ಉದಯವಾಣಿ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಉದಯವಾಣಿ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಬುಧವಾರ, ಏಪ್ರಿಲ್ 17, 2024

ಪರ್ಸೆಂಟೇಜಿಗಿಂತ ಬದುಕು ದೊಡ್ಡದು

14 ಏಪ್ರಿಲ್‌ 2024ರ ʻಉದಯವಾಣಿʼ ಸಾಪ್ತಾಹಿಕ ಪುರವಣಿಯಲ್ಲಿ ಪ್ರಕಟವಾದ ಲೇಖನ.

ಹಿರಿಯರೊಬ್ಬರು ಮುಖದ ತುಂಬ ನೋವು ಹೊತ್ತುಕೊಂಡು ಹೇಳುತ್ತಿದ್ದರು: ‘ಈ ರಿಸಲ್ಟುಗಳು
ಯಾಕಾದರೂ ಬರುತ್ತವೋ... ರಿಸಲ್ಟಿನ ಮರುದಿನ ಪತ್ರಿಕೆ ನೋಡಲು ಭಯ... ಯಾವ ಎಳೆಯ ಹುಡುಗರು ಏನು ಅನಾಹುತ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಓದುವ ಆತಂಕ...’ ಇದು ಅವರದೊಬ್ಬರದೇ ಭಯ ಅಲ್ಲ. ಪ್ರತಿವರ್ಷ ನೂರಾರು ಮಂದಿಯ ಎದೆಯಲ್ಲಿ ಹುಟ್ಟಿಕೊಳ್ಳುವ ನಡುಕ. ಫಲಿತಾಂಶದ ಮರುದಿನ ಏನು, ಪರೀಕ್ಷೆಯ ಮರುದಿನದಿಂದಲೇ ಇದು ಆರಂಭವಾಗುತ್ತದೆ. ಪರೀಕ್ಷೆ ಚೆನ್ನಾಗಿ ಮಾಡಿಲ್ಲ ಎಂದು ನೇಣಿಗೆ ತಲೆಯೊಡ್ಡುವ ಮಕ್ಕಳು, ಮರುದಿನ ಬರುವ ರಿಸಲ್ಟಿಗೆ ಹೆದರಿಯೇ ರೈಲುಹಳಿಗೆ ಬಲಿಯಾಗುವ ಮಕ್ಕಳು... ಇವರಿಗೆ ಫಲಿತಾಂಶದವರೆಗೆ ಕಾಯುವ ತಾಳ್ಮೆಯೇ ಇಲ್ಲ. ಫಲಿತಾಂಶವನ್ನು ಊಹಿಸಿಕೊಂಡೇ ಬದುಕನ್ನು ಮುಗಿಸುವ ಮಕ್ಕಳಿವರು.

ಜೀವನಕ್ಕಿಂತ ಪರೀಕ್ಷೆಯೇ ದೊಡ್ಡದು ಎಂದು ಭಾವಿಸಿರುವ ಮಕ್ಕಳ ಕತೆಯಿದು. ವಾಸ್ತವವಾಗಿ ಇದು ಮಕ್ಕಳ ಸಮಸ್ಯೆ ಅಲ್ಲ, ಅವರ ತಂದೆತಾಯಿಯರದು, ಹತ್ತಿರದ ಬಂಧುಗಳದು ಮತ್ತು ಸುತ್ತಲಿನ ಸಮಾಜದ್ದು. ಇವರೆಲ್ಲ ಸೇರಿ ನಿರ್ಮಿಸಿರುವ ದೊಡ್ಡದೊಂದು ವ್ಯೂಹವಿದು- ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಗಳೆಂಬ ಭೂತ. ಭವಿಷ್ಯದ ದೃಷ್ಟಿಯಿಂದ ಇವರೆಡೂ ಹಂತಗಳು ಪ್ರಮುಖ ಎಂಬುದೇನೋ ನಿಜ. ಮುಂದೇನು ಓದಬೇಕು ಎಂಬ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ದೃಷ್ಟಿಯಿಂದ ಇವು ಪ್ರಮುಖವೇ ಹೊರತು ಇಲ್ಲಿ ಒಂದೆರಡು ಪರ್ಸೆಂಟೇಜು ಕಡಿಮೆಯಾದರೆ ಬದುಕೇ ಮುಗಿಯಿತು ಎಂದು ಭಾವಿಸಬೇಕಾಗಿಲ್ಲ.

ಆದರೆ ನಮ್ಮ ಸಮಾಜ ಈ ಎರಡು ಪರೀಕ್ಷೆಗಳನ್ನು ಪ್ರತಿಷ್ಠೆಯ ಪ್ರಶ್ನೆಯನ್ನಾಗಿ ಮಾಡಿಕೊಂಡಿದೆ ಅಥವಾ ಮಾಡಿಕೊಳ್ಳುವಂತೆ ನೋಡಿಕೊಳ್ಳಲಾಗಿದೆ. ಮೂಲತಃ ಇದರ ಹಿಂದೆ ಇರುವುದು ಹಣದ ಬೆನ್ನುಹತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಷಡ್ಯಂತ್ರವೇ ಹೊರತು ಇನ್ನೇನೂ ಅಲ್ಲ. ಇಂಜಿನಿಯರಿಂಗ್-ಮೆಡಿಕಲ್‍ಗಳಂತಹ ಒಂದೆರಡು ವೃತ್ತಿಗಳನ್ನೇ ಭೂಮಿಯ ಮೇಲಿನ ಮಹೋನ್ನತ ಉದ್ಯೋಗಗಳೆಂದು ಬಿಂಬಿಸಿರುವುದರ ಹಿಂದೆಯೂ ಇದೇ ಷಡ್ಯಂತ್ರ ಇದೆ. ಈ ಎರಡು ವೃತ್ತಿಪರ ಕೋರ್ಸುಗಳಿಗೆ ಲಕ್ಷಾಂತರ ಹಣ ಬೇಕೆಂಬುದು ಹಿಂದಿನಿಂದಲೂ ಚಾಲ್ತಿಯಲ್ಲಿರುವ ನಂಬಿಕೆ. ಇವುಗಳಿಗೆ ಪ್ರವೇಶ ಪಡೆಯುವುದೂ ಭಾರೀ ದೊಡ್ಡ ಸ್ಪರ್ಧೆಯೆಂಬ ಭ್ರಮೆಯನ್ನು ಕೂಡ ಬಹು ವ್ಯವಸ್ಥಿತವಾಗಿ ರೂಪಿಸಲಾಗಿದೆ.

‘ಇಂಜಿನಿಯರಿಂಗ್ ಅಥವಾ ವೈದ್ಯಕೀಯ ಕೋರ್ಸುಗಳಿಗೆ ಸೇರಬೇಕೆಂದರೆ ಒಳ್ಳೆಯ ಕಡೆ ಪಿಯುಸಿ ಮಾಡಬೇಕು. ಅಲ್ಲಿ ಉತ್ಕøಷ್ಟ ಮಟ್ಟದ ಸಿಇಟಿ-ಜೆಇಇ-ನೀಟ್ ಕೋಚಿಂಗ್ ಸಿಗಬೇಕು. ಅಂತಹ ಕಾಲೇಜು ಸಿಗಬೇಕೆಂದರೆ ಎಸ್.ಎಸ್.ಎಲ್.ಸಿ.ಯಲ್ಲಿ ಒಂದೊಂದು ಅಂಕವೂ ಮುಖ್ಯ’ – ಇದು ಬಹುಪಾಲು ತಂದೆತಾಯಂದಿರಲ್ಲಿ ಇರುವ ಧಾವಂತ. ಈ ಧಾವಂತ ಕ್ಷಣಕ್ಷಣವೂ ಮಕ್ಕಳ ತಲೆಗೆ ವರ್ಗಾವಣೆ ಆಗುತ್ತಾ ಇರುತ್ತದೆ. ಬೆಳಗೆಂದರೇನು, ಸಂಜೆಯೆಂದರೇನು, ಮಳೆಯೆಂದರೇನು, ಬಿಸಿಲೆಂದರೇನು ಎಂದು ತಿಳಿಯದ ಮಕ್ಕಳು. ಬೆಳಕಾಗುವ ಮುನ್ನವೇ ಬಾಗಿಲು ತೆರೆಯುವ ಕೋಚಿಂಗ್ ಸಂಸ್ಥೆಗಳು, ಮಧ್ಯರಾತ್ರಿ ಕಳೆದರೂ ಮಲಗಲು ಬಿಡದ ಹಾಸ್ಟೆಲುಗಳು. ಓದಲೇಬೇಕು, ಕೋಚಿಂಗ್ ಪಡೆಯಲೇಬೇಕು, ಓದಿದ್ದನ್ನೇ ಓದಬೇಕು, ಉರುಹೊಡೆಯಲೇಬೇಕು, ಮತ್ತಮತ್ತೆ ಪರೀಕ್ಷೆ ಬರೆಯಬೇಕು, ಪರ್ಸೆಂಟೇಜು ಹೆಚ್ಚಾಗಬೇಕು...

ಈ ನಿರೀಕ್ಷೆಗಳ ಭಾರದಲ್ಲಿ ಮಕ್ಕಳ ಮನಸ್ಸಿನ ಪಾಡು ಯಾರಿಗೂ ಬೇಕಾಗಿಲ್ಲ. ಮನಸ್ಸು-ಬುದ್ಧಿಗಳು ಉಲ್ಲಾಸದಿಂದ ವಿಕಸಿತಗೊಳ್ಳಬೇಕಾದ ಬಂಗಾರದ ಕಾಲವದು. ಮನುಷ್ಯನ ಒಟ್ಟಾರೆ ವ್ಯಕ್ತಿತ್ವ ನಿರ್ಮಾಣವಾಗುವುದೇ ಈ ಹದಿಹರೆಯದ ಪರ್ವಕಾಲದಲ್ಲಿ. ಆದರೆ ಈಗ ಅಲ್ಲಿ ನಡೆಯುವುದು ಅಂಕ ಮೊಗೆಯುವ ಯಂತ್ರಗಳನ್ನು ತಯಾರು ಮಾಡುವ ಪ್ರಕ್ರಿಯೆ ಮಾತ್ರ. ಬುದ್ಧಿಭಾವಗಳು ಬಲಿಯಬೇಕಾದ ಕಾಲದಲ್ಲಿ ಇದೇನು ಮಾಡುತ್ತಿದ್ದೇವೆ ಎಂಬ ವಿವೇಕ ಯಾರಿಗೂ ಬೇಕಾಗಿಲ್ಲ. ಯಾವುದೋ ವೇಗೋತ್ಕರ್ಷದ ಬಲದಲ್ಲಿ ಆಸಕ್ತಿಯಿರುವ ಇಲ್ಲದಿರುವ ಎಲ್ಲ ಮಕ್ಕಳು ಮುಂದಮುಂದಕ್ಕೆ ತೇಲಿಕೊಂಡೇನೋ ಹೋಗುತ್ತವೆ. ಅವರ ನಿಜವಾದ ಭವಿಷ್ಯ ಏನು? ಮುಂದೆ ತಾವು ಜೀವನ ನಡೆಸಬೇಕಾದವರೊಂದಿಗೆ, ಸುತ್ತಲಿನ ಸಮಾಜದೊಂದಿಗೆ ಹೊಂದಿಕೊಂಡು ಸಂತೋಷವಾಗಿ ಬದುಕಬಲ್ಲರೇ ಇವರು?

ಸಂತೋಷ ಎಂದರೇನು? ಮುಂದೆ ದೊರೆಯಲಿರುವ ಉದ್ಯೋಗ, ಅದರಿಂದ ಸಂಪಾದನೆಯಾಗುವ ಹಣ ಮತ್ತು ಆ ಮೂಲಕ ದೊರೆಯುವ ಸಾಮಾಜಿಕ ಪ್ರತಿಷ್ಠೆ. ಸಮಾಜದ ಕಣ್ಣಿನಲ್ಲಿ ಇದೇ ಸಂತೋಷ. ಇದುವೇ ವೃತ್ತಿಪರ ಕೋರ್ಸುಗಳಲ್ಲಿ ಸೀಟು ಗಿಟ್ಟಿಸಿಕೊಳ್ಳುವ ಧಾವಂತದಲ್ಲಿ ದೆಸೆಗೆಟ್ಟು ಓಡುತ್ತಿರುವ ಒಟ್ಟಾರೆ ಸಮಾಜದ ಪರಮ ಉದ್ದೇಶ. ಇದರ ಹಿಂದಿರುವುದು ಶಿಕ್ಷಣ ಸಂಸ್ಥೆಗಳನ್ನು ಹಣದ ಮಳೆಗರೆಯುವ ಕಲ್ಪವೃಕ್ಷ-ಕಾಮಧೇನುಗಳನ್ನಾಗಿ ಮಾಡಿಕೊಂಡಿರುವ ಮಂದಿಯ ಸ್ವಾರ್ಥಬುದ್ಧಿ ಎಂಬುದು ನಮ್ಮ ಸಮಾಜಕ್ಕಿನ್ನೂ ಅರ್ಥವಾಗದಿರುವುದು ದುರಂತ.

ಈ ಕಾಲದಲ್ಲಿ ಒಂದೊಳ್ಳೆಯ ಜೀವನ ಕಟ್ಟಿಕೊಳ್ಳಬೇಕೆಂದರೆ ಹಣಕಾಸಿನ ಸ್ಥಿತಿಗತಿ ಚೆನ್ನಾಗಿರಬೇಕೆಂಬುದರಲ್ಲಿ ಅನುಮಾನವೇನೂ ಇಲ್ಲ. ಆದರೆ ಅದು ಎಷ್ಟು ಬೇಕು, ಹೇಗೆ ಬೇಕು ಎಂಬ ಬಗ್ಗೆ ಪ್ರಾಮಾಣಿಕವಾಗಿ ಯಾರೂ ಯೋಚಿಸಿಲ್ಲ. ಸಂಪಾದನೆ ಮಾಡುವುದು ತಪ್ಪಲ್ಲ; ಸಮಾಜದಲ್ಲಿ ನಾಲ್ಕು ಮಂದಿಯ ಗೌರವಕ್ಕೆ ಪಾತ್ರರಾಗಬೇಕು ಎಂಬ ಅಪೇಕ್ಷೆಯಿರುವುದು ತಪ್ಪಲ್ಲ. ಆದರೆ ಅದಕ್ಕೆ ಯಾವುದೋ ಒಂದೆರಡು ದಾರಿಗಳು ಮಾತ್ರ ಇರುವುದು ಎಂಬುದು ಮಾತ್ರ ಶುದ್ಧ ಭ್ರಮೆ. ಮರ್ಯಾದೆಯಿಂದ ಬದುಕುವುದಕ್ಕೆ ಸಾವಿರ ದಾರಿಗಳಿವೆ. ಎಲ್ಲರೂ ಒಂದೇ ರಸ್ತೆಯಲ್ಲಿ ಸಾಗುತ್ತಿದ್ದರೆ ಆಮೇಲೆ ಅವರೆಲ್ಲ ಅದೇ ಟ್ರಾಫಿಕ್ಕಿನಲ್ಲಿ ಬದುಕನ್ನೆಲ್ಲ ಕಳೆಯಬೇಕಾಗುತ್ತದೆ. ವಾಸ್ತವವಾಗಿ ಬೇರೆ ರಸ್ತೆ ಹಿಡಿದವರು ಉಳಿದವರಿಗಿಂತ ಮೊದಲೇ ಗಮ್ಯ ಸೇರಿರುತ್ತಾರೆ.

ರಿಲಯನ್ಸ್ ಎಂಬ ಸಾಮ್ರಾಜ್ಯವನ್ನು ಕಟ್ಟಿದ ಧೀರೂಭಾಯ್ ಅಂಬಾನಿ ಆರಂಭದಲ್ಲಿ ಏನಾಗಿದ್ದರು? ಹ್ಯಾರಿಪಾಟರ್ ಪುಸ್ತಕಗಳಿಂದಲೇ ಲೋಕಪ್ರಸಿದ್ಧಿ ಪಡೆದ ಜೆ.ಕೆ. ರೌಲಿಂಗ್ ಏನಾಗಿದ್ದರು? ಜಗತ್ಪ್ರಸಿದ್ಧ ಬ್ಯಾಗುಗಳ ಬ್ರಾಂಡ್ ಅನ್ನು ಕಟ್ಟಿಬೆಳೆಸಿದ ಗುಚಿಯೋ ಗುಚಿ ಏನಾಗಿದ್ದರು? ಮಸ್ಯಾಚುಸೆಟ್ಸ್ ಇನ್ಸ್‍ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಪ್ರವೇಶ ಪಡೆದ ಮೊದಲ ಅಂತಾರಾಷ್ಟ್ರೀಯ ಅಂಧವ್ಯಕ್ತಿ ಶ್ರೀಕಾಂತ್ ಬೊಲ್ಲಾ ಅಲ್ಲಿಯವರೆಗೆ ಎದುರಿಸಿದ ನೋವು-ಅವಮಾನಗಳೇನು? ನಾವು ನಮ್ಮ ಸುತ್ತಲಿನ ಸಮಾಜವನ್ನು ಕಣ್ಣುತೆರೆದು ನೋಡುವುದೇ ಇಲ್ಲ. ಯಾರೋ ಬೆಳೆಸಿದ ಭ್ರಮೆಯಲ್ಲಿ, ನಾವೇ ಹಾಕಿಕೊಂಡ ಕನ್ನಡಕದಲ್ಲಿ ಬಂಧಿಯಾಗಿರುತ್ತೇವೆ. 

ಪರ್ಸೆಂಟೇಜಿಗಿಂತ ಬದುಕು ತುಂಬ ದೊಡ್ಡದು. ಬದುಕಿನ ತೃಪ್ತಿಯನ್ನು ಎಸ್.ಎಸ್.ಎಲ್.ಸಿ. ಅಥವಾ ಪಿಯುಸಿಯ ಪರ್ಸೆಂಟೇಜಿನಿಂದ ಅಳೆಯಲು ಬರುವುದಿಲ್ಲ. ಮೂಲತಃ ಪರ್ಸೆಂಟೇಜು ಒಬ್ಬ ವ್ಯಕ್ತಿಯ ಒಟ್ಟಾರೆ ವ್ಯಕ್ತಿತ್ವವನ್ನು, ಪ್ರತಿಭೆಯನ್ನು ಅಳೆಯುವ ಮಾನದಂಡವೇ ಅಲ್ಲ. ಅದು ಮಗುವಿನೊಳಗೆ ಸುಪ್ತವಾಗಿಯೇ ಇರುತ್ತದೆ. ಅದನ್ನು ಸಶಕ್ತವಾಗಿ ಹೊರಗೆ ತರುವುದಕ್ಕೆ ಹತ್ತಾರು ಮಾರ್ಗಗಳಿವೆ. ಅದು ಕೋಚಿಂಗ್ ಸೆಂಟರುಗಳಲ್ಲಿ ವಿಕಾಸವಾಗುವುದಿಲ್ಲ. ಹಾರ್ವರ್ಡ್‍ನ ಮನಃಶಾಸ್ತ್ರಜ್ಞ ಹೊವಾರ್ಡ್ ಗಾರ್ಡನರ್ ಪ್ರತಿಪಾದಿಸಿರುವ ‘ಬಹುಬುದ್ಧಿವಂತಿಕೆಯ ಸಿದ್ಧಾಂತ’ವೂ (ಮಲ್ಟಿಪಲ್ ಇಂಟೆಲಿಜೆನ್ಸಸ್ ಥಿಯರಿ) ಇದನ್ನೇ ಪ್ರತಿಪಾದಿಸುತ್ತದೆ. ಬುದ್ಧಿವಂತಿಕೆಗೆ ಏಳೆಂಟು ಆಯಾಮಗಳಿವೆ, ಅವುಗಳಲ್ಲಿ ಯಾವುದಾರೂ ಒಂದೋ ಎರಡೋ ಮೂರೋ ಮಗುವಿನಲ್ಲಿ ಪ್ರಬಲವಾಗಿರಬಹುದು. ಅವುಗಳನ್ನು ಆರಂಭದಿಂದಲೇ ಗಮನಿಸಿ ಬೆಳೆಸಿದರೆ ಆ ಮಗು ಮುಂದೆ ತನ್ನ ಆಸಕ್ತಿಯ ಕ್ಷೇತ್ರದಲ್ಲಿ ಅಸಾಧಾರಣವಾದುದನ್ನು ಸಾಧಿಸಬಹುದು ಎಂದಿದ್ದಾರೆ ಗಾರ್ಡನರ್.

ಕೆಲವರಲ್ಲಿ ದೃಶ್ಶಿಕ (ವಿಶುವಲ್) ಶಕ್ತಿ ಪ್ರಬಲವಾಗಿರುತ್ತದೆ - ಆ ಶಕ್ತಿಯನ್ನು ಬೆಳೆಸಿದರೆ ಮುಂದೆ ಅವರು ಉತ್ತಮ ವಿನ್ಯಾಸಕಾರರಾಗಿ ಬೆಳೆಯಬಹುದು. ಕೆಲವರಲ್ಲಿ ಶಾಬ್ದಿಕ (ವರ್ಬಲ್) ಪ್ರತಿಭೆ ದಟ್ಟವಾಗಿರುತ್ತದೆ- ಮುಂದೆ ಅವರು ಉತ್ತಮ ಬರೆಹಗಾರರಾಗಿ, ಮಾತುಗಾರರಾಗಿ ಬೆಳೆಯಬಹುದು. ಇನ್ನು ಕೆಲವರಲ್ಲಿ ಸಂಗೀತದ (ಮ್ಯೂಸಿಕಲ್) ಕೌಶಲ ಆಳದಲ್ಲಿ ಬೇರೂರಿರುತ್ತದೆ- ಅವರು ಮುಂದೆ ಜಗತ್ತು ಮೆಚ್ಚುವ ಸಂಗೀತಗಾರರಾಗಿ ಬೆಳೆಯಬಹುದು. ಮತ್ತೆ ಕೆಲವರಲ್ಲಿ ತಾರ್ಕಿಕ (ಲಾಜಿಕಲ್) ಶಕ್ತಿ ಪ್ರಬಲವಾಗಿರುತ್ತದೆ- ಅವರು ಮುಂದೆ ವಿಜ್ಞಾನಿಯಾಗಿಯೋ, ಇಂಜಿನಿಯರಾಗಿಯೋ ಹೆಸರು ಮಾಡಬಹುದು. ಹಲವರಲ್ಲಿ ದೈಹಿಕ (ಬಾಡಿಲೀ) ಕೌಶಲಗಳು ಅಪೂರ್ವವಾಗಿರುತ್ತವೆ- ಅಂಥವರು ಮುಂದೆ ಕ್ರೀಡಾಕ್ಷೇತ್ರದಲ್ಲಿ ಪ್ರಸಿದ್ಧಿಗೇರಬಹುದು... ಇದನ್ನು ಗಾರ್ಡನರ್ ‘ಮಲ್ಟಿಪಲ್ ಇಂಟೆಲಿಜೆನ್ಸಸ್’ ಎಂದು ಕರೆದಿರುವುದು. ತಂದೆತಾಯಿಯರು ಮತ್ತು ಅಧ್ಯಾಪಕರು ಇದನ್ನು ಗುರುತಿಸುವುದನ್ನು ಮರೆತರೆ ತಮ್ಮ ಮಕ್ಕಳಿಗೆ ಬಹುದೊಡ್ಡ ಅನ್ಯಾಯ ಮಾಡಿದಂತೆ. ಇಂಜಿನಿಯರ್ ಆಗಲಾರದ ವ್ಯಕ್ತಿಯೊಬ್ಬ ನಾಳೆ ದೊಡ್ಡ ಹಾಡುಗಾರ ಆಗಬಹುದು, ವೈದ್ಯಕೀಯ ವಿಜ್ಞಾನ ಓದಲಾಗದವನೊಬ್ಬ ನಾಳೆ ದೊಡ್ಡ ಕ್ರೀಡಾಪಟುವಾಗಿ ಹೊರಹೊಮ್ಮಬಹುದು, ಚಿತ್ರಕಾರನೋ, ಸಾಹಿತಿಯೋ, ವಕೀಲನೋ, ಪತ್ರಕರ್ತನೋ, ಸಂಶೋಧನಕೋ, ಲೆಕ್ಕಪರಿಶೋಧಕನೋ, ಅಧಿಕಾರಿಯೋ, ಉದ್ಯಮಿಯೋ ಆಗಬಹುದು. ಈ ಸ್ಥಾನಗಳಲ್ಲಿರುವುದು ಅವಮಾನವೇ? ಇವುಗಳಿಂದ ವ್ಯಕ್ತಿಯೊಬ್ಬ ತನ್ನ ಬದುಕಿನ ತೃಪ್ತಿ ಕಂಡುಕೊಳ್ಳಲು ಸಾಧ್ಯವಿಲ್ಲವೇ?

ಎಲ್ಲರಿಗಿಂತ ಮೊದಲು ಅಪ್ಪ-ಅಮ್ಮಂದಿರು ತಮ್ಮ ಭ್ರಮೆಗಳಿಂದ ಹೊರಬರಬೇಕು. ಧನದಾಹಿಗಳ ಸ್ವಾರ್ಥದಲ್ಲಿ ನಲುಗುತ್ತಿರುವ ಶಿಕ್ಷಣವಲಯ ನಿರ್ಮಿಸಿರುವ ವ್ಯೂಹದೊಳಗೆ ತಾವು ಬಂಧಿಗಳಾಗಿದ್ದೇವೆ ಎಂಬುದನ್ನು ತಿಳಿಯಬೇಕು. ಮಕ್ಕಳು ನಮ್ಮ ಭ್ರಮೆಗಳನ್ನೆಲ್ಲ ಹೊತ್ತುಕೊಂಡು ಓಡಬೇಕಾದ ಕತ್ತೆಗಳಲ್ಲ. ಅವರಿಗೂ ಅವರದ್ದೇ ಆದ ಮನಸ್ಸು, ಕೌಶಲ, ಪ್ರತಿಭೆ, ಕನಸುಗಳು ಇರುತ್ತವೆ. ಅವು ಹೂವಿನಂತೆ ಸ್ವಾಭಾವಿಕವಾಗಿ ವಿಕಾಸವಾಗಿ, ಹೀಚಾಗಿ, ಕಾಯಿಯಾಗಿ, ಹಣ್ಣಾಗಿ ಸುತ್ತಲಿನ ಸಮಾಜಕ್ಕೆ ಹಿತವಾಗಿ, ಉಪಯುಕ್ತವಾಗಿ ಪರಿಣಮಿಸಲು ಅವಕಾಶ ಮಾಡಿಕೊಡೋಣ. ಇಲ್ಲವಾದರೆ ಭವಿಷ್ಯ ನಮ್ಮನ್ನು ಕ್ಷಮಿಸಲಾರದು.

- ಸಿಬಂತಿ ಪದ್ಮನಾಭ ಕೆ. ವಿ.

ಶನಿವಾರ, ಜನವರಿ 27, 2024

ಭಾರತೀಯ ಪತ್ರಿಕಾಲೋಕದ ಹಿಂದಿನ ಕಥೆ

28 ಜನವರಿ 2024ರ ʻಉದಯವಾಣಿ ಸಾಪ್ತಾಹಿಕ ಸಂಪದʼದಲ್ಲಿ ಪ್ರಕಟವಾದ ಲೇಖನ

ಕಾಫಿಯಿಲ್ಲದ ಬೆಳಗನ್ನಾದರೂ ಊಹಿಸಬಹುದು, ಪತ್ರಿಕೆಯಿಲ್ಲದ ಮುಂಜಾವನ್ನು ಊಹಿಸಿಕೊಳ್ಳುವುದು ಕಡುಕಷ್ಟ. ಪತ್ರಿಕೆಯ ಜಾಗದಲ್ಲಿ ಮೊಬೈಲೇನೋ ಬಂದು ಕೂತಿರಬಹುದು, ಆದರೆ ಮನುಷ್ಯನ ದಿನದ ಬಾಗಿಲನ್ನು ತೆರೆಯುವುದು ಯಾವುದೋ ಒಂದು ಮಾಧ್ಯಮ ಎಂಬುದರಲ್ಲಿ ಎರಡು ಮಾತಿಲ್ಲ. ಯಾವ ಮಾಧ್ಯಮ ಬಂದರೂ ಪತ್ರಿಕೆಯ ಮೇಲೆ ಕಣ್ಣಾಡಿಸದೆ ತೃಪ್ತಿಯಿಲ್ಲ ಎನ್ನುವ ಮಂದಿಯಂತೂ ಬೇಕಾದಷ್ಟಿದ್ದಾರೆ.

ಪತ್ರಿಕೆಗಳನ್ನು ಇಷ್ಟೊಂದು ಹಚ್ಚಿಕೊಂಡಿರುವ ಎಲ್ಲರಿಗೂ ‘ಜನರನ್ನು ಈ ಮಟ್ಟಕ್ಕೆ ಪ್ರಭಾವಿಸಿರುವ ಇಂತಹದೊಂದು ಮಾಧ್ಯಮ ಹೇಗೆ ಹುಟ್ಟಿಕೊಂಡಿತು? ಯಾವಾಗ ಹುಟ್ಟಿಕೊಂಡಿತು?’ ಎಂಬ ಪ್ರಶ್ನೆ ಕಾಡದಿರದು.  ಆ ಕಥೆ ಬಹಳ ಸ್ವಾರಸ್ಯಕರವಾಗಿದೆ. ಸದ್ಯಕ್ಕೆ ನಾವು ಭಾರತದಲ್ಲಿ ಪತ್ರಿಕೆಗಳು ಹೇಗೆ ಹುಟ್ಟಿಕೊಂಡವು? ನಮ್ಮ ದೇಶದ ಮೊದಲ ಪತ್ರಿಕೆಯ ಕಥೆ ಏನು? ಆರಂಭಿಸಿದವರು ಯಾರು? ಇತ್ಯಾದಿಗಳನ್ನು ಗಮನಿಸೋಣ. 

ಸುಮಾರು ಇನ್ನೂರೈವತ್ತು ವರ್ಷಗಳ ಹಿಂದೆ ಭಾರತದಲ್ಲಿ ಪತ್ರಿಕೆಗಳೇ ಇರಲಿಲ್ಲ. ಇರಲಿಲ್ಲ ಎಂದರೆ ಜನ ಪತ್ರಿಕೆಗಳನ್ನು ಕಂಡೇ ಇರಲಿಲ್ಲ ಎಂದಲ್ಲ. ಯುರೋಪಿನ ಪತ್ರಿಕೆಗಳನ್ನು ಜನರು ಓದುತ್ತಿದ್ದುದುಂಟು. ಇಲ್ಲಿ ಬ್ರಿಟಿಷರ ವ್ಯಾಪಾರ ವ್ಯವಹಾರ ಜೋರಾಗಿದ್ದುದರಿಂದ, ಇಂಗ್ಲೆಂಡಿನಿಂದ ಹಡಗುಗಳ ಮೂಲಕ ಪತ್ರಿಕೆಗಳೂ ಆಗೊಮ್ಮೆ ಈಗೊಮ್ಮೆ ಬರುತ್ತಿದ್ದವು. ಅವು ಮೂರ್ನಾಲ್ಕು ತಿಂಗಳು ಹಳೆಯ ಪತ್ರಿಕೆಗಳು. ಅವನ್ನೇ ಇಲ್ಲಿನ ಮಂದಿ ಬಿಸಿಬಿಸಿ ಸುದ್ದಿಗಳೆಂದು ಭಾವಿಸಿ ಓದಬೇಕಿತ್ತು.

ವ್ಯಾಪಾರಿಯ ಕನಸು:

ಭಾರತದಲ್ಲೇ ಪತ್ರಿಕೆಗಳನ್ನು ಮುದ್ರಿಸಬೇಕು ಎಂಬ ಯೋಚನೆ ಮೊದಲು ಬಂದದ್ದು ವಿಲಿಯಂ ಬೋಲ್ಟ್ಸ್ ಎಂಬ ಯುರೋಪಿಯನ್ ವ್ಯಾಪಾರಿಗೆ. ಭಾರತದಲ್ಲಿ ಪತ್ರಿಕೆಗಳಿಲ್ಲದೆ ವ್ಯಾಪಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದೂ, ಯಾರಾದರೂ ಮುದ್ರಣಾಲಯವನ್ನು ಸ್ಥಾಪಿಸುವ ಆಸಕ್ತರಿದ್ದರೆ ಅವರಿಗೆ ತಾನು ಸಹಾಯ ಮಾಡುತ್ತೇನೆ ಎಂದೂ, ತನ್ನಲ್ಲಿ ಸಾಕಷ್ಟು ವಿಶೇಷ ಸುದ್ದಿಗಳಿದ್ದು ಅವನ್ನು ಓದಬಯಸುವವರು ತನ್ನಮನೆಗೆ ಬೆಳಗ್ಗಿನ ಹೊತ್ತು ಬರಬಹುದು ಎಂದೂ ಒಂದು ಕರಪತ್ರವನ್ನು ಸಿದ್ಧಪಡಿಸಿ ಅವನು ಕಲ್ಕತ್ತಾದ ಕೌನ್ಸಿಲ್ ಹೌಸಿನ ಹೆಬ್ಬಾಗಿಲಿನಲ್ಲಿ ಅಂಟಿಸಿದ. ಅದು 1760ರ ದಶಕದ ಕೊನೆಯ ಭಾಗ.

