್ರಿಕಾರಂಗದ ಚಹರೆಗಳು ಇನ್ನಿಲ್ಲದಂತೆ ಬದಲಾಗಿವೆ. ಮುದ್ರಣ ಮಾಧ್ಯಮವು ಕುಗ್ಗಿ ಆನ್‌ಲೈನ್ ಮಾಧ್ಯಮದ ಸಾಧ್ಯತೆಗಳು ವಿಸ್ತರಿಸಿವೆ. ಪತ್ರಿಕಾರಂಗದ ಆರ್ಥಿಕ ಲೆಕ್ಕಾಚಾರಗಳೂ ಬದಲಾಗಿವೆ. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಜನರಿಗೆ ನೇರವಾಗಿ ತಲುಪುವ ಆನ್‌ಲೈನ್ ಮಾಧ್ಯಮಗಳಿಗೆ ಬೇಡಿಕೆ ಒದಗಿದೆ. ಆದರೆ ಜಾಹೀರಾತು ಕೊಡುತ್ತಿದ್ದ ಹಲವು ಸಂಸ್ಥೆಗಳು ನೇರವಾಗಿಯೇ ಗ್ರಾಹಕರನ್ನು ಮುಟ್ಟುವ ತಂತ್ರಗಳಿಗೆ ಮೊರೆಹೋಗಿರುವುದು ಪತ್ರಿಕಾರಂಗದ ವರಮಾನದ ಕುಸಿತಕ್ಕೆ ಕಾರಣವಾಗಿರುವುದು ವಾಸ್ತವ. 

ಹೀಗೆ ಮಾಹಿತಿಸ್ಫೋಟದ ಯುಗವು ‘ಮಾಹಿತಿ ವಿಪ್ಲವ’ದ ಕಾಲಘಟ್ಟವಾಗಿ ನಮ್ಮೆದುರಿಗೆ ನಿಂತಿರುವ, ವೆಬ್ 1.0 ರಿಂದ ವೆಬ್ 2.0 ಅನ್ನು ದಾಟಿ ವೆಬ್ 3.0 ಅನ್ನು ಅನುಭವಿಸುತ್ತಿರುವ ಈ ಹೊತ್ತಿನಲ್ಲಿ ಕನ್ನಡದ ಮಾಧ್ಯಮ ವಿದ್ಯಾರ್ಥಿಗಳು ಮಾಡಬೇಕಾದ್ದೇನು ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕಿದೆ. ಇದು ಈ ಮುನ್ನುಡಿಯ ವ್ಯಾಪ್ತಿಯನ್ನು ಮೀರಿದ ಸಂಗತಿ. ‘ಮಾಧ್ಯಮ ತಂತ್ರಜ್ಞಾನ’ ಪುಸ್ತಕವು ಈ ವಿಪ್ಲವವನ್ನು ಅರಿತು ಬಾಳುವ ಹಲವು ದಿಕ್ಸೂಚಿ ಮಾಹಿತಿಗಳನ್ನು ನೀಡಿದೆ. ಇದನ್ನು ಕಂಪ್ಯೂಟರಿನ ಮಾಹಿತಿಯೆಂದೋ, ತಂತ್ರಾಂಶಗಳ ಕಸರತ್ತಿನ ವಿವರಣೆಗಳೆಂದೋ, ಆನ್‌ಲೈನ್ ಆಗುಹೋಗುಗಳ ದಾಖಲಾತಿಯೆಂದೋ ಭಾವಿಸುವಂತಿಲ್ಲ. ಈ ಪಠ್ಯವು ಜಗತ್ತಿನ ಮಾಹಿತಿ ತಂತ್ರಜ್ಞಾನ ಆಧಾರಿತ ಸಂವಹನದ ಎಲ್ಲ ಸಮಕಾಲೀನ ಆಯಾಮಗಳನ್ನು ಐತಿಹಾಸಿಕ ಹಿನ್ನೆಲೆಯೊಂದಿಗೆ ದಾಖಲಿಸಿದ ಮಹತ್ವದ ಪ್ರಯತ್ನ. 

ಇಂತಹ ನವಮಾಧ್ಯಮದ ಪಠ್ಯಪುಸ್ತಕಗಳು ಹೆಚ್ಚುಕಡಿಮೆ ಅಂತರಜಾಲದಲ್ಲಿ ಸಿಗುವ ವಿವರಣೆಗಳ ನಕಲಿನಿಂದಲೇ ತುಂಬಿಕೊಂಡಿರುವ ಅಪಾಯ ಇದ್ದೇ ಇತ್ತು. ಆದರೆ ವಿಶ್ವವಿದ್ಯಾಲಯದಲ್ಲಿ ಬೋಧನೆ ಮಾಡುತ್ತಿರುವ ಶ್ರೀ ಸಿಬಂತಿ ಪದ್ಮನಾಭ ಮತ್ತು ಪತ್ರಿಕಾರಂಗದ ಯುವಪೀಳಿಗೆಯ ಬರಹಗಾರ ಶ್ರೀ ಶ್ರೀಶ ಪುಣಚ ಅವರಿಬ್ಬರೂ ಮೂಲತಃ ಸ್ವಂತ ಮಾಹಿತಿ ಸಂಗ್ರಹದಲ್ಲಿ ತೊಡಗಿರುವುದರಿಂದ ಈ ಪುಸ್ತಕವೂ ಅವರ ಅರಿವಿನ ಮೂಸೆಯಿಂದಲೇ ಅತ್ಯಂತ ಸ್ವಂತ ಕೃತಿಯಾಗಿ ಮೂಡಿದೆ. ವಿಕಿಪೀಡಿಯ ಪುಟಗಳಲ್ಲಿ ಇಂಥದ್ದೇ ಮಾಹಿತಿ ಸಿಗಬಹುದು; ಆದರೆ ಈ ಪಠ್ಯಪುಸ್ತಕದಲ್ಲಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಬೇಕಾದ ಮಾಹಿತಿಗಳನ್ನು ವಿವಿಯ ಪಠ್ಯಕ್ರಮದ ಅನುಸಾರವಾಗಿಯೇ ಸ್ವತಂತ್ರವಾಗಿ ರೂಪಿಸಲಾಗಿದೆ. ಈ ಅಧ್ಯಾಯಗಳ ಬರಹದ ಶೈಲಿಯನ್ನು ನೋಡಿದಾಗ, ವಿಷಯಗಳನ್ನು ಚೆನ್ನಾಗಿ ಅರಿತು ವಿಶ್ಲೇಷಿಸಿ ಬರೆದಿರುವುದನ್ನು ಖಚಿತವಾಗಿ ಗುರುತಿಸಿದ್ದೇನೆ. ಇದೇ ಈ ಪುಸ್ತಕದ ಜೀವಿತಾವಧಿ ಹೆಚ್ಚಿಸಬಲ್ಲ ಒಂದು ಮುಖ್ಯ ಗುಣವಾಗಿದೆ. 