ಕಂಪೆನಿ ಸರ್ಕಾರಕ್ಕೆ ಅಲ್ಲೇ ಅಪಾಯದ ಮುನ್ಸೂಚನೆ ಕಂಡಿತು. ಇದನ್ನು ಚಿಗುರಲ್ಲೇ ಚಿವುಟದೆ ಹೋದರೆ ನಮಗೇ ಸಂಚಕಾರ ಉಂಟಾದೀತು ಎಂದು ಭಾವಿಸಿದ ಕಂಪೆನಿ ಅಧಿಕಾರಿಗಳು ಬೋಲ್ಟ್ಸ್‍ನನ್ನು ಗಡಿಪಾರು ಮಾಡುವುದೇ ಸರಿ ಎಂದು ಯೋಚಿಸಿದರು. ಆತ ಕೂಡಲೇ ಬಂಗಾಲ ತೊರೆದು ಮದ್ರಾಸಿಗೆ ಹೋಗಿ, ಅಲ್ಲಿಂದ ಇಂಗ್ಲೆಂಡ್‍ನ ಹಡಗು ಹಿಡಿಯಬೇಕು ಎಂದು ಸರ್ಕಾರ ಆದೇಶಿಸಿತು. ಅಲ್ಲಿಗೆ ಭಾರತದ ಮೊದಲ ಪತ್ರಿಕೆ ಹುಟ್ಟುವ ಮೊದಲೇ ಸತ್ತುಹೋಯಿತು.

ಬೆಂಗಾಲ್ ಗಜೆಟ್:

ಇದಾಗಿ ಹನ್ನೆರಡು ವರ್ಷಗಳ ಬಳಿಕ ಭಾರತದ ಮೊತ್ತಮೊದಲ ಪತ್ರಿಕೆ ‘ಬೆಂಗಾಲ್ ಗಜೆಟ್’ನ ಉಗಮವಾಯಿತು. 1780ರ ಜನವರಿ 29ರಂದು ಜೇಮ್ಸ್ ಆಗಸ್ಟಸ್ ಹಿಕಿ ಎಂಬ ಇನ್ನೊಬ್ಬ ಯುರೋಪಿಯನ್ ವ್ಯಾಪಾರಿ ‘ಬೆಂಗಾಲ್ ಗಜೆಟ್’ನ ಮೊದಲ ಸಂಚಿಕೆಯನ್ನು ಹೊರಡಿಸಿದ. ಅದಕ್ಕೆ ‘ದಿ ಒರಿಜಿನಲ್ ಕಲ್ಕತ್ತಾ ಜನರಲ್ ಅಡ್ವಟೈಸರ್’ ಎಂಬ ಇನ್ನೊಂದು ಹೆಸರೂ ಇತ್ತು. ಆ ಪತ್ರಿಕೆಗೆ ಹಿಕಿಯೇ ಲೇಖಕ, ವರದಿಗಾರ, ಪ್ರಕಾಶಕ, ಮುದ್ರಕ ಎಲ್ಲವೂ ಆಗಿದ್ದರಿಂದ ಅದಕ್ಕೆ ‘ಹಿಕೀಸ್ ಗಜೆಟ್’ ಎಂಬ ಹೆಸರೂ ಇತ್ತು.

ಭಾರತದಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿಯ ಕೇಂದ್ರಸ್ಥಾನ ಬಂಗಾಳದ ಕಲ್ಕತ್ತಾವೇ ಆಗಿದ್ದುದರಿಂದ ನಮ್ಮ ಪತ್ರಿಕೋದ್ಯಮದ ಜನ್ಮಸ್ಥಳವೂ ಅದೇ ಆಯಿತು. ‘ಬೆಂಗಾಲ್ ಗಜೆಟ್’ ಇಂಗ್ಲಿಷ್ ಭಾಷೆಯ ವಾರಪತ್ರಿಕೆ ಆಗಿತ್ತು. 12 ಇಂಚು ಉದ್ದ, 8 ಇಂಚು ಅಗಲದ ಈ ಪುಟ್ಟ ಪತ್ರಿಕೆಯಲ್ಲಿ ನಾಲ್ಕು ಪುಟಗಳಿದ್ದವು. ಪುಟಗಳನ್ನು ತಲಾ ಮೂರು ಕಾಲಂಗಳಾಗಿ ವಿಭಾಗಿಸಲಾಗಿತ್ತು. ಕಂಪೆನಿ ಅಧಿಕಾರಿಗಳು, ಇಂಗ್ಲಿಷ್ ಬಲ್ಲ ಕೆಲವು ಭಾರತೀಯರು ಇದರ ಓದುಗರಾಗಿದ್ದರು. ಸರಾಸರಿ 400 ಪ್ರತಿಗಳಷ್ಟು ‘ಗಜೆಟ್’ ಪ್ರಕಟವಾಗುತ್ತಿತ್ತು. ಅದರ ಮುದ್ರಣವೇನೂ ಅಷ್ಟೊಂದು ಸೊಗಸಾಗಿರಲಿಲ್ಲ. ಸುದ್ದಿಗಳಿಗಿಂತ ಜಾಹೀರಾತುಗಳೇ ಹೆಚ್ಚಾಗಿದ್ದವು.

ಯಾರೀತ ಹಿಕಿ?

‘ಈಸ್ಟ್ ಇಂಡಿಯಾ ಕಂಪೆನಿಯ ಮಾಜಿ ಮುದ್ರಕ’ ಎಂದು ಜೇಮ್ಸ್ ಆಗಸ್ಟಸ್ ಹಿಕಿ ತನ್ನನ್ನು ತಾನು ಪರಿಚಯಿಸಿಕೊಂಡಿದ್ದ. ಆತ ಮೂಲತಃ ಐರ್ಲೆಂಡಿನವನು. 1740ರ ಆಸುಪಾಸಿನಲ್ಲಿ ಜನಿಸಿದ. ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡಿದ್ದ ಹಿಕಿ 1772ರಲ್ಲಿ ಭಾರತಕ್ಕೆ ಬಂದು ಈಸ್ಟ್ ಇಂಡಿಯಾ ಕಂಪೆನಿ ಸೇರಿಕೊಂಡ. ‘ಶಸ್ತ್ರಚಿಕಿತ್ಸಕ’ನಾಗಿ, ಮುದ್ರಣ ಸಹಾಯಕನಾಗಿ ಆತ ಕಾರ್ಯನಿರ್ವಹಿಸುತ್ತಿದ್ದ. ವ್ಯಾಪಾರದಲ್ಲಿ ಸಾಕಷ್ಟು ನಷ್ಟ ಅನುಭವಿಸಿ ಸಾಲ ತೀರಿಸಲಾಗದೆ ಜೈಲುಪಾಲಾದ. ಜೈಲಿನಲ್ಲಿದ್ದಾಗಲೇ ಒಂದು ಮುದ್ರಣ ಯಂತ್ರ ಪಡೆದುಕೊಂಡು ಮುದ್ರಣದ ಕೆಲಸ ಆರಂಭಿಸಿದ. 1777ರಲ್ಲಿ ಜೈಲಿನಿಂದ ಹೊರಬಂದು ತನ್ನದೇ ಪ್ರಿಂಟಿಂಗ್ ಪ್ರೆಸ್ ಆರಂಭಿಸಿದ. ಮೂರು ವರ್ಷಗಳ ಬಳಿಕ ಅವನಿಂದಲೇ ಭಾರತದ ಮೊದಲ ಪತ್ರಿಕೆ ಆರಂಭವಾಯಿತು.

ಹಿಕಿ ಒಬ್ಬ ವಿಲಕ್ಷಣ ಪ್ರವೃತ್ತಿಯ ವ್ಯಕ್ತಿ. ಆತನ ‘ಬೆಂಗಾಲ್ ಗಜೆಟ್’ ಆರಂಭದಲ್ಲಿ ಗಂಭೀರವಾಗಿಯೇ ಪ್ರಕಟವಾಗುತ್ತಿತ್ತು. ತನ್ನದು “ಎಲ್ಲ ಪಕ್ಷಗಳಿಗೂ ಮುಕ್ತವಾದ ಆದರೆ ಯಾರಿಂದಲೂ ಪ್ರಭಾವಕ್ಕೊಳಗಾಗದ ಪತ್ರಿಕೆ” ಎಂದು ಪತ್ರಿಕೆಯ ಮೇಲ್ಭಾಗದಲ್ಲೇ ಹಿಕಿ ಪ್ರಕಟಿಸುತ್ತಿದ್ದ. ಆದರೆ ಎಂಟ್ಹತ್ತು ತಿಂಗಳಲ್ಲಿ ‘ಇಂಡಿಯಾ ಗಜೆಟ್’ ಎಂಬ ಇನ್ನೊಂದು ಪತ್ರಿಕೆ ಆರಂಭವಾದಾಗ, ಹಿಕಿಗೆ ಆತಂಕವಾಯಿತು. ತನ್ನ ಓದುಗರು ಎಲ್ಲಿ ಕಡಿಮೆಯಾಗುತ್ತಾರೋ ಎಂಬ ಆತಂಕದಲ್ಲಿ ತನ್ನ ಪತ್ರಿಕೆಯ ಧ್ವನಿಯನ್ನೇ ಬದಲಾಯಿಸಿಕೊಂಡ. ಸುದ್ದಿಗಳಲ್ಲಿ, ಲೇಖನಗಳಲ್ಲಿ ಅಲ್ಲಿಯವರೆಗೆ ಇದ್ದ ಸಮತೋಲನ ಕಳೆದುಹೋಗಿ ವೈಯಕ್ತಿಕ ಪ್ರಹಾರಗಳನ್ನು ಆರಂಭಿಸಿದ.

ಪ್ರಖರ ಟೀಕಾಕಾರ:

ಸ್ವತಃ ಯುರೋಪಿಯನ್ನನಾಗಿದ್ದೂ ಹಿಕಿ ಈಸ್ಟ್ ಇಂಡಿಯಾ ಕಂಪೆನಿಯ ಪ್ರಖರ ಟೀಕಾಕಾರನಾಗಿದ್ದ. ಅಲ್ಲಿನ ಅಧಿಕಾರಿಗಳ ದಬ್ಬಾಳಿಕೆ ಹಾಗೂ ಭ್ರಷ್ಟಾಚಾರಗಳನ್ನು ತೀಕ್ಷ್ಣವಾಗಿ ಖಂಡಿಸಿ ಲೇಖನಗಳನ್ನು ಪ್ರಕಟಿಸುತ್ತಿದ್ದ. ‘ಬೆಂಗಾಲ್ ಗಜೆಟ್’ ಬ್ರಿಟಿಷ್ ಅಧಿಕಾರಿಗಳ ಪಾಲಿಗೆ ನುಂಗಲಾರದ ಬಿಸಿತುಪ್ಪವಾಗಿತ್ತು. ಆಗ ಭಾರತದ ಗವರ್ನರ್ ಜನರಲ್ ಆಗಿದ್ದ ವಾರನ್ ಹೇಸ್ಟಿಂಗ್ಸ್, ಸುಪ್ರೀಂಕೋರ್ಟಿನ ಮುಖ್ಯನಾಯಾಧೀಶರಾಗಿದ್ದ ಸರ್ ಎಲಿಜಾ ಇಂಪೆಯವರನ್ನೂ ಬಿಡದೆ ಕಾಡಿದ ಹಿಕಿ.

ಆದರೆ ಟೀಕೆಯ ಭರದಲ್ಲಿ ಹಿಕಿ ವೈಯಕ್ತಿಕ ದಾಳಿಯಲ್ಲಿ ತೊಡಗಿದ. ತನಗಾಗದಿದ್ದವರ ಖಾಸಗಿ ಬದುಕಿನ ಕುರಿತು ವ್ಯಂಗ್ಯವಾಡಿದ. ಹೇಸ್ಟಿಂಗ್ಸ್‍ನ ಪತ್ನಿಯ ಕುರಿತೂ ದೋಷಾರೋಪಣೆ ಮಾಡಿದ. ಇದರಿಂದಾಗಿ ಹಿಕಿ ಪದೇಪದೇ ಮಾನನಷ್ಟ ಮೊಕದ್ದಮೆಗಳನ್ನು ಎದುರಿಸಬೇಕಾಯಿತು. ಕೋರ್ಟು ಕಚೇರಿ ಅಲೆದಾಡಬೇಕಾಯಿತು. ಸಾವಿರಾರು ರುಪಾಯಿ ದಂಡ ಹಾಕಿಸಿಕೊಳ್ಳಬೇಕಾಯಿತು. ಬೆಂಗಾಲ್ ಗಜೆಟ್‍ನ ಅಂಚೆ ಸೌಲಭ್ಯ ರದ್ದಾಯಿತು. ಕೊನೆಗೊಂದು ದಿನ ಹಿಕಿಯ ಮುದ್ರಣಾಲಯವನ್ನೇ ಸರ್ಕಾರ ವಶಪಡಿಸಿಕೊಂಡು ಬೀಗ ಜಡಿಯಿತು. 1782ರ ಮಾರ್ಚ್ 23ರಂದು ಗಜೆಟ್‍ನ ಕೊನೆಯ ಸಂಚಿಕೆ ಪ್ರಕಟವಾಯಿತು.

ಮರೆತುಹೋದ ಮಹಾನುಭಾವ:

ಹಿಕಿಯ ಬಗ್ಗೆ ಇತಿಹಾಸದಲ್ಲಿ ಅಂತಹ ಒಳ್ಳೆಯ ಅಭಿಪ್ರಾಯವೇನೂ ಇಲ್ಲ. ಆದರೆ ಆತನಿಂದಲೇ ಭಾರತೀಯ ಪತ್ರಿಕಾಲೋಕ ಹುಟ್ಟಿಕೊಂಡಿತು ಎಂಬುದರಲ್ಲಿ ಎರಡು ಮಾತಿಲ್ಲ. ಆತ ಒಳ್ಳೆಯ ಉದ್ದೇಶದಿಂದಲೇ ಪತ್ರಿಕೆ ಆರಂಭಿಸಿದ, ಬ್ರಿಟಿಷರ ಭ್ರಷ್ಟಾಚಾರಗಳನ್ನು ಕಟುವಾಗಿ ಟೀಕಿಸಿದ. ಪತ್ರಿಕಾ ಸ್ವಾತಂತ್ರ್ಯವನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಕೊನೆಯವರೆಗೂ ಹೋರಾಡಿದ. ಆದರೆ ಒಂದು ಹಂತದಲ್ಲಿ ಆತ ಬೆಳೆಸಿಕೊಂಡ ಕೀಳು ಅಭಿರುಚಿ ಹಾಗೂ ಕಂಪೆನಿಯ ಪೂರ್ವಗ್ರಹದಿಂದ ಆತನಿಗೆ ಹೆಚ್ಚುಸಮಯ ಪತ್ರಿಕೆಯನ್ನು ನಡೆಸಲಾಗಲಿಲ್ಲ. ಆತನನ್ನು ‘ಮರೆತುಹೋದ ಮಹಾನುಭಾವ’ ‘ಭಾರತೀಯ ಪತ್ರಿಕೋದ್ಯಮದ ಪಿತಾಮಹ’ ಅಂತಲೂ ಇತಿಹಾಸಕಾರರು ದಾಖಲಿಸಿದ್ದುಂಟು.

ಒಟ್ಟಿನಲ್ಲಿ, ಬೆಂಗಾಲ್ ಗಜೆಟ್‍ನ ಹುಟ್ಟಿನ ನೆನಪಲ್ಲಿ ಜನವರಿ 29 ‘ಭಾರತೀಯ ಪತ್ರಿಕಾ ದಿನ’ ಎಂದು ಪ್ರಸಿದ್ಧಿಪಡೆದಿದೆ. ನಮ್ಮ ಪತ್ರಿಕಾಲೋಕದ ಸಿಂಹಾವಲೋಕನಕ್ಕೆ ಇದು ಸುದಿನ.

- ಸಿಬಂತಿ ಪದ್ಮನಾಭ ಕೆ. ವಿ.

ಮಂಗಳವಾರ, ಅಕ್ಟೋಬರ್ 10, 2023

ಲೇಖಕರಾಗಲು ಹತ್ತು ಸೂತ್ರಗಳು

ʻಉದಯವಾಣಿʼ UV Fusion 100ನೆಯ ಸಂಚಿಕೆಯಲ್ಲಿ ಪ್ರಕಟವಾದ ಲೇಖನ | 08 ಅಕ್ಟೋಬರ್‌ 2023

ಒಂದು ವಿಷಯದ ಕುರಿತು ಗಂಟೆಗಟ್ಟಲೆ, ದಿನಗಟ್ಟಲೆ ಅಧ್ಯಯನ ಮಾಡಿ, ಟಿಪ್ಪಣಿ ಮಾಡಿಕೊಂಡು, ಕೊನೆಗೊಮ್ಮೆ ಆ ಟಿಪ್ಪಣಿಗೆಳನ್ನೆಲ್ಲ ಮುಚ್ಚಿ ಬದಿಗಿಟ್ಟು ಕುಳಿತಲ್ಲಿಂದ ಏಳದೆ ಸರಸರನೆ ನಿಮ್ಮಷ್ಟಕ್ಕೆ ಒಂದು ಲೇಖನವನ್ನು ಬರೆಯಬಲ್ಲಿರಾ? ಅದು ನಿಮ್ಮ ಅತ್ಯುತ್ತಮ ಬರೆಹ ಎನಿಸೀತು.

ಅನೇಕ ಮಂದಿ ಒಳ್ಳೆಯ ಲೇಖಕರಾಗಬೇಕೆಂದು, ನಾಲ್ಕು ಮಂದಿಯಿಂದ ಸೈ ಅನಿಸಿಕೊಳ್ಳಬೇಕೆಂದು ಕನಸು ಕಾಣುತ್ತಾರೆ. ಅದು ನನಸಾಗದೆ ಭ್ರಮನಿರಸನಗೊಳ್ಳುತ್ತಾರೆ. ಇದಕ್ಕೆ ಮುಖ್ಯವಾಗಿ ಕಾರಣಗಳು ಎರಡು: ಬರೆವಣಿಗೆಗೆ ಪೂರಕ ಅಧ್ಯಯನವಿಲ್ಲದಿರುವುದು ಮತ್ತು ನಿರಂತರವಾಗಿ ಬರೆಯದಿರುವುದು.

ಬರೆವಣಿಗೆಯೆಂಬುದು ಕನಸು ಕಂಡಷ್ಟು ಸುಲಭವಲ್ಲ. ಅದೊಂದು ತಪಸ್ಸಿನ ಹಾಗೆ. ತಪಸ್ಸಿಗೆ ಕುಳಿತವರಿಗೆ ಎಂದೂ ಕರಗದ ಛಲ, ಕಠಿಣ ಪರಿಶ್ರಮ, ಏಕಾಗ್ರತೆ ಇರಬೇಕಾಗುತ್ತದೆ. ಅದು ಎವರೆಸ್ಟ್‌ ಶಿಖರವನ್ನು ಏರುವ ಸಾಹಸ. ಅರ್ಧದಲ್ಲಿ ಪ್ರಯತ್ನ ಕೈಬಿಟ್ಟರೆ ಎವರೆಸ್ಟ್‌ ಹತ್ತಿದಂತೆ ಆಗುವುದಿಲ್ಲ.

ಹಾಗಾದರೆ ಒಳ್ಳೆಯ ಬರೆಹಗಾರರೆನಿಸಿಕೊಳ್ಳಲು ಏನು ಮಾಡಬೇಕು? ಅದಕ್ಕಾಗಿ ಹತ್ತು ಸೂತ್ರಗಳು ಇಲ್ಲಿವೆ ನೋಡಿ:

  1. ಬರೆಯುವುದಕ್ಕಿಂತಲೂ ಓದು ಹೆಚ್ಚು ಮುಖ್ಯ. ಹತ್ತು ಓದಿದ ಬಳಿಕ ಒಂದು ಬರೆ ಎಂಬುದು ಹಿರಿಯರ ಸಲಹೆ. ಕಥೆ, ಕಾದಂಬರಿ, ಕಾವ್ಯ, ಲಲಿತಪ್ರಬಂಧ, ಜೀವನಚರಿತ್ರೆ ಇತ್ಯಾದಿಗಳನ್ನು ನಿರಂತರವಾಗಿ ಓದುತ್ತಿರಬೇಕು. ತಿಂಗಳಿಗೊಂದಾದರೂ ಹೊಸ ಪುಸ್ತಕ ಓದಬೇಕು.
  2. ಪತ್ರಿಕೆ ಹಾಗೂ ನಿಯತಕಾಲಿಕಗಳು ನಮ್ಮ ದೈನಂದಿನ ಓದಿನ ಭಾಗವಾಗಿರಬೇಕು. ಹೀಗೆ ಓದುವಾಗಲೆಲ್ಲ ಒಂದು ಪುಟ್ಟ ಟಿಪ್ಪಣಿ ಪುಸ್ತಕ ಜತೆಗಿರಬೇಕು. ಮುಖ್ಯವೆನಿಸುವ ಘಟನೆಗಳು, ಅಂಕಿಅಂಶಗಳು, ಉಕ್ತಿಗಳನ್ನು ಆಗಿಂದಾಗಲೇ ಬರೆದಿಟ್ಟುಕೊಳ್ಳಬೇಕು.
  3. ಭಾಷೆಯೇ ಬರೆಹಗಾರನ ಬಂಡವಾಳ. ಭಾಷೆಯನ್ನು ಚೆನ್ನಾಗಿ ದುಡಿಸಿಕೊಳ್ಳಬಲ್ಲವರು ಮಾತ್ರ ಉತ್ತಮ ಲೇಖಕರಾಗಬಲ್ಲರು. ಶ್ರೇಷ್ಠ ಗದ್ಯಕೃತಿಗಳ ನಿರಂತರ ಓದಿನಿಂದ ಮಾತ್ರ ಉತ್ತಮ ಶಬ್ದಭಂಡಾರ, ಸುಲಲಿತ ಭಾಷೆ ಬೆಳೆಯಬಹುದು.
  4. ಬರೆವಣಿಗೆಯಲ್ಲಿ ನಿರಂತರತೆ ಇದ್ದಾಗ ಮಾತ್ರ ಅದರಲ್ಲೊಂದು ಲಯಸಿದ್ಧಿ ಸಾಧ್ಯ. ʻಹಾಡಿ ಹಾಡಿ ರಾಗʼ ಎಂಬಂತೆ ಬರೆದು ಬರೆದೇ ಬರೆವಣಿಗೆಯ ನಾಡಿಮಿಡಿತ ಹಿಡಿಯಲಾದೀತು. ಪದದಿಂದ ಪದಕ್ಕೆ, ವಾಕ್ಯದಿಂದ ವಾಕ್ಯಕ್ಕೆ ಅರ್ಥಪೂರ್ಣ ಜೋಡಣೆ, ಸುಸಂಬದ್ಧತೆ, ಲಯಬದ್ಧತೆ ಇರಬೇಕು.
  5. ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳುವುದಕ್ಕೆ ವ್ಯಾಯಾಮ ಹೇಗೆ ನಿರಂತರವಾಗಿರಬೇಕೋ, ಬರೆವಣಿಗೆಯ ಸೌಂದರ್ಯ ಉಳಿಸಿಕೊಳ್ಳುವುದಕ್ಕೂ ಅದೇ ಬಗೆಯ ಪ್ರಯತ್ನ ಬೇಕು. ನಡುವೆ ನಿಲ್ಲಿಸಿದರೆ ಬೊಜ್ಜು ಬೇಡವೆಂದರೂ ಬಂದು ತುಂಬಿಕೊಂಡೀತು.
  6. ದಿನಚರಿ ಬರೆಯುವುದನ್ನು ರೂಢಿಸಿಕೊಳ್ಳುವುದು ಬರೆವಣಿಗೆಯಲ್ಲಿ ನಿರಂತರತೆ ಸಾಧಿಸುವುದಕ್ಕೆ ಸುಲಭ ಮಾರ್ಗ. ಆಯಾ ದಿನದ ಪ್ರಮುಖ ಅನುಭವಗಳನ್ನು ಬರೆದಿಡುತ್ತಾ ಹೋಗಿ. ಪ್ರತಿದಿನ ಮಲಗುವುದಕ್ಕೆ ಮುಂಚೆ ಹತ್ತು ನಿಮಿಷ ಇದಕ್ಕಾಗಿ ಮೀಸಲಿಡಿ. ನಿಮ್ಮ ಅಭಿವ್ಯಕ್ತಿ ವಿಧಾನದಲ್ಲಿ ಆಗುವ ಬದಲಾವಣೆಯನ್ನು ನೀವೇ ಗಮನಿಸುವಿರಿ.
  7. ಆರಂಭದಲ್ಲೇ ದೊಡ್ಡ ದೊಡ್ಡ ಲೇಖನಗಳನ್ನು ಬರೆಯುವುದಕ್ಕೆ ತೊಡಗಬೇಡಿ. ಪುಟ್ಟಪುಟ್ಟ ಬರೆಹಗಳಿಂದ ಆರಂಭಿಸಿ. ಉದಾಹರಣೆಗೆ, ಪತ್ರಿಕೆಗಳಲ್ಲಿನ ʼಸಂಪಾದಕರಿಗೆ ಪತ್ರʼ ಅಂಕಣವನ್ನು ಯತೇಚ್ಛ ಬಳಸಿಕೊಳ್ಳಿ. ಸಮಕಾಲೀನ ವಿದ್ಯಮಾನಗಳು, ಸಮಸ್ಯೆಗಳ ಕುರಿತು ಬರೆಯಿರಿ; ಪ್ರಕಟಿತ ಲೇಖನ, ಅಂಕಣ, ಸಂಪಾದಕೀಯ, ನುಡಿಚಿತ್ರಗಳಿಗೆ ಪ್ರತಿಕ್ರಿಯೆ ಬರೆಯಿರಿ. ಇದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ.
  8. ಏನೇ ಬರೆದರೂ ಅದನ್ನು ನೀವೇ ಮತ್ತೆಮತ್ತೆ ಓದಿಕೊಂಡು ಪದಗಳು, ವಾಕ್ಯಗಳು ಸುಲಲಿತವಾಗಿ ಸಾಗಿವೆಯೇ ಎಂದು ಪರಿಶೀಲಿಸಿಕೊಳ್ಳಿ. ಕಾಗುಣಿತ ತಪ್ಪುಗಳಿದ್ದರೆ ತಿದ್ದಿಕೊಳ್ಳಿ. ಸ್ನೇಹಿತರಿಗೋ ಅಧ್ಯಾಪಕರಿಗೋ ತೋರಿಸಿ ಅವರ ಅಭಿಪ್ರಾಯ ಪಡೆಯಿರಿ.
  9. ಯಾವುದೇ ವಿಷಯ ಬರೆಯುವ ಮುಂಚೆ ಅದನ್ನು ಎಲ್ಲ ಆಯಾಮಗಳಿಂದಲೂ ಯೋಚಿಸಿ. ದೊರೆಯುವ ಸಂಪನ್ಮೂಲಗಳನ್ನೆಲ್ಲ ಅಧ್ಯಯನ ಮಾಡಿ. ಆದರೆ ಅವುಗಳನ್ನೇ ಲೇಖನಕ್ಕೆ ಭಟ್ಟಿಯಿಳಿಸಲು ಹೋಗಬೇಡಿ. ಸ್ವಂತಿಕೆಯೇ ನಿಮ್ಮ ಆದ್ಯತೆಯಾಗಿರಲಿ.
  10. ಬರೆದದ್ದೆಲ್ಲ ಪ್ರಕಟವಾಗಬೇಕು ಎಂಬ ಆಸೆ ಬೇಡ.  ನಾವು ಬರೆದದ್ದು ಇನ್ನೊಬ್ಬರಿಗೆ ಇಷ್ಟವಾಗಲೇಬೇಕು ಎಂದಿಲ್ಲ. ಅದು ಸಂದರ್ಭಕ್ಕೆ ಸರಿಹೊಂದದೆಯೂ ಇರಬಹುದು. ಎರಡು ಲೇಖನ ಪ್ರಕಟವಾಗದಿದ್ದ ಕೂಡಲೇ ಶಸ್ತ್ರಸನ್ಯಾಸ ಮಾಡಬೇಡಿ. ʻತಾಳ್ಮೆಗಿಂತ ಅನ್ಯ ತಪವು ಇಲ್ಲʼ.

 - ಸಿಬಂತಿ ಪದ್ಮನಾಭ ಕೆ. ವಿ.

ಮಂಗಳವಾರ, ಸೆಪ್ಟೆಂಬರ್ 13, 2022

ಯಕ್ಷಗಾನಕ್ಕೆ ಕಾಲಮಿತಿ: ಪರಿವರ್ತನೆ ಎಂಬ ಕಾಲಧರ್ಮ

11 ಸೆಪ್ಟೆಂಬರ್ 2022ರ 'ಉದಯವಾಣಿ' ಸಾಪ್ತಾಹಿಕ ಪುರವಣಿಯಲ್ಲಿ ಪ್ರಕಟವಾದ ಲೇಖನ.

ಯಕ್ಷಗಾನ ನಿರಂತರ ಪರಿಷ್ಕರಣೆಗೆ ಒಳಗಾಗುತ್ತಾ ಬಂದಿರುವ ಕಲೆ. ಅದರ ವಸ್ತು, ವಿನ್ಯಾಸ, ರಂಗಭಾಷೆ, ವೇಷಭೂಷಣ, ಪ್ರಸ್ತುತಿ- ಎಲ್ಲ ಆಯಾಮಗಳಲ್ಲೂ ಸಾಕಷ್ಟು ಬದಲಾವಣೆಗಳು ಆಗಿವೆ, ಆಗುತ್ತಲೇ ಇವೆ. ಇವುಗಳಲ್ಲಿ ಕೆಲವನ್ನು ಪ್ರೇಕ್ಷಕರು, ಕಲಾವಿದರು, ವಿದ್ವಾಂಸರು ಒಪ್ಪಿಕೊಂಡರು, ಇನ್ನು ಕೆಲವನ್ನು ಟೀಕಿಸಿದರು. ಕಾಳುಗಳು ಉಳಿದವು; ಜಳ್ಳುಗಳು ತೂರಿಹೋದವು. ಇದು ಕಾಲಧರ್ಮ.

ಯಾವುದೇ ಕಲೆಯನ್ನು ಒಂದು ಸಜೀವ ಅಸ್ತಿತ್ವವೆಂದು ಪರಿಗಣಿಸಬಹುದಾದರೆ, ಅದರಲ್ಲಿ ಬದಲಾವಣೆ ಸಹಜ. ಕಲೆ ಬದುಕಿನ ಭಾಗ. ಜೀವನ ಬೇರೆ ಅಲ್ಲ, ಕಲೆ ಬೇರೆ ಅಲ್ಲ. ಬದುಕಿನ ಸೃಜನಶೀಲ ಭಾಗವೇ ಕಲೆ. ಬದುಕು ಶತಮಾನಗಳ ಹಿಂದೆ ಹೇಗಿತ್ತೋ ಈಗಲೂ ಹಾಗೆಯೇ ಇಲ್ಲ. ಅಂದಮೇಲೆ ಕಲೆಯೂ ಯಥಾಸ್ಥಿತಿಯಲ್ಲಿರುವುದು ಸಾಧ್ಯವಿಲ್ಲ. ಅದೂ ಕಾಲಾನುಕ್ರಮದಲ್ಲಿ ಬಯಸುವ ಬದಲಾವಣೆಗಳನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಆದರೆ ಈ ಪರಿಷ್ಕಾರಗಳು ಕಲೆಯ ಉನ್ನತಿಗೆ ಪೂರಕವಾಗಿರಬೇಕು ಎಂಬುದಷ್ಟೇ ಕಲೋಪಾಸಕರ ಆಗ್ರಹ.

ಯಕ್ಷಗಾನ ಕ್ಷೇತ್ರದಲ್ಲಿ ಯಾವುದೇ ಹೊಸ ವಿಚಾರ ಪ್ರಸ್ತಾಪವಾದಾಗಲೂ ಚರ್ಚೆ ಸಾಮಾನ್ಯ. ಅದಕ್ಕೆ ಕಾರಣ ಯಕ್ಷಗಾನಕ್ಕಿರುವ ದೊಡ್ಡಸಂಖ್ಯೆಯ ಪ್ರೇಕ್ಷಕರು ಮತ್ತು ಯಕ್ಷಗಾನದ ಕುರಿತು ಅವರಲ್ಲಿರುವ ವಿಶೇಷ ಅಭಿಮಾನ. ಮೂಲತಃ ಆರಾಧನಾ ಕಲೆಯಾಗಿದ್ದ ಯಕ್ಷಗಾನ ಕಾಲಕ್ರಮೇಣ ಮುಕ್ತತೆಗೆ ತೆರೆದುಕೊಂಡರೂ ಬಹುಪಾಲು ಪ್ರೇಕ್ಷಕರ ಮನಸ್ಸಿನಲ್ಲಿ ಅದರ ಕುರಿತೊಂದು ಪೂಜ್ಯ ಭಾವವೇ ಇದೆ. ಅವರು ಅದನ್ನೊಂದು ಕೇವಲ ಪ್ರದರ್ಶನ ಕಲೆಯಾಗಿ ಒಪ್ಪಿಕೊಳ್ಳಲಾರರು. ಯಕ್ಷಗಾನಕ್ಕಿರುವ ಜಾನಪದ ಸ್ವರೂಪವೂ ಇದಕ್ಕಿರುವ ಪ್ರಮುಖ ಕಾರಣ.

ಕಟೀಲು ಮೇಳಗಳು ಮುಂದಿನ ತಿರುಗಾಟದಿಂದ ಕಾಲಮಿತಿ ಪ್ರದರ್ಶನಗಳನ್ನು ನೀಡಲಿವೆ ಎಂದು ಇತ್ತೀಚೆಗೆ ಘೋಷಿಸಿದಲ್ಲಿಂದ ಯಕ್ಷಗಾನ ವಲಯದಲ್ಲಿ ಈ ಕುರಿತ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕಾಲಮಿತಿಯ ವಿಚಾರ ಯಕ್ಷಗಾನಕ್ಕೆ ಹೊಸದೇನಲ್ಲ. ಕಾಲಮಿತಿಯ ಪರಿಕಲ್ಪನೆಯನ್ನು 1955ರಷ್ಟು ಹಿಂದೆಯೇ 'ಕಾಂಚನ ಮೇಳ' ಜಾರಿಗೆ ತಂದಿತೆಂದು ನೆನಪಿಸಿಕೊಳ್ಳುತ್ತಾರೆ ಯಕ್ಷಗಾನ ಕಲಾವಿದ-ಸಂಘಟಕ ಉಜಿರೆ ಅಶೋಕ ಭಟ್ಟರು. 1985ರಲ್ಲಿ ಕೆರೆಮನೆ ಮೇಳವೂ ಕಾಲಮಿತಿಯನ್ನು ಅಳವಡಿಸಿಕೊಂಡಿತು. ಹೊಸ ಸಹಸ್ರಮಾನದಲ್ಲಿ ಹೊಸನಗರ ಮೇಳ ಕಾಲಮಿತಿಯ ಪ್ರದರ್ಶನಗಳನ್ನು ಆರಂಭಿಸಿತು. ಹೊಸಕಾಲದ ವೃತ್ತಿಪರ ಮೇಳಗಳ ಮಟ್ಟಿಗೆ ಇದೊಂದು ಕ್ರಾಂತಿಕಾರಕ ಹೆಜ್ಜೆಯೇ ಆಗಿತ್ತು.  ಇದರಿಂದ ಪ್ರೇರಿತವಾದ ಧರ್ಮಸ್ಥಳ ಮೇಳವು 2015ರಲ್ಲಿ ಕಾಲಮಿತಿ ಪ್ರದರ್ಶನಗಳನ್ನು ನೀಡಲಾರಂಭಿಸಿತು. ಮುಂದೆ ಹನುಮಗಿರಿ, ಪಾವಂಜೆ ಮೊದಲಾದ ಮೇಳಗಳೂ ಕಾಲಮಿತಿಯ ಪ್ರದರ್ಶನಗಳಿಗೆ ಒಗ್ಗಿಕೊಂಡವು. ಆದರೆ ಕಟೀಲು ಮೇಳಗಳು ಕಾಲಮಿತಿಯ ಪ್ರಸ್ತಾಪ ಮಾಡಿದಾಗ ಅದರ ಬಗ್ಗೆ ಕಲಾವಿದರು ಹಾಗೂ ಪ್ರೇಕ್ಷಕರ ವಲಯದಿಂದ ಮತ್ತೆ ಪರ-ವಿರೋಧದ ಅಭಿಪ್ರಾಯಗಳು ಬರಲಾರಂಭಿಸಿವೆ.

ಯಾಕೆ ವಿರೋಧ?

ಕಟೀಲು ಮೇಳ ಯಕ್ಷಗಾನದ ಪೂರ್ವರಂಗವನ್ನೂ ಉಳಿಸಿಕೊಂಡು ಇಡೀ ರಾತ್ರಿ ಪ್ರದರ್ಶನ ನೀಡುತ್ತಿರುವ ತೆಂಕುತಿಟ್ಟಿನ ಏಕೈಕ ಮೇಳ (ಒಟ್ಟು ಆರು ಮೇಳಗಳಿವೆ). ಮುಸ್ಸಂಜೆಯ ಹೊತ್ತಲ್ಲಿ ಆರಂಭವಾಗುವ ಯಕ್ಷಗಾನದ ಪ್ರಕ್ರಿಯೆ, ರಾತ್ರಿ ಎಂಟರ ಸುಮಾರಿಗೆ ಸಭಾಲಕ್ಷಣದೊಂದಿಗೆ ಮುಂದುವರಿದು, ಹನ್ನೊಂದರ ಆಸುಪಾಸಲ್ಲಿ ಪ್ರಸಂಗವನ್ನು ಆರಂಭಿಸಿ, ಮುಂಜಾನೆ ಐದೂವರೆ-ಆರರ ಸುಮಾರಿಗೆ ಮಂಗಳವಾಗುವುದು ವಾಡಿಕೆ. ಇಡೀ ರಾತ್ರಿ ನಡೆಯುವ ಈ ಒಟ್ಟಾರೆ ಪ್ರಕ್ರಿಯೆ ಪ್ರೇಕ್ಷಕರ ಮನಸ್ಸಿನಲ್ಲೊಂದು ರಮ್ಯಾದ್ಭುತ ವರ್ಣಮಯ ಲೋಕವನ್ನು ಸೃಷ್ಟಿಸುವ ಪರಿ ಅನನ್ಯ.  

ಕಟೀಲು ಮೇಳಗಳೂ ಈ ಕಾಲಮಿತಿಯ ಪ್ರದರ್ಶನಗಳಿಗೆ ಒಳಪಟ್ಟರೆ ತೆಂಕುತಿಟ್ಟಿನಲ್ಲಿ ಉಳಿದಿರುವ ಪೂರ್ಣಾವಧಿಯ ಏಕೈಕ ಮಾದರಿಯೂ ಇಲ್ಲವಾಗುತ್ತದಲ್ಲ ಎಂಬುದು ಪ್ರಸ್ತುತ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವವರ ನೋವು. ಇದು ನಮ್ಮ ಸಾಂಸ್ಕೃತಿಕ ಪರಂಪರೆಗೆ ಬೀಳುತ್ತಿರುವ ಏಟು ಎಂಬ ವ್ಯಾಖ್ಯಾನವೂ ಕೇಳಿಬಂದಿದೆ. ಅವಧಿಯನ್ನು ಮೊಟಕುಗೊಳಿಸುವುದರಿಂದ ಅನೇಕ ಕಲಾವಿದರಿಗೆ ಅವಕಾಶ ತಪ್ಪಿಹೋಗುತ್ತದೆ, ಪೂರ್ವರಂಗ ಇಲ್ಲವಾಗುವುದರಿಂದ ಅಭ್ಯಾಸಿಗಳಿಗೆ ತರಬೇತಿ ಸಿಗುವುದಿಲ್ಲ, ಮಧ್ಯರಾತ್ರಿ ಆಟ ಮುಕ್ತಾಯವಾಗುವುದರಿಂದ ಪ್ರೇಕ್ಷಕರು ಮನೆಗಳಿಗೆ ಹಿಂತಿರುವುದು ಕಷ್ಟ, ಪ್ರಸಂಗಗಳನ್ನು ಸಂಕ್ಷೇಪಗೊಳಿಸುವುದರಿಂದ ಗುಣಮಟ್ಟ ಕಡಿಮೆಯಾಗುತ್ತದೆ ಇತ್ಯಾದಿ ಕಾರಣಗಳೂ ಪ್ರಸ್ತಾಪವಾಗಿವೆ.

ಬದಲಾವಣೆ ಅನಿವಾರ್ಯ:

ಆದರೆ ಕಾಲವೆಂಬುದು ಎಲ್ಲದಕ್ಕಿಂತ ಮೇಲಿನದ್ದು. ಅದು ಇಚ್ಛೆಯುಳ್ಳವರನ್ನು ಕರೆದುಕೊಂಡು ಹೋಗುತ್ತದೆ, ಇಚ್ಛೆಯಿಲ್ಲದವರನ್ನು ಎಳೆದುಕೊಂಡು ಹೋಗುತ್ತದೆ. ಮುಂದಕ್ಕೆ ಹೋಗುವುದಂತೂ ಹೋಗಲೇಬೇಕು. "ಕಾಲದ ಅನಿವಾರ್ಯಗಳನ್ನು ಅರ್ಥಮಾಡಿಕೊಳ್ಳದ ಕಲೆ ಕಾಲಗರ್ಭವನ್ನು ಸೇರಬೇಕಾಗುತ್ತದೆ" ಎಂಬ ಕಲಾವಿದ-ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಯವರ ಮಾತು ಚಿಂತನಾರ್ಹ.

ಇದೇ ಅರ್ಥವನ್ನು ಹಿರಿಯ ವಿದ್ವಾಂಸ, ಯಕ್ಷಗಾನ ಕವಿ ಪ್ರೊ. ಅಮೃತ ಸೋಮೇಶ್ವರರೂ ಧ್ವನಿಸಿದ್ದುಂಟು: “ಚಲನಶೀಲತೆಯಿರುವ ಯಾವುದೇ ಜೀವಂತ ಕಲೆಯು ವರ್ತಮಾನ, ಭವಿಷ್ಯತ್ಕಾಲಗಳ ಪರಿಕಲ್ಪನೆಯಿಲ್ಲದೆ ಕೇವಲ ಭೂತಕಾಲವಿಹಾರಿಯಾಗುವಂತಿಲ್ಲ. ಒಂದು ವೇಳೆ ಅಂಥ ಹಳೇ ಹವ್ಯಾಸವನ್ನೇ ಮುಂದುವರಿಸಿದರೆ ಅಂಥ ಕಲೆ ಪ್ರತಿಗಾಮಿಯೂ ಪ್ರಗತಿ ವಿಮುಖವೂ ಎನಿಸುತ್ತದೆ. ವರ್ತಮಾನದ ಅರ್ಥಪೂರ್ಣ ಸಂಬಂಧವನ್ನು ಕಳೆದುಕೊಳ್ಳುತ್ತದೆ.”

ನಾವೀಗ ಅಂತಹದೊಂದು ಪರಿವರ್ತನೆಯ ಸಂಕ್ರಮಣಕಾಲದಲ್ಲಿದ್ದೇವೆ. ಸಮಾಜ ಆಧುನಿಕತೆಗೆ ತೆರೆದುಕೊಂಡಿದೆ. ಆಧುನಿಕ ಸಂವಹನ ಮಾಧ್ಯಮಗಳು ಜನರನ್ನು ಇನ್ನಿಲ್ಲದಂತೆ ಆವರಿಸಿಕೊಂಡಿವೆ. ಇಂತಹ ಸನ್ನಿವೇಶದಲ್ಲೂ ಜನರು ಯಕ್ಷಗಾನದಂತಹ ಸಾಂಪ್ರದಾಯಿಕ ಕಲೆಗಳಲ್ಲಿ ಆಸಕ್ತಿ ಉಳಿಸಿಕೊಂಡಿದ್ದಾರೆ ಎಂಬುದೇ ವಿಶೇಷ. ಬಹುಶಃ ಅದು ಆ ಕಲೆಗಳ ಶಕ್ತಿ ಕೂಡಾ.

“ಈಗ ಎಲ್ಲರೂ ಒಂದಲ್ಲ ಒಂದು ಉದ್ಯೋಗ ಹಿಡಿದಿರುವವರೇ. ಯಾರೂ ಇಡೀ ರಾತ್ರಿ ನಿದ್ದೆಗೆಟ್ಟು ಆಟ ನೋಡುವ ಪರಿಸ್ಥಿತಿಯಲ್ಲಿ ಇಲ್ಲ. ಅವರು ನೋಡಬೇಕು ಎಂಬುದು ಅಪೇಕ್ಷಣೀಯವೂ ಅಲ್ಲ. ದಿನಬೆಳಗಾದರೆ ಎಲ್ಲರಿಗೂ ಅವರವರದ್ದೇ ಕೆಲಸಗಳಿರುತ್ತವೆ. ಇಂತಹ ಸಂದರ್ಭದಲ್ಲಿ ಕಾಲಮಿತಿ ಪ್ರದರ್ಶನಗಳು ಖಂಡಿತ ಸ್ವಾಗತಾರ್ಹ” ಎನ್ನುತ್ತಾರೆ ಹಿರಿಯ ಕಲಾವಿದ, ಯಕ್ಷಗಾನ ಕವಿ ಡಿ. ಎಸ್. ಶ್ರೀಧರ.

“ಕಟೀಲು ಮೇಳದ್ದೇ ಜನಪ್ರಿಯ ಪ್ರಸಂಗ ‘ದೇವಿಮಹಾತ್ಮೆ’ಯನ್ನು ಮಧ್ಯರಾತ್ರಿ ಬಳಿಕ ನೋಡುವವರ ಸಂಖ್ಯೆ ಬೆರಳೆಣಿಕೆಯಷ್ಟು. ಆಟದ ವೀಳ್ಯ ಕೊಟ್ಟವರೇ ಬೆಳಗಿನವರೆಗೆ ಕೂರುವುದು ಕಡಿಮೆ. ರಕ್ತಬೀಜನ ಪಾತ್ರವನ್ನು ಸಾಮಾನ್ಯವಾಗಿ ಅನುಭವೀ ಹಿರಿಯ ಕಲಾವಿದರು ನಿರ್ವಹಿಸುತ್ತಾರೆ. ಆ ಪಾತ್ರದ ಪ್ರವೇಶವಾಗುವುದೇ ಬೆಳಗ್ಗೆ ನಾಲ್ಕು ಗಂಟೆಗೆ. ಆ ಹೊತ್ತಿಗೆ ರಂಗದ ಎದುರು ನಾಲ್ಕೈದು ಮಂದಿ ತೂಕಡಿಸುತ್ತಾ ಕುಳಿತಿದ್ದರೆ ಆ ಕಲಾವಿದರ ಶ್ರಮಕ್ಕೆ ಏನು ಬೆಲೆ?” ಎಂದು ಪ್ರಶ್ನಿಸುತ್ತಾರೆ ಯಕ್ಷಗಾನ ಸಂಘಟಕ ಡಾ. ಚಂದ್ರಶೇಖರ ದಾಮ್ಲೆ.

ಯಕ್ಷಗಾನದ ಅವಧಿ ಮೊಟಕುಗೊಳಿಸುವ ವಿದ್ಯಮಾನ ಇತ್ತೀಚಿನದ್ದೇನೂ ಅಲ್ಲವೆನ್ನುತ್ತಾರೆ ಕಲಾವಿದ-ಲೇಖಕ ಗಣರಾಜ ಕುಂಬ್ಳೆ. “ದೇವಿಮಹಾತ್ಮೆ, ಸಂಪೂರ್ಣ ರಾಮಾಯಣ ಇತ್ಯಾದಿ ಪ್ರಸಂಗಗಳನ್ನು ಮೂರು ದಿನ, ಐದು ದಿನ- ಹೀಗೆ ಪ್ರದರ್ಶಿಸುವುದು ಹಿಂದೆ ಚಾಲ್ತಿಯಲ್ಲಿತ್ತು. ಕಾಲಕ್ರಮೇಣ ಅವೆಲ್ಲ ಮರೆಯಾಗುತ್ತಾ ಒಂದು ರಾತ್ರಿಯ ಅವಧಿಗೆ ಬಂದು ನಿಂತಿತು. ಈಗಲೂ ಇಡೀ ರಾತ್ರಿ ಆಡುವುದಿದ್ದರೂ ಹೆಚ್ಚೆಂದರೆ ಆರು ಗಂಟೆ ಸಿಗಬಹುದು ಅಷ್ಟೆ. ಅದನ್ನು ನಾಲ್ಕೋ ಐದೋ ಗಂಟೆಗೆ ಸಂಕ್ಷೇಪಗೊಳಿಸುವುದು ಕಷ್ಟವೇನೂ ಅಲ್ಲ” ಎನ್ನುತ್ತಾರೆ ಅವರು.

ಇದರೊಂದಿಗೆ ಇನ್ನೊಂದು ಎಚ್ಚರಿಕೆಯ ಮಾತನ್ನೂ ಕುಂಬ್ಳೆಯವರು ಸೇರಿಸುತ್ತಾರೆ: "ಕಲೆಯಲ್ಲಿ ಆಗುವ ಭೌತಿಕ ಬದಲಾವಣೆಗಳು ಕಲೆಯ ಆಂತರಿಕ ಗುಣಕ್ಕೆ ತೊಂದರೆ ಉಂಟುಮಾಡಬಾರದು. ಇದು ಪ್ರಬುದ್ಧ ಪ್ರೇಕ್ಷಕರು ಬಯಸುವ ವಿಷಯ. ಪ್ರದರ್ಶನದ ವೇಗ ಪ್ರಸಂಗದ ಆಶಯಕ್ಕೆ ವಿರುದ್ಧವಾಗಿ ಹೋಗುವುದು, ಪ್ರಾಮುಖ್ಯತೆ ಸಿಗಬೇಕಾದ ಭಾಗವನ್ನು ಬಿಟ್ಟು ಇನ್ಯಾವುದೋ ಭಾಗಕ್ಕೆ ಮಹತ್ವ ನೀಡುವುದು- ಇಂತಹ ಅಪಸವ್ಯಗಳು ಆಗದಂತೆ ಕಲಾವಿದರು ಎಚ್ಚರಿಕೆ ವಹಿಸಬೇಕು.  ಹೀಗೆ ಮಾಡಿದರೆ ಕಾಲಮಿತಿಯ ಪ್ರದರ್ಶನಗಳೂ ಹಿಂದಿನ ರಸಾನುಭವವನ್ನೇ ಪ್ರೇಕ್ಷಕರಿಗೆ ನೀಡಬಲ್ಲವು."

ವಾಸ್ತವಕ್ಕೆ ಬನ್ನಿ:

“ಇಡೀ ರಾತ್ರಿ ಯಕ್ಷಗಾನ ಬೇಕು ಎಂಬ ಬೇಡಿಕೆಯನ್ನು ಒಪ್ಪೋಣ. ಆದರೆ ಅದಕ್ಕೆ ಪ್ರೇಕ್ಷಕರು ಎಲ್ಲಿದ್ದಾರೆ? ಯಕ್ಷಗಾನವನ್ನೇ ಸಂಪೂರ್ಣ ನಂಬಿರುವ ಕಲಾವಿದರು ಎಲ್ಲಿದ್ದಾರೆ? ನಾವು ವಾಸ್ತವ ಅರ್ಥಮಾಡಿಕೊಳ್ಳಬೇಕು” ಎನ್ನುತ್ತಾರೆ ಕಲಾವಿದ, ಸಂಘಟಕ ಉಜಿರೆ ಅಶೋಕ ಭಟ್. “ಯಕ್ಷಗಾನದಿಂದಲೇ ಬದುಕು ಸಾಗಬೇಕು ಎನ್ನುವ ಮಂದಿ ಈಗ ಇಲ್ಲ. ಮೇಳಗಳು ಕೊಡುವ ಹದಿನೈದಿಪ್ಪತ್ತು ಸಾವಿರ ಸಂಬಳ ತಿಂಗಳ ಖರ್ಚಿಗೆ ಸಾಕಾಗುವುದಿಲ್ಲ. ಎಲ್ಲರಿಗೂ ಉಪವೃತ್ತಿ ಅನಿವಾರ್ಯವಾಗಿದೆ. ಮೇಳಗಳಿಗೆ ಕೆಲಸದಾಳುಗಳು ಸಿಗುವುದಿಲ್ಲ. ಇನ್ನೂ ಏಳೆಂಟು ವರ್ಷ ಕಳೆದರೆ ಒಂದು ಮೇಳಕ್ಕೆ ಬದ್ಧವಾಗಿರುವ ಖಾಯಂ ಕಲಾವಿದರ ತಂಡ ಸಿಗುವುದು ಕಷ್ಟ. ಆಗ ಸ್ಥಳೀಯ ಮಟ್ಟದಲ್ಲಿ ಲಭ್ಯವಿರುವ ಕಲಾವಿದರನ್ನೇ ಬಳಸಿಕೊಂಡು ಯಕ್ಷಗಾನ ಪ್ರದರ್ಶನ ಮಾಡಬೇಕಾಗುತ್ತದೆ. ಹೀಗಾಗಿ ಕಾಲಮಿತಿ ಯಕ್ಷಗಾನದ ಚಿಂತನೆಯಲ್ಲಿ ಆಕ್ಷೇಪಾರ್ಹವೇನೂ ಇಲ್ಲ” ಎನ್ನುತ್ತಾರವರು.

ಎಡಿಟಿಂಗ್ ಸಾಧ್ಯ:

ಯಕ್ಷಗಾನದ ಮೂಲಸೊಗಡನ್ನು ಕಳೆಯದೆ, ಪ್ರಸಂಗವನ್ನು ವಿರೂಪಗೊಳಿಸದೆ ಎಡಿಟಿಂಗ್ ಮಾಡುವುದು ಸಾಧ್ಯ ಎಂಬುದು ಈ ಎಲ್ಲ ಅನುಭವಿಗಳ ಅಭಿಪ್ರಾಯ. “ಪರಿಷ್ಕರಣೆ ಎಂದರೆ ಪ್ರಸಂಗವನ್ನು ಮನಬಂದಂತೆ ಕತ್ತರಿಸುವುದಲ್ಲ. ಯಾವುದು ಎಷ್ಟು ಬೇಕು ಎಂಬ ವಿವೇಚನೆಯನ್ನು ಇಟ್ಟುಕೊಂಡು ಎಡಿಟ್ ಮಾಡುವುದು. ಪೂರ್ವರಂಗವನ್ನು ಉಳಿಸಿಕೊಂಡು, ಪ್ರದರ್ಶನದ ಕಾಲಗತಿಯನ್ನು ಕಡೆಗಣಿಸದೆ, ಸನ್ನಿವೇಶಗಳನ್ನೂ ಬಿಡದೆ ಒಟ್ಟಾರೆ ಪ್ರದರ್ಶನವನ್ನು ಸಂಕ್ಷೇಪಗೊಳಿಸುವುದಕ್ಕೆ ಅವಕಾಶವಿದೆ. ಒಂದೇ ವಿಷಯಕ್ಕೆ ಸಂಬಂಧಿಸಿದ ನಾಲ್ಕೈದು ಪದ್ಯಗಳನ್ನು ಕೈಬಿಟ್ಟು ಅಗತ್ಯವಿರುವ ಒಂದೋ ಎರಡೋ ಪದ್ಯಗಳನ್ನು ವಿವೇಚನೆಯಿಂದ ತೆಗೆದುಕೊಳ್ಳಬಹುದು. ಕೋವಿಡ್ ಸಮಯದಲ್ಲಿ ಕಟೀಲು ಮೇಳಗಳೂ ಅನಿವಾರ್ಯವಾಗಿ ಕಾಲಮಿತಿ ಪ್ರದರ್ಶನ ಆರಂಭಿಸಿದಾಗ ಪ್ರೇಕ್ಷಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾದದ್ದು ಉಲ್ಲೇಖಾರ್ಹ” ಎನ್ನುತ್ತಾರೆ ಭಾಗವತ ಪುತ್ತೂರು ರಮೇಶ ಭಟ್.

“ಸೂಕ್ತ ವಿವೇಚನಾ ಸಾಮರ್ಥ್ಯವುಳ್ಳ ಸಮರ್ಥ ಭಾಗವತನೊಬ್ಬ ಈ ಎಡಿಟಿಂಗನ್ನು ಮಾಡಬಲ್ಲ. ಪೂರ್ವರಂಗದ ಪ್ರಸ್ತುತತೆಯನ್ನೂ ನಾವೀಗ ವಿವೇಚಿಸಬೇಕು. ಅದರ ಹಿಂದಿರುವುದು ಮೂಲತಃ ತರಬೇತಿಯ ಉದ್ದೇಶ. ಈಗ ತಕ್ಕಮಟ್ಟಿಗೆ ತರಬೇತಿ ಪಡೆದವರೇ ಮೇಳಕ್ಕೆ ಸೇರುತ್ತಾರೆ. ಅಲ್ಲಿ ಎರಡುಗಂಟೆಯ ಪೂರ್ವರಂಗ ಪ್ರದರ್ಶಿಸುವ ಅಗತ್ಯವೇ ಇಲ್ಲ. ಈಗಾಗಲೇ ಕಾಲಮಿತಿ ಪ್ರದರ್ಶನಕ್ಕೆ ಒಗ್ಗಿಕೊಂಡ ಮೇಳಗಳಿಂದಾಗಿಯೂ ಯಕ್ಷಗಾನಕ್ಕೆ ಅಂತಹ ನಷ್ಟವೇನೂ ಆದಂತೆ ಕಾಣುವುದಿಲ್ಲ” ಎನ್ನುತ್ತಾರೆ ಕಲಾವಿದ-ಲೇಖಕ ರಾಧಾಕೃಷ್ಣ ಕಲ್ಚಾರ್.

ರಾತ್ರಿ ಹತ್ತರ ಬಳಿಕ 50 ಡೆಸಿಬಲ್‌ಗಳಿಗಿಂತ ಹೆಚ್ಚಿನ ಧ್ವನಿಹೊಮ್ಮಿಸುವ ಮೈಕ್‌ಗಳನ್ನು ಬಳಸದಂತೆಯೂ ಸರ್ಕಾರ ಇತ್ತೀಚೆಗೆ ಧಾರ್ಮಿಕ ಕೇಂದ್ರಗಳಿಗೆ ಸೂಚನೆ ನೀಡಿದೆ. ನೆಲದ ಕಾನೂನುಗಳನ್ನು ಗೌರವಿಸುವುದೂ ನಮ್ಮ ಅನಿವಾರ್ಯಗಳಲ್ಲೊಂದು. ಕಾಲಕಳೆದಂತೆ ಸಮಾಜದ ಅದ್ಯತೆ, ದೃಷ್ಟಿಕೋನಗಳು ಬದಲಾಗುವುದು ಸಾಮಾನ್ಯ. ಅದನ್ನು ಗಮನಿಸುವ ಸೂಕ್ಷ್ಮತೆ ಬೆಳೆಸಿಕೊಳ್ಳದೆ ಹೋದರೆ ಕಲೆಯೂ ಅಪ್ರಸ್ತುತವಾಗುತ್ತದೆ.

- ಸಿಬಂತಿ ಪದ್ಮನಾಭ ಕೆ. ವಿ.

ಶನಿವಾರ, ಸೆಪ್ಟೆಂಬರ್ 4, 2021

ವಿದ್ಯಾರ್ಥಿಗಳಿಗೆ ಅಧ್ಯಾಪಕನೇ ಪಠ್ಯಪುಸ್ತಕ

ಆಗಸ್ಟ್ 28, 2021ರ ಉದಯವಾಣಿ 'ಫ್ಯೂಷನ್' ಸಂಚಿಕೆಯಲ್ಲಿ ಪ್ರಕಟವಾದ ಲೇಖನ

ಶಿಕ್ಷಣವೆಂದರೆ ಪಾತ್ರೆಯನ್ನು ತುಂಬಿಸುವ ಕೆಲಸ ಅಲ್ಲ, ದೀಪವನ್ನು ಹಚ್ಚುವ ಕ್ರಿಯೆ ಎಂಬ ಯೇಟ್ಸ್ ಕವಿಯ ಮಾತಿದೆ. ಪಾತ್ರೆಯನ್ನು ತುಂಬಿಸುವುದಾದರೂ, ದೀಪವನ್ನು ಹಚ್ಚುವುದಾದರೂ ಒಬ್ಬರಿಂದ ಆಗುವ ಕಾರ್ಯ ಅಲ್ಲ ಎಂಬುದು ಮುಖ್ಯ. ಪಾತ್ರೆ ತುಂಬಿಸುವ ಕ್ರಿಯೆಯ
ಲ್ಲಿ ಪಾತ್ರೆ ಬೇಕು, ತುಂಬುವವನು ಬೇಕು, ತುಂಬಿಸಲು ಸೂಕ್ತ ದ್ರವ್ಯ ಬೇಕು; ದೀಪ ಹಚ್ಚುವ ಕೆಲಸಕ್ಕೆ ದೀಪ ಬೇಕು, ತೈಲ-ಬತ್ತಿ ಬೇಕು, ಹಚ್ಚುವವನು ಬೇಕೇ ಬೇಕು. ಅಂತೂ ಎಲ್ಲವೂ ಪರಸ್ಪರ.

ಶಿಕ್ಷಣದ ಒಟ್ಟಾರೆ ಪ್ರಕ್ರಿಯೆಯಲ್ಲಿ ಶಿಕ್ಷಕನ ಪಾತ್ರ ಬಲುದೊಡ್ಡದೇ. ಅವನು ಮನಸ್ಸು ಮಾಡಿದರೆ ಏನೂ ಮಾಡಿಯಾನು. ವಿದ್ಯಾರ್ಥಿಯ ಪ್ರಗತಿ ಪತನಗಳೆರಡೂ ಅವನ ಕೈಯಲ್ಲೇ ಇವೆ. ಆದರೆ ಯಾವ ಸಾವಯವ ಪ್ರಕ್ರಿಯೆಯೂ ಒಂದೇ ಮುಖದ್ದಲ್ಲ. ಒಬ್ಬನೇ ಕುಳಿತು ಮಾಡುವಂಥದ್ದಲ್ಲ. ಶಿಕ್ಷಣವೂ ಹಾಗೆಯೇ. ಅದೂ ಯಶಸ್ವೀ ಎನಿಸಬೇಕಾದರೆ ಗುರು-ಶಿಷ್ಯರಿಬ್ಬರ ಏಕಪ್ರಕಾರದ ಪ್ರತಿಸ್ಪಂದನೆ ಇರಬೇಕು.

ಪಾತ್ರೆ ತುಂಬಿಸುವ ಕೆಲಸ ಎಂದುಕೊಂಡರೂ ಆದೀತು. ಆದರೆ ಪಾತ್ರೆ ಎಷ್ಟು ದೊಡ್ಡದಿದೆ ಎಂಬುದು ಮುಖ್ಯ. ಶಿಷ್ಯ ತಂದ ಪಾತ್ರೆಗೆ ತುಂಬಿಸುವಷ್ಟು ಬಂಡವಾಳ ಶಿಕ್ಷಕನಲ್ಲಿ ಇದೆಯೋ ಎಂಬುದೂ ಮುಖ್ಯ. ಇಲ್ಲವಾದರೆ ವಿದ್ಯಾರ್ಥಿ ದೊಡ್ಡ ಪಾತ್ರೆ ತಂದಂತೆಯೋ, ಅಧ್ಯಾಪಕ ಅದಕ್ಕೆ ಮೊಗೆಮೊಗೆದು ತುಂಬಿಸಿದಂತೆಯೋ ನಟನೆ ಮಾಡಬೇಕಾಗುತ್ತದೆ. ಇದರಿಂದ ಪರಸ್ಪರರಿಗೂ ಸಮಾಜಕ್ಕೂ ಯಾವ ಪ್ರಯೋಜನವೂ ಇಲ್ಲ. ಕೊನೆಗೆ ಎರಡೂ ಖಾಲಿ ಪಾತ್ರೆಗಳು ಸದ್ದು ಮಾಡುವ ತಮಾಷೆ ಮಾತ್ರ ನಡೆಯುತ್ತದೆ.

ಸಮುದ್ರಕ್ಕೆ ಹೋದರೆ ಎಷ್ಟು ನೀರು ತುಂಬಿಸಿಕೊಂಡು ಬರಬಹುದು ಎಂದು ಶಿಷ್ಯನೊಬ್ಬ ಗುರುವಿನಲ್ಲಿ ಕೇಳಿದನಂತೆ. ನೀನು ಎಷ್ಟು ದೊಡ್ಡ ಪಾತ್ರೆ ತೆಗೆದುಕೊಂಡು ಹೋಗುತ್ತೀಯೋ ಅಷ್ಟು ತುಂಬಿಸಿಕೊಂಡು ಬರಬಹುದು ಎಂದು ಗುರು ಉತ್ತರಿಸಿದನಂತೆ. ಶಿಷ್ಯ ದೊಡ್ಡ ಪಾತ್ರೆ ತೆಗೆದುಕೊಂಡು ಹೋಗಬೇಕಿರುವುದು ನಿಜ. ಅನೇಕ ಸಲ ದೊಡ್ಡ ಪಾತ್ರೆ ಒಯ್ಯಬೇಕೆಂಬ ತಿಳುವಳಿಕೆ ಶಿಷ್ಯನಿಗೆ ಮೂಡಿರುವುದಿಲ್ಲ, ಮತ್ತು ಅದು ಅವನ ಅಪರಾಧವೂ ಅಲ್ಲ. ಅಂತಹದೊಂದು ತಿಳುವಳಿಕೆ ಮೂಡಿಸುವ ಜವಾಬ್ದಾರಿ ಗುರುವಿನದ್ದೂ ಆಗಿರುತ್ತದೆ. ಇಲ್ಲವಾದರೆ ಆ ಸ್ಥಾನಕ್ಕೆ ಏನು ಅರ್ಥ?