ಹೀಗಿದ್ದೂ, ಈ ಪುಸ್ತಕವು ಕ್ಷಣಕ್ಷಣಕ್ಕೂ ಬದಲಾಗುತ್ತಿರುವ ಮಾಧ್ಯಮ ತಂತ್ರಜ್ಞಾನದ ರಂಗಕ್ಕೆ ಒಂದು ಸಮಕಾಲೀನ ದಿಕ್ಸೂಚಿಯೇ ಹೊರತು, ಅರಿವಿನ ಸಮಗ್ರ ವಿಶ್ವಕೋಶವಲ್ಲ ಎಂಬುದೂ ನಿಜ. ಶ್ರಮವಹಿಸುವ ಮಾಧ್ಯಮ ವಿದ್ಯಾರ್ಥಿಗಳು ಈ ಪುಸ್ತಕದ ಮೂಲಕ ಹಲವು ರಂಗಗಳ ಬ್ರಹ್ಮಾಂಡ ಕಲಿಕೆಗೆ ಕೀಲಿಕೈ ಪಡೆಯುತ್ತಾರೆ. ಇಲ್ಲಿ ಬರೆದ ಪ್ರತಿಯೊಂದೂ ಅಧ್ಯಾಯ, ಉಪಶೀರ್ಷಿಕೆಗಳೇ ಪ್ರತ್ಯೇಕ ಮಾಧ್ಯಮ ತಂತ್ರಜ್ಞಾನ ರಂಗಗಳು. ಉದಾಹರಣೆಗೆ ಬ್ಲಾಕ್‌ಚೈನ್ ತಂತ್ರಜ್ಞಾನವನ್ನೇ ತೆಗೆದುಕೊಳ್ಳಿ. ಅದು ಮಾಹಿತಿ ತಂತ್ರಜ್ಞಾನದ ಭಾಗವಾಗಿ ಹ್ಯಾಶ್‌ಟ್ಯಾಗ್ ಹೆಸರಿನಲ್ಲಿ ಎರಡು ದಶಕಗಳಿಂದಲೂ ಬಳಕೆಯಲ್ಲಿತ್ತು. ಅದರ ಅವತಾರವೇ ಈಗ ಬದಲಾಗಿದೆ. ಈಗ ಬ್ಲಾಕ್‌ಚೈನನ್ನು ಎಲ್ಲ ಬಗೆಯ ಸತ್ಯದ ಮೂಲಕ್ಕೆ ಅಡಿಪಾಯ ಎಂದೇ ಬಗೆದು ವಿಜ್ಞಾನ, ಹಣಕಾಸು, ಭೂದಾಖಲೆ – ಹೀಗೆ ಹಲವು ರಂಗಗಳಲ್ಲಿ ಅಳವಡಿಸುತ್ತಿದ್ದಾರೆ. ಬ್ಲಾಕ್‌ಚೈನ್ ಕುರಿತಾಗಿ ಕನಿಷ್ಟ 20ಕ್ಕೂ ಹೆಚ್ಚು ಮಹತ್ವದ ಪುಸ್ತಕಗಳು ಕಳೆದೆರಡು ವರ್ಷಗಳಲ್ಲೇ ಬಂದಿವೆ. ಇನ್ನು ಎಐ, ವಿಆರ್‌ಗಳ ಬಗ್ಗೆ ಹೇಳಿದಷ್ಟೂ ಕಡಿಮೆ. 

ಈ ಉತ್ತಮ ಸಂಗತಿಗಳ ನಡುವೆಯೂ ಪಠ್ಯಕ್ರಮಕ್ಕೆ ಅನುಸಾರವಾಗಿಯೇ ಪುಸ್ತಕವನ್ನು ಬರೆಯುವ ಅನಿವಾರ್ಯತೆಯಲ್ಲಿ ಮಾಧ್ಯಮರಂಗಕ್ಕೆ ಬೇಕಾದ ಕೆಲವು ಅತಿಮುಖ್ಯ ತಂತ್ರಜ್ಞಾನಗಳ ಮಾಹಿತಿಗಳು ಲಭ್ಯವಿಲ್ಲ. ಉದಾಹರಣೆಗೆ ಡೇಟಾ ಜರ್ನಲಿಸಂ. ಇಂದು ಅಂಕಿಅಂಶಗಳ ಖಚಿತ ನೆರವಿಲ್ಲದೆ ಏನನ್ನೂ ಪ್ರತಿಪಾದಿಸಲು ಆಗದು; ಅಥವಾ ಅಂಕಿಅಂಶಗಳ ನೆರವಿನಿಂದ ಹಲವು ಸುದ್ದಿಗಳನ್ನು ಹೆಕ್ಕಿ ತೆಗೆಯಬಹುದು. ಇದು ಮೂಲತಃ ಪತ್ರಿಕಾರಂಗ, ಗಣಿತ ಮತ್ತು ಮಾಹಿತಿ ತಂತ್ರಜ್ಞಾನವನ್ನು ಮೇಳೈಸಿದ ಒಂದು ಮಾಧ್ಯಮ ತಂತ್ರಜ್ಞಾನ. ವೈಜ್ಞಾನಿಕವಾಗಿ ದತ್ತಾಂಶಗಳನ್ನು ವಿಶ್ಲೇಷಿಸುವ ಮೂಲಕ ನಾಡಿನ ಹಲವು ಸಮಸ್ಯೆಗಳನ್ನು ಹುಡುಕುವ, ಪರಿಹಾರಗಳನ್ನು ಅರಸುವ ಕೆಲಸವನ್ನು ಮಾಡಬಹುದು. ಈಗಾಗಲೇ ಭಾರತ ಸರ್ಕಾರ, ವಿವಿಧ ರಾಜ್ಯ ಸರ್ಕಾರಗಳು ಮುಕ್ತ ದತ್ತಾಂಶ ಪೋರ್ಟಲ್‌ಗಳನ್ನೇ ತೆರೆದಿವೆ. ಇವನ್ನೆಲ್ಲ ಮಾಧ್ಯಮ ರಂಗದ ವಿದ್ಯಾರ್ಥಿಗಳು ಅರಿತಿರಲೇಬೇಕು.  

ಪಠ್ಯಕ್ರಮಕ್ಕೇ ಹೊಂದಿಸಿಕೊಂಡು ಈ ಪುಸ್ತಕವನ್ನು ಬರೆದಿರುವುದು ಈ ಪುಸ್ತಕದ ಮಿತಿಯೂ ಹೌದು. ಇಂತಹ ಮಾಹಿತಿಪೂರ್ಣ ಪುಸ್ತಕವು ಸಾರ್ವಜನಿಕ ಓದಿಗೂ ಸಿಗಬೇಕು ಎಂಬ ಅಪೇಕ್ಷೆಯನ್ನು ಈ ಪುಸ್ತಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮದ ವಿವಿಧ ಹೊಸ ಆಯಾಮಗಳಾದ ಮೊಬೈಲ್ ಜರ್ನಲಿಸಂ, ಡಿಜಿಟಲ್ ಸುರಕ್ಷತೆ, ಗಣಿತ ತಂತ್ರಜ್ಞಾನ, ಲಿಪ್ಯಂತರಣ, ಇ–ಸಂವಹನ, ಡಿಜಿಟಲ್ ಕಥಾ ನಿರೂಪಣೆ, ಇನ್‌ಫೋಗ್ರಾಫಿಕ್ಸ್, ಡೇಟಾ ವಿಜುಯಲೈಸೇಶನ್, ಡಿಜಿಟಲ್ ಸಂಶೋಧನೆ, ಸಮುದಾಯ ಪತ್ರಿಕಾಕಾಯಕದ ತಂತ್ರಜ್ಞಾನ ಸಾಧ್ಯತೆಗಳು, ಪೋಡ್‌ಕಾಸ್ಟಿಂಗ್, ವಿಡಿಯೋ ಜರ್ನಲಿಸಂ – ಹೀಗೆ ಹಲವು ಮಾಹಿತಿ ತಂತ್ರಜ್ಞಾನ ಆಧಾರಿತ ಪತ್ರಕರ್ತರಿಗೆ ಅತ್ಯಾವಶ್ಯಕವಾದ ಸಂಗತಿಗಳ ಬಗ್ಗೆ ಕಲಿಯಲು ಈ ಪುಸ್ತಕವು ಮೊದಲ ಹೆಜ್ಜೆ ಆಗುವುದಂತೂ ನಿಶ್ಚಿತ.       