ಮಕ್ಕಳು ಹೇಳಿದ್ದನ್ನು ಮಾಡುವುದಿಲ್ಲ, ಮಾಡಿದ್ದನ್ನು ಮಾಡುತ್ತಾರೆ. ಇದು ಅವರ ವಯೋಸಹಜ ಸ್ವಭಾವ. ಗುರು ತಾನು ಮಾಡದ್ದನ್ನು ಮಕ್ಕಳಲ್ಲಿ ನಿರೀಕ್ಷೆ ಮಾಡಬಾರದು. ಉದಾಹರಣೆಗೆ, ಖುದ್ದು ಓದುವ ಅಭ್ಯಾಸ ಇಲ್ಲದ ಅಧ್ಯಾಪಕ ತನ್ನ ವಿದ್ಯಾರ್ಥಿಗಳು ಓದಬೇಕೆಂದು ನಿರೀಕ್ಷೆ ಮಾಡುವುದು ತಪ್ಪು. ಸ್ವಯಂಶಿಸ್ತು ಇಲ್ಲದ ಶಿಕ್ಷಕ ತನ್ನ ಮಕ್ಕಳು ಸ್ವಯಂಶಿಸ್ತು ರೂಢಿಸಿಕೊಳ್ಳಬೇಕೆಂದು ಅಪ್ಪಣೆ ಮಾಡುವುದು ನಗೆಪಾಟಲು. ಸಮಯಪಾಲನೆ ಮಾಡಲಾಗದ ಮೇಷ್ಟ್ರು ತನ್ನ ವಿದ್ಯಾರ್ಥಿಗಳು ಸಮಯಪಾಲನೆ ಮಾಡಬೇಕೆಂದು ಅಪೇಕ್ಷಿಸುವುದು ಅಸಂಗತ. ಪಾಠ ಇರುವುದು ವಾಸ್ತವವಾಗಿ ಪಠ್ಯಪುಸ್ತಕದಲ್ಲಿ ಅಲ್ಲ, ಅಧ್ಯಾಪಕನ ವರ್ತನೆಯಲ್ಲಿ. ವಿದ್ಯಾರ್ಥಿಗಳಿಗೆ ಅಧ್ಯಾಪಕನೇ ದೊಡ್ಡ ಪಠ್ಯಪುಸ್ತಕ. ಆತ ತನ್ನ ವರ್ತನೆ, ಕ್ರಿಯೆಗಳಲ್ಲಿ ಶ್ರೇಷ್ಠವಾದದ್ದನ್ನು ತೋರಿಸದೇ ಹೋದರೆ ಪಠ್ಯಪುಸ್ತಕ ಕೇವಲ ಅಕ್ಷರಗಳ ಮೊತ್ತವಷ್ಟೇ ಆದೀತು.

ಸಾಮಾನ್ಯ ಅಧ್ಯಾಪಕ ಪಾಠ ಮಾಡುತ್ತಾನೆ, ಉತ್ತಮ ಅಧ್ಯಾಪಕ ಪ್ರಾಯೋಗಿಕವಾಗಿ ವಿವರಿಸುತ್ತಾನೆ, ಶ್ರೇಷ್ಠ ಅಧ್ಯಾಪಕ ಪ್ರಭಾವಿಸುತ್ತಾನೆ ಎಂಬ ಮಾತು ಇದೇ ಕಾರಣಕ್ಕೆ ಹುಟ್ಟಿಕೊಂಡಿರುವುದು. ಯಾರೇ ಐತಿಹಾಸಿಕ ವ್ಯಕ್ತಿಯ ಬದುಕನ್ನು ನೋಡಿದರೂ ಆತನ ಹಿಂದೊಬ್ಬ ಶ್ರೇಷ್ಠ ಶಿಕ್ಷಕನ ಪಾತ್ರವಿರುವುದು ನಿಸ್ಸಂಶಯ. ಆತನ ಪ್ರಭಾವಲಯಕ್ಕೆ ಸಿಕ್ಕಿದ ಎಂತಹ ಸಾಮಾನ್ಯ ವ್ಯಕ್ತಿಯಾದರೂ ಜೀವನದಲ್ಲಿ ಎತ್ತರಕ್ಕೆ ಏರಬಲ್ಲ, ಸಮಾಜಕ್ಕೆ ಸಂಪನ್ಮೂಲವಾಗಬಲ್ಲ. ಶಿಕ್ಷಣದ ಒಟ್ಟಾರೆ ಉದ್ದೇಶ ಕನ್ನಡಿಗಳನ್ನು ಕಿಟಕಿಗಳನ್ನಾಗಿ ಪರಿವರ್ತಿಸುವುದು ಎಂಬ ಉಕ್ತಿ ಎಷ್ಟೊಂದು ಅರ್ಥಪೂರ್ಣ! ಕಿಟಕಿಗಳನ್ನು ತೆರೆಯುವ ಕೆಲಸ ಅಧ್ಯಾಪಕನದ್ದು. ನೋಡುವ ಜವಾಬ್ದಾರಿ ವಿದ್ಯಾರ್ಥಿಯದ್ದು. ಕಿಟಕಿ ತೆರೆದಿದ್ದರೂ ಹೊರಗೆ ದೃಷ್ಟಿ ಹಾಯಿಸದೆ ಮುಸುಕೆಳೆದು ಮಲಗಿದರೆ ಅಂತಹ ವಿದ್ಯಾರ್ಥಿಗೆ ಕತ್ತಲೂ ಒಂದೇ, ಬೆಳಕೂ ಒಂದೇ.

ಶಿಷ್ಯ ಕಲಿಯಲು ಸೋತನೆಂದರೆ ಶಿಕ್ಷಕ ಕಲಿಸಲು ಸೋತನೆಂದು ಅರ್ಥ ಎಂಬ ನಾಣ್ಣುಡಿಯೊಂದಿದೆ. ಅಂದರೆ ಶಿಷ್ಯನ ಸೋಲಿನ ಹಿಂದೆ ಗುರುವಿನ ಜವಾಬ್ದಾರಿಯೂ ಇದೆ ಎಂದಾಯ್ತು. ಶಿಷ್ಯ ಉನ್ನತಿಗೇರಿದರೆ ಅದರಲ್ಲಿ ಗುರುವಿಗೂ ಒಂದು ಪಾಲಿರುವುದು ನಿಜವಾದರೆ ಆತನ ಸೋತರೂ ಅದರದ್ದೊಂದು ಪಾಲು ಗುರುವಿನದ್ದಾಗುತ್ತದೆ. ತನ್ನ ವಿದ್ಯಾರ್ಥಿಗಳು ದಾರಿತಪ್ಪಿದರೆ, ಯಶಸ್ಸಿನ ಹಾದಿಯಲ್ಲಿ ಎಡವಿದರೆ ತಾನು ಇದನ್ನು ತಪ್ಪಿಸಬಹುದಿತ್ತೇ ಎಂಬ ಆತ್ಮಾವಲೋಕನವನ್ನಾದರೂ ಗುರು ಮಾಡಬೇಕು. ಏಕೆಂದರೆ ಗುರು ಎಂದರೆ ದೊಡ್ಡದು ಎಂಬ ಅರ್ಥವೂ ಇದೆ. ದೊಡ್ಡವರು ದೊಡ್ಡವರಂತೆ ಇದ್ದರೆ ಮಾತ್ರ ಬೆಲೆ.

- ಸಿಬಂತಿ ಪದ್ಮನಾಭ ಕೆ. ವಿ.

ಮಂಗಳವಾರ, ಡಿಸೆಂಬರ್ 15, 2020

ಕ್ಲಾಸ್ ಆನ್ ಸ್ಟೂಡೆಂಟ್ ಆಫ್!

15 ಡಿಸೆಂಬರ್ 2020ರ 'ಉದಯವಾಣಿ' ಪತ್ರಿಕೆಯಲ್ಲಿ ಪ್ರಕಟವಾದ ಬರಹ

ವಿದ್ಯಾರ್ಥಿಗಳಿಗೆ ಗೊಂಡಾರಣ್ಯದಿಂದ ಹೊರಹೋಗಲು ದಾರಿ ಸಿಕ್ಕ ಅನುಭವ. ಅಧ್ಯಾಪಕರಿಗೆ ಮರುಭೂಮಿಯಲ್ಲಿ ಓಯಸಿಸ್ ಸಿಕ್ಕ ಅನುಭವ. ಇಷ್ಟೆಲ್ಲದಕ್ಕೆ ಕಾರಣವಾದ ಕೊರೋನ ಮಾಯಾವಿಗೆ ಯಾವ ಅನುಭವ ಆಗುತ್ತಿದೆಯೋ ಗೊತ್ತಿಲ್ಲ. 

ತಿಂಗಳಾನುಗಟ್ಟಲೆ ಮನೆಗಳಲ್ಲೇ ಇದ್ದು ಚಡಪಡಿಸುತ್ತಿದ್ದ ವಿದ್ಯಾರ್ಥಿಗಳು ಈಗ ಮೆಲ್ಲಮೆಲ್ಲನೆ ಹೊರಗಡಿಯಿಡುವ ಕಾಲ. ಮೊಬೈಲ್, ಲ್ಯಾಪ್‍ಟಾಪ್ ನೋಡಿಕೊಂಡು ಪಾಠ ಹೇಳುತ್ತಿದ್ದ ಮೇಷ್ಟ್ರುಗಳು ಮತ್ತೆ ವಿದ್ಯಾರ್ಥಿಗಳನ್ನೇ ಕಂಡು ಬದುಕಿದೆಯಾ ಬಡಜೀವವೇ ಎಂದು ನಿರಾಳವಾಗುವ ಕಾಲ. 

ಹಾಗೆಂದು ಎರಡೂ ಕಡೆಯವರ ಸಂಕಷ್ಟಗಳು ಮುಗಿದವೆಂದಲ್ಲ. ಈ ತರಗತಿ ಭಾಗ್ಯ ಯೋಜನೆಯ ಫಲಾನುಭವಿಗಳು ಕೊನೇ ವರ್ಷದಲ್ಲಿ ಓದುತ್ತಿರುವ ಡಿಗ್ರಿ ಮತ್ತು ಯುನಿವರ್ಸಿಟಿ ವಿದ್ಯಾರ್ಥಿಗಳು ಮತ್ತವರಿಗೆ ಪಾಠ ಮಾಡುತ್ತಿರುವ ಅಧ್ಯಾಪಕರು ಮಾತ್ರ. ಅದರಲ್ಲೂ ವಿದ್ಯಾರ್ಥಿಗಳಿಗೆ ಇದು ಕಡ್ಡಾಯವೇನಲ್ಲ. ತರಗತಿಗೆ ಬರುವುದು ಬಿಡುವುದು ಅವರ ನಿರ್ಧಾರ. ಕಾಲೇಜಿಗೆ ಬರಲೇಬೇಕೆಂದು ಮೇಷ್ಟ್ರುಗಳು ಒತ್ತಾಯಿಸುವ ಹಾಗೆ ಇಲ್ಲ. ಬಂದವರಿಗೆ ಪಾಠ ಮಾಡಬೇಕು. ಬಾರದವರಿಗೂ ಪಾಠಗಳು ಮುಂದುವರಿಯಬೇಕು.

ವಿದ್ಯಾರ್ಥಿಗಳಿಗೇನೋ ಕಾಲೇಜಿಗೆ ಹೋಗುವುದಕ್ಕೆ ಅನುಮತಿ ಸಿಕ್ಕಿದೆ. ಆದರೆ ಅವರೆದುರು ಆಯ್ಕೆಗಳಿವೆ. ಸಿಗ್ನಲ್ ತೆರೆದ ತಕ್ಷಣ ಮುನ್ನುಗ್ಗುವ ವಾಹನಗಳ ಉತ್ಸಾಹ ಅವರಲ್ಲಿ ಕಾಣುತ್ತಿಲ್ಲ. ಅವರಿಗೇನೋ ಮತ್ತೆ ಕ್ಲಾಸ್ ಅಟೆಂಡ್ ಆಗಬೇಕು, ಮೊದಲಿನಂತೆ ತಮ್ಮ ಗೆಳೆಯರ ಜತೆ ಬೆರೆಯಬೇಕೆಂಬ ಆಸೆ. ಆದರೆ ಅನೇಕರಿಗೆ ಮನೆಯಿಂದಲೇ ಅನುಮತಿ ಇಲ್ಲ. ‘ಅಪ್ಪ-ಅಮ್ಮ ಬೇಡ ಅಂತಿದ್ದಾರೆ ಸಾರ್’ ಎಂಬುದು ಹಲವು ಹುಡುಗರ ಅಳಲು. ಹೇಗೂ ಮನೆಯಿಂದಲೇ ಪಾಠ ಕೇಳಬಹುದು ಎಂಬ ಆಯ್ಕೆ ಇರುವುದರಿಂದ ಈ ಜಂಜಾಟದ ಓಡಾಟ ಯಾಕೆ ಎಂದು ಯೋಚಿಸುವವರೂ ಹಲವರು.

ತರಗತಿಗೆ ಹಾಜರಾಗುವುದಕ್ಕೆ ಅವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿರಬೇಕು ಎಂಬ ಸೂಚನೆ ಇರುವುದೂ ಈ ನಿರುತ್ಸಾಹಕ್ಕೆ ಇನ್ನೊಂದು ಕಾರಣ. ಅಯ್ಯೋ ಅಲ್ಲಿ ಗಂಟೆಗಟ್ಟಲೆ ಕ್ಯೂ ನಿಲ್ಲಬೇಕು ಎಂಬ ಬೇಸರ ಕೆಲವರಿಗಾದರೆ, ತಮ್ಮ ಮಕ್ಕಳು ಟೆಸ್ಟ್ ಮಾಡಿಸಿಕೊಳ್ಳುವುದೇ ಬೇಡ ಎಂಬ ಆತಂಕ ಕೆಲವು ಅಪ್ಪ-ಅಮ್ಮಂದಿರದ್ದು. ದೂರದೂರುಗಳಿಂದ ಬರುವವರಿಗೆ ಹಾಸ್ಟೆಲ್ ಕೂಡ ತೆರೆದಿರಬೇಕು. ‘ಹಾಸ್ಟೆಲ್ ತೆರೆದಿದ್ದಾರೆ, ಮೆಸ್ ಇನ್ನೂ ಓಪನ್ ಆಗಿಲ್ಲ. ಊಟಕ್ಕೇನು ಮಾಡೋಣ ಸಾರ್’ ಮತ್ತೆ ಹುಡುಗರ ದೂರು. ಇಂತಿಷ್ಟು ಮಕ್ಕಳಿರುತ್ತಾರೆ ಎಂದು ಖಚಿತವಾಗದೆ ಅಡುಗೆ ಆರಂಭಿಸುವುದಕ್ಕೆ ಹಾಸ್ಟೆಲಿನವರಿಗೂ ಸಮಸ್ಯೆ.

ಅಂತೂ ಎಲ್ಲದರ ನಡುವೆ ಅನುಕೂಲ ಮಾಡಿಕೊಂಡು ತರಗತಿಗೆ ಬಂದು ಕುಳಿತಿರುವ ಹುಡುಗರಿಗೆ ಪ್ರತ್ಯಕ್ಷ ಪಾಠ ಮಾಡುವ ಸವಾಲು ಮೇಷ್ಟ್ರುಗಳದ್ದು. ವಿದ್ಯಾರ್ಥಿಗಳು ಒಂದು ಸುದೀರ್ಘ ರಜೆ ಮುಗಿಸಿ ಬಂದವರು. ಇಲ್ಲಿಯವರೆಗೆ ಆನ್ಲೈನ್ ಪಾಠ ನಡೆದಿರುತ್ತದೆ ಎಂದಿದ್ದರೂ, ಅವರಲ್ಲೆಷ್ಟು ಮಂದಿ ಅದನ್ನು ಕೇಳಿಸಿಕೊಂಡಿದ್ದಾರೆ, ಕೇಳಿಸಿಕೊಂಡವರಿಗೆಷ್ಟು ಅರ್ಥವಾಗಿದೆ ಎಂಬುದು ಮೇಷ್ಟ್ರುಗಳ ಗೊಂದಲ. ಮತ್ತೆ ಲಾಗಾಯ್ತಿನಿಂದ ಪಾಠ ಆರಂಭಿಸುವಂತಿಲ್ಲ. ಆದಲೇ ಅರ್ಧ ಸೆಮಿಸ್ಟರು ಮುಗಿದಿದೆ. ಅಲ್ಲಿಂದಲೇ ಪಾಠ ಮುಂದುವರಿಯಬೇಕು. 

‘ಕಳೆದ ಕ್ಲಾಸಿನಲ್ಲಿ ಹೇಳಿದಂತೆ...’ ಅಂತ ಶುರುಮಾಡೋ ಮೇಷ್ಟ್ರು ‘ಕಳೆದ ಆನ್ಲೈನ್ ಕ್ಲಾಸಿನಲ್ಲಿ ಹೇಳಿದಂತೆ...’ ಅಂತ ವರಸೆಯನ್ನು ಬದಲಾಯಿಸಿಕೊಳ್ಳಬೇಕು. ಈಗ ಮುಖಮುಖ ನೋಡಿಕೊಳ್ಳುವ ಸರದಿ ಹುಡುಗರದ್ದು. ಯಾವ ಕಡೆ ಕತ್ತು ತಿರುಗಿಸಿದರೂ ಕಳೆದ ಆನ್ಲೈನ್ ಕ್ಲಾಸಲ್ಲಿ ಮೇಷ್ಟ್ರು ಏನು ಹೇಳಿದ್ದಾರೆ ಅನ್ನೋದು ನೆನಪಾಗಲೊಲ್ಲದು. ಅಂತೂ ಅವರಿಗೊಂದೆರಡು ದಿನ ಸುದೀರ್ಘ ಪೀಠಿಕೆ ಹಾಕಿ ಮತ್ತೆ ಸಿಲೆಬಸ್ಸಿಗೆ ಬರಬೇಕು.

ಇಷ್ಟಾದಮೇಲೂ ತರಗತಿಯಲ್ಲಿರುವುದು ಶೇ. 20-30ರಷ್ಟು ವಿದ್ಯಾರ್ಥಿಗಳು. ಉಳಿದವರನ್ನು ಬಿಟ್ಟುಬಿಡುವ ಹಾಗಿಲ್ಲ. ಅವರಿಗೂ ಪಾಠ ತಲುಪಿಸಬೇಕು. ಒಂದೋ ತರಗತಿಯಲ್ಲಿ ಮಾಡಿದ್ದನ್ನು ಮತ್ತೊಮ್ಮೆ ಆನ್ಲೈನ್ ಮಾಡಬೇಕು. ಅಥವಾ ತರಗತಿಯಲ್ಲಿ ಮಾಡುತ್ತಿರುವುದೇ ನೇರ ಪ್ರಸಾರ ಆಗಬೇಕು. ಅಂದರೆ ಪಾಠ ಮಾಡುತ್ತಿರುವ ಅಧ್ಯಾಪಕ ಎದುರಿಗೆ ಮೊಬೈಲ್ ಅಥವಾ ಲ್ಯಾಪ್‍ಟಾಪ್ ಇಟ್ಟುಕೊಳ್ಳಬೇಕು. ಆನ್ಲೈನಿಗೆ ಬಂದಿರುವ ವಿದ್ಯಾರ್ಥಿಗಳು ಪಾಠ ಕೇಳಿಸಿಕೊಳ್ಳಬೇಕೆಂದರೆ ಅಧ್ಯಾಪಕ ನಿಂತಲ್ಲೇ ನಿಂತಿರಬೇಕು. ನಿಂತಲ್ಲೇ ನಿಂತರೆ ಅನೇಕ ಅಧ್ಯಾಪಕರಿಗೆ ಮಾತೇ ಹೊರಡದು. ಅವರಿಗೆ ಬೋರ್ಡು ಬಳಕೆ ಮಾಡಿ ಅಭ್ಯಾಸ. ಪ್ರತ್ಯಕ್ಷ ತರಗತಿಗೆ ಹಾಜರಾಗಿರುವವರಿಗೂ ನಿಶ್ಚಲ ಮೇಷ್ಟ್ರ ಪಾಠ ಕೇಳುವುದಕ್ಕೆ ಪರಮ ಸಂಕಷ್ಟ. ಅಧ್ಯಾಪಕ ಬೋರ್ಡನ್ನೂ ಬಳಕೆ ಮಾಡುವುದು ಆನ್ಲೈನ್ ವಿದ್ಯಾರ್ಥಿಗಳಿಗೆ ಕಾಣಿಸುವಂತೆ ಮಾಡಬಹುದು. ಅದಕ್ಕೆ ಬೇರೆ ವ್ಯವಸ್ಥೆ ಬೇಕು. ಅಷ್ಟೊಂದು ವ್ಯವಸ್ಥೆ ನಮ್ಮ ಕಾಲೇಜುಗಳಲ್ಲಿದೆಯಾ?

ಕಡೇ ಪಕ್ಷ ತರಗತಿಯಲ್ಲಿ ಪಾಠ ಮಾಡಿದ್ದರ ಆಡಿಯೋವನ್ನಾದರೂ ರೆಕಾರ್ಡ್ ಮಾಡಿ ಮನೆಯಲ್ಲಿ ಕುಳಿತಿರುವ ಭಾಗಶಃ ವಿದ್ಯಾರ್ಥಿಗಳಿಗೆ ವಾಟ್ಸಾಪ್ ಮೂಲಕ ತಲುಪಿಸಬಹುದು. ಕಾಲರ್ ಮೈಕ್ ಅನ್ನು ಮೊಬೈಲಿಗೆ ತಗುಲಿಸಿ ಈ ಕೆಲಸ ಮಾಡಬಹುದು. ನಡುವೆ ಫೋನ್ ಬಾರದಂತೆ ಅಧ್ಯಾಪಕ ಮುನ್ನೆಚ್ಚರಿಕೆ ವಹಿಸಬೇಕು. ಫೋನ್ ಬಂದರೆ ಅಲ್ಲಿಯವರೆಗಿನ ರೆಕಾರ್ಡಿಂಗ್ ಢಮಾರ್. ಈ ಎಲ್ಲ ಸರ್ಕಸ್ ಮಾಡುವ ತಾಂತ್ರಿಕತೆಗಳ ಪರಿಚಯ ಎಲ್ಲ ಅಧ್ಯಾಪಕರಿಗೂ ಇದೆಯೇ? ಅದು ಬೇರೆ ಮಾತು.

ಅಂತೂ ದಿನೇದಿನೇ ವಿದ್ಯಾರ್ಥಿಗಳ ಮತ್ತವರ ಪೋಷಕರ ಆತಂಕ ನಿಧಾನವಾಗಿ ಕರಗುತ್ತಿರುವುದು ಸದ್ಯದ ಆಶಾವಾದ. ತಮ್ಮ ಕ್ಲಾಸ್ಮೇಟುಗಳು ಧೈರ್ಯ ಮಾಡಿರುವುದು ನೋಡಿ ಉಳಿದಿರುವವರಿಗೂ ಉತ್ಸಾಹ ಮೂಡುತ್ತಿದೆ. ತರಗತಿಗಳಲ್ಲಿ ಅಟೆಂಡೆನ್ಸ್ ದಿನೇದಿನೇ ಏರುತ್ತಿದೆ. ಎಲ್ಲರೂ ಬಂದು ಹಾಜರ್ ಸಾರ್ ಎನ್ನುವವರೆಗೆ ಮೇಷ್ಟ್ರ ಪರದಾಟ ಮಾತ್ರ ತಪ್ಪಿದ್ದಲ್ಲ.

- ಸಿಬಂತಿ ಪದ್ಮನಾಭ ಕೆ. ವಿ.

ಗುರುವಾರ, ಜನವರಿ 16, 2020

ಈಗ ನಿಮ್ಮ ಟೈಮ್ ಶುರು

14 ಜನವರಿ 2020ರ 'ಉದಯವಾಣಿ'ಯ 'ಜೋಶ್' ಪುರವಣಿಯಲ್ಲಿ ಪ್ರಕಟವಾದ ಲೇಖನ

Winners don't do different things, but they do the things differently- ಅಂತಾರೆ ಮ್ಯಾನೇಜ್ಮೆಂಟ್ ಗುರು ಶಿವ ಖೇರಾ. ಗೆಲ್ಲುವವರು ಆ ವಿಧಾನ ಈ ವಿಧಾನ ಅಂತ ಸಮಯಹರಣ ಮಾಡುವುದಿಲ್ಲವಂತೆ, ಅವರು ಮಾಡುವುದನ್ನೇ ಉಳಿದವರಿಗಿಂತ ವಿಭಿನ್ನವಾಗಿ ಮಾಡುತ್ತಾರಂತೆ. ಪರೀಕ್ಷೆಗೆ ಸಿದ್ಧವಾಗುವವರೂ ಈ ಮಾತನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಹೀಗೆ ಓದಿದರೆ ಸರಿಯೋ, ಹಾಗೆ ಓದಿದರೆ ಸರಿಯೋ ಎಂದು ಅಳೆದು ಸುರಿಯುವುದರಲ್ಲೇ ಸಮಯ ಕಳೆಯುವುದು ಜಾಣತನವಲ್ಲ. ಪರೀಕ್ಷಾ ತಯಾರಿಯಲ್ಲಿ ತೊಡಗಿರುವವರಿಗೆ ಸಮಯ ಬಹಳ ಮುಖ್ಯ; ಪರೀಕ್ಷೆ ಸಮೀಪಿಸಿದಾಗಲಂತೂ ಒಂದೊಂದು ನಿಮಿಷವೂ ಅಮೂಲ್ಯ.

ಉದಯವಾಣಿ- ಜೋಶ್ 14-01-2020
ಹೀಗಾಗಿ ಯಾವ ಸಬ್ಜೆಕ್ಟನ್ನು ಎಷ್ಟೆಷ್ಟು ಹೊತ್ತು ಓದಬೇಕು, ಹೇಗೆ ಪ್ಲಾನ್ ಮಾಡಿಕೊಳ್ಳಬೇಕು ಎಂದು ಅರ್ಥ ಮಾಡಿಕೊಳ್ಳದೇ ಹೋದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಎಲ್ಲರಿಗೂ ಎಲ್ಲ ಸಬ್ಜೆಕ್ಟೂ ಒಂದೇ ಥರ ಇರುವುದಿಲ್ಲ. ಕೆಲವರಿಗೆ ವಿಜ್ಞಾನ ಕಷ್ಟ, ಇನ್ನು ಕೆಲವರಿಗೆ ಗಣಿತ ಕಷ್ಟ. ಹೀಗಾಗಿ ಎಲ್ಲರಿಗೂ ಸರಿ ಬರುವಂತಹ ಒಂದು ಕಾಮನ್ ವೇಳಾಪಟ್ಟಿ ಹಾಕಿಕೊಳ್ಳಲಾಗದು. ಒಬ್ಬೊಬ್ಬರೂ ತಮ್ಮ ಪರಿಸ್ಥಿತಿಯನ್ನು ಗಮನಿಸಿಕೊಂಡು ಅದಕ್ಕೆ ತಕ್ಕುದಾದ ವೇಳಾಪಟ್ಟಿ ಮಾಡಿಕೊಳ್ಳಬೇಕು. ಅಂತೂ ಟೈಮ್‍ಟೇಬಲ್ ಹಾಕಿಕೊಳ್ಳದೆ ಓದುವುದೆಂದರೆ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದ ಹಾಗೆಯೇ ಸರಿ.

ಎರಡು ರೀತಿಯ ವೇಳಾಪಟ್ಟಿ ಮಾಡಿಕೊಳ್ಳಬಹುದು. ಒಂದು ತರಗತಿಗಳು ನಡೆಯುತ್ತಿರುವಾಗ ಓದಿಕೊಳ್ಳುವುದಕ್ಕೆ; ಇನ್ನೊಂದು ಪರೀಕ್ಷೆಗಾಗಿಯೇ ಕೊಡುವ ರೀಡಿಂಗ್ ಹಾಲಿಡೇಸ್‍ನಲ್ಲಿ ಅಥವಾ ವಾರಾಂತ್ಯದಲ್ಲಿ ಓದಿಕೊಳ್ಳುವುದಕ್ಕೆ. ತರಗತಿಗಳಿನ್ನೂ ನಡೆಯುತ್ತಿರುವಾಗ ಓದುವುದಕ್ಕೆ ತಮ್ಮತಮ್ಮ ಶಾಲಾ/ಕಾಲೇಜು ಅವಧಿಯನ್ನು ಗಮನಿಸಿಕೊಂಡು ಟೈಮ್ ಟೇಬಲ್ ಸಿದ್ಧಪಡಿಸಿಕೊಳ್ಳಬೇಕು. ಉದಾಹರಣೆಗೆ, ಬೆಳಗ್ಗೆ 5ರಿಂದ 8ಗಂಟೆಯವರೆಗೆ, ಸಂಜೆ 8ರಿಂದ 11 ಗಂಟೆಯವರೆಗೆ ಓದುವ ಸಮಯ ಅಂತ ಮೀಸಲಿಡಬಹುದಾದರೆ, ಒಟ್ಟು ಐದು ಗಂಟೆ ಸಿಕ್ಕಹಾಗಾಯ್ತು.

ಒಂದೇ ದಿನ ಎಲ್ಲ ಸಬ್ಜೆಕ್ಟ್‍ಗಳನ್ನೂ ಒಂದಿಷ್ಟಿಷ್ಟು ಓದಿಕೊಳ್ತೀನಿ ಅಂತ ಹೊರಡುವುದಕ್ಕಿಂತ ಎರಡು ದಿನಗಳಲ್ಲಿ ಎಲ್ಲವನ್ನೂ ಕವರ್ ಮಾಡಿಕೊಳ್ಳುವುದು ಉತ್ತಮ. ಮೊದಲ ದಿನ ಬೆಳಗ್ಗೆ ದೊರೆಯುವ ಮೂರು ಗಂಟೆಗಳನ್ನು ನಿಮಗೆ ಅತ್ಯಂತ ಕಷ್ಟವೆನಿಸುವ ವಿಷಯಕ್ಕೆ ಮೀಸಲಿಡಿ. ಉದಾ: ಗಣಿತ ಅಥವಾ ವಿಜ್ಞಾನ. ಸಂಜೆಯ ವೇಳೆ, 7ರಿಂದ 8 ಗಂಟೆಯ ನಡುವೆ ಆಯಾ ದಿನ ಮಾಡಬೇಕಾದ ಹೋಂವರ್ಕ್ ಇತ್ಯಾದಿಗಳನ್ನು ಪೂರೈಸಿಕೊಳ್ಳಿ. ಆಮೇಲೆ ಒಂದರ್ಧ ಗಂಟೆ ಊಟದ ಬ್ರೇಕ್ ತೆಗೆದುಕೊಂಡರೆ 8-30ರಿಂದ 11 ಗಂಟೆಯವರೆಗೆ ಇನ್ನೊಂದು ಸಬ್ಜೆಕ್ಟನ್ನು ಓದಿಕೊಳ್ಳಬಹುದು.

ಎರಡನೆಯ ದಿನ ಇದೇ ಸಮಯದ ಮಿತಿಯಲ್ಲಿ ಉಳಿದ ನಾಲ್ಕು ಸಬ್ಜೆಕ್ಟ್‍ಗಳನ್ನು ಓದುವ ಪ್ಲಾನ್ ಮಾಡಿಕೊಳ್ಳಬೇಕು. ಅವರವರ ಆದ್ಯತೆಗನುಗುಣವಾಗಿ ಸಮಯವನ್ನು ಒಂದರಿಂದ ಒಂದೂವರೆಗಂಟೆವರೆಗೆ ಒಂದೊಂದು ವಿಷಯಕ್ಕೆ ಹಂಚಿಕೊಳ್ಳಬಹುದು. ಮರುದಿನದಿಂದ ಮತ್ತೆ ಇದೇ ಯೋಜನೆ ಪುನರಾವರ್ತನೆ ಆಗಬೇಕು.