ಇನ್ನು ಈ ಪುಸ್ತಕದ ತಿರುಳೇ ಕ್ಷಣಕ್ಷಣಕ್ಕೂ ಬದಲಾಗುತ್ತಿರುವ ಮಾಧ್ಯಮ ತಂತ್ರಜ್ಞಾನದ ಸಂಗತಿಗಳು. ಆದ್ದರಿಂದ ಮುದ್ರಿತ ಪುಸ್ತಕವಾಗಿ ಈ ಪುಸ್ತಕದ ಬಾಳಿಕೆ (ಅದರಲ್ಲೂ ಹೊಸ - ಬೆಳೆಯುತ್ತಿರುವ ತಂತ್ರಜ್ಞಾನಗಳ ಕುರಿತಾಗಿ) ಅಲ್ಪವೇ ಎಂಬುದು ಲೇಖಕರಿಗೆ ಗೊತ್ತಿರುವ ಹಾಗೆಯೇ ಶಿಕ್ಷಕ – ವಿದ್ಯಾರ್ಥಿಗಳೂ ಅರಿಯಬೇಕು. ಪತ್ರಿಕಾರಂಗದಲ್ಲಿ ವೃತ್ತಿಗೆ ಸೇರುವ ವಿದ್ಯಾರ್ಥಿಗಳ ಕಲಿಕೆಯ ಹೊಣೆಯರಿತ ಈ ವಿಶಿಷ್ಟ ಮತ್ತು ಮಾಹಿತಿಪೂರ್ಣ ಪುಸ್ತಕವನ್ನು ಸದಾ ತತ್‌ಸಾಮಯಿಕವಾಗಿ ಇರಿಸುವ ಆನ್‌ಲೈನ್ ತಾಣವನ್ನೂ ರೂಪಿಸುವುದು ಅತ್ಯಂತ ಅವಶ್ಯಕ. ಆಗ ಈ ಪುಸ್ತಕವನ್ನೇ ವಿಸ್ತರಿಸಿ ಹಲವು ಆಕರಗಳ ತಾಣಗಳಿಗೆ ಕೊಂಡಿಗಳನ್ನು ನೀಡಬಹುದು; ಬದಲಾದ ಮಾಹಿತಿಗಳನ್ನು ಸೂಕ್ತ ಉಲ್ಲೇಖದೊಂದಿಗೆ ಸೇರಿಸಬಹುದು; ಹೊಸ ಸಂಗತಿಗಳು ಅನಾವರಣಗೊಂಡ ಹಾಗೆಲ್ಲ ಸೇರಿಸುತ್ತ ಹೋಗಬಹುದು. ಇದೇ ಒಂದು ಮುಕ್ತಜ್ಞಾನ ಮಾದರಿಯ ಮಾಧ್ಯಮತಾಣ ಆಗುತ್ತದೆ. ಇಂತಹ ತಾಣವನ್ನು ಅಭಿವೃದ್ಧಿಪಡಿಸಿ ನಿರ್ವಹಿಸುವ ಖರ್ಚುಗಳನ್ನು ವಹಿಸಿಕೊಳ್ಳುವ ಬಗ್ಗೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳೂ ಒಂದು ಏಕಾಭಿಪ್ರಾಯಕ್ಕೆ ಬರಬಹುದು. ಆಗ ಇಂತಹ ಸದಾ ಬದಲಾಗುವ ಪಠ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ವರ್ಷಕ್ಕೊಂದು ಆವೃತ್ತಿಯಾಗಿ ಹೊಸತಾಗಿ ನೀಡಬಹುದು. ಜ್ಞಾನವನ್ನು ಮುಕ್ತವಾಗಿಟ್ಟು, ಜ್ಞಾನ ನಿರ್ವಹಣೆಗೆ ನಿಧಿ ನೀಡುವುದು ಈ ಕಾಲದ ಸಹಜ ಕ್ರಮವಾಗಿದೆ.  ಆಗಲೇ ಈ ಲೇಖಕರ ಶ್ರಮಕ್ಕೂ ಸೂಕ್ತ ಬೆಲೆ ಒದಗಿಸಿದಂತಾಗುತ್ತದೆ.  

ಮಾಧ್ಯಮ ತಂತ್ರಜ್ಞಾನವೆಂದರೆ ಕೇವಲ ಓದಿನ ಸರಕಲ್ಲ. ಸ್ವತಃ ಕಂಪ್ಯೂಟರ್ ಒಂದನ್ನು ಬಳಸಿ ಕಲಿಯಬೇಕಾದ ಸಂಗತಿಗಳು ಹೇರಳವಾಗಿವೆ. ಅದರಲ್ಲೂ ಮಾಧ್ಯಮ ವಿದ್ಯಾರ್ಥಿಗಳು ಡೆಸ್ಕ್ಟಾಪ್ ಕಂಪ್ಯೂಟರ್‌ಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಬೇಕು ಎಂಬುದು ನನ್ನ ಅನುಭವದ ಮಾತು. ಕಂಪ್ಯೂಟರ್‌ಗಳನ್ನು ಬೈಪಾಸ್ ಮಾಡಿ ಸ್ಮಾರ್ಟ್ಫೋನ್‌ಗಳನ್ನೇ ಬಳಸುತ್ತಿರುವ ಈ ಸಂದರ್ಭದಲ್ಲಿ ಈ ಮಾತು ವಿಚಿತ್ರವೆನ್ನಿಸಬಹುದು. ಆದರೆ ಡೆಸ್ಕ್ಟಾಪ್ ಕಂಪ್ಯೂಟರ್ ಎಂಬುದು ಪ್ರತಿಯೊಬ್ಬ ಪತ್ರಕರ್ತನ ವೃತ್ತಿಕೋಶ. ಮಾಹಿತಿ, ಕಲಿಕೆ, ತಂತ್ರಜ್ಞಾನ, ವಿಶ್ಲೇಷಣೆ, ಚಿತ್ರಣ, ವಿಷಯ ಸಂಪಾದನೆ, ಸಂಗ್ರಹ, ಸಂವಹನ - ಎಲ್ಲವನ್ನೂ ಸಾಧ್ಯವಾಗಿಸುವ ಕಂಪ್ಯೂಟರ್‌ಗಳನ್ನು ಅಂತರಜಾಲದ ಹೊಣೆಗಾರಿಕೆಯ ಬಳಕೆಯೊಂದಿಗೆ ಪತ್ರಕರ್ತರು ಸಮಾಜಮುಖಿಯಾಗಿ ಹಲವು ವರದಿಗಳನ್ನು ರೂಪಿಸಬಹುದು. 