ಇನ್ನು ರೀಡಿಂಗ್ ಹಾಲಿಡೇಸ್‍ನಲ್ಲಿ ಇಡೀ ದಿನಕ್ಕೆ ವೇಳಾಪಟ್ಟಿ ಹಾಕಿಕೊಳ್ಳುವುದು ತುಂಬ ಮುಖ್ಯ. ಇಲ್ಲವಾದರೆ ನಮಗೆ ಗೊತ್ತಿಲ್ಲದಂತೆಯೇ ಅಮೂಲ್ಯ ಸಮಯ ಎಲ್ಲೋ ಕಳೆದುಹೋಗಿಬಿಡಬಹುದು. ಸರಿಯಾಗಿ ಪ್ಲಾನ್ ಮಾಡಿಕೊಂಡರೆ ರಜಾದಿನದಲ್ಲಿ ಏನಿಲ್ಲವೆಂದರೂ 10-12 ಗಂಟೆ ಓದಿಗಾಗಿಯೇ ಬಳಸಿಕೊಳ್ಳಬಹುದು. ಉದಾಹರಣೆಗೆ, ಬೆಳಗ್ಗೆ 5ರಿಂದ 8ರವರೆಗೆ ನಿಮ್ಮ ಆಯ್ಕೆಯ ಪ್ರಮುಖ ವಿಷಯವನ್ನು ಅಭ್ಯಾಸ ಮಾಡುವುದು; 8ರಿಂದ 9ರವರೆಗೆ ಒಂದು ಬ್ರೇಕ್ ತೆಗೆದುಕೊಂಡು ಸ್ನಾನ, ತಿಂಡಿ ಪೂರೈಸಿಕೊಂಡರೆ 9ರಿಂದ 11ರವರೆಗೆ ಇನ್ನೊಂದು ಸಬ್ಜೆಕ್ಟ್ ತೆಗೆದುಕೊಳ್ಳಬಹುದು. ಆಮೇಲೆ ಒಂದರ್ಧ ಗಂಟೆ ಬ್ರೇಕ್ ತೆಗೆದುಕೊಂಡು ರಿಫ್ರೆಶ್ ಆದರೆ ಮತ್ತೆ ಮಧ್ಯಾಹ್ನ 1-30ರವರೆಗೂ ಓದಬಹುದು. ಅರ್ಧ ಗಂಟೆ ಲಂಚ್ ಬ್ರೇಕ್ ಎಂದುಕೊಂಡರೆ, ಇನ್ನೊಂದರ್ಧ ಗಂಟೆ ಸಣ್ಣ ನಿದ್ದೆ ಮಾಡಿ ರಿಫ್ರೆಶ್ ಆಗುವುದೂ ತಪ್ಪಲ್ಲ.

ಬಳಿಕ 2-30ರಿಂದ 4-30ರವರೆಗೆ ಒಂದು ಸ್ಲಾಟ್, 5ರಿಂದ 8ರವರೆಗೆ ಇನ್ನೊಂದು ಸ್ಲಾಟ್, 8-30ರಿಂದ 10-30ರವರೆಗೆ ಅಂದಿನ ಕೊನೆಯ ಸ್ಲಾಟ್. ಅಂತೂ ಪ್ರತೀ ಸ್ಲಾಟಿನ ನಡುವೆಯೂ ಒಂದಿಷ್ಟು ಗ್ಯಾಪ್ ತೆಗೆದುಕೊಳ್ಳವುದು ತುಂಬ ಮುಖ್ಯ. ಇಲ್ಲಿ ಯಾವ ಯಾವ ಸಬ್ಜೆಕ್ಟ್‍ಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ನೀವೇ ನಿರ್ಧರಿಸಿಕೊಳ್ಳಬೇಕು. ಬೆಳಗ್ಗೆ 5ರಿಂದ 8 ಎಷ್ಟು ಪ್ರಮುಖವಾದ ಸಮಯವೋ, ಸಂಜೆ 5ರಿಂದ 8 ಕೂಡ ಅಷ್ಟೇ ಪ್ರಮುಖ ಸಮಯ. ಊಟದ ಬಳಿಕ ಕೆಲವರಿಗೆ ಒಂದಿಷ್ಟು ಬಳಲಿಕೆ ಕಾಡಬಹುದು, ಆದರೆ 5ರಿಂದ 8ರ ಅವಧಿ ಮನಸ್ಸು ತುಂಬ ಆಕ್ಟೀವ್ ಆಗಿರುವ ಅವಧಿ.

ಎಲ್ಲ ಸಬ್ಜೆಕ್ಟ್‍ಗಳಿಗೂ ಒಂದೇ ಅಪ್ರೋಚ್‍ನಿಂದ ಅನುಕೂಲವಾಗದು. ಆಯಾ ವಿಷಯಕ್ಕನುಗುಣವಾಗಿ ತಯಾರಿಯ ವಿಧಾನದಲ್ಲೂ ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಗಣಿತವನ್ನೇ ತೆಗೆದುಕೊಳ್ಳಿ. ಅದಕ್ಕೆ ಪ್ರಾಕ್ಟೀಸ್, ಪ್ರಾಕ್ಟೀಸ್, ಪ್ರಾಕ್ಟೀಸ್ ಎಂಬುದೇ ಮೂಲಮಂತ್ರ. ಓದಿ, ಕೇಳಿ ಕಲಿಯುವ ಸಬ್ಜೆಕ್ಟ್ ಅದಲ್ಲ, ಮಾಡಿ ಕರಗತ ಮಾಡಿಕೊಳ್ಳಬೇಕಾದ ಸಬ್ಜೆಕ್ಟ್ ಅದು. ಜಗತ್ತಿನಲ್ಲಿ ಜೀನಿಯಸ್ ಎನಿಸಿದ ಐನ್‍ಸ್ಟೀನ್ ಏನು ಹೇಳಿದ್ದಾನೆ ಗೊತ್ತಾ? ‘ನಾನೇನೂ ತುಂಬ ಬುದ್ಧಿವಂತ ಅಲ್ಲ. ಸಮಸ್ಯೆಗಳೊಂದಿಗೆ ಸ್ವಲ್ಪ ಹೆಚ್ಚು ಹೊತ್ತು ಕಳೆಯುತ್ತೇನೆ ಅಷ್ಟೇ’ ಅಂತ. ಎಷ್ಟೇ ಕಠಿಣ ವಿಷಯವಾದರೂ ನಮ್ಮ ಸಮಯ ಹಾಗೂ ಪ್ರಾಕ್ಟೀಸಿನ ಎದುರು ಸೋಲಲೇ ಬೇಕು. ಈ ಹಂತದಲ್ಲಿ ಮಾಡಬೇಕಾದ ಎರಡನೇ ಕೆಲಸ ಅಂದ್ರೆ ತಪ್ಪುಗಳನ್ನು ಅರ್ಥ ಮಾಡಿಕೊಳ್ಳುವುದು. ಗಣಿತದಲ್ಲಿ ಒಂದು ಸ್ಟೆಪ್‍ನಲ್ಲಿ ತಪ್ಪಾದರೆ ಉಳಿದದ್ದೆಲ್ಲ ತಪ್ಪಾದಂತೆಯೇ ಅಲ್ಲವೇ? ಹಾಗಾಗಿ ಯಾವ ಹಂತದಲ್ಲಿ ತಪ್ಪು ಮಾಡುತ್ತಿದ್ದೇವೆ ಎಂಬುದನ್ನು ಗಮನಿಸಿಕೊಳ್ಳಬೇಕು.

ಇನ್ನೊಂದು ಪ್ರಮುಖ ಸಂಗತಿ ಎಂದರೆ ಬೇಸಿಕ್ಸ್ ಅನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು. ಗಣಿತದಲ್ಲಿ ಫಾರ್ಮುಲಾ ಬಿಟ್ಟು ಬೇರೆ ಏನನ್ನೂ ಬೈಹಾರ್ಟ್‍ಮಾಡುವುದು ತುಂಬ ಕೆಟ್ಟದು. ಅರ್ಥವಾಗದ ಪ್ರಾಥಮಿಕ ವಿಷಯಗಳನ್ನು ಅಧ್ಯಾಪಕರು ಅಥವಾ ಸ್ನೇಹಿತರ ಸಹಾಯದಿಂದ ಆರಂಭದಲ್ಲೇ ಬಗೆಹರಿಸಿಕೊಳ್ಳಬೇಕು. ಗಣಿತದ ಓದಿನಲ್ಲಿ ತಾಳ್ಮೆ ತುಂಬ ಮುಖ್ಯ. ನಿಮ್ಮ ಮನಸ್ಥಿತಿಗೆ ಹೊಂದಿಕೊಳ್ಳುವ ಒಬ್ಬ ಅಥವಾ ಇಬ್ಬರು ಗೆಳೆಯರಿದ್ದರೆ ಅವರೊಂದಿಗೆ ಅಭ್ಯಾಸ ಮಾಡುವುದರಿಂದ ಅನುಕೂಲವಾಗಬಹುದು. ಅನೇಕ ಸಲ ಗಣಿತ ನಮ್ಮ ನಿಜ ಬದುಕಿಗೆ ತುಂಬ ಹತ್ತಿರವಾಗಿರುತ್ತದೆ. ದಿನನಿತ್ಯದ ಉದಾಹರಣೆಗಳೊಂದಿಗೆ ಅದನ್ನು ಸಮೀಕರಿಸಿಕೊಂಡಾಗ ಬೇಗ ಅರ್ಥವಾಗುತ್ತದೆ ಮತ್ತು ಮರೆತು ಹೋಗುವುದಿಲ್ಲ.

ಇನ್ನು ವಿಜ್ಞಾನಕ್ಕೆ ಬಂದರೆ, ಗೆಳೆಯನೊಬ್ಬನಿಗೆ ಪಾಠ ಮಾಡುವ ವಿಧಾನ ತುಂಬ ಉಪಯುಕ್ತ. ಇದರಿಂದ ವಿಷಯಗಳು ಮನಸ್ಸಿನಲ್ಲಿ ತುಂಬ ಗಟ್ಟಿಯಾಗಿ ನೆಲೆಯಾಗುತ್ತವೆ. ಓದುತ್ತಲೇ ಪಾಯಿಂಟ್ಸ್ ಮಾಡಿಕೊಳ್ಳುವುದು, ಈಕ್ವೇಶನ್‍ಗಳನ್ನು ಪ್ರತ್ಯೇಕ ಕಾರ್ಡ್‍ಗಳಲ್ಲಿ ಬರೆದಿಟ್ಟುಕೊಳ್ಳುವುದು, ಬೇಸಿಕ್ಸ್ ಯಾವುದನ್ನೂ ಬಿಡದೆ ಅರ್ಥ ಮಾಡಿಕೊಳ್ಳುವುದು, ಓದಿದ್ದನ್ನು ಆಗಾಗ ನೆನಪು ಮಾಡಿಕೊಳ್ಳಲು ಪ್ರಯತ್ನಿಸುವುದು, ಮಾಕ್ ಟೆಸ್ಟ್‍ಗಳನ್ನು ಬರೆಯುವುದು ಬಹಳ ಅಗತ್ಯ. ಕೊನೇ ಕ್ಷಣದಲ್ಲಿ ಹೊಸ ಟಾಪಿಕ್ ಅನ್ನು ಓದಲು ಹೊರಡದಿರುವುದೇ ಒಳ್ಳೆಯದು.

ಸಿಬಂತಿ ಪದ್ಮನಾಭ ಕೆ. ವಿ.

ಸೋಮವಾರ, ಸೆಪ್ಟೆಂಬರ್ 30, 2019

NET ಪರೀಕ್ಷೆಗೆ ನೆಟ್ಟಗೆ ತಯಾರಾಗಿ!

01 ಒಕ್ಟೋಬರ್ 2019ರ ಉದಯವಾಣಿ (ಜೋಶ್ ಪುರವಣಿ)ಯಲ್ಲಿ ಪ್ರಕಟವಾದ ಲೇಖನ

ಏನಾದರಾಗಲಿ, ಈ ಬಾರಿ ನೆಟ್ ಪರೀಕ್ಷೆ ಪಾಸಾಗಿಬಿಡಬೇಕು ಎಂದು ಗಟ್ಟಿ ಮನಸ್ಸು ಮಾಡುತ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿದೆ. ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ಸಾಫ್ಟ್‍ವೇರ್ ಇಂಜಿನಿಯರುಗಳಂತೆ ಸಂಬಳ ಪಡೆಯುತ್ತಿರುವುದು, ಇಂತಹ ಹುದ್ದೆಗೆ ಆಯ್ಕೆಯಾಗಲು ನೆಟ್ (NET) ಪರೀಕ್ಷೆ ಪ್ರಾಥಮಿಕ ಅರ್ಹತೆಯಾಗಿರುವುದೇ ಇದಕ್ಕೆ ಪ್ರಮುಖ ಕಾರಣ.

ಯುಜಿಸಿ-ಎನ್‍ಇಟಿ ಹಿಂದಿನಿಂದಲೂ ಒಂದು ಪ್ರತಿಷ್ಠಿತ ಪರೀಕ್ಷೆ. ಅದನ್ನು ತೇರ್ಗಡೆಯಾದವರೆಲ್ಲರಿಗೂ ಸರ್ಕಾರಿ ನೇಮಕಾತಿ ಖಾತ್ರಿಯಲ್ಲವಾದರೂ, ತೇರ್ಗಡೆಯಾಗುವುದೇ ಒಂದು ಹೆಮ್ಮೆಯ ಸಂಗತಿ. ಒಮ್ಮೆ ತೇರ್ಗಡೆಯಾದರೆ ಅದು ಜೀವಮಾನದ ಅರ್ಹತೆ - ಅದಕ್ಕೆ ಎಕ್ಸ್‍ಪಯರಿ ಡೇಟ್ ಇಲ್ಲ; ಅವಕಾಶ ಕೂಡಿ ಬಂದಾಗ ಈ ಅರ್ಹತೆ ಬೆನ್ನಿಗೆ ನಿಲ್ಲುತ್ತದೆ. ಖಾಸಗಿ ಕಾಲೇಜುಗಳೂ ನೆಟ್ ತೇರ್ಗಡೆಯಾದ ಅಭ್ಯರ್ಥಿಗಳಿಗೇ ಮಣೆ ಹಾಕುತ್ತವೆ. ಅತ್ಯುನ್ನತ ಶ್ರೇಣಿಯಲ್ಲಿ ನೆಟ್ ತೇರ್ಗಡೆಯಾದವರು ಪಿಎಚ್‍ಡಿ ಸಂಶೋಧನೆ ಕೈಗೊಳ್ಳುವುದಕ್ಕೆ ಸರ್ಕಾರದಿಂದ ಆಕರ್ಷಕ ಶಿಷ್ಯವೇತನ (JRF) ಪಡೆಯುವುದೂ ನೆಟ್ ಜನಪ್ರಿಯತೆಗೆ ಇನ್ನೊಂದು ಕಾರಣ.

ಕಷ್ಟದ ಪರೀಕ್ಷೆಯೇ?
ಕಷ್ಟವೆನ್ನುವವರಿಗೆ ಕಷ್ಟ, ಸುಲಭವೆನ್ನುವವರಿಗೆ ಸುಲಭ. ಈಜು ಬಲ್ಲವರಿಗೆ ಅದೊಂದು ಆಟ, ನಿಂತು ನೋಡುವವರಿಗೆ ಆತಂಕ. ಆದರೆ ಇದು ಎಂ.ಎ., ಎಂಎಸ್ಸಿ ಪರೀಕ್ಷೆಗಳನ್ನು ಬರೆದಂತೆ ಅಲ್ಲ. ರಾಷ್ಟೀಯ ಅರ್ಹತಾ ಪರೀಕ್ಷೆ. ತೇರ್ಗಡೆಯಾದವರು ದೇಶದ ಯಾವ ಭಾಗದಲ್ಲಾದರೂ ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಬಹುದು. ಸ್ನಾತಕೋತ್ತರ ಹಂತದ ಪಠ್ಯಕ್ರಮವೇ ಆದರೂ, ಪರೀಕ್ಷಾ ವಿಧಾನ ಹಾಗೂ ಪ್ರಶ್ನೆಗಳ ಸಂಕೀರ್ಣತೆಯಿಂದಾಗಿ ಗಟ್ಟಿ ಮನಸ್ಸು, ಅಪಾರ ಬದ್ಧತೆ ಹಾಗೂ ಶ್ರದ್ಧೆಯ ತಯಾರಿಯನ್ನು ಅಪೇಕ್ಷಿಸುತ್ತದೆ.

ಯಾರು ಬರೆಯಬಹುದು?
ಸ್ನಾತಕೋತ್ತರ ಪದವೀಧರರು ಅಥವಾ ಅದರ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರು ಈ ಪರೀಕ್ಷೆ ಬರೆಯಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ. 55, ಒಬಿಸಿ/ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳು ಶೇ. 50 ಅಂಕ ಪಡೆದಿರಬೇಕು. ಸ್ನಾತಕೋತ್ತರ ಪದವಿ ಅಂತಿಮ ವರ್ಷದಲ್ಲೇ ನೆಟ್ ತೇರ್ಗಡೆಯಾದರೆ, ಪದವಿ ಫಲಿತಾಂಶ ಬಂದಮೇಲಷ್ಟೇ ಅರ್ಹತಾ ಪ್ರಮಾಣಪತ್ರ ದೊರೆಯುತ್ತದೆ.

ನೆಟ್ ಬರೆದು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಹತೆ ಪಡೆಯುವುದಕ್ಕೆ ಗರಿಷ್ಠ ವಯೋಮಿತಿ ಇಲ್ಲ. ಆದರೆ ಸಂಶೋಧನಾ ಫೆಲೋಷಿಪ್ (JRF) ಪಡೆಯಲು ಅರ್ಹರಾಗಬೇಕೆಂದರೆ 30 ವರ್ಷದ ಒಳಗಿನವರಾಗಿರಬೇಕು. ಒಬಿಸಿ/ಎಸ್‍ಸಿ/ಎಸ್‍ಟಿ/ಭಿನ್ನಲಿಂಗಿ ಅಭ್ಯರ್ಥಿಗಳಿಗೆ 35 ವರ್ಷದವರೆಗೆ ಅವಕಾಶವಿದೆ.

ಯಾರು ನಡೆಸುತ್ತಾರೆ?
ಹಿಂದೆ ಎನ್‍ಇಟಿ ಪರೀಕ್ಷೆಗಳನ್ನು ವಿಶ್ವವಿದ್ಯಾನಿಲಯ ಅನುದಾನ ಆಯೋಗ (UGC) ನಡೆಸುತ್ತಿತ್ತು. ಈಗ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಿಂದ ಸ್ಥಾಪಿತವಾದ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುತ್ತದೆ. ಮಾನವಿಕ ವಿಷಯಗಳ (ಕಲೆ, ವಾಣಿಜ್ಯ, ಸಾಹಿತ್ಯ) ಎನ್‍ಇಟಿ ಪರೀಕ್ಷೆಗೆ ಯುಜಿಸಿ ಪ್ರಾಧಿಕಾರವಾದರೆ, ವಿಜ್ಞಾನ ವಿಷಯಗಳ ಎನ್‍ಇಟಿ ಪರೀಕ್ಷೆಗೆ ಯುಜಿಸಿ-ಸಿಎಸ್‍ಐಆರ್ ಪ್ರಾಧಿಕಾರವಾಗಿದೆ. ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (CSIR) ನಮ್ಮ ದೇಶದ ಅತಿದೊಡ್ಡ ಸಂಶೋಧನ ಸಂಸ್ಥೆಗಳಲ್ಲೊಂದು. ಎರಡೂ ಪರೀಕ್ಷೆಗಳಿಗೆ ಬೇರೆಬೇರೆ ಸಮಯದಲ್ಲಿ ಪ್ರತ್ಯೇಕ ಅಧಿಸೂಚನೆ, ಪ್ರಕ್ರಿಯೆ ನಡೆಯುತ್ತದೆ.

ಮಾನವಿಕ ವಿಭಾಗದಲ್ಲಿ ಸುಮಾರು 100 ವಿಷಯಗಳಲ್ಲಿ ಎನ್‍ಇಟಿ ಪರೀಕ್ಷೆ ತೆಗೆದುಕೊಳ್ಳಬಹುದು. ವಿಜ್ಞಾನ ವಿಷಯಗಳಲ್ಲಿ ರಾಸಾಯನಿಕ ವಿಜ್ಞಾನ, ಭೂ ವಿಜ್ಞಾನ, ಜೀವ ವಿಜ್ಞಾನ, ಗಣಿತಶಾಸ್ತ್ರೀಯ ವಿಜ್ಞಾನ ಹಾಗೂ ಭೌತಶಾಸ್ತ್ರೀಯ ವಿಜ್ಞಾನಗಳೆಂಬ ಐದು ವಿಭಾಗಗಳಿವೆ. ತಾವು ಎಂಎಸ್ಸಿ ಓದಿದ ವಿಷಯದ ಎನ್‍ಇಟಿಯನ್ನು ಸಂಬಂಧಿತ ವಿಭಾಗದಲ್ಲಿ ಬರೆಯಬಹುದು. ಹಿಂದೆ ಇಂಜಿನಿಯರಿಂಗ್ ವಿಷಯಗಳಿಗೂ ಎನ್‍ಇಟಿ ನಡೆಯುತ್ತಿತ್ತು, ಈಗ ಇಲ್ಲ.

ಹೇಗಿರುತ್ತದೆ ನೆಟ್?
ಈಗ ಎನ್‍ಇಟಿ ಪರೀಕ್ಷೆ ಆನ್‍ಲೈನ್ ಮಾದರಿಯಲ್ಲಿ ನಡೆಯುತ್ತದೆ. ಕಲೆ/ವಾಣಿಜ್ಯ/ಸಾಹಿತ್ಯ ವಿಷಯಗಳಲ್ಲಿ ಎರಡು ಪ್ರತ್ಯೇಕ ಪತ್ರಿಕೆಗಳಿದ್ದು ಒಟ್ಟು ಮೂರು ಗಂಟೆಯ ಅವಧಿ ಇರುತ್ತದೆ. ಪ್ರಶ್ನೆಗಳು ಬಹುಆಯ್ಕೆಯ ವಸ್ತುನಿಷ್ಠ ಮಾದರಿಯವು. ಮೊದಲನೇ ಪತ್ರಿಕೆ ಎಲ್ಲ ವಿಷಯಗಳ ಅಭ್ಯರ್ಥಿಗಳಿಗೂ ಸಾಮಾನ್ಯ. ಇದರಲ್ಲಿ ಎರಡು ಅಂಕಗಳ 50 ಪ್ರಶ್ನೆಗಳಿದ್ದು ಅವು ಬೋಧನೆ ಹಾಗೂ ಸಂಶೋಧನ ಕೌಶಲಗಳಿಗೆ ಸಂಬಂಧಪಟ್ಟವು. ಎರಡನೇ ಪತ್ರಿಕೆ ಆಯಾ ಅಭ್ಯರ್ಥಿಗಳ ಸ್ನಾತಕೋತ್ತರ ಪದವಿಯಲ್ಲಿ ಓದಿದ ವಿಷಯಗಳಿಗೆ ಸಂಬಂಧಪಟ್ಟವು; ಉದಾ: ಇತಿಹಾಸ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ವಾಣಿಜ್ಯಶಾಸ್ತ್ರ, ಕನ್ನಡ, ಇಂಗ್ಲಿಷ್, ಇತ್ಯಾದಿ. ಇದರಲ್ಲಿ ತಲಾ ಎರಡು ಅಂಕಗಳ 100 ಪ್ರಶ್ನೆಗಳಿರುತ್ತವೆ. ಎರಡೂ ಪರೀಕ್ಷೆಗಳ ನಡುವೆ ಬ್ರೇಕ್ ಇಲ್ಲ. ಪ್ರಶ್ನೆಗಳ ನಡುವೆ ಆಯ್ಕೆ ಇಲ್ಲ, ನೆಗೆಟಿವ್ ಮಾರ್ಕಿಂಗ್ ಕೂಡ ಇಲ್ಲ.

ವಿಜ್ಞಾನ ವಿಷಯಗಳಲ್ಲಿ ಮೂರು ಗಂಟೆ ಅವಧಿಯ ಒಂದೇ ಪರೀಕ್ಷೆ. ಎರಡು ಪತ್ರಿಕೆಗಳಿಲ್ಲ. 200 ಅಂಕಗಳ ಬಹು ಆಯ್ಕೆಯ ವಸ್ತುನಿಷ್ಠ ಮಾದರಿಯ ಪತ್ರಿಕೆ. ಇದರಲ್ಲಿ ಮೂರು ವಿಭಾಗಗಳಿರುತ್ತವೆ: ಮೊದಲನೇ ಭಾಗ (30 ಅಂಕ) ಎಲ್ಲರಿಗೂ ಸಾಮಾನ್ಯ; ಎರಡನೇ ಭಾಗ (70 ಅಂಕ) ಅವರವರ ಎಂಎಸ್ಸಿ ವಿಷಯಗಳಿಗೆ ಸಂಬಂಧಿಸಿದ್ದು; ಮೂರನೇ ಭಾಗ (100 ಅಂಕ) ಅದೇ ವಿಷಯ, ಕೊಂಚ ಹೆಚ್ಚಿನ ಸಂಕೀರ್ಣತೆ ಹೊಂದಿರುವ ಪ್ರಶ್ನೆಗಳಿರುತ್ತವೆ. ಇಲ್ಲಿ ಪ್ರಶ್ನೆಗಳ ಆಯ್ಕೆಯೂ ಇರುತ್ತದೆ, ನೆಗೆಟಿವ್ ಮಾರ್ಕಿಂಗ್ ಕೂಡ ಇರುತ್ತದೆ.

ಪರೀಕ್ಷೆ ಯಾವಾಗ? ಎಲ್ಲಿ?
ನೆಟ್ ಪರೀಕ್ಷೆಯನ್ನು ಜೂನ್ ಹಾಗೂ ಡಿಸೆಂಬರ್ ತಿಂಗಳಲ್ಲಿ- ಅಂದರೆ ವರ್ಷಕ್ಕೆ ಎರಡು ಬಾರಿ ನಡೆಸಲಾಗುತ್ತದೆ. ಈ ಬಾರಿಯ ನೆಟ್ ಪರೀಕ್ಷೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಆರಂಭವಾಗಿದೆ. ಅಕ್ಟೋಬರ್ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಅಕ್ಟೋಬರ್ 10ರ ರಾತ್ರಿವರೆಗೂ ಶುಲ್ಕ ಪಾವತಿಸಬಹುದು. ಸಾಮಾನ್ಯ ವರ್ಗದವರಿಗೆ ರೂ. 1000, ಆರ್ಥಿಕವಾಗಿ ಹಿಂದುಳಿದವರಿಗೆ ಹಾಗೂ ಒಬಿಸಿ ವರ್ಗದವರಿಗೆ ರೂ. 500 ಮತ್ತು ಎಸ್‍ಸಿ/ಎಸ್‍ಟಿ/ವಿಕಲಾಂಗ/ತೃತೀಯಲಿಂಗಿ ಅಭ್ಯರ್ಥಿಗಳಿಗೆ ರೂ. 250 ಶುಲ್ಕವಿರುತ್ತದೆ. ನವೆಂಬರ್ 9ರಿಂದ ಎನ್‍ಟಿಎ ಜಾಲತಾಣ ದಿಂದ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.

ಯುಜಿಸಿ-ಎನ್‍ಇಟಿ ಈ ಬಾರಿ ಡಿಸೆಂಬರ್ 2ರಿಂದ 6ರವರೆಗೆ, ಸಿಎಸ್‍ಐಆರ್-ಎನ್‍ಇಟಿ ಡಿಸೆಂಬರ್ 15ಕ್ಕೆ ನಡೆಯಲಿದೆ. ಎರಡೂ ಪರೀಕ್ಷೆಗಳ ಫಲಿತಾಂಶ ಡಿಸೆಂಬರ್ 31ಕ್ಕೆ ಲಭ್ಯವಾಗಲಿದೆ. ಯುಜಿಸಿ-ಎನ್‍ಇಟಿ ಎರಡು ಪಾಳಿಗಳಲ್ಲಿ ನಡೆಯಲಿದ್ದು, ಬೆಳಗ್ಗಿನ ಶಿಫ್ಟ್ 9:30ರಿಂದ 12:30ರವರೆಗೆ, ಮಧ್ಯಾಹ್ನದ ಶಿಫ್ಟ್ 2:30ರಿಂದ 5:30ರವರೆಗೆ.

ಆನ್‍ಲೈನ್ ಪರೀಕ್ಷೆಗಾಗಿ ದೇಶದ ವಿವಿಧ ಭಾಗಗಳಲ್ಲಿ ಕಂಪ್ಯೂಟರ್ ಸೌಲಭ್ಯವಿರುವ ಕೇಂದ್ರಗಳನ್ನು ಆಯ್ಕೆ ಮಾಡಲಾಗುತ್ತದೆ. ಹಾಲ್ ಟಿಕೇಟಿನಲ್ಲಿ ಪರೀಕ್ಷೆಯ ಸ್ಥಳ, ದಿನಾಂಕ ಹಾಗೂ ಸಮಯ ನಮೂದಿಸುತ್ತಾರೆ.

ತಯಾರಿ ಹೇಗೆ?
ಎನ್‍ಇಟಿ ಪರೀಕ್ಷೆಗೆ ಕನಿಷ್ಠ ಆರು ತಿಂಗಳ ಗಂಭೀರ ತಯಾರಿ ಬೇಕು. ಮಾನವಿಕ ವಿಷಯಗಳ ಪಠ್ಯಕ್ರಮ https://www.ugcnetonline.in/syllabus-new.php ಜಾಲತಾಣದಲ್ಲಿಯೂ, ವಿಜ್ಞಾನ ವಿಷಯಗಳ ಪಠ್ಯಕ್ರಮ https://csirhrdg.res.in ಜಾಲತಾಣದಲ್ಲಿಯೂ ಲಭ್ಯವಿದೆ. ತಯಾರಿಯ ಮೊದಲು ಪಠ್ಯಕ್ರಮದ ಸಂಪೂರ್ಣ ಪರಿಚಯ ಮಾಡಿಕೊಳ್ಳುವುದು ಅಗತ್ಯ.

ನೆಟ್ ಸಾಮಾನ್ಯ ಪತ್ರಿಕೆಯ ಪಠ್ಯಕ್ರಮದಲ್ಲಿ 10 ಅಧ್ಯಾಯಗಳಿವೆ. ಬೋಧನೆ ಹಾಗೂ ಸಂಶೋಧನೆಯ ಕೌಶಲ, ವಿಷಯ ಗ್ರಹಿಕೆ, ಸಂವಹನ, ಪ್ರಾಥಮಿಕ ಗಣಿತ, ತಾರ್ಕಿಕ ಚಿಂತನೆ, ದತ್ತಾಂಶ ವಿಶ್ಲೇಷಣೆ, ಮಾಹಿತಿ ಸಂವಹನ ತಂತ್ರಜ್ಞಾನ (ICT), ಅಭಿವೃದ್ಧಿ ಮತ್ತು ಪರಿಸರ, ಉನ್ನತ ಶಿಕ್ಷಣ ವ್ಯವಸ್ಥೆ- ಹೀಗೆ ವೈವಿಧ್ಯಮಯ ವಿಷಯಗಳಿರುತ್ತವೆ. ಐಚ್ಛಿಕ ವಿಷಯದ ಪಠ್ಯಕ್ರಮ ಸ್ನಾತಕೋತ್ತರ ಕೋರ್ಸಿಗೆ ಸಮಾನವಾಗಿದ್ದು, ಸಮಗ್ರ ಹಾಗೂ ಆಳವಾದ ಅಧ್ಯಯನ ಅಗತ್ಯ.

ಒಂದು ವೇಳಾಪಟ್ಟಿಯನ್ನು ಹಾಕಿಕೊಂಡು ದಿನದಲ್ಲಿ ಕನಿಷ್ಠ 3-4 ಗಂಟೆಯನ್ನಾದರೂ ಅಭ್ಯಾಸಕ್ಕೆ ಮೀಸಲಿಡುವುದು ಒಳ್ಳೆಯದು. ಪರೀಕ್ಷೆ ವಸ್ತುನಿಷ್ಠ ಮಾದರಿಯದ್ದಾಗಿರುವುದರಿಂದ ಸಣ್ಣಸಣ್ಣ ವಿವರಗಳಿಗೂ ಹೆಚ್ಚಿನ ಗಮನ ಕೊಡುವುದು ಮುಖ್ಯ. ಓದುತ್ತಲೇ ನೋಟ್ಸ್ ಮಾಡಿಕೊಳ್ಳುವುದು ಕೊನೆಯ ಕ್ಷಣದ ರಿವಿಶನ್‍ಗೆ ಬಹಳ ಅಗತ್ಯ. ಈಗ ಮಾರುಕಟ್ಟೆಯಲ್ಲಿ ಎಲ್ಲಾ ವಿಷಯಗಳ ಬಗ್ಗೆ ಸಾಕಷ್ಟು ಪುಸ್ತಕಗಳು ಲಭ್ಯ. ಹತ್ತಾರು ಪುಸ್ತಕಗಳನ್ನು ತಂದು ಗುಡ್ಡೆ ಹಾಕಿ ಗೊಂದಲಕ್ಕೆ ಬೀಳುವುದಕ್ಕಿಂತ ಉತ್ತಮ ಗುಣಮಟ್ಟದ ಒಂದೋ ಎರಡೋ ಪುಸ್ತಕ ಸಾಕು.

ಹಳೆಯ ಪ್ರಶ್ನೆಪತ್ರಿಕೆಗಳ ಅಭ್ಯಾಸ ಅತ್ಯಂತ ಮುಖ್ಯ. ಕನಿಷ್ಠ 7-8 ವರ್ಷಗಳ ಹಿಂದಿನ ಎಲ್ಲ ಪ್ರಶ್ನೆಪತ್ರಿಕೆಗಳನ್ನು ಬಿಡಿಸಲು ಕಲಿತರೆ ಪರೀಕ್ಷೆ ತೇರ್ಗಡೆಯಾಗುವುದರಲ್ಲಿ ಅನುಮಾನವೇ ಇಲ್ಲ. ಆಯಾ ಪರೀಕ್ಷೆಗಳ ವೆಬ್‍ಸೈಟಿನಿಂದ ಅನೇಕ ವರ್ಷಗಳ ಪ್ರಶ್ನೆಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಹಾಗೆ ನೋಡಿದರೆ ಈ ಪರೀಕ್ಷೆಗೆ ಪ್ರತ್ಯೇಕ ಕೋಚಿಂಗ್ ಅನಿವಾರ್ಯವೇನೂ ಅಲ್ಲ. ಪರಿಶ್ರಮಪಟ್ಟು ಸ್ವಂತ ಅಧ್ಯಯನ ಮಾಡಿದರೆ ಸಾಕು. ಈಗಂತೂ ಇಂಟರ್ನೆಟ್ಟಲ್ಲಿ ಧಾರಾಳ ಅಭ್ಯಾಸ ಸಾಮಗ್ರಿಗಳು, ಮಾಕ್ ಟೆಸ್ಟ್ ಗಳು ದೊರೆಯುತ್ತವೆ. ತೀರಾ ಅರ್ಥವಾಗದ ವಿಷಯಗಳಿದ್ದರೆ ಸ್ನೇಹಿತರ ಅಥವಾ ಅಧ್ಯಾಪಕರ ಬಳಿ ಪಾಠ ಹೇಳಿಸಿಕೊಳ್ಳಬಹುದು. ವಿದ್ಯಾರ್ಥಿಗಳಾಗಿರುವಾಗಲೇ ನೆಟ್ ಬರೆಯುವುದು ತಯಾರಿ ದೃಷ್ಟಿಯಿಂದ ತುಂಬ ಒಳ್ಳೆಯದು.

ಉದಾಸೀನ ಸಲ್ಲದು
‘ಮೊದಲನೇ ಪತ್ರಿಕೆ ಜನರಲ್, ಅಷ್ಟಾಗಿ ಓದಿಕೊಳ್ಳದಿದ್ದರೂ ಪರವಾಗಿಲ್ಲ; ಐಚ್ಛಿಕ ಪತ್ರಿಕೆಗೆ ಚೆನ್ನಾಗಿ ತಯಾರಾಗೋಣ’ ಎಂದು ಭಾವಿಸುವವರು ಹೆಚ್ಚು. ಇಲ್ಲೇ ಅವರು ಎಡವುವುದು. ಮೊದಲನೇ ಪತ್ರಿಕೆ ಅಂದುಕೊಂಡಷ್ಟು ಸುಲಭವಲ್ಲ. ಅಂದಾಜಿನ ಮೇಲೆ ಉತ್ತರ ಗುರುತು ಮಾಡುವುದೂ ಸರಿಯಲ್ಲ. ಮೊದಲನೇ ಪತ್ರಿಕೆಯಲ್ಲೇ ತೇರ್ಗಡೆಯಾಗದೆ ಎರಡನೆಯದರಲ್ಲಿ ಉನ್ನತ ಶ್ರೇಣಿ ಪಡೆದೂ ಪ್ರಯೋಜನವಿಲ್ಲ. ಆದ್ದರಿಂದ ಎರಡೂ ಪತ್ರಿಕೆಗಳಿಗೆ ಸಮಾನ ಆದ್ಯತೆ ನೀಡಿ ತಯಾರಿ ನಡೆಸುವವರೇ ಜಾಣರು.

ಎಲ್ಲ ಅಧ್ಯಾಯಗಳನ್ನು ಸಂಪೂರ್ಣವಾಗಿ ಅಭ್ಯಾಸ ಮಾಡುವುದೂ ಅಷ್ಟೇ ಮುಖ್ಯ. ಪ್ರತಿ ಅಧ್ಯಾಯದಿಂದಲೂ ಸಮಾನ ಸಂಖ್ಯೆಯ ಪ್ರಶ್ನೆಗಳನ್ನು ಕೇಳಿರುತ್ತಾರೆ. ಸಾಮಾನ್ಯವಾಗಿ ಜನರಲ್ ಪತ್ರಿಕೆಯ ಮೆಥಮೆಟಿಕಲ್ ರೀಸನಿಂಗ್ & ಆಪ್ಟಿಟ್ಯೂಡ್, ಲಾಜಿಕಲ್ ರೀಸನಿಂಗ್ ಡೇಟಾ ಇಂಟರ್‍ಪ್ರಿಟೇಶನ್ ಅಧ್ಯಾಯಗಳನ್ನು ನಿರ್ಲಕ್ಷಿಸುವವರು ಹೆಚ್ಚು. ಅದರಲ್ಲೂ ಕಲಾ ವಿಭಾಗದ ಅಭ್ಯರ್ಥಿಗಳಿಗೆ ಇವೆಲ್ಲ ಕೊಂಚ ಕಷ್ಟ ಅನಿಸಿ ಬಿಟ್ಟುಬಿಡುವುದೂ ಇದೆ. ಹಾಗೆ ಮಾಡುವುದು ತಪ್ಪು. ಅನೇಕ ಅಭ್ಯರ್ಥಿಗಳು ಮೊದಲ ಪತ್ರಿಕೆಯಲ್ಲಿ ಫೇಲ್ ಆಗುವುದಕ್ಕೆ ಇದೇ ಕಾರಣ. ಒಂದಷ್ಟು ಮಾದರಿ ಪ್ರಶ್ನೆಗಳನ್ನು ಅಭ್ಯಾಸ ಮಾಡಿದರೆ ಇವೆಲ್ಲ ಅಂತ ಕಠಿಣ ವಿಷಯಗಳೇನಲ್ಲ.

ಎರಡನೇ ಪತ್ರಿಕೆಯಲ್ಲಂತೂ ಹೊಂದಿಸಿ ಬರೆಯುವ, ಕಾಲಾನುಕ್ರಮದಲ್ಲಿ ಜೋಡಿಸುವ, ಪ್ರತಿಪಾದನೆ-ತರ್ಕ (Assertion-Reasoning) ಮಾದರಿಯ ಪ್ರಶ್ನೆಗಳೇ ಹೆಚ್ಚಾಗಿರುವುದರಿಂದ ಸಮಯ ಬೇಗನೆ ಕಳೆದುಹೋಗುತ್ತದೆ. ಕೊಂಚ ಏಕಾಗ್ರತೆ ತಪ್ಪಿದರೂ ಚೆನ್ನಾಗಿ ಗೊತ್ತಿರುವ ಪ್ರಶ್ನೆಗೇ ತಪ್ಪು ಉತ್ತರ ಬರೆಯುವ ಸಾಧ್ಯತೆ ಹೆಚ್ಚು. ಹಳೆಯ ಪ್ರಶ್ನೆಪತ್ರಿಕೆಗಳನ್ನು ಹೆಚ್ಚುಹೆಚ್ಚು ಬಿಡಿಸಿದಷ್ಟೂ ಈ ಸಮಸ್ಯೆ ಮನವರಿಕೆ ಆಗುವುದರಿಂದ ಸಂಭವನೀಯ ತಪ್ಪುಗಳಿಂದ ಬಚಾವಾಗಬಹುದು.

ಏನಿದು JRF?
ನೆಟ್ ಪರೀಕ್ಷೆಯನ್ನು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ ಜೂನಿಯರ್ ರಿಸರ್ಚ್ ಫೆಲೋಷಿಪ್ (JRF-Junior Research Fellowship) ಎಂಬ ಬಂಪರ್ ಬಹುಮಾನವಿದೆ. ಪಿಎಚ್‍ಡಿ ಮಾಡಲು ಯುಜಿಸಿ ಪ್ರತೀ ತಿಂಗಳೂ ಕೈತುಂಬ ಫೆಲೋಷಿಪ್ ನೀಡುತ್ತದೆ. ಮೊದಲ ಎರಡು ವರ್ಷ ಪ್ರತೀ ತಿಂಗಳೂ ರೂ. 31,000, ಮುಂದಿನ ಮೂರು ವರ್ಷ (SRF- Senior Research Fellowship) ಪ್ರತೀ ತಿಂಗಳೂ ರೂ. 35,000 ಲಭ್ಯ. ಬೇರೆ ಭತ್ಯೆಗಳೂ ಇವೆ. ಯಾವ ಉದ್ಯೋಗ ಹಿಡಿಯುವ ಆತಂಕವೂ ಇಲ್ಲದೆ ನೆಮ್ಮದಿಯಾಗಿ ಸಂಶೋಧನೆಯಲ್ಲಿ ನಿರತರಾಗಬಹುದು. ಜೆಆರ್‍ಎಫ್ ಬಯಸುವವರು ನೆಟ್ ಅರ್ಜಿ ತುಂಬುವಾಗ ಮಾತ್ರ ‘ಅಸಿಸ್ಟೆಂಟ್ ಪ್ರೊಫೆಸರ್ & ಜೆಆರ್‍ಎಫ್’ ಎಂಬ ಅಂಕಣವನ್ನು ಕಡ್ಡಾಯ ತುಂಬಬೇಕು. ಕೇವಲ ‘ಅಸಿಸ್ಟೆಂಟ್ ಪ್ರೊಫೆಸರ್’ ಎಂದು ತುಂಬಿದರೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದರೂ ಫೆಲೋಷಿಪ್‍ಗೆ ಪರಿಗಣಿಸುವುದಿಲ್ಲ.

ಕೆ-ಸೆಟ್ ಬರೆಯಿರಿ
ನೆಟ್ ಪರೀಕ್ಷೆಗೆ ಸಮಾನವಾಗಿ ರಾಜ್ಯಮಟ್ಟಗಳಲ್ಲಿ ಸೆಟ್ ಪರೀಕ್ಷೆ ನಡೆಸಲಾಗುತ್ತದೆ. ಕರ್ನಾಟಕದಲ್ಲಿ ಕೆಲವು ವರ್ಷಗಳಿಂದ ಮೈಸೂರು ವಿಶ್ವವಿದ್ಯಾನಿಲಯ ಕೆ-ಸೆಟ್ ಪರೀಕ್ಷೆ ನಡೆಸುತ್ತಿದೆ. ಪರೀಕ್ಷೆಯ ವಿಧಾನ, ಮಾದರಿ, ಪಠ್ಯಕ್ರಮ ಎಲ್ಲವೂ ಯುಜಿಸಿ-ನೆಟ್‍ನಂತೆಯೇ ಇರುತ್ತದೆ. ಆದರೆ ಇದನ್ನು ತೇರ್ಗಡೆಯಾದವರು ನಮ್ಮ ರಾಜ್ಯದ ಕಾಲೇಜು, ವಿವಿಗಳಲ್ಲಿ ಮಾತ್ರ ಉದ್ಯೋಗ ಪಡೆಯಬಹುದು, ಬೇರೆ ರಾಜ್ಯಗಳಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. http://kset.uni-mysore.ac.in/ ಜಾಲತಾಣದಲ್ಲಿ ಸಂಪೂರ್ಣ ವಿವರಗಳಿವೆ.

-ಸಿಬಂತಿ ಪದ್ಮನಾಭ ಕೆ. ವಿ.

ಮಂಗಳವಾರ, ಜುಲೈ 30, 2019

ಕನಸಲ್ಲ ಐಎಎಸ್

30 ಜುಲೈ 2019ರಂದು 'ಉದಯವಾಣಿ' 'ಜೋಶ್' ಪುರವಣಿಯಲ್ಲಿ ಪ್ರಕಟವಾದ ಲೇಖನ

ಅಪ್ಪ ಆಟೋ ಡ್ರೈವರ್. ಅಮ್ಮಂದು ಕೂಲಿ ಕೆಲಸ. ಮನೆ ತುಂಬ ಮಕ್ಕಳು. ಬಡತನವೇ ಹೊದ್ದುಕೊಂಡಿರುವ ಕುಟುಂಬ. ಆಗಷ್ಟೇ ಡಿಗ್ರಿ ಪೂರೈಸಿದ್ದ ಅನ್ಸಾರ್ ಶೇಕ್ ಒಂದು ದಿನ ಓಡೋಡಿ ಬಂದು 'ಅಮ್ಮಾ ನಾನು ಪಾಸಾಗ್ಬಿಟ್ಟೆ’ ಎಂದು ಬಿಕ್ಕಳಿಸಿದರೆ ಆತ ಡಿಗ್ರಿ ರಿಸಲ್ಟ್ ಹೇಳುತ್ತಿದ್ದಾನೆ ಎಂದೇ ಎಲ್ಲರೂ ಅಂದುಕೊಂಡಿದ್ದರು. ಅವನು ಪಾಸ್ ಮಾಡಿದ್ದು ಬರೀ ಪದವಿ ಆಗಿರಲಿಲ್ಲ; ಈ ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಕಠಿಣ ಪರೀಕ್ಷೆಯಾದ ಐಎಎಸ್ ಆಗಿತ್ತು! ಆಗಿನ್ನೂ ಅವನಿಗೆ 21 ವರ್ಷ, ಅಂದರೆ ಎಲ್ಲರೂ ಡಿಗ್ರಿ ಪಾಸಾಗುವ ವಯಸ್ಸು. ಅನ್ಸಾರ್ ಶೇಕ್ ಈ ದೇಶದ ಅತ್ಯಂತ ಕಿರಿಯ ಐಎಎಸ್ ಅಧಿಕಾರಿ.

ನನ್ನದು ಮರಾಠವಾಡ ಪ್ರದೇಶದ ಕುಗ್ರಾಮ. ಆರ್ಥಿಕವಾಗಿ ತುಂಬ ಹಿಂದುಳಿದಿರುವ ಕುಟುಂಬ. ಸಾಮಾಜಿಕವಾಗಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವನು. ಅಪ್ಪನ ಮೂವರು ಹೆಂಡತಿಯರಲ್ಲಿ ನನ್ನ ಅಮ್ಮ ಎರಡನೆಯವಳು. ನನ್ನೂರಿನಂತಹ ಹತ್ತಾರು ಹಳ್ಳಿಗಳ ಕಡುಬಡವರಿಗೆ ಒಂದಿಷ್ಟು ನಿರಾಳತೆಯನ್ನು ತಂದುಕೊಟ್ಟ ದಿನ ನನಗೆ ನೆಮ್ಮದಿ ಹಾಗೆಂದು ಅನ್ಸಾರ್ ಹೇಳುತ್ತಿದ್ದರೆ ಇಡೀ ಶೆಡ್‌ಗಾಂವ್ ಗ್ರಾಮವೇ ಆನಂದಬಾಷ್ಪ ಮಿಡಿಯುತ್ತಿತ್ತು.

21 ವರ್ಷ ವಯಸ್ಸು ಐಎಎಸ್ ಪರೀಕ್ಷೆ ಬರೆಯಲು ಕನಿಷ್ಠ ವಯೋಮಿತಿ ಆಗಿದ್ದರೂ ಅದು ಸಾಮಾನ್ಯವಾಗಿ ಎಲ್ಲರೂ ಡಿಗ್ರಿ ಪೂರೈಸಿಕೊಳ್ಳುವ ಪ್ರಾಯ. ನಮ್ಮ ಅನೇಕ ಹುಡುಗರು ಅಲ್ಲಿಯೂ ಯಾವುದಾದರೊಂದು ಪೇಪರ್ ಪಾಸಾಗದೆ ಇನ್ನೂ ಒಂದಷ್ಟು ವರ್ಷ ಒದ್ದಾಡುವುದಿದೆ. ಅಂತಹದರಲ್ಲಿ ಅನ್ಸಾರ್ ಐಎಎಸ್ ಪರೀಕ್ಷೆಯನ್ನೇ ಮಣಿಸಿಬಿಟ್ಟಿದ್ದ.

ಐಎಎಸ್ ಈ ದೇಶದ ಲಕ್ಷಾಂತರ ಯುವಕ-ಯುವತಿಯರ ಹೃದಯದ ಮಿಡಿತ, ಕನಸಿನ ಲೋಕ. ಯುವಕರೇಕೆ, ಇನ್ನೂ ಸ್ಕೂಲುಗಳಲ್ಲಿರುವ ಪುಟ್ಟ ಮಕ್ಕಳಲ್ಲೇ 'ಮುಂದೇನಾಗ್ತೀರಾ?’ ಎಂದು ಕೇಳಿದರೆ 'ಐಎಎಸ್ ಆಫೀಸರ್’ ಎಂದು ಖಡಕ್ ಉತ್ತರಿಸುವವರ ಸಂಖ್ಯೆಯೇ ಬಹಳ. ಅಷ್ಟರ ಮಟ್ಟಿಗೆ ಅದೊಂದು ಬಲುದೊಡ್ಡ ಆಕರ್ಷಣೆ. ತಿಂಗಳಿಗೆ ಆರಂಕಿ ಸಂಬಳ ತರುವ ಸಾಕಷ್ಟು ಉದ್ಯೋಗಗಳಿದ್ದರೂ ಐಎಎಸ್‌ನಂತಹ ಹುದ್ದೆಗಳ ಖದರಿಗೆ ಮಾರು ಹೋಗದವರು ಕಡಿಮೆ.

ಪ್ರತಿವರ್ಷ ಐಎಎಸ್ ಪರೀಕ್ಷೆಗಳಿಗೆ ಅರ್ಜಿ ಹಾಕುವವರ ಸಂಖ್ಯೆ ಏನಿಲ್ಲವೆಂದರೂ ಹತ್ತು ಲಕ್ಷ. ಅವರಲ್ಲಿ ಅಂತಿಮ ರ‍್ಯಾಂಕ್ ಪಟ್ಟಿಯಲ್ಲಿ ಕಾಣಿಸಿಕೊಳ್ಳುವವರು ಸುಮಾರು 1000 ಮಂದಿ. ಇಷ್ಟಾದ ಮೇಲೆ ಐಎಎಸ್, ಐಪಿಎಸ್ ಹುದ್ದೆಗಳಿಗೆ ಆಯ್ಕೆಯಾಗುವವರು ಹೆಚ್ಚೆಂದರೆ 150-200 ಮಂದಿ. ಇವರ ಪೈಕಿ ಮೊದಲ ರ‍್ಯಾಂಕ್ ಪಡೆದುಕೊಳ್ಳುವ ಯುವಕ/ ಯುವತಿ ಎಂತಹ ಛಲದಂಕಮಲ್ಲರಾಗಿರಬಹುದೆಂದು ಊಹಿಸಿನೋಡಿ.

ಬದ್ಧತೆಯ ಅಗ್ನಿಪರೀಕ್ಷೆ
ಐಎಎಸ್ ಎಂದೇ ಜನಪ್ರಿಯವಾಗಿರುವ ನಾಗರಿಕ ಸೇವಾ ಪರೀಕ್ಷೆ ನಮ್ಮ ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದು. ಅದು ಕೇವಲ ಜ್ಞಾನದ ಪರೀಕ್ಷೆಯಲ್ಲ. ವ್ಯಕ್ತಿಯ ಶ್ರದ್ಧೆ, ಬದ್ಧತೆ, ಸಿದ್ಧತೆ, ನಿರಂತರ ಪರಿಶ್ರಮಗಳ ಫಲಶ್ರುತಿ. ಬೌದ್ಧಿಕ ಸಾಮರ್ಥ್ಯ, ದೂರದೃಷ್ಟಿ, ನಾಯಕತ್ವ, ಸಾಧಿಸುವ ಛಲಗಳೆಲ್ಲ ಒಂದಾದ ವ್ಯಕ್ತಿತ್ವದ ಅಳತೆಗೋಲು.

'ಎಲ್ಲ ಕಾಂಪಿಟೀಟಿವ್ ಎಕ್ಸಾಂಗಳನ್ನೂ ಬರೀತಿದ್ದೀನಿ. ಐಎಎಸ್ ನನ್ನ ಅಂತಿಮ ಗುರಿ’ ಎನ್ನುವವರಿಗೆ ಅದು ದಕ್ಕುವ ಹಣ್ಣಲ್ಲ. ಅದೊಂದನ್ನೇ ಗಮ್ಯವಾಗಿಟ್ಟುಕೊಂಡು ಮುನ್ನಡೆಯುವವರ ಮುಡಿಗಷ್ಟೇ ಏರುವ ಯಶಸ್ಸಿನ ಕಿರೀಟ. ಅಂಥದ್ದೊಂದು ಬದ್ಧತೆ ಸಿವಿಲ್ ಸರ್ವಿಸ್ ಪರೀಕ್ಷೆಗಳ ಮೂಲಮಂತ್ರ. ಬದುಕಿನಲ್ಲಿ ದೊಡ್ಡ ಗುರಿಗಳನ್ನು ಸಾಧಿಸಬೇಕಾದರೆ ಸಣ್ಣಪುಟ್ಟ ಆಕರ್ಷಣೆಗಳನ್ನು ತ್ಯಜಿಸುವುದು ಅನಿವಾರ್ಯ ಎಂಬ ಹಿರಿಯರ ಮಾತು ಐಎಎಸ್ ಆಕಾಂಕ್ಷಿಗಳ ಕೈದೀವಿಗೆ. ನೀರು ಬೇಕೆಂದು ಹತ್ತು ಕಡೆ ಗುಂಡಿ ತೋಡುವುದಲ್ಲ, ಅಷ್ಟೂ ಪ್ರಯತ್ನವನ್ನೂ ಒಂದೇ ಕಡೆ ಮಾಡಬೇಕು.

ಯಾರು ಬರೆಯಬಹುದು?
21 ವರ್ಷ ವಯಸ್ಸಿನವರು ಅಂದರೆ ಪದವಿ ಅಂತಿಮ ವರ್ಷದಲ್ಲಿರುವವರು ಐಎಎಸ್ ಪರೀಕ್ಷೆ ಬರೆಯಲು ಅರ್ಹರು. ಬಿಎ, ಬಿಎಸ್ಸಿ, ಬಿಕಾಂ, ಬಿಬಿಎಂ, ಬಿಸಿಎ, ಬಿಎಸ್‌ಡಬ್ಲ್ಯೂ, ಇಂಜಿನಿಯರಿಂಗ್, ಮೆಡಿಕಲ್- ಯಾವ ಡಿಗ್ರಿ ಓದಿದವರೂ ಐಎಎಸ್ ಬರೆಯಬಹುದು. ಹಾಗೆಂದು ಡಿಗ್ರಿ ಮುಗಿಯುತ್ತಿದ್ದಂತೆ ಒಂದು ಅಟೆಮ್ಟ್ ಮಾಡಿಬಿಡೋಣ ಎನ್ನುವುದು ಜಾಣತನವಲ್ಲ. ಏಕೆಂದರೆ ಐಎಎಸ್‌ನಲ್ಲಿ ಪ್ರತಿ ಪ್ರಯತ್ನ ಅಮೂಲ್ಯ.

ಸಾಮಾನ್ಯ ವರ್ಗದ ಅಭ್ಯರ್ಥಿಗಳು ತಮ್ಮ 32ನೇ ವಯಸ್ಸಿನವರೆಗೆ ಆರು ಬಾರಿ ಮಾತ್ರ ಪರೀಕ್ಷೆ ಬರೆಯಬಹುದು. ಹಿಂದುಳಿದ ವರ್ಗಕ್ಕೆ ಸೇರಿದವರು 35 ವರ್ಷದವರೆಗೆ 9 ಬಾರಿ ಬರೆಯಬಹುದು. ಎಸ್‌ಸಿ/ಎಸ್‌ಟಿ ಸಮುದಾಯದ ಅಭ್ಯರ್ಥಿಗಳು 37 ವರ್ಷದವರೆಗೆ ಮಾತ್ರ ಐಎಎಸ್ ಬರೆಯಬಹುದು, ಪ್ರಯತ್ನದ ಮಿತಿ ಇಲ್ಲ.

ಪದವಿ ಮುಗಿದ ಮೇಲೆ ಒಂದೆರಡು ವರ್ಷ ಕಠಿಣ ಪರಿಶ್ರಮಪಟ್ಟ ಬಳಿಕ ಮೊದಲನೇ attempt ಕೊಡುವುದೇ ಬುದ್ಧಿವಂತಿಕೆ. ಆಮೇಲೆ ಪ್ರತಿವರ್ಷ ಪ್ರಯತ್ನಪಟ್ಟರೂ ಎಲ್ಲ ಲಭ್ಯ ಅವಕಾಶಗಳನ್ನು ಬಳಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಎಂ.ಎ. ಎಂಎಸ್ಸಿಯಂತಹ ಸ್ನಾತಕೋತ್ತರ ಪದವಿ ಓದಿದ ಮೇಲೆ ಐಎಎಸ್ ಬರೆಯುತ್ತೇನೆ ಎಂದುಕೊಂಡರೂ ತಪ್ಪಲ್ಲ. ಆದರೆ ಕನಿಷ್ಟ ಪದವಿ ಓದುವಾಗಿಂದಲೇ ತಯಾರಿ ಆರಂಭಿಸುವುದು ತುಂಬ ಮುಖ್ಯ.

ಹೇಗಿರುತ್ತದೆ ಐಎಎಸ್ ಪರೀಕ್ಷೆ?
ಐಎಎಸ್ ಪರೀಕ್ಷೆ ಮೂರು ಹಂತದಲ್ಲಿ ನಡೆಯುತ್ತದೆ: ಸಿವಿಲ್ ಸರ್ವೀಸಸ್ ಆಪ್ಟಿಟ್ಯೂಡ್ ಟೆಸ್ಟ್ (ಪ್ರಿಲಿಮ್ಸ್ ಅಥವಾ ಪೂರ್ವಭಾವಿ ಪರೀಕ್ಷೆ), ಮುಖ್ಯ ಪರೀಕ್ಷೆ ಮತ್ತು ವ್ಯಕ್ತಿತ್ವ ಸಂದರ್ಶನ. ಇವುಗಳ ಪೈಕಿ ಮೊದಲನೆಯದು ಸ್ಕ್ರೀನಿಂಗ್ ಟೆಸ್ಟ್. ವಸ್ತುನಿಷ್ಠ ಮಾದರಿಯ ಎರಡು ಪತ್ರಿಕೆಗಳಿರುತ್ತವೆ. ತಲಾ ಎರಡು ಗಂಟೆ ಅವಧಿಯವು. ಇವುಗಳ ಅಂಕಗಳನ್ನು ರ‍್ಯಾಂಕಿಗೆ ಪರಿಗಣಿಸುವುದಿಲ್ಲವಾದರೂ ಮುಖ್ಯ ಪರೀಕ್ಷೆ ಬರೆಯಲು ಇದರಲ್ಲಿ ತೇರ್ಗಡೆಯಾಗಬೇಕು. ಮುಖ್ಯ ಪರೀಕ್ಷೆ ವಿಸ್ತೃತ ಉತ್ತರ ಮಾದರಿಯದ್ದು. ಇಲ್ಲಿ ಒಂಭತ್ತು ಪತ್ರಿಕೆಗಳನ್ನು ಉತ್ತರಿಸಬೇಕಾಗುತ್ತದೆ. ಇದರಲ್ಲಿ ಆಯ್ಕೆಯಾದ ಮೇಲೆ ಅತ್ಯಂತ ನಿರ್ಣಾಯಕವಾದ ಸಂದರ್ಶನ ಅಥವಾ ವ್ಯಕ್ತಿತ್ವ ಪರೀಕ್ಷೆ. ವಿವಿಧ ವಿಷಯಗಳ ಕುರಿತ ಅಭ್ಯರ್ಥಿಯ ಜ್ಞಾನ, ಸಾಮರ್ಥ್ಯ, ಪ್ರಾಮಾಣಿಕತೆ, ಬದ್ಧತೆ, ನಾಯಕತ್ವ, ದೂರದರ್ಶಿತ್ವ ಮುಂತಾದವುಗಳನ್ನು ತಜ್ಞರ ಸಮಿತಿಯೊಂದು ಒರೆಗಲ್ಲಿಗೆ ಹಚ್ಚುತ್ತದೆ. ಈ ಹಂತವನ್ನೂ ದಾಟಿ ಗೆಲ್ಲುವವನೇ ಐಎಎಸ್ ಶೂರ.

ಏನನ್ನು ಓದಬೇಕು?
ಮೊದಲನೆಯ ಹಂತದ ಪರೀಕ್ಷೆಗೆ ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಹತ್ವದ ಪ್ರಚಲಿತ ವಿದ್ಯಮಾನ, ಭಾರತ ಹಾಗೂ ಸ್ವಾತಂತ್ರ್ಯ ಹೋರಾಟದ ಇತಿಹಾಸ, ಭಾರತೀಯ ಮತ್ತು ಜಾಗತಿಕ ಭೂಗೋಳಶಾಸ್ತ್ರ, ಭಾರತದ ರಾಜಕೀಯ ಮತ್ತು ಆಡಳಿತ ವ್ಯವಸ್ಥೆ, ಸಂವಿಧಾನ, ಪಂಚಾಯತ್ ರಾಜ್, ಆರ್ಥಿಕತೆ, ಬಡತನ, ಪರಿಸರ, ಜೀವ ವೈವಿಧ್ಯತೆ, ಹವಾಮಾನ ಬದಲಾವಣೆ, ಸಾಮಾನ್ಯ ವಿಜ್ಞಾನ ಮುಂತಾದ ವಿಷಯಗಳ ಬಗ್ಗೆ ಓದಿಕೊಳ್ಳಬೇಕು. ಹಾಗೆಯೇ, ವಿಷಯಗ್ರಹಿಕೆ, ಸಂವಹನ ಕಲೆ, ತಾರ್ಕಿಕ ಮತ್ತು ವಿಶ್ಲೇಷಣಾ ಸಾಮರ್ಥ್ಯ, ನಿರ್ಧಾರ ಕೈಗೊಳುವಿಕೆ, ಸಮಸ್ಯೆ ಪರಿಹಾರ, ಸಾಮಾನ್ಯ ಬೌದ್ಧಿಕ ಸಾಮರ್ಥ್ಯ, ಪ್ರಾಥಮಿಕ ಗಣಿತ ಜ್ಞಾನ, ದತ್ತಾಂಶ ವಿಶ್ಲೇಷಣೆ ಮುಂತಾದ ವಿಷಯಗಳ ತಿಳುವಳಿಕೆಯೂ ಇರಬೇಕು.

ಮುಖ್ಯ ಪರೀಕ್ಷೆಯಲ್ಲಿ ಇಂಗ್ಲಿಷ್ ಭಾಷೆ ಮತ್ತು ಯಾವುದಾದರೂ ಭಾರತೀಯ ಭಾಷೆ (ಉದಾ: ಕನ್ನಡ) ಕುರಿತ ಪ್ರತ್ಯೇಕ ಪತ್ರಿಕೆಗಳಿರುತ್ತವೆ. ಮೂರನೆಯ ಪತ್ರಿಕೆ ಪ್ರಬಂಧ ಬರವಣಿಗೆ. ಮುಂದಿನ ನಾಲ್ಕು ಪತ್ರಿಕೆಗಳು ಸಾಮಾನ್ಯ ಅಧ್ಯಯನದ ಬಗ್ಗೆ ಇರುತ್ತವೆ. ಪೂರ್ವಭಾವಿ ಪರೀಕ್ಷೆಗೆ ಹೇಳಿದ ವಿಷಯಗಳೇ ಇಲ್ಲಿ ಹೆಚ್ಚು ಆಳ ಮತ್ತು ವಿಸ್ತಾರವಾಗಿ ಇರುತ್ತವೆ. ಕೊನೆಯ ಎರಡು ಪತ್ರಿಕೆಗಳು ನಮ್ಮ ಐಚ್ಛಿಕ ವಿಷಯದ ಬಗ್ಗೆ ಇರುತ್ತವೆ. ಯುಪಿಎಸ್‌ಸಿ ಸೂಚಿಸುವ 26 ವಿಷಯಗಳ ಪೈಕಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇವುಗಳಲ್ಲಿ ನಾವು ಪದವಿಯಲ್ಲಿ ಓದಿದ ಯಾವುದಾದರೊಂದು ವಿಷಯ ಇದ್ದೇ ಇರುತ್ತದೆ.