ಕೊನೆಯ ಮಾತಾಗಿ ಹೇಳಬಹುದಾದರೆ, ಮಾಹಿತಿ ತಂತ್ರಜ್ಞಾನ, ಮಾಧ್ಯಮ ತಂತ್ರಜ್ಞಾನ – ಎಲ್ಲವೂ ನಾಡಿನ ಕಷ್ಟ ಸುಖಗಳನ್ನು ವರದಿಗಳ ಮೂಲಕ, ವಿವಿಧ ಮಾಧ್ಯಮಗಳ ಮೂಲಕ ಜನತೆಗೆ ತಲುಪಿಸುವ, ಸರ್ಕಾರಕ್ಕೆ ತಿಳಿಸುವ ಮೂಲ ಹೊಣೆಗಾರಿಕೆಗೆ ಸಹಕಾರಿಯಾಗುವ ಅಂಶಗಳೇ ಹೊರತು, ತಂತ್ರಜ್ಞಾನವೇ ಎಲ್ಲದಕ್ಕೂ ಪರಿಹಾರವಲ್ಲ. ತಂತ್ರಜ್ಞಾನವನ್ನು ಅರಿತರೆ ಪತ್ರಕರ್ತರು ಖಂಡಿತ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸಿಕೊಳ್ಳಬಹುದು. ಪತ್ರಿಕಾರಂಗದಲ್ಲೂ ಉದ್ಯೋಗದ ಅವಕಾಶಗಳು ವೈವಿಧ್ಯವೂ, ವಿಸ್ತಾರವೂ ಆಗಿರುವ ಈ ಹೊತ್ತಿನಲ್ಲಿ ಈ ಪುಸ್ತಕವು ಹೊಸಕಾಲದ ಉದ್ಯೋಗಾವಕಾಶಗಳಿಗೆ ಕಿಟಕಿಯಾಗಿದೆ.     

ಇಂತಹ ತಾಜಾ ಪುಸ್ತಕವನ್ನು ಬರೆದ ಲೇಖಕರಿಬ್ಬರಿಗೂ ನನ್ನ ಅಭಿನಂದನೆಗಳು, ಶುಭಾಶಯಗಳು. ಜವಾಬ್ದಾರಿಯುತ ಮತ್ತು ತಂತ್ರಜ್ಞಾನಾಧಾರಿತ ಪತ್ರಿಕಾಕಾಯಕಕ್ಕೆ ಈ ಪುಸ್ತಕವು ನೆರವಾಗಲಿ ಎಂದು ಆಶಿಸುತ್ತೇನೆ. 

- ಬೇಳೂರು ಸುದರ್ಶನ 

  • ಪುಸ್ತಕದ ಶೀರ್ಷಿಕೆ: ಮಾಧ್ಯಮ ತಂತ್ರಜ್ಞಾನ
  • ಲೇಖಕರು: ಡಾ. ಸಿಬಂತಿ ಪದ್ಮನಾಭ ಕೆ. ವಿ. & ಡಾ.  ಶ್ರೀಶ ಎಂ. ಪುಣಚ
  • ಪ್ರಕಾಶನ: ಅಂಕುರ್ ಮೀಡಿಯಾ ಪಬ್ಲಿಕೇಶನ್ಸ್, ತುಮಕೂರು
  • ISBN: 978-81-958059-1-4
  • ಪ್ರಕಟಣೆಯ ವರ್ಷ: 2022
  • ಪುಟಗಳು: 234
  • ಬೆಲೆ: ರೂ. 250-00
  • ಪುಸ್ತಕಗಳಿಗಾಗಿ ಸಂಪರ್ಕ: 9449525854

ಗುರುವಾರ, ಅಕ್ಟೋಬರ್ 20, 2022

ಅಂಕಪಟ್ಟಿಯಿದ್ದರೆ ಅಷ್ಟೇ ಸಾಕೆ?

17 ಅಕ್ಟೋಬರ್ 2022ರ 'ಪ್ರಜಾವಾಣಿ'ಯಲ್ಲಿ ಪ್ರಕಟವಾದ ಬರಹ

(ಉದ್ಯೋಗಾರ್ಹತೆಯ ಕೌಶಲಗಳು: ಭಾಗ-1)

ಅಂಕಪಟ್ಟಿ ನೋಡಿ ಉದ್ಯೋಗ ಕೊಡುವ ಪ್ರವೃತ್ತಿ ಹೋಗಿ ಬಹಳ ಕಾಲವೇ ಆಯಿತು. ಕೆಲವೇ ಕೆಲವು ಸರ್ಕಾರಿ ಉದ್ಯೋಗಗಳಿಗೆ ಮಾತ್ರ ಇನ್ನೂ ಪಿಯುಸಿ ಅಥವಾ ಪದವಿ ಅಂಕಗಳನ್ನು ನೋಡಿ ಮೆರಿಟ್‌ಲಿಸ್ಟ್ ತಯಾರಿಸುವ ಪದ್ಧತಿಯಿದೆ. ಉಳಿದಂತೆ ಉದ್ಯೋಗದಾತರಿಗೆ ಅಭ್ಯರ್ಥಿಗಳ ಅಂಕಗಳಿಸುವ ತಾಕತ್ತು ಬೇಕಾಗಿಲ್ಲ. ಅವರಿಗೆ ಬೇಕಾಗಿರುವುದು ಸಂಬಳಕ್ಕೆ ಪ್ರತಿಯಾಗಿ ಇವರು ಏನನ್ನು ನೀಡಬಲ್ಲರು ಎಂಬ ಪ್ರಶ್ನೆಗೆ ಉತ್ತರ ಮಾತ್ರ. ಈ ನಿರೀಕ್ಷೆಯನ್ನು ‘ಉದ್ಯೋಗಾರ್ಹತೆ’ ಎಂದೋ, ‘ಉದ್ಯೋಗಾರ್ಹತೆಯ ಕೌಶಲಗಳು’ ಎಂದೋ ಕರೆಯಬಹುದು.