ಯುಪಿಎಸ್ಸಿ ನೀಡುವ ಐಚ್ಛಿಕ ವಿಷಯಗಳ ಪಟ್ಟಿ ಹೀಗಿದೆ: ಕೃಷಿ, ಪಶುಸಂಗೋಪನೆ & ಪಶು ವೈದ್ಯಕೀಯ, ವೈದ್ಯಕೀಯ ವಿಜ್ಞಾನ,  ಮಾನವಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ,  ಭೌತಶಾಸ್ತ್ರ, ರಸಾಯನಶಾಸ್ತ್ರ, ಸಿವಿಲ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್,  ಗಣಿತಶಾಸ್ತ್ರ, ಸ್ಟಾಟಿಸ್ಟಿಕ್ಸ್, ತತ್ತ್ವಶಾಸ್ತ್ರ,  ಕಾಮರ್ಸ್ & ಅಕೌಂಟೆನ್ಸಿ, ಅರ್ಥಶಾಸ್ತ್ರ, ಭೂಗೋಳಶಾಸ್ತ್ರ, ಭೂಗರ್ಭಶಾಸ್ತ್ರ, ಇತಿಹಾಸ, ಕಾನೂನು, ನಿರ್ವಹಣೆ, ರಾಜ್ಯಶಾಸ್ತ್ರ & ಅಂತಾರಾಷ್ಟ್ರೀಯ ಸಂಬಂಧಗಳು, ಮನಃಶಾಸ್ತ್ರ, ಸಾರ್ವಜನಿಕ ಆಡಳಿತ, ಸಮಾಜಶಾಸ್ತ್ರ, ಸಾಹಿತ್ಯ (23 ವಿವಿಧ ಭಾಷೆಗಳಲ್ಲಿರುವ ಸಾಹಿತ್ಯದ ಆಯ್ಕೆ ಇದೆ).

ತಯಾರಿ ಹೇಗೆ?
ಐಎಎಸ್ ಪರೀಕ್ಷೆಗೆ ಗಂಭೀರವಾಗಿ ತಯಾರಿ ಮಾಡುವವರೆಲ್ಲ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಓದುವುದರಿಂದ ಆರಂಭಿಸುವುದು ಸಾಮಾನ್ಯ. ಐಎಎಸ್ ಪರೀಕ್ಷೆಗೆ ಓದಬೇಕಾಗಿರುವ ಎಲ್ಲ ವಿಷಯಗಳ ಪ್ರಾಥಮಿಕ ಜ್ಞಾನ ಈ ಪಠ್ಯಪುಸ್ತಕಗಳಲ್ಲಿ ಲಭ್ಯವಿರುವುದರಿಂದ 6ನೇ ತರಗತಿಯಿಂದ 12ನೇ ತರಗತಿವರೆಗಿನ ಎಲ್ಲ ಪಠ್ಯಪುಸ್ತಕಗಳನ್ನು ಒಮ್ಮೆ ಓದಿಕೊಳ್ಳುವುದು ಸೂಕ್ತ. ಅದಾದ ಬಳಿಕ ಆಯಾ ವಿಷಯಗಳಿಗೆ ಸಂಬಂಧಿಸಿದ ವಿವಿಧ ಪುಸ್ತಕಗಳನ್ನು ಅಭ್ಯಾಸ ಮಾಡಬೇಕಾಗುತ್ತದೆ.

ಅಂತಹ ಪುಸ್ತಕಗಳ ಪಟ್ಟಿಯನ್ನು ನೋಡಲು ಈ ಲಿಂಕನ್ನು ಬಳಸಿರಿ.

ಈ ಹಂತದಲ್ಲಿ ಐಎಎಸ್ ಪರೀಕ್ಷೆಯ ವಿಸ್ತೃತ ಸಿಲೆಬಸ್ ಅನ್ನು ಅರ್ಥಮಾಡಿಕೊಳ್ಳುವುದು ಮುಖ್ಯ. ಯುಪಿಎಸ್‌ಸಿಯ ವೆಬ್‌ಸೈಟ್  www.upsc.gov.in ನಿಂದ ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು. ಮೇಲೆ ತಿಳಿಸಿದ ವಿವಿಧ ವಿಷಯಗಳಿಗೆ ಸಂಬಂಧಿಸಿದ ಪ್ರತ್ಯೇಕ ಪುಸ್ತಕಗಳು ಹಾಗೂ ಎಲ್ಲ ವಿಷಯಗಳೂ ಇರುವ ಸಿದ್ಧ ಅಧ್ಯಯನ ಸಾಮಗ್ರಿಗಳು ಈಗ ಪುಸ್ತಕದಂಗಡಿಗಳಲ್ಲಿ ಹೇರಳವಾಗಿ ಲಭ್ಯ. ಆದರೆ ಹತ್ತಾರು ಪುಸ್ತಕಗಳನ್ನು ತಂದು ಗುಡ್ಡೆ ಹಾಕಿ ಪ್ರಯೋಜನವಿಲ್ಲ. ಅದರಿಂದ ಗೊಂದಲವೇ ಹೆಚ್ಚು. ಪುಸ್ತಕ ಆಯ್ಕೆ ಮಾಡುವಾಗ ಗುಣಮಟ್ಟದ ಬಗ್ಗೆ ಎಚ್ಚರ ಅಗತ್ಯ.

ಇಂಗ್ಲಿಷ್ ಚೆನ್ನಾಗಿ ಬಲ್ಲವರಿಗೆ ಮಾತ್ರ ಐಎಎಸ್ ಒಲಿಯುತ್ತದೆ ಎಂಬೊಂದು ತಪ್ಪುತಿಳುವಳಿಕೆ ಬಹುಮಂದಿಯಲ್ಲಿದೆ. ಇಂಗ್ಲಿಷ್ ಪ್ರಯೋಜನಕಾರಿ ಎಂಬ ಮಾತು ನಿಜ. ಅದರ ತಿಳುವಳಿಕೆ ಇರುವುದರಿಂದ ಉತ್ತಮ ಪುಸ್ತಕಗಳನ್ನು ಓದಿ ಒಳ್ಳೆಯ ನೋಟ್ಸ್ ಮಾಡಿಕೊಳ್ಳಬಹುದು. ಆದರೆ ಅದೇ ಮುಖ್ಯವಲ್ಲ. ಕನ್ನಡದಲ್ಲೇ ಮುಖ್ಯ ಪರೀಕ್ಷೆಯನ್ನು ಬರೆಯುವುದಕ್ಕೆ ಹಾಗೂ ಸಂದರ್ಶನ ಎದುರಿಸುವುದಕ್ಕೆ ಅವಕಾಶವಿದೆ. ಇಂಗ್ಲಿಷ್ ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಎದೆಗುಂದುವ ಅವಶ್ಯಕತೆ ಇಲ್ಲ. 

ಐಎಎಸ್ ಪಾಸಾಗಲು ದೆಹಲಿ, ಹೈದರಾಬಾದಿನಂತಹ ನಗರಗಳಲ್ಲಿ ಕೋಚಿಂಗ್ ಪಡೆಯುವುದು ಅನಿವಾರ್ಯ ಎಂದು ತಿಳಿದುಕೊಂಡಿರುವವರೂ ಬಹಳ. ಆರ್ಥಿಕವಾಗಿ ಹಿಂದುಳಿದಿರುವವರು ಸಾವಿರಾರು ರುಪಾಯಿ ಖರ್ಚು ಮಾಡಿ ಇಂತಹ ತರಬೇತಿ ಪಡೆಯುವುದು ಹೇಗೆ ಎಂಬ ಆತಂಕವೂ ಇದೆ. ಆದರೆ ಇವೆಲ್ಲ ನಿಜವಲ್ಲ. ಸ್ವಂತ ಅಧ್ಯಯನದಿಂದ ಯಶಸ್ಸು ಸಾಧಿಸಿದ ನೂರಾರು ಮಂದಿ ನಮ್ಮೊಂದಿಗಿದ್ದಾರೆ. ಅತ್ಯುತ್ತಮ ಅಧ್ಯಯನ ಸಾಮಗ್ರಿಗಳಲ್ಲದೆ ಸುಲಭವಾಗಿ ಕೈಗೆಟುಕುವ ಆನ್‌ಲೈನ್ ವೇದಿಕೆಗಳಿಂದ ಅನೇಕ ಬಡಹುಡುಗರ ಕನಸು ನನಸಾಗಿದೆ.

ಅನುಕೂಲವಿದ್ದರೆ ಕೋಚಿಂಗ್ ಪಡೆಯುವ ಯೋಚನೆ ಕೂಡ ಒಳ್ಳೆಯದು. ಉತ್ತಮ ಸಂಸ್ಥೆಗಳನ್ನು ಆಯ್ಕೆ ಮಾಡುವುದರಿಂದ ಸಮಯದ ಉಳಿತಾಯವಾಗುವುದಲ್ಲದೆ, ಉತ್ತಮ ಮಾರ್ಗದರ್ಶನವೂ ಲಭಿಸೀತು. ನಾಗರಿಕ ಸೇವಾ ಪರೀಕ್ಷೆಗಳನ್ನು ಎದುರಿಸುವ ವಿವಿಧ ವರ್ಗಗಳ ಅಭ್ಯರ್ಥಿಗಳಿಗಾಗಿ ಈಗ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳು ಧಾರಾಳವಾಗಿ ಹಣಕಾಸಿನ ಬೆಂಬಲ ನೀಡುತ್ತಿವೆ. ದೊಡ್ಡ ನಗರಗಳಲ್ಲಿರುವ ಪ್ರಸಿದ್ಧ ತರಬೇತಿ ಸಂಸ್ಥೆಗಳ ಶುಲ್ಕವನ್ನು ಸರ್ಕಾರವೇ ತುಂಬಿ ಆಯ್ದ ಅಭ್ಯರ್ಥಿಗಳನ್ನು ಪ್ರೋತ್ಸಾಹಿಸುತ್ತಿದೆ. ನಮ್ಮ ಉತ್ಸಾಹಿ ಯುವಕರು ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು.

ವೇಳಾಪಟ್ಟಿ ಹಾಕಿಕೊಂಡು ಓದುವುದು, ಓದಿದ್ದನ್ನೆಲ್ಲ ಸಂಕ್ಷಿಪ್ತವಾಗಿ ನೋಟ್ಸ್ ಮಾಡಿಕೊಂಡು ಮನನ ಮಾಡುವುದು, ಹಳೆಯ ಪ್ರಶ್ನೆಪತ್ರಿಕೆಗಳನ್ನು ಹೆಚ್ಚಾಗಿ ಅಭ್ಯಾಸ ಮಾಡುವುದು, ಸಮಾನ ಮನಸ್ಕ ಗೆಳೆಯರ ಸ್ಟಡಿ ಸರ್ಕಲ್ ಗಳನ್ನು ಮಾಡಿಕೊಂಡು ವಾರಕ್ಕೊಮ್ಮೆ ಜತೆ ಸೇರಿ ಚರ್ಚಿಸುವುದು, ದಿನಕ್ಕೆ ಕನಿಷ್ಟ ಎರಡು ಗಂಟೆ ವೃತ್ತಪತ್ರಿಕೆಗಳನ್ನು ವಿವರವಾಗಿ ಓದಿ ಟಿಪ್ಪಣಿ ಮಾಡಿಕೊಳ್ಳುವುದು, mock testಗಳನ್ನು ತೆಗೆದುಕೊಳ್ಳುವುದು- ಇವೆಲ್ಲ ಯಶಸ್ಸಿನ ಕೆಲವು ಸೂತ್ರಗಳು.

ಸಾಧಿಸುವ ಛಲವಿದ್ದರೆ ಯಶಸ್ಸಿನ ಬಲ ತಾನಾಗಿಯೇ ಒಲಿದುಬರುತ್ತದೆ. ಕನಸು ಕಂಡರೆ ಸಾಲದು, ಅದಕ್ಕೆ ಕಸುವು ತುಂಬುವ ದೃಢನಿರ್ಧಾರವೂ ಬೇಕಲ್ಲವೇ?

- ಸಿಬಂತಿ ಪದ್ಮನಾಭ ಕೆ. ವಿ.

ಮಂಗಳವಾರ, ಡಿಸೆಂಬರ್ 25, 2018

ಡೆಸ್ಕ್ ಚಿತ್ರಕಥಾ

ಡಿಸೆಂಬರ್ 25, 2018ರ ಉದಯವಾಣಿ 'ಜೋಶ್' ಪುರವಣಿಯಲ್ಲಿ ಪ್ರಕಟವಾದ ಲೇಖನ

ತನ್ನ ವಿದ್ಯಾರ್ಥಿಗಳನ್ನು ಕುರಿತು ಕಾಲೇಜು ಮೇಷ್ಟ್ರೊಬ್ಬ ಶತದಡ್ಡರು ನಾಲಾಯಕ್ಕುಗಳು ಎಂದು ಎಂದಾದರೂ ರೇಗಿದ್ದಾನೆ ಎಂದರೆ ಆತ ಆವರೆಗೆ ಇಡೀ ತರಗತಿಗೆ ಒಮ್ಮೆಯೂ ಪ್ರದಕ್ಷಿಣೆ ಬಂದಿಲ್ಲವೆಂದೇ ಅರ್ಥ. ಬಂದಿದ್ದರೆ ಆತನ ತರಗತಿಯಲ್ಲಿರುವ ಸಿನಿಮಾ ಹೀರೋಗಳು, ಅಮರ ಪ್ರೇಮಿಗಳು, ಮಹಾಕವಿಗಳು, ತತ್ತ್ವಜ್ಞಾನಿಗಳ ಬಗ್ಗೆ ಅವನಿಗೆ ಜ್ಞಾನೋದಯವಾಗದೇ ಇರುತ್ತಿರಲಿಲ್ಲ.

'ರಾತ್ರಿಯಿಡೀ ಓದಿಯೂ ಏನೂ ಬರಿಯಕ್ಕೆ ಹೊಳೀತಿಲ್ರೀ. ದಯಮಾಡಿ ಪಾಸು ಮಾಡಿ ಸರಾ...’ ಎಂದು ಉತ್ತರ ಪತ್ರಿಕೆಯ ಕೊನೆಯಲ್ಲಿ ಸಾಷ್ಟಾಂಗ ಸಮಸ್ಕಾರ ಸಮೇತ ವಿನಂತಿ ಮಾಡಿಕೊಳ್ಳುವ ಉತ್ತರ ಭೂಪರೂ ಕ್ಲಾಸಿನಲ್ಲಿ ಕುಳಿತರೆಂದರೆ ಅವರ ಸುಪ್ತ ಪ್ರತಿಭೆ ತಾನಾಗೇ ಚಿಗುರಲು ಆರಂಭಿಸುತ್ತದೆ. ಅದರಿಂದ ಒಡಮೂಡುವ ಪ್ರಕಾರವೇ ಸಾರಸ್ವತ ಲೋಕದಲ್ಲಿ ತೀರಾ ವಿಶಿಷ್ಟವೆನಿಸುವ ಡೆಸ್ಕ್ ಸಾಹಿತ್ಯ. ತೀರಾ ಬೋರು ಹುಟ್ಟಿಸುವ ಮೇಷ್ಟ್ರುಗಳೇ ಇಂತಹ ಪ್ರತಿಭೆಗಳ ನಿಜವಾದ ಪ್ರೇರಣೆಯಾಗಿರುವುದರಿಂದ ಅವರನ್ನು ಸಾಹಿತ್ಯ ಪೋಷಕರು ಎಂದು ಎಲ್ಲ ರೀತಿಯಿಂದಲೂ ಒಪ್ಪಿಕೊಳ್ಳಬಹುದು.

ಡೆಸ್ಕ್ ಸಾಹಿತ್ಯಕ್ಕೆ ಹಲವು ಆಯಾಮಗಳಿದ್ದರೂ ಅದರಲ್ಲಿ ಪ್ರೇಮಸಾಹಿತ್ಯಕ್ಕೇ ಸಿಂಹಪಾಲು. ಅಲ್ಲದೆ, ಇಂತಹ ಸಾಹಿತಿಗಳ ಪೈಕಿ ಹುಡುಗರದ್ದೇ ಬಹುಸಂಖ್ಯೆ ಎಂಬ ವೈಜ್ಞಾನಿಕ ಸತ್ಯವನ್ನು ಯಾವ ಸಂಶೋಧನೆಯೂ ಇಲ್ಲದೆ ದೃಢೀಕರಿಸಬಹುದು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಎಲ್ಲದರಲ್ಲೂ ಹುಡುಗಿಯರದ್ದೇ ಮೇಲುಗೈ ಎಂದು ಪದೇಪದೇ ಮುಖಪುಟದಲ್ಲಿ ಬರೆಯುವ ಪತ್ರಿಕೆಗಳು ಡೆಸ್ಕ್ ಸಾಹಿತ್ಯ ನಿರ್ಮಾಣದಲ್ಲಿ ಹುಡುಗರದ್ದೇ ಮೇಲುಗೈ ಎಂಬುದನ್ನು ಬೇಷರತ್ತಾಗಿ ಪ್ರಕಟಿಸಬೇಕಾಗುತ್ತದೆ.
ಮೇಘಸಂದೇಶದ ಬಳಿಕ ಪ್ರೇಮಪತ್ರಗಳ ಕಾಲ ಸರಿದುಹೋಗಿ ವಾಟ್ಸಾಪು ಅವತರಿಸಿದರೂ ಡೆಸ್ಕಿನ ಮೇಲೆ ಪ್ರೇಮನಿವೇದನೆ ಮಾಡುವ ಸಂಪ್ರದಾಯಕ್ಕೆ ಎಳ್ಳಿನಿತೂ ಧಕ್ಕೆಯಾಗಿಲ್ಲ. ಯಾವುದಾದರೂ ಡೆಸ್ಕಿನ ಮೇಲೆ ಪ್ರೇಮ ಪ್ರತೀಕವಾದ ಹೃದಯದ ಒಂದಾದರೂ ರೇಖಾಚಿತ್ರ ಇಲ್ಲದೇ ಹೋದರೆ ಅಂತಹ ಕಾಲೇಜನ್ನು ಕಾಲೇಜೆಂದು ಕರೆಯುವುದು ಹುಡುಗರಿಗೆ ಮಾಡುವ ಅವಮಾನವೆಂದೇ ಭಾವಿಸಬಹುದು.

ಡೆಸ್ಕಿನ ಮೇಲೆ ಈಗಾಗಲೇ ಇರುವ ಹೃದಯದ ಚಿತ್ರವನ್ನು ಇನ್ನಷ್ಟು ಬಲಪಡಿಸುವ ಹೊಣೆ ಮುಂದಿನ ವರ್ಷಗಳಲ್ಲಿ ಬರುವ ಕಿರಿಯ ತಲೆಮಾರಿನದ್ದು. ಈ ಜವಾಬ್ದಾರಿಯನ್ನು ಅತ್ಯಂತ ಶ್ರದ್ಧೆಯಿಂದ ಜೂನಿಯರ‍್ಸ್ ಮುಂದುವರಿಸುತ್ತಾರೆಂದು ಕನಿಷ್ಟ ಐದು ವರ್ಷ ಹಳೆಯದಾದ ಯಾವ ಡೆಸ್ಕುಗಳನ್ನು ನೋಡಿದರೂ ಹೇಳಬಹುದು. ಡೆಸ್ಕು ಹಳೆಯದಾದಷ್ಟು ಸಾಹಿತ್ಯ ಹೆಚ್ಚು ಗಟ್ಟಿ.

'ಬುಲ್‌ಬುಲ್ ಮಾತಾಡಕಿಲ್ವ?’ ಎಂಬ ತನ್ನ ಬಹುಕಾಲದ ಬೇಡಿಕೆಯನ್ನು ಹುಡುಗಿ ಕೂರುವ ಡೆಸ್ಕಿನ ಮೇಲೆ ಸೂಚ್ಯವಾಗಿ ಬಹಿರಂಗಪಡಿಸಿ ನಾಪತ್ತೆಯಾಗುವ ಬಯಲುಸೀಮೆಯ ಹುಡುಗ, 'ಎನ್’ ಐ ಮಿಸ್ ಯೂ ಎಂದೋ, ಐ ಲವ್ ಯೂ 'ಕೆ’ ಎಂದೋ ಡೆಸ್ಕಿನ ಮೇಲೆ ಗೀಚಿ ಬರೆದದ್ದು ಹುಡುಗನೋ ಹುಡುಗಿಯೋ ಎಂಬ ರಹಸ್ಯವನ್ನು ಕಾಪಾಡಿಕೊಳ್ಳುವ ಅನಾಮಿಕ ಪ್ರೇಮಿ, ಈ ಕಣ್ಣಿರೋದು ನಿನ್ನನ್ನೇ ನೋಡಲು ಚಿನ್ನೂ ಎಂದೋ, ನೀನಿಲ್ಲನ ನಾನು ನೀರಿಲ್ಲದ ಮೀನು ಎಂದೋ ಒಂದೇ ಸಾಲಿನ ಕವಿತೆಯನ್ನು ಬರೆದು ಅಡಗಿ ಕೂರುವ ಭಾವಜೀವಿ- ಎಲ್ಲರೂ ಈ ಸಾಹಿತ್ಯ ವಲಯದ ಆಧಾರ ಸ್ತಂಭಗಳು.

ಆಕ್ಷನ್ ಪ್ರಿನ್ಸ್‌ಗೂ ಡಿಂಪಲ್ ಕ್ವೀನ್‌ಗೂ ಸಿಂಪಲ್ಲಾಗ್ ಲವ್ ಆಯ್ತು ಎಂದು ತನ್ನ ಪ್ರೇಮಕಥನವನ್ನೇ ಸಿನಿಮಾ ಶೈಲಿಯಲ್ಲಿ ಪ್ರಸ್ತುತ ಪಡಿಸುವ ಸುಪ್ತಪ್ರತಿಭೆ, ಆರ್ ಲವ್ಸ್ ಇ: ಗ್ರೇಟ್ ಲವರ್ಸ್ ಫಾರೆವರ್ ಎಂದು ತಾನು ನಿರ್ಮಿಸಲಿರುವ ಹೊಸ ಸಿನಿಮಾದ ಟೈಟಲನ್ನು ಪ್ರಕಟಿಸುವ ಭಾವೀ ನಿರ್ದೇಶಕ, ಕನ್ನಡ ಮೇಷ್ಟ್ರ ಪಾಠ ಕೇಳುತ್ತಲೇ ಪಕ್ಕದ ಬೆಂಚಿನ ಕನಸಿನ ಕನ್ಯೆಯನ್ನು ನೋಡಿ 'ಓ ನನ್ನ ಚೇತನ’ ಎಂದು ಬರೆದು ಅದರ ಸುತ್ತಲೊಂದು ಹೃದಯದ ನಕಾಶೆಯನ್ನು ಕೊರೆವ ಕಳ್ಳಕವಿ- ಇವರೂ ಈ ಸಾಹಿತ್ಯಸಮಾಜದ ಸಕ್ರಿಯ ನಾಗರಿಕರು.

ಯಾವ ಸಿನಿಮಾ ಹೀರೋಗಳು ಹೆಚ್ಚು ಜನಪ್ರಿಯರು, ಪಡ್ಡೆಗಳ ಹೃದಯ ಗೆದ್ದಿರುವ ಚಿತ್ರಗಳು ಯಾವವೆಂದು ತಿಳಿಯಲೂ ಪ್ರತ್ಯೇಕ ಸಮೀಕ್ಷೆಗಳು ಬೇಕಿಲ್ಲ. ಡೆಸ್ಕುಗಳ ಮೇಲೆ ಐದು ನಿಮಿಷ ಕಣ್ಣಾಡಿಸಿಕೊಂಡು ಬಂದರೆ ಧಾರಾಳವಾಯ್ತು. ಎಲ್ಲ ಬಗೆಯ ರಿಯಲ್ ಸ್ಟಾರುಗಳು, ಗೋಲ್ಡನ್ ಸ್ಟಾರ್‌ಗಳು, ರೆಬೆಲ್ ಸಾರ್‌ಗಳು, ಪವರ್ ಸ್ಟಾರ್‌ಗಳು ಸಾಲುಸಾಲಾಗಿ ಪವಡಿಸಿರುತ್ತಾರೆ. ಅದ್ದೂರಿ, ಭರ್ಜರಿ, ಬಹದ್ದೂರ್, ಗಜಕೇಸರಿ, ಜಗ್ಗುದಾದ, ಕಿರಾತಕ, ರಾಮಾಚಾರಿ... ಎಂಬಿತ್ಯಾದಿ ಸಿನಿಮಾಗಳು ಥಿಯೇಟರುಗಳಲ್ಲಿ ಎಷ್ಟು ವಾರ ಓಡುತ್ತವೋ ಗೊತ್ತಿಲ್ಲ, ನಮ್ಮ ಹುಡುಗರ ಕೃಪೆಯಿಂದ ಡೆಸ್ಕುಗಳ ಮೇಲೆ ಒಂದು ಶತಮಾನವಾದರೂ ಬಾಳಿ ಬದುಕುವುದು ಶತಃಸಿದ್ಧ.

ಭರ್ತಿ ಎರಡು ತಿಂಗಳ ಬಳಿಕ ಕ್ಲಾಸಿಗೆ ಹಾಜರಾಗಿ 'ಪ್ರಶೂ ಈಸ್ ಬ್ಯಾಕ್’ ಎಂದು ಡೆಸ್ಕ್ ಮೇಲೆ ಹಾಜರಿ ಹಾಕಿ ಹೋಗಿ ಮತ್ತೆ ಎರಡು ತಿಂಗಳ ನಾಪತ್ತೆಯಾಗುವ ಉಡಾಳ, ಕರುನಾಡ ಸಿಂಗಂ ರವಿ ಚನ್ನಣ್ಣನವರ್ ಎಂದು ದೊಡ್ಡದಾಗಿ ಬರೆದು ಕುಸುರಿ ಕೆಲಸದಿಂದ ಸಿಂಗರಿಸುವ ಅಪ್ರತಿಮ ಅಭಿಮಾನಿ, 'ಎವರಿಬಡಿ ಈಸ್ ಈಕ್ವಲ್ ಬಿಫೋರ್ ಲಾ’ ಎಂಬ ಮೇಷ್ಟ್ರ ಹೇಳಿಕೆಯನ್ನು ಕರಾರುವಾಕ್ಕಾಗಿ ಬರೆದು ಅದರ ಮುಂದೆ 'ಸೋ, ಮುಂದಿನ ಬೆಂಚೂ ಹಿಂದಿನ ಬೆಂಚಿನ ನಡುವೆ ವ್ಯತ್ಯಾಸ ಇಲ್ಲ ತಿಳ್ಕಳಿ’ ಎಂದು ಷರಾ ನಮೂದಿಸುವ ಕೊನೇ ಬೆಂಚಿನ ಹುಡುಗ- ಇವರೆಲ್ಲ ತರಗತಿ ಬಹುಮುಖ ಪ್ರತಿಭೆಗಳಿಂದ ಕೂಡಿದೆಯೆಂಬುದಕ್ಕೆ ಪ್ರಮುಖ ಸಾಕ್ಷಿಗಳು.

ಇಷ್ಟೆಲ್ಲದರ ನಡುವೆ ಭಾರತೀಯ ಸಂವಿಧಾನದ ಪ್ರಮುಖ ಲಕ್ಷಣಗಳು, ಪ್ರಧಾನಮಂತ್ರಿಯ ಅಧಿಕಾರ ಮತ್ತು ಕರ್ತವ್ಯಗಳು, ವಿಜಯನಗರ ಸಾಮ್ರಾಜ್ಯ ಪತನಕ್ಕೆ ಕಾರಣಗಳು, ಸಣ್ಣ ಕೈಗಾರಿಕೆಗಳ ಸಮಸ್ಯೆಗಳು, ಕುಮಾರವ್ಯಾಸನ ಕಾವ್ಯಸೌಂದರ್ಯ ಮತ್ತಿತರ ಘನಗಂಭೀರ ಟಿಪ್ಪಣಿಗಳೂ ಡೆಸ್ಕುಗಳ ಮೇಲೆ ಕಾಣಸಿಗುವುದುಂಟು. ಇವೆಲ್ಲ ತರಗತಿಲ್ಲಾಗಲೀ ಮನೆಯಲ್ಲಾಗಲೀ ಎಂದೂ ಒಂದು ಪುಟ ನೋಟ್ಸ್ ಬರೆಯದ ಮಹಾನ್ ಸೋಮಾರಿಗಳ ಶ್ರದ್ಧೆಯ ಫಲ ಎಂದು ಮೇಲ್ನೋಟಕ್ಕೇ ಹೇಳಬಹುದು. ಪರೀಕ್ಷೆಯಲ್ಲಿ ಪಾಸಾಗುವುದೇ ಈ ಸಾಹಿತ್ಯ ಪ್ರಕಾರದ ಏಕೈಕ ಉದ್ದೇಶ.

ಈ ಬಹುಮುಖ ಪ್ರತಿಭೆಗಳ ನಡುವಿನ ತತ್ತ್ವಜ್ಞಾನಿಗಳ ಬಗ್ಗೆ ಹೇಳದೆ ಹೋದರೆ ಲೇಖನವೇ ಅಪೂರ್ಣವಲ್ಲವೇ? 'ಒಳ್ಳೆಯವರು ನೆನಪು ನೀಡುತ್ತಾರೆ. ಕೆಟ್ಟವರು ಅನುಭವ ನೀಡುತ್ತಾರೆ. ದುಷ್ಟರು ಪಾಠ ಕಲಿಸುತ್ತಾರೆ. ಅತ್ಯುತ್ತಮರು ಸವಿ ನೆನಪು ನೀಡುತ್ತಾರೆ. ಆದ್ದರಿಂದ ಯಾರನ್ನೂ ದೂಷಿಸುವುದು ಸರಿಯಲ್ಲ. ಎಲ್ಲರಿಂದಲೂ ಒಂದು ರೀತಿಯ ಅನುಕೂಲವಿರುತ್ತದೆ...’ - ಎಂಬೊಂದು ಮಾತು ಬರೆದ ಪುಣ್ಯಾತ್ಮ ಕೊನೆಗೆ ತನ್ನ ಹೆಸರು ಬರೆಯಲು ಮನಸ್ಸಾಗದೆ 'ಗೌತಮ ಬುದ್ಧ’ ಎಂದು ಬರೆದಿದ್ದ. ಅವನಿಗೆ ಡೆಸ್ಕಿನ ಮೇಲೆ ಜ್ಞಾನೋದಯವಾದದ್ದಿರಬೇಕು.

ಮಂಗಳವಾರ, ಜನವರಿ 2, 2018

ಚಾರಣ ಹೋಮ! ಒಂದು ಟ್ರೆಕ್ಕಿಂಗ್ ಸ್ಟೋರಿ


ಉದಯವಾಣಿ 'ಜೋಶ್' ಪುರವಣಿಯಲ್ಲಿ ಜನವರಿ 2, 2018ರಂದು ಪ್ರಕಟವಾದ ಲೇಖನ

'ಭಾನುವಾರ ಎಲ್ಲರೂ ಫ್ರೀ ಇದ್ದೀರೇನ್ರೋ? ನಿಮ್ಗೆಲ್ಲ ಓಕೆ ಅಂದ್ರೆ ದೇವರಾಯನದುರ್ಗಕ್ಕೆ ಒಂದು ಟ್ರೆಕ್ಕಿಂಗ್ ಹೋಗ್ಬರೋಣ’
ಅಂದಿದ್ದೇ ತಡ ಇನ್ನೇನು ಸೇತುವೆ ಕಟ್ಟಿಯೇ ಸಿದ್ಧ ಎಂದು ಹೊರಟ ವಾನರ ಸೈನ್ಯದಂತೆ ಇಡೀ ಕ್ಲಾಸು ಜೈ ಎಂದು ಎದ್ದು ನಿಂತಿತು. 'ಅಂದ್ರೆ ನಡ್ಕೊಂಡೇ ಹೋಗೋದಾ ಸಾರ್?’ ಎಂದು ಸೈನ್ಯದ ನಡುವಿನಿಂದ ಕೀರಲು ಅಶರೀರವಾಣಿಯೊಂದು ಕೇಳಿಬಂದದ್ದೂ, 'ಅಲ್ಲ ನನ್ ತಾತ ಫ್ಲೈಟ್ ತರ್ತಾರೆ, ಟೆನ್ಷನ್ ಮಾಡ್ಕೋಬೇಡ’ ಎಂದು ಮತ್ತೊಂದು ದನಿ ಛೇಡಿಸಿದ್ದೂ, 'ಟ್ರೆಕ್ಕಿಂಗ್ ಅಂದ್ರೆ ನಡ್ಕೊಂಡೇ ಹೋಗೋದು ಕಣಮ್ಮಾ’ ಎಂದು ಇನ್ನೊಬ್ಬ ಸ್ಪಷ್ಟೀಕರಣ ಕೊಟ್ಟಿದ್ದೂ ಮುಂದಿನ ಮೂರು ಕ್ಷಣಗಳಲ್ಲಿ ನಡೆದುಹೋಯಿತು.

ಹದಿನೈದೂ ಕಿ.ಮೀ ನಡ್ಕೊಂಡು ಹೋಗೋದು ಬೇಡ, ಆಮೇಲೆ ಬೆಟ್ಟ ಹತ್ತೋದಕ್ಕಾಗಲೀ ಇಳಿಯೋದಕ್ಕಾಗಲೀ ಬ್ಯಾಟರಿ ಉಳಿಯದೆ ಅಲ್ಲೇ ತಪಸ್ಸಿಗೆ ಕೂರುವ ಪರಿಸ್ಥಿತಿ ಬಂದೀತೆಂದು ಯೋಚನೆ ಮಾಡಿ ನಾಮದ ಚಿಲುಮೆಯವರೆಗೆ ಲೋಕಲ್ ಬಸ್ಸಿನಲ್ಲಿ ಹೋಗಿ ಅಲ್ಲಿಂದ ಮುಂದಕ್ಕೆ ನಡೆದುಕೊಂಡು ಹೋಗೋಣವೆಂದು ತೀರ್ಮಾನಿಸಿದ್ದಾಯಿತು.

ಹೊರಟಿತು ಸವಾರಿ
ಅಂತೂ ಭಾನುವಾರದ ಚುಮುಚುಮು ಮುಂಜಾನೆ ಎಲ್ಲರನ್ನೂ ಹೊತ್ತು ತುಮಕೂರಿನಲ್ಲೇ ವರ್ಲ್ಡ್‌ಫೇಮಸ್ಸಾದ ಡಕೋಟಾ ಬಸ್ಸು ಬೆಳಗುಂಬ ಗ್ರಾಮ ದಾಟಿ ಮುಂದಕ್ಕೆ ತೆವಳಿತು. ಅಪರೂಪಕ್ಕೆ ಹುಡುಗ ಹುಡುಗಿಯರಿಂದಲೇ ತುಂಬಿ ತೊನೆದಾಡುತ್ತಿದ್ದ ಬಸ್ಸು ಯಾವ ಕೋನದಿಂದ ನೋಡಿದರೂ ಮದುವೆ ದಿಬ್ಬಣಕ್ಕಿಂತ ಕಡಿಮೆಯಿರಲಿಲ್ಲ. ಅರ್ಧ ಗಂಟೆಯಲ್ಲಿ ನಾವು ನಾಮದ ಚಿಲುಮೆ ತಲುಪಿಯಾಗಿತ್ತು. ಜಿಂಕೆವನಕ್ಕೆ ಸುತ್ತು ಹಾಕಿ, ಬಂಡೆಗಲ್ಲಿನ ನಡುವೆ ವರ್ಷವಿಡೀ ಬತ್ತದೆ ಹರಿಯುವ ಚಿಲುಮೆಯನ್ನು ನೋಡಲು ಮುನ್ನುಗ್ಗಿತು ಕಪಿಸೇನೆ.

ವನವಾಸದ ವೇಳೆ ಕಾಡಿನಿಂದ ಕಾಡಿಗೆ ಸಂಚರಿಸುತ್ತಾ ಶ್ರೀರಾಮ ಈ ಪ್ರದೇಶಕ್ಕೆ ಬಂದಾಗ ನೀರಿನ ಸೆಲೆ ಕಾಣದೆ ತಾನೇ ಬಾಣ ಪ್ರಯೋಗಿಸಿ ಒರತೆಯೊಂದನ್ನು ಚಿಮ್ಮಿಸಿದ ಕತೆಯನ್ನು ತಾನೇ ಕಣ್ಣಾರೆ ಕಂಡಂತೆ ವರ್ಣಿಸಿದಳು ಅದೇ ಏರಿಯಾದ ಮೂಲನಿವಾಸಿ ಸವಿತಾ. ಅಲ್ಲೇ ಸಮೀಪದ ಕಲ್ಲುಮಂಟಪವನ್ನು ಏರಿ ಫೋಟೋ ಸೆಶನ್ ಮುಗಿಸಿಕೊಂಡ ಮೇಲೆ ಆರಂಭವಾಯಿತು ನಿಜವಾದ ಟ್ರೆಕ್ಕಿಂಗ್.

ನಡೆ ಮುಂದೆ ನಡೆ ಮುಂದೆ
ತಂದಾನಿ ತಾನೋ ತಾನಿ ತಂದಾನೋ ಎಂದು ಕೈಕೈ ಹಿಡಿದು ಹುಡುಗಿಯರ ತಂಡ ಮುಂದುವರಿದರೆ ಡಕ್ಕಣಕಾ ಣಕಾ ಜಕಾ ಎಂದು ತಮ್ಮದೇ ಸ್ಟೈಲಲ್ಲಿ ಹೆಜ್ಜೆ ಹಾಕುತ್ತಾ ತಿರುವುಗಳಲ್ಲಿ ಸಾಗಿ ಬೆಟ್ಟದ ಬುಡ ತಲುಪಿತು ಹುಡುಗರ ಗಡಣ. ದುರ್ಗದ ಬಾಗಿಲಲ್ಲಿರುವ ಯೋಗಾನರಸಿಂಹಸ್ವಾಮಿ ದೇವಾಲಯದ ಎದುರೇ ಮನೆಕಟ್ಟಿಕೊಂಡಿರುವ ಕವಿತಾ ಜ್ಯೂಸು ಪಾನಕಗಳೊಂದಿಗೆ ಆಗಲೇ ಸಿದ್ಧವಾಗಿದ್ದರಿಂದ ಬೆಟ್ಟವೇರುವ ಸೈನ್ಯದ ಉತ್ಸಾಹ ಇಮ್ಮಡಿಸಿತು. ತಮ್ಮ ತಮ್ಮ ಟ್ಯಾಂಕ್‌ಗಳನ್ನು ಮತ್ತೊಮ್ಮೆ ಭರ್ತಿ ಮಾಡಿಕೊಂಡ ಹುಡುಗರು ಬೆಟ್ಟದತ್ತ ಸರಭರನೆ ಹೆಜ್ಜೆಯಿಟ್ಟೇಬಿಟ್ಟರು.

ಬ್ಯಾಗ್ ಹೊತ್ತೊಯ್ದ ಕೋತಿ
ಹುಡುಗಿಯರು ಸಲೀಸಾದ ಡಾಂಬಾರು ರಸ್ತೆಯಲ್ಲಿ ಗುಂಪುಗುಂಪಾಗಿ ಗೀಗೀಪದ ಹೊಸೆದುಕೊಂಡು ಸಾಗಿದರೆ ಹುಡುಗರು ತಮ್ಮ ಸಹಜ ಧರ್ಮವನ್ನು ಬಿಡಲಾಗದೆ ಕಲ್ಲುಬಂಡೆಗಳ ನಡುವೆ ಹಾದಿ ಹುಡುಕಿಕೊಂಡು ಏರತೊಡಗಿದರು. ದೇವರಾಯನದುರ್ಗವೆಂದರೆ ಕೇಳಬೇಕೇ? ತಮ್ಮ ಸ್ನೇಹಿತ ವರ್ಗ ಬರುತ್ತಿದೆಯೆಂದು ಮೊದಲೇ ತಿಳಿದವರಂತೆ ಕಾದುಕುಳಿತಿದ್ದವು ನೂರಾರು ಕೋತಿಗಳು. ತಮಗಿಂತಲೂ ಚೆನ್ನಾಗಿ ಬೆಟ್ಟವೇರಲು ಗೊತ್ತಿದ್ದ ಹುಡುಗರನ್ನು ಕಂಡು ಸೋಜಿಗದಿಂದ ತಾವೂ ಮರದಿಂದ ಮರಕ್ಕೆ ನೆಗೆಯುತ್ತಾ ಹಿಂಬಾಲಿಸಿಯೇಬಿಟ್ಟವು. ಚುರುಮುರಿ ಸೌತೆಕಾಯಿ ಮೆಲ್ಲುತ್ತಾ ಬೆಟ್ಟದ ತಪ್ಪಲಿನ ರಮಣೀಯ ಹಸಿರನ್ನು ನಿರಾಳವಾಗಿ ಕಣ್ತುಂಬಿಕೊಳ್ಳುತ್ತಿದ್ದ ಹುಡುಗಿಯರ ಗುಂಪೊಂದು ಕಿಟಾರನೆ ಕಿರುಚಿಕೊಂಡಾಗಲೇ ಕೋತಿಗಳ ನಿಜವಾದ ಕೌಶಲ ಎಲ್ಲರಿಗೂ ಅರ್ಥವಾದದ್ದು. ಕೆಂಪು ಮೂತಿಯ ದಢೂತಿ ಗಡವವೊಂದು ಅನಿತಳ ಹೊಚ್ಚಹೊಸ ಹ್ಯಾಂಡ್‌ಬ್ಯಾಗನ್ನು ಸರಕ್ಕನೆ ಲಪಟಾಯಿಸಿಕೊಂಡು ಹೋಗಿ ಮರದ ತುದಿಯಲ್ಲಿ ಪ್ರತಿಷ್ಠಾಪಿತವಾಗಿತ್ತು.

ಮಿಷನ್ ಬ್ಯಾಗ್ ವಾಪಸಿ
ಜಗತ್ತನ್ನೇ ಗೆದ್ದು ಬರುವ ಉತ್ಸಾಹದಲ್ಲಿ ಬೀಗುತ್ತಿದ್ದ ಹುಡುಗರಿಗೆ ಕೋತಿಯ ಕೈಯಿಂದ ಬ್ಯಾಗನ್ನು ಪಡೆಯುವ ಕೆಲಸ ಮಾತ್ರ ಹರಸಾಹಸವಾಯಿತು. ಮರದಿಂದ ಮರಕ್ಕೆ ಬಂಡೆಯಿಂದ ಬಂಡೆಗೆ ಬ್ಯಾಗ್ ಸಮೇತ ನೆಗೆಯುತ್ತಾ ಕೋತಿ ಮಜಾ ತೆಗೆದುಕೊಳ್ಳುತ್ತಿದ್ದರೆ ಬ್ಯಾಗಿನ ಒಳಗೆ ಪ್ರಾಣವನ್ನೆಲ್ಲಾ ಪ್ಯಾಕ್ ಮಾಡಿಟ್ಟಿದ್ದ ಹುಡುಗಿಯ ಕಣ್ಣುಗಳಿಂದ ಸ್ವತಃ ಜಯಮಂಗಲಿಯೇ ಧಾರಾಕಾರವಾಗಿ ಹರಿಯುತ್ತಿದ್ದಳು. ಅಂತೂ ಹದಿನೈದು ನಿಮಿಷ ಹೋರಾಡಿ ಹುಡುಗರೆಲ್ಲ ಸೋಲೊಪ್ಪಿಕೊಂಡ ಬಳಿಕ ಬ್ಯಾಗನ್ನು ಬಂಡೆಯೊಂದರ ತುದಿಯಲ್ಲಿ ಬಿಟ್ಟು ಮಾಯವಾಯಿತು ಮಂಗ.

ಮರಳಿ ಮನೆಗೆ
ಬೆಟ್ಟದ ತುದಿ ತಲುಪಿ ದುರ್ಗವೇ ಬೆಚ್ಚಿಬೀಳುವಂತೆ ಡ್ಯಾನ್ಸ್ ಮಾಡಿ ಇದ್ದ ಏಕೈಕ ಕೂಲಿಂಗ್ ಗ್ಲಾಸನ್ನೇ ಒಬ್ಬರಾದಮೇಲೊಬ್ಬರಂತೆ ತೊಟ್ಟು ಫೋಟೋ ಹೊಡೆಸಿಕೊಳ್ಳುವ ಹೊತ್ತಿಗೆ ಚಿಪ್ಸು ಪಪ್ಸಾದಿ ಸರಕುಗಳೆಲ್ಲ ಬಹುತೇಕ ಖಾಲಿಯಾಗಿದ್ದವು. ಮಟಮಟ ಮಧ್ಯಾಹ್ನದ ಬಿಸಿಲಿನ ನಡುವೆಯೇ ಬೆಟ್ಟವಿಳಿದು ರಸ್ತೆ ಸೇರಿದಾಗ ಮತ್ತೆ ನಡೆದುಕೊಂಡು ನಗರ ಸೇರುವ ಉತ್ಸಾಹ ಯಾರಿಗೂ ಉಳಿದಿರಲಿಲ್ಲ. ನಡೆದುಕೊಂಡೇ ವಾಪಸ್ ಬಂದೆವೆಂದು ಮರುದಿನ ಪ್ರಚಾರ ಮಾಡುವುದೆಂಬ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದ ಮೇಲೆ ಎಲ್ಲರೂ ಮತ್ತದೇ ಸೂಪರ್ ಡಿಲಕ್ಸ್ ಬಸ್ ಹತ್ತಿದ್ದಾಯಿತು.

ಶನಿವಾರ, ಡಿಸೆಂಬರ್ 9, 2017

ಎಕ್ಸಾಂ ಎಂಬ ಗೊಂದಲಪುರ

28-11-2017ರ 'ಉದಯವಾಣಿ'ಯಲ್ಲಿ ಪ್ರಕಟವಾದ ಲೇಖನ

'ನಿದ್ದೆ ಹತ್ತಿರ ಸುಳಿಯುತ್ತಿಲ್ಲ; ಊಟ ತಿಂಡಿ ರುಚಿಸುತ್ತಿಲ್ಲ; ಮನದೊಳಗೆ ಅದೇನೋ ಆತಂಕ. ದೇವರೇ, ನಾನು ಪ್ರೀತಿಯಲ್ಲಿ ಬಿದ್ದಿದ್ದೀನಾ?'
'ಮಂಕೇ ಅದು ಪ್ರೀತಿಯಲ್ಲ, ಎಕ್ಸಾಂ ಫಿಯರು.'

ಹೌದು, ಜಗತ್ತಿನ ಸಕಲ ಚರಾಚರ ವಸ್ತುಗಳನ್ನೂ ವರ್ಷಕ್ಕೆರಡು ಬಾರಿ ಕಾಡುವ ಅತಿದೊಡ್ಡ ಭಯಕ್ಕೆ ಎಕ್ಸಾಂ ಫಿಯರೆಂದು ಹೆಸರು. ಇಡೀ ಸೆಮಿಸ್ಟರಿನಲ್ಲಿ ಆದ ಪಾಠಗಳನ್ನು ಒಂದೇ ರಾತ್ರಿಯಲ್ಲಿ ಓದುವುದಕ್ಕೆ ತೊಡಗಿ ಅದರ ತುದಿಮೊದಲು ಒಂದೂ ಆರ್ಥವಾಗದೆ ಇನ್ನು ಭೂಮಿಯ ಮೇಲಿನ ಯಾವ ದೇವರೂ ತನ್ನನ್ನು ಕಾಪಾಡನೆಂದು ಬ್ರಾಹ್ಮೀ ಮುಹೂರ್ತದಲ್ಲಿ ಅರ್ಥವಾದಾಗ ಈ ಭಯದ ಜೊತೆಗೆ ಚಳಿಜ್ವರವೂ ಕಾಡುವುದುಂಟು.

ಅತ್ತ ಎಚ್ಚರವೂ ಅಲ್ಲದ ಇತ್ತ ನಿದ್ದೆಯೂ ಅಲ್ಲದ ಬೆಳ್ಳಂಬೆಳಗ್ಗಿನ ಅರೆಪ್ರಜ್ಞಾವಸ್ಥೆಯ ನಡುವೆ ಸುತ್ತಲೂ ಭೋರೆಂದು ಮಹಾಮಳೆ ಸುರಿದಂತೆ, ಅಚಾನಕ್ ಪ್ರವಾಹಕ್ಕೆ ಪ್ರಶ್ನೆಪತ್ರಿಕೆಯ ಬಂಡಲ್‌ಗಳು ಕೊಚ್ಚಿಹೋದಂತೆ, ಪರೀಕ್ಷೆಗಳೆಲ್ಲ ಮೂರು ದಿನದ ಮಟ್ಟಿಗೆ ಮುಂದೂಡಲ್ಪಟ್ಟಿವೆ ಎಂಬ ಸಿಹಿಸುದ್ದಿ ವಾಟ್ಸಾಪಿನಲ್ಲಿ ತೇಲಿಬಂದಂತೆ ಕನಸುಗಳು ಬೀಳುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಆದರೆ ನಿದ್ದೆಯ ಮಂಪರಿನೊಂದಿಗೆ ಕನಸೂ ಹಾರಿಹೋದಾಗ ಎಂತೆಂಥದೋ ಬ್ರೇಕಿಂಗ್ ನ್ಯೂಸ್ ಕೊಡುವ ಟಿವಿಗಳು ಕಡೇ ಪಕ್ಷ ಎಲ್ಲೋ ಪ್ರಶ್ನೆಪತ್ರಿಕೆ ಲೀಕ್ ಆಗಿದೆ, ಪರೀಕ್ಷೆಯನ್ನು ಮುಂದೂಡಲಾಗಿದೆ ಎಂಬ ಫ್ಲಾಶ್ ನ್ಯೂಸನ್ನಾದರೂ ಕೊಡಬಾರದೇ ಎಂದು ಅನ್ನಿಸುವುದುಂಟು.

ಛೇ! ತಿಂಗಳಿಗೊಮ್ಮೆಯಾದರೂ ಪುಸ್ತಕಗಳನ್ನು ತಿರುವಿ ಹಾಕಿರುತ್ತಿದ್ದರೆ ಈಗ ಇಷ್ಟೊಂದು ಟೆನ್ಷನ್ ತೆಗೆದುಕೊಳ್ಳೋ ಪರಿಸ್ಥಿತಿ ಬರುತ್ತಿರಲಿಲ್ಲ. ಹೋಗಲಿ ಹತ್ತು ದಿನದಿಂದ ರೀಡಿಂಗ್ ಹಾಲಿಡೇ ಇರುವಾಗಲಾದರೂ ಒಂದಿಷ್ಟು ಸೀರಿಯಸ್ ಆಗಿ ಓದಿರುತ್ತಿದ್ದರೆ ಕೊಂಚ ನಿರಾಳವಾಗುತ್ತಿತ್ತು. ಯೆಸ್, ಇದೇ ಕೊನೆ, ಇನ್ನು ಮುಂದೆ ಹೀಗಾಗಕೂಡದು. ಮುಂದಿನ ಸೆಮಿಸ್ಟರಿನಲ್ಲಿ ರ‍್ಯಾಂಕ್ ಸ್ಟೂಡೆಂಟ್ ರೀತಿಯಲ್ಲಿ ಓದಬೇಕು ಎಂದು ಇಂತಹ ಚಳಿಜ್ವರದ ನಡುವೆಯೂ ಪ್ರತಿಜ್ಞೆ ಮಾಡುವುದುಂಟು. ಇದೊಂಥರಾ ನ್ಯೂ ಇಯರ್ ರೆಸೊಲ್ಯೂಷನ್ ಇದ್ದ ಹಾಗೆ. ಈ ಪತ್ರಿಜ್ಞೆ ಮತ್ತೆ ನೆನಪಿಗೆ ಬರುವುದು ಮುಂದಿನ ಸೆಮಿಸ್ಟರ್ ಪರೀಕ್ಷೆಗಳು ಆರಂಭವಾದ ಮೇಲೆಯೇ.

ಇಂತಿಪ್ಪ ಗಡಿಬಿಡಿಯ ನಡುವೆ ಪರೀಕ್ಷಾ ಕೇಂದ್ರದತ್ತ ಹೊರಟಾಗ ಎಂದೂ ತಪ್ಪದ ಬಸ್ ಅಂದು ತಪ್ಪಿಸಿಕೊಳ್ಳುವುದುಂಟು. ಬಸ್ ಮಿಸ್ಸಾಗಿದೆ ಎಂದರೆ ಹಾಲ್ ಟಿಕೇಟು, ಐಡಿ ಕಾರ್ಡು, ಕೊನೆಗೆ ಬರೆಯಬೇಕಾಗಿರುವ ಪೆನ್ನೂ ಮನೆಯಲ್ಲೇ ಉಳಿದುಬಿಟ್ಟಿದೆ ಎಂದು ಬೇರೆ ಹೇಳಬೇಕಾಗಿಲ್ಲ. ಪರೀಕ್ಷೆ ಬರೆಯಬೇಕಾಗಿರುವವನು ತನ್ನನ್ನೇ ತಾನು ಮರೆತಿರುವಾಗ ಹಾಲ್ ಟಿಕೇಟಿನಂತಹ ಕ್ಷುಲ್ಲಕ ವಸ್ತುಗಳು ಮರೆತುಹೋಗುವುದು ವಿಶೇಷವಲ್ಲ.

ಅಂತೂ ಪರೀಕ್ಷಾ ಮುಖ್ಯಸ್ಥರ ಕೈಕಾಲು ಹಿಡಿದು ಪರೀಕ್ಷೆ ಬರೆಯುವುದಕ್ಕೆ ಅನುಮತಿ ಪಡೆದು ಎಕ್ಸಾಂ ಹಾಲ್ ಹುಡುಕಿ ಹೊರಟರೆ ಕಣ್ಣೆದುರೇ ಇರುವ ಹಾಲ್ ಕಾಣಿಸದೆ ಈ ಹಾಲಿನಿಂದ ಆ ಹಾಲಿಗೆ, ಆ ಹಾಲಿನಿಂದ ಈ ಹಾಲಿಗೆ ಅಲೆದಾಡುತ್ತಾ ಮತ್ತೆ ಹತ್ತು ನಿಮಿಷ ಕಳೆದುಹೋಗಿರುತ್ತದೆ. ಅಷ್ಟರಲ್ಲಿ ಪ್ರಶ್ನೆಪತ್ರಿಕೆಯೆಂಬ ಭಯಾನಕ ವಸ್ತು ಅದಾಗಲೇ ಎಲ್ಲರ ಕೈಯನ್ನೂ ಅಲಂಕರಿಸಿರುತ್ತದೆ. ಏದುಸಿರು ಬಿಡುತ್ತಾ ಅದನ್ನೂ ಪಡೆದುಕೊಂಡು ಸ್ವಸ್ಥಾನದಲ್ಲಿ ಕುಕ್ಕರಿಸಿ ಪ್ರಶ್ನೆಪತ್ರಿಕೆಯ ಮೇಲೆ ಕಣ್ಣಾಡಿಸಿದರೆ ಮುಂದಕ್ಕೆ ಏನೂ ಕಾಣಲೊಲ್ಲದು. ಸುತ್ತಲೂ ಕತ್ತಲು. ಅದ್ಯಾವ ಭೂಪ ಕ್ಷೆಶ್ಚನ್ ಪೇಪರ್ ತಯಾರಿಸಿದ್ದಾನೋ? ತಾನು ರಾತ್ರಿಯಿಡೀ ಓದಿದ್ದಕ್ಕೂ ಪ್ರಶ್ನೆಪತ್ರಿಕೆಯಲ್ಲಿರುವುದಕ್ಕೂ ಒಂದಿನಿತೂ ತಾಳಮೇಳ ಇಲ್ಲ. ಕುಳಿತಲ್ಲೇ ಭೂಕಂಪ ಸಂಭವಿಸಿ ಭೂಮಿ ಬಾಯ್ದೆರೆದು ತನ್ನನ್ನು ನುಂಗಿಬಿಡಬಾರದೇ ಎಂದು ಆ ಕ್ಷಣ ಅನ್ನಿಸುವುದೂ ಉಂಟು.

'ಯಾಕೋ ತಮ್ಮಾ, ನೀರು ಬೇಕೇನೋ?’ ಪರೀಕ್ಷಾ ಕೊಠಡಿಯಲ್ಲಿ ಮೇಲ್ವಿಚಾರಕನಾಗಿ ನಿಂತಿರುವ ನಾನು ಅಲ್ಲಿಯವರೆಗಿನ ಸಮಸ್ತ ವಿದ್ಯಮಾನಗಳನ್ನೆಲ್ಲ ಊಹಿಸಿಕೊಂಡು ಆತನನ್ನು ಕೇಳುತ್ತೇನೆ. ಗಟಗಟನೆ ಒಂದು ಲೀಟರ್ ನೀರು ಕುಡಿದ ಅವನಿಗೆ ತಾನೆಲ್ಲಿದ್ದೇನೆ ಎಂದು ಅರ್ಥವಾದ ಬಳಿಕ 'ಸುಧಾರಿಸ್ಕೊಳೋ. ಟೆನ್ಷನ್ ಮಾಡ್ಕೋಬೇಡ. ನಿಧಾನವಾಗಿ ಯೋಚಿಸಿ ಬರೆಯೋದಕ್ಕೆ ಶುರುಮಾಡು’ ಎಂದು ಬೆನ್ನುತಟ್ಟುತ್ತೇನೆ.

ಎಕ್ಸಾಂ ಹಾಲ್‌ನಲ್ಲಿ ಪ್ರತಿದಿನ ಇಂತಹ ದೃಶ್ಯಗಳು ಸಾಮಾನ್ಯ. ಪ್ರತೀ ಹಾಲ್‌ನಲ್ಲೂ ಇಂತಹವರು ನಾಲ್ಕೈದು ಮಂದಿಯಾದರೂ ಸಿಗುತ್ತಾರೆ. ನನ್ನ ಮಟ್ಟಿಗಂತೂ ಎಕ್ಸಾಂ ಹಾಲ್ ಒಂದು ಕುತೂಹಲದ ಕೇಂದ್ರ. ನಲ್ವತ್ತು ಮಂದಿ ಪರೀಕ್ಷಾರ್ಥಿಗಳಿದ್ದರೆ ನಲ್ವತ್ತು ಅಧ್ಯಯನದ ವಸ್ತುಗಳಿವೆ ಎಂದೇ ಅರ್ಥ. ಒಬ್ಬೊಬ್ಬರದೂ ಒಂದೊಂದು ಭಾವ, ಒಂದೊಂದು ವರ್ತನೆ. ಅವರನ್ನೆಲ್ಲ ಗಮನಿಸುತ್ತಾ ಮೂರು ಗಂಟೆ ಕಳೆಯುವುದೇ ಒಂದು ಸೊಗಸಾದ ಅನುಭವ.

ಕಣ್ಣುಮುಚ್ಚಿ ಧ್ಯಾನಸ್ಥರಾಗಿರುವವರು ಒಂದಷ್ಟು ಮಂದಿಯಾದರೆ ಕೂದಲೇ ಕಿತ್ತುಹೋಗುವಂತೆ ತಲೆಕೆರೆದುಕೊಳ್ಳುವವರು ಇನ್ನೊಂದಷ್ಟು ಮಂದಿ. ಪ್ರಪಂಚದಲ್ಲಿ ಅತಿಹೆಚ್ಚು ಉಗುರು ತಿನ್ನುವ ಜೀವಿಗಳನ್ನು ನೋಡಬೇಕಾದರೂ ಎಕ್ಸಾಂ ಹಾಲ್‌ಗೇ ಭೇಟಿ ನೀಡಬೇಕು. ಪ್ರಶ್ನೆಪತ್ರಿಕೆ ವಿತರಣೆಯೆಂಬ ದುರ್ಘಟನೆ ನಡೆದ ಮೊದಲ ಅರ್ಧ ಗಂಟೆಯಲ್ಲಿ ಕನಿಷ್ಟ ಅರ್ಧ ಕೆ.ಜಿ. ಉಗುರಾದರೂ ಅಭ್ಯರ್ಥಿಗಳ ಹೊಟ್ಟೆಯಲ್ಲಿ ಕರಗಿ ಬೆವರಾಗಿ ಈಚೆ ಬರುವುದುಂಟು.

ತಲೆ ಮೇಲೆ ಕೈಹೊತ್ತು ಕುಳಿತವರು, ಡೆಸ್ಕ್ ಮೇಲೆ ಮೊಣಕೈಯೂರಿ ಹಣೆ ನೀವಿಕೊಳ್ಳುವವರು, ಪೆನ್ನಿನ ತುದಿ ಕಚ್ಚಿ ವಿರೂಪಗೊಳಿಸುವವರು, ಅಕ್ಕಪಕ್ಕದಲ್ಲಿ ಇರುವವರು ಏನು ಮಾಡುತ್ತಿದ್ದಾರೆ ಎಂದು ಗಮನಿಸುವುದರಲ್ಲೇ ಕಾಲಕಳೆಯುವವರು, ಎಷ್ಟು ಬರೆದರೂ ಪುಟವೇ ತುಂಬುತ್ತಿಲ್ಲವಲ್ಲ ಎಂದು ಶಪಿಸಿಕೊಳ್ಳುವವರು, ಪಕ್ಕದ ಬೆಂಚಿನಲ್ಲಿ ಕುಳಿತಿರುವ ರ‍್ಯಾಂಕ್ ಸ್ಟೂಡೆಂಟ್ ಮೇಲಿಂದ ಮೇಲೆ ಅಡಿಶನಲ್ ಪೇಪರ್ ತೆಗೆದುಕೊಳ್ಳುವುದನ್ನೇ ಜಗತ್ತಿನ ಒಂಬತ್ತನೇ ಅದ್ಭುತವೆಂಬಂತೆ ಬೆರಗಿನಿಂದ ನೋಡುವವರು, ಕಿಟಕಿಯಾಚೆ ಶೂನ್ಯದತ್ತ ದೃಷ್ಟಿ ನೆಟ್ಟು ಓದಿದ್ದನ್ನು ನೆನಪಿಸಿಕೊಳ್ಳಲು ಪ್ರಯತ್ನಿಸುತ್ತಾ ಮಣಮಣ ಮಂತ್ರ ಪಠಿಸುವ, ಕಣ್ಣುಕೊಂಕಿಸುವ ಹುಡುಗ ಹುಡುಗಿಯರು, ಪದೇಪದೇ ವಾಚ್ ನೋಡಿಕೊಳ್ಳುತ್ತಾ ಎದ್ದು ಹೋಗಲು ಇನ್ನೆಷ್ಟು ಹೊತ್ತು ಕಾಯಬೇಕು ಎಂದು ಸಂಕಟಪಡುವವರು, 120 ಕಿ.ಮೀ. ಸ್ಪೀಡಿನಲ್ಲಿ ಬರೆಯುತ್ತಿರುವ ಮುಂದಿನ ಬೆಂಚಿನ ಹುಡುಗಿಯ ತಲೆಯೊಳಗೆ ಏನಿರಬಹುದು ಎಂಬ ವಿಸ್ಮಯದಲ್ಲಿ ಕಣ್ಣರಳಿಸಿ ಕುಳಿತವರು... ಪರೀಕ್ಷಾ ಕೊಠಡಿಯಲ್ಲಿ ಹತ್ತೆಂಟು ಬಗೆಯ ಮಂದಿ.

ವಾರೆಗಣ್ಣಿನಲ್ಲಿ ಅಕ್ಕಪಕ್ಕದವರ ಉತ್ತರಪತ್ರಿಕೆಗಳನ್ನು ಗಮನಿಸುವ, ಅಮಾಯಕರಂತೆ ಪೋಸ್ ಕೊಡುತ್ತಾ ಎದುರು ಕುಳಿತವರ ಉತ್ತರಗಳನ್ನು ಹೇಗೆಂದಹಾಗೆ ನಕಲು ಮಾಡುವ, ಮೇಲ್ವಿಚಾರಕರು ಗಮನಿಸಿದರು ಎಂದು ಗೊತ್ತಾದ ಕೂಡಲೇ ಕುತ್ತಿಗೆ ನೆಟಿಗೆ ತೆಗೆಯಲು ಪಕ್ಕಕ್ಕೆ ಕತ್ತು ತಿರುಗಿಸಿದೆ ಎಂಬ ಹಾಗೆ ತಲೆಯಲ್ಲಾಡಿಸುವ ಕಲೆಯಲ್ಲಂತೂ ಅನೇಕ ಪರೀಕ್ಷಾರ್ಥಿಗಳಿಗೆ ನೂರರಲ್ಲಿ ನೂರು ಅಂಕ.

ಹತ್ತು ನಿಮಿಷ ತಡವಾಗಿ ಎಕ್ಸಾಂ ಹಾಲ್‌ಗೆ ಬಂದ ಆಸಾಮಿ ಹತ್ತು ನಿಮಿಷ ಮೊದಲೇ ಎದ್ದು ಹೊರಟಾಗ ಹತ್ತಿರ ಕರೆದು ಸಣ್ಣ ಧ್ವನಿಯಲ್ಲಿ 'ಹೆಂಗಾಯ್ತೋ ಎಕ್ಸಾಂ?’ ಎಂದು ಕೇಳುತ್ತೇನೆ. 'ಅವ್ರು ನಂಗೆ ಗೊತ್ತಿಲ್ಲದ ಪ್ರಶ್ನೆಗಳನ್ನೇ ಕೇಳಿದಾರೆ. ಹಂಗೇ ನಾನೂ ಅವರಿಗೆ ಗೊತ್ತಿಲ್ಲದ ಉತ್ತರಗಳನ್ನೇ ಬರೆದಿದೀನಿ ಸಾರ್’ ಎನ್ನುತ್ತಾ ಆತ ಕ್ಷಣಾರ್ಧದಲ್ಲಿ ಕಾರಿಡಾರ್ ತುದಿಯಲ್ಲಿ ಮಾಯವಾಗಿರುತ್ತಾನೆ.