ಅಂಕಪಟ್ಟಿ ತೋರಿಸುವ ಪರ್ಸೆಂಟೇಜು ಅರ್ಹ ಅಭ್ಯರ್ಥಿಗಳ ಪಟ್ಟಿ ತಯಾರಿಸುವ ಅನೇಕ ಮಾನದಂಡಗಳಲ್ಲಿ ಒಂದಷ್ಟೇ. ಬಹುತೇಕ ಆಯ್ಕೆ ಪ್ರಕ್ರಿಯೆಗಳಲ್ಲಿ ಸಂದರ್ಶನವೇ ಪ್ರಧಾನ ಭಾಗ. ನಾಗರಿಕ ಸೇವಾ ಪರೀಕ್ಷೆಗಳಲ್ಲಂತೂ ಸಂದರ್ಶನ ಎಂಬ ಪದವನ್ನೂ ಬಳಸುವುದಿಲ್ಲ. ಅವರು ಅದನ್ನು ‘ವ್ಯಕ್ತಿತ್ವ ಪರೀಕ್ಷೆ’ ಎಂದು ಕರೆಯುತ್ತಾರೆ. ಈ ವ್ಯಕ್ತಿತ್ವ ಮಾಪನ ಪ್ರಕ್ರಿಯೆಯಲ್ಲಿ ಅವರು ಹುಡುಕುವುದು ಅಭ್ಯರ್ಥಿಯ ಉದ್ಯೋಗಾರ್ಹತೆಯನ್ನೇ.

ಯಾವುದೇ ಉದ್ಯೋಗವನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಹೋಗಬೇಕಾದರೆ ಶೈಕ್ಷಣಿಕ ವಿದ್ಯಾರ್ಹತೆಗಿಂತ ಹೊರತಾದ ಅನೇಕ ಗುಣಗಳು ಬೇಕೇಬೇಕು. ಸಂವಹನ ಕೌಶಲ, ಹೊಂದಾಣಿಕೆಯ ಪ್ರವೃತ್ತಿ, ಸಮಸ್ಯೆ ಬಗೆಹರಿಸುವಿಕೆ, ಸಮಯ ನಿರ್ವಹಣೆ, ತಂಡ ಮನೋಭಾವ, ಸಂಘಟನಾ ಕೌಶಲ, ಲಭ್ಯ ಮಾಹಿತಿಯ ಬಳಕೆ, ತಂತ್ರಜ್ಞಾನದ ಸದುಪಯೋಗ, ವ್ಯಕ್ತಿತ್ವ ಕೌಶಲಗಳು, ನಾಯಕತ್ವ- ಹೀಗೆ ಹತ್ತಾರು ಇವೆ. ಇವುಗಳಲ್ಲಿ ಕೆಲವು ಆಯಾ ಉದ್ಯೋಗವನ್ನು ನಿರ್ವಹಿಸಲು ಪ್ರಾಥಮಿಕ ಅವಶ್ಯಕತೆಗಳಾದರೆ, ಇನ್ನು ಕೆಲವು ಅದರಲ್ಲಿ ಕ್ಷಮತೆಯನ್ನು ಸಾಧಿಸಲು ಅನಿವಾರ್ಯ.

ಉದ್ಯೋಗಾರ್ಹತೆಯ ಕೌಶಲಗಳು:

ಯಾವುದೇ ಉದ್ಯೋಗದಲ್ಲಿರುವವನಿಗೆ ಪ್ರತಿದಿನ ಒಂದಲ್ಲ ಒಂದು ಸವಾಲು ಎದುರಾಗಿಯೇ ಆಗುತ್ತದೆ. ಸಣ್ಣ ಹುದ್ದೆಗಳಲ್ಲಿರುವವರಿಗೆ ಅವರ ಜವಾಬ್ದಾರಿ ನಿರ್ವಹಿಸುವಲ್ಲಿ ಸವಾಲುಗಳಾದರೆ, ದೊಡ್ಡ ಹುದ್ದೆಗಳಲ್ಲಿರುವವರಿಗೆ ಸಂಸ್ಥೆಯನ್ನೇ ಮುಂದಕ್ಕೆ ಒಯ್ಯುವಲ್ಲಿ ಸವಾಲುಗಳಿರುತ್ತವೆ. ಅವುಗಳು ಎದುರಾದ ತಕ್ಷಣ ಎದೆಗುಂದುವ ಬದಲು, ಅವುಗಳನ್ನು ಅಲ್ಲಲ್ಲಿಯೇ ವಿಶ್ಲೇಷಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವುದು, ಅಗತ್ಯ ನಿರ್ಧಾರಗಳನ್ನು ಕೈಗೊಳ್ಳುವುದು ನಿಜಕ್ಕೂ ಒಂದು ಕೌಶಲವೇ.

ಸಂವಹನ ಕೌಶಲವಂತೂ ಒಂದು ಅತಿಪ್ರಮುಖ ಅರ್ಹತೆ. ಹೇಳಬೇಕಾದುದನ್ನು ಗೊಂದಲವಿಲ್ಲದಂತೆ ಸ್ಪಷ್ಟವಾಗಿ ಇನ್ನೊಬ್ಬರಿಗೆ ಹೇಳುವುದೊಂದು ದೊಡ್ಡ ಕಲೆ. ಅನೇಕ ಸಲ ಇದನ್ನೇ ಸರಿಯಾಗಿ ಮಾಡದೆ ಎಡವಟ್ಟುಗಳನ್ನು ಮಾಡಿಕೊಂಡುಬಿಡುತ್ತೇವೆ. ಸಂವಹನವೆಂದಮೇಲೆ ಅದು ಬರವಣಿಗೆ ಮತ್ತು ಮಾತು ಎರಡನ್ನೂ ಒಳಗೊಂಡಿದೆ. ಕೆಲವು ಉದ್ಯೋಗಗಳಲ್ಲಿ ಬರವಣಿಗೆ ಮುಖ್ಯವಾದರೆ ಕೆಲವದರಲ್ಲಿ ಮಾತು ಮುಖ್ಯವಾಗುವುದೂ ಇದೆ. ಸರಿಯಾದ ಮಾತೊಂದರಿಂದ ಯುದ್ಧವನ್ನೇ ತಪ್ಪಿಸಬಹುದಂತೆ, ಇನ್ನು ಉದ್ಯೋಗದಲ್ಲಿ ಯಶಸ್ಸು ಕಾಣಲಾಗದೇ?

ಬಹುತೇಕ ಕೆಲಸಗಳನ್ನು ತಂಡಗಳಲ್ಲಿ ನಿರ್ವಹಿಸಬೇಕಾಗುತ್ತದೆ. ಒಬ್ಬಂಟಿಯಾಗಿ ಮಾಡುವ ಕೆಲಸಗಳು ಅಪರೂಪ. ಕಾರ್ಪೋರೇಟ್ ಯುಗದಲ್ಲಂತೂ ಟೀಂವರ್ಕ್ ಒಂದು ಮಹಾಮಂತ್ರ. ನಾವು ಕೆಲಸ ಮಾಡುವ ಕಂಪೆನಿಗಳಲ್ಲಿ ವಿವಿಧ ವಯೋಮಾನದ, ಸಾಮಾಜಿಕ ಹಿನ್ನೆಲೆಯ, ಭಿನ್ನ ರಾಜಕೀಯ ನಿಲುವುಗಳ ಸಹೋದ್ಯೋಗಿಗಳಿರುತ್ತಾರೆ. ಉದ್ಯೋಗದ ವೇಳೆ ಇವು ಯಾವುವೂ ಅಡ್ಡಿಯಾಗದಂತೆ ನೋಡಿಕೊಳ್ಳುವುದೊಂದು ಪ್ರಮುಖ ಕೌಶಲ. ಸಣ್ಣಪುಟ್ಟ ಅಡಚಣೆಗಳನ್ನು ನಿರ್ಲಕ್ಷಿಸಿ ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡುವುದೇ ಇಲ್ಲಿ ಮುಖ್ಯ.

ಯೋಜನೆ ಮತ್ತು ಸಂಘಟನೆ ಉದ್ಯೋಗ ಜಗತ್ತು ಬಯಸುವ ಇನ್ನೊಂದು ವಿಶಿಷ್ಟ ಕೌಶಲ. ಸಂಘಟನಾ ಕಲೆ ಎಲ್ಲರಿಗೂ ಒಲಿಯುವುದು ಕಷ್ಟವಾದರೂ, ಯಾವುದೇ ಉದ್ಯೋಗ ಕೈಗೊಂಡವರಿಗೆ ಅದರ ಪ್ರಾಥಮಿಕ ತಿಳುವಳಿಕೆಯಾದರೂ ಬೇಕಾಗುತ್ತದೆ. ಆಗಬೇಕಿರುವ ಕೆಲಸಗಳನ್ನು ಹೇಗೆ ವಿಭಾಗಿಸಿಕೊಳ್ಳಬೇಕು, ಯಾರಿಗೆ ಯಾವ ಹೊಣೆಗಾರಿಕೆಗಳನ್ನು ಹಂಚಬೇಕು, ಎಷ್ಟು ಸಮಯದೊಳಗೆ ಅವುಗಳನ್ನು ಪೂರೈಸುವಂತೆ ನೋಡಿಕೊಳ್ಳಬೇಕು, ಸಂಪನ್ಮೂಲಗಳನ್ನು ಹೇಗೆ ಒಟ್ಟು ಮಾಡಬೇಕು- ಇತ್ಯಾದಿಗಳನ್ನು ಅರಿತವರು ಉತ್ತಮ ಸಂಘಟಕರಾಗುತ್ತಾರೆ.

ಎಲ್ಲರೂ ರೂಢಿಸಿಕೊಳ್ಳಬೇಕೆಂದು ಬಯಸುವ ಆದರೆ ಬಹುತೇಕರು ವಿಫಲವಾಗುವ ಒಂದು ವಿಚಾರವೆಂದರೆ ಸಮಯ ನಿರ್ವಹಣೆ. ಯಾವುದೇ ವೃತ್ತಿಯ ಯಶಸ್ಸಿನಲ್ಲಿ ಸಮಯನಿರ್ವಹಣೆಯ ಪಾತ್ರ ಬಲು ಪ್ರಮುಖ. ನಿರ್ದಿಷ್ಟ ಕೆಲಸವೊಂದು ನಿಗದಿತ ಸಮಯದಲ್ಲಿ ಆಗದೇಹೋದರೆ ಕಂಪೆನಿಯ ನಿರ್ಣಾಯಕ ಯೋಜನೆಯೊಂದು ಕೈತಪ್ಪಿಹೋಗಬಹುದು. ನಾವು ಹತ್ತಬೇಕಾದ ಬಸ್ಸೋ ರೈಲೋ ತಪ್ಪಿಹೋದರೆ ಎಷ್ಟೊಂದು ಸಮಸ್ಯೆಯಾಗುತ್ತದೆ; ಇನ್ನು ಯೋಜನೆಯೇ ತಪ್ಪಿಹೋದರೆ ಆಗುವ ನಷ್ಟ ಎಷ್ಟು ದೊಡ್ಡದು? ಸಮಯ ನಿರ್ವಹಣೆಯಲ್ಲಿ ನಾವು ಯಶಸ್ವಿಯಾದರೆ ಅರ್ಧ ಉದ್ಯೋಗಜೀವನವೇ ಯಶಸ್ವಿಯಾದಂತೆ.

ಹೊಸತನ್ನು ಕಲಿಯುವುದು, ಅಗತ್ಯ ಮಾಹಿತಿಯನ್ನು ಕಲೆಹಾಕುವುದು, ಲಭ್ಯವಿರುವ ಮಾಹಿತಿಗಳನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳುವುದು, ತಂತ್ರಜ್ಞಾನವನ್ನು ಬಳಸುವ ಪ್ರಾಥಮಿಕ ತಿಳುವಳಿಕೆ ಹೊಂದಿರುವುದು ಇಂದು ಯಾವುದೇ ಉದ್ಯೋಗಕ್ಕೆ ಅಗತ್ಯ. ಕೆಲವು ವರ್ಷಗಳ ಹಿಂದೆ ಕಂಪ್ಯೂಟರ್ ಜ್ಞಾನ ಅನಿವಾರ್ಯವೇನೂ ಇರಲಿಲ್ಲ. ಇಂದು ಸಾಮಾನ್ಯ ವೃತ್ತಿಯೊಂದನ್ನು ನಿಭಾಯಿಸಬೇಕೆಂದರೂ ತಂತ್ರಜ್ಞಾನದ ಪ್ರಾಥಮಿಕ ತಿಳುವಳಿಕೆ ಅನಿವಾರ್ಯ.

ಆಯ್ದುಕೊಂಡ ವೃತ್ತಿಯಲ್ಲಿ ದಿನೇದಿನೇ ಪರಿಣತಿಯನ್ನು ಸಾಧಿಸುವುದು, ಆತ್ಮವಿಶ್ವಾಸ ಬತ್ತದಂತೆ ನೋಡಿಕೊಳ್ಳುವುದು, ಸೃಜನಶೀಲತೆಯನ್ನು ರೂಢಿಸಿಕೊಳ್ಳುವುದು ಕೂಡ ಉದ್ಯೋಗಾರ್ಹತೆಯ ಕೌಶಲವೆನಿಸಿದೆ. ಇವೆಲ್ಲಕ್ಕೂ ಕಿರೀಟಪ್ರಾಯವಾಗಿರುವುದು ಹೊಸತನಕ್ಕೆ ಉಪಕ್ರಮಿಸುವ ಮನೋಭಾವ ಮತ್ತು ನಾಯಕತ್ವದ ಗುಣ. ಇನ್ನೊಬ್ಬರನ್ನು ಮುನ್ನಡೆಸುವ ಗುಣ ಹೊಂದಿರುವವನು ತನ್ನ ಹುದ್ದೆಯಲ್ಲಿ ಉನ್ನತಿಗೇರುತ್ತಾನೆ.

ಇವೆಲ್ಲ ಆಧುನಿಕ ಉದ್ಯೋಗ ಜಗತ್ತು ಅಭ್ಯರ್ಥಿಗಳಿಂದ ಬಯಸುವ ಪ್ರಮುಖ ಕೌಶಲಗಳು. ನಮ್ಮ ಶೈಕ್ಷಣಿಕ ಅರ್ಹತೆಯ ಹಿಂದೆ ವರ್ಷಗಳ ಶ್ರಮ, ಸಾವಿರಾರು ರುಪಾಯಿಗಳ ಖರ್ಚು ಇರುತ್ತದೆ. ಅಚ್ಚರಿಯೆಂದರೆ ಇದರಾಚೆಗಿರುವ ಉದ್ಯೋಗ ಕೌಶಲಗಳಲ್ಲಿ ಹೆಚ್ಚಿನವೂ ಯಾವುದೇ ಖರ್ಚಿಲ್ಲದೆ ನಮ್ಮಷ್ಟಕ್ಕೆ ನಾವೇ ರೂಢಿಸಿಕೊಳ್ಳುವಂಥವು. ಅಂದಮೇಲೆ ಶಿಕ್ಷಣದ ಜತೆಜತೆಗೇ ಅವುಗಳನ್ನು ಪಡೆಯುವಲ್ಲಿ ಉದಾಸೀನ ಸಲ್ಲದು. ನೂರಕ್ಕೆ ನೂರು ಅಂಕ ಗಳಿಸಿದ ಅಭ್ಯರ್ಥಿ ತಾನೇ ಮಾರುಕಟ್ಟೆಗೆ ಹೋಗಿ ಆ ದಿನಕ್ಕೆ ಬೇಕಾದ ದಿನಸಿ ಸಾಮಗ್ರಿ ತಾರದೇ ಹೋದರೆ ಮನೆಮಂದಿಯೇ ಆತನನ್ನು/ಆಕೆಯನ್ನು ಜಾಣ/ಜಾಣೆ ಎಂದು ಒಪ್ಪುವುದಿಲ್ಲ. ಇನ್ನು ಪ್ರತಿತಿಂಗಳೂ ಸಂಬಳ ಕೊಡುವ ಉದ್ಯೋಗದಾತ ಪರ್ಸೆಂಟೇಜಿಗಿಂತ ಹೊರತಾದ ಅಗತ್ಯ ಕೌಶಲಗಳನ್ನು ಬಯಸುವುದರಲ್ಲಿ ಏನು ಅತಿಶಯ ಅಲ್ಲವೇ?

- ಸಿಬಂತಿ ಪದ್ಮನಾಭ ಕೆ. ವಿ